ಅಥವಾ

ಒಟ್ಟು 126 ಕಡೆಗಳಲ್ಲಿ , 30 ವಚನಕಾರರು , 123 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಮನ ಮಂದಿರದಡವಿಯೊಳಗೆ ಶುಕ್ಲಶೋಣಿತವೆಂಬ ಮಡಕೆಯ ಮಾಡಿ ಮೂತ್ರ ಶ್ಲೇಷ್ಮ ಅಮೇಧ್ಯವೆಂಬ ಪಾಕದ್ರವ್ಯಂಗಳ ಮಡಕೆಯಲ್ಲಿ ನಿಶ್ಚಯಿಸಿ ಆ ಮಡಕೆಯನೊಡೆದಾ[ಗಲೆ ಭಕ್ತ] ಕಾಣಾ. ರೇಕಣ್ಣಪ್ರಿಯ ನಾಗಿನಾಥಾ ಬಸವಣ್ಣನಿಂದ ಬದುಕಿದೆನು.
--------------
ಬಹುರೂಪಿ ಚೌಡಯ್ಯ
ನಿರಂಜನಾತೀತಷಟ್‍ಸ್ಥಲಬ್ರಹ್ಮ ಅಂಗವಾಗಿ ಆ ನಿರಂಜನಾತೀತ ಷಟ್‍ಸ್ಥಲಬ್ರಹ್ಮವನೊಡಗೂಡಿದ ಮಹಾಶರಣಂಗೆ ನಮೋ ನಮೋ ಎಂದು ಬದುಕಿದೆನು ಕಾಣಾ ಅಪ್ರಮಾಣಕೂಡಲಸಂಗಮದೇವಾ. || 661 ||
--------------
ಬಾಲಸಂಗಯ್ಯ ಅಪ್ರಮಾಣ ದೇವ
ಶಾಂಭವಲೋಕದ ಕುಂಬ್ಥಿನಿಯುದರದ ಮೇಲೆ ಅಂಗನೆ ಅರುದಿಂಗಳ ಹಡೆದಳು ನೋಡಾ. ಅರುದಿಂಗಳ ಅದಾರನೂ ಅರಿಯದೆ ನಿರ್ವಯಲನೆ ಅರಿವುತ್ತರಿವುತ್ತ ಬೆರಗಾಗಲು ಕುಂಬ್ಥಿನಿಯುದರದಂಗನೆ ಸತ್ತುದ ಕಂಡು ಇಹಲೋಕ ಪರಲೋಕ ಆವ ಲೋಕವ ಹೊಗದೆ ಲೋಕಶ್ರೇಷ್ಠವಲ್ಲವೆಂದು ದೇಹವಿಲ್ಲದ ದೇವನ ಉದರವ ಬಗೆದು ಹೊಕ್ಕು ಅಗಣಿತನಪ್ರಮಾಣನಾದ ಲಿಂಗೈಕ್ಯಂಗೆ ನಮೋ ನಮೋಯೆಂದು ಬದುಕಿದೆನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಕರ್ತನಟ್ಟಿದಡೆ ಮತ್ರ್ಯದಲ್ಲಿ ಮಹಾಮನೆಯ ಕಟ್ಟಿದೆ, ಸತ್ಯಶರಣರಿಗೆ ತೊತ್ತು ಭೃತ್ಯನಾಗಿ ಸವೆದು ಬದುಕಿದೆನು. ಕರ್ತನ ಬೆಸನು ಮತ್ತೆ ಬರಲೆಂದಟ್ಟಿದಡೆ, ಕೂಡಲಸಂಗಮದೇವರ ನಿರೂಪಕ್ಕೆ ಮಹಾಪ್ರಸಾದವೆಂದೆನು.
--------------
ಬಸವಣ್ಣ
ಎಲೆ ಕಲಿದೇವಯ್ಯಾ, ಆದಿಯ ಕುಳವೂ ಅನಾದಿಯ ಕುಳವೂ ನಿಮ್ಮ ಜಂಗಮಮೂರ್ತಿಯಲ್ಲಿ ನಿಂದಿತ್ತು. ಮೂಲಶುದ್ಧದ ಮುಕ್ತಾಯ ನಿಮ್ಮ ಜಂಗಮಮೂರ್ತಿಯಲ್ಲಿ ನಿಂದಿತ್ತು. ಉಭಯಕುಳದ ಕಿರಣಶಕ್ತಿ ನಿಮ್ಮ ಜಂಗಮಮೂರ್ತಿಯಲ್ಲಿ ನಿಂದಿತ್ತು. ಭಾವವೂ ನಿರ್ಭಾವವೂ ನಿಮ್ಮ ಜಂಗಮಮೂರ್ತಿಯಲ್ಲಿ ನಿಂದಿತ್ತು. ಅರ್ಥ ಪ್ರಾಣ ಅಬ್ಥಿಮಾನ ನಿಮ್ಮ ಜಂಗಮಮೂರ್ತಿಯಲ್ಲಿ ನಿಂದಿತ್ತು. ಅಂಗಲಿಂಗಸಂಗ ನಿಮ್ಮ ಜಂಗಮಮೂರ್ತಿಯಲ್ಲಿ ನಿಂದಿತ್ತು. ಅಷ್ಟದಳಕಮಲದ ಸಪ್ತಕರ್ಣಿಕೆಯು ನಿಮ್ಮ ಜಂಗಮಮೂರ್ತಿಯಲ್ಲಿ ನಿಂದಿತ್ತು. ಎನ್ನ ನಡೆಗೆಟ್ಟಿತ್ತು ನಿಮ್ಮ ಜಂಗಮಮೂರ್ತಿಯಿಂದ. ಎನ್ನ ನುಡಿಗೆಟ್ಟಿತ್ತು ನಿಮ್ಮ ಜಂಗಮಮೂರ್ತಿಯಿಂದ ಎನ್ನ ನೋಟ ಕೆಟ್ಟಿತ್ತು ನಿಮ್ಮ ಜಂಗಮಮೂರ್ತಿಯಿಂದ. ಎನ್ನ ಮಾಟ ಸಮಾಪ್ತಿಯಾಯಿತ್ತು ನಿಮ್ಮ ಜಂಗಮಮೂರ್ತಿಯಿಂದ. ನಿಮ್ಮ ಪ್ರಸಾದದಿಂದ ತನು ಶುದ್ಧವಾಯಿತ್ತು. ಬಸವಣ್ಣ ತೋರಿದ ಕಾರಣ, ನಿಮ್ಮ ಜಂಗಮಮೂರ್ತಿಯ ಕಂಡು ಬದುಕಿದೆನು ಕಾಣಾ ಕಲಿದೇವರದೇವಾ.
--------------
ಮಡಿವಾಳ ಮಾಚಿದೇವ
ಅರಿಯದೆ ಮರಹಿಂದ ಭವದಲ್ಲಿ ಬಂದೆನಲ್ಲದೆ, ಇನ್ನು ಅರಿದ ಬಳಿಕ ಬರಲುಂಟೆ ? ಹೃದಯಕಮಲಮಧ್ಯದಲ್ಲಿ ನಿಜವು ನೆಲೆಗೊಂಡ ಬಳಿಕ, ಪುಣ್ಯಪಾಪವೆಂಬುದಕ್ಕೆ ಹೊರಗಾದೆನು. ಭುವನಹದಿನಾಲ್ಕರೊಳಗೆ ಪರಿಪೂರ್ಣ ನಿರಂಜನಜ್ಯೋತಿಯಾಗಿ ಬೆಳಗುವ ಪ್ರಭುವ ಕಂಡು ಬದುಕಿದೆನು ಕಾಣಾ ಬಸವಣ್ಣಪ್ರಿಯ ಚೆನ್ನಸಂಗಯ್ಯಾ.
--------------
ನಾಗಲಾಂಬಿಕೆ
ಏನು ಏನೂ ಎನಲಿಲ್ಲದ ಮಹಾಘನ ನಿರಂಜನಾತೀತದ ನೆನಹುಮಾತ್ರದಲ್ಲಿಯೆ ನವಪದ್ಮ ನವಶಕ್ತಿಗಳುತ್ಪತ್ಯ ಲಯವು. ನಿಶ್ಶಬ್ದವೆಂಬ ಪರಬ್ರಹ್ಮದ ನೆನಹುಮಾತ್ರದಲ್ಲಿಯೆ ಏಕಾಕ್ಷರ ತ್ರಯಾಕ್ಷರ ಸಹಸ್ರಾಕ್ಷರ ಅಷ್ಟನಾದ ಉತ್ಪತ್ಯ ಲಯವು. ದಶಚಕ್ರ ಮೊದಲಾಗಿ, ಚತುರ್ವೇದ ಗಾಯತ್ರಿ ಅಜಪೆ ಕಡೆಯಾಗಿ, ಸಮಸ್ತವು ಅಖಂಡಜ್ಯೋತಿರ್ಮಯವಾಗಿಹ ಗೋಳಕಾಕಾರಪ್ರಣವದಲ್ಲಿ ಉತ್ಪತ್ಯ ಲಯವೆಂದು ಬೋದ್ಥಿಸಿ ಕೃತಾರ್ಥನ ಮಾಡಿದ ಮಹಾಗುರುವಿನ ಶ್ರೀಪಾದಕ್ಕೆ ನಮೋ ನಮೋ ಎಂದು ಬದುಕಿದೆನು ಕಾಣಾ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಎನ್ನ ಘ್ರಾಣದಲ್ಲಿ ಆಚಾರಲಿಂಗವಾಗಿ ಮೂರ್ತಿಗೊಂಡನಯ್ಯಾ, ಬಸವಣ್ಣನು. ಎನ್ನ ಜಿಹ್ವೆಯಲ್ಲಿ ಗುರುಲಿಂಗವಾಗಿ ಮೂರ್ತಿಗೊಂಡನಯ್ಯಾ, ಚನ್ನಬಸವಣ್ಣನು ಎನ್ನ ನೇತ್ರದಲ್ಲಿ ಶಿವಲಿಂಗವಾಗಿ ಮೂರ್ತಿಗೊಂಡನಯ್ಯಾ, ಘಟ್ಟಿವಾಳ ಮುದ್ದಯ್ಯನು. ಎನ್ನ ತ್ವಕ್ಕಿನಲ್ಲಿ ಜಂಗಮಲಿಂಗವಾಗಿ ಮೂರ್ತಿಗೊಂಡನಯ್ಯಾ, ಸಿದ್ಧರಾಮಯ್ಯನು. ಎನ್ನ ಶ್ರೋತ್ರದಲ್ಲಿ ಪ್ರಸಾದಲಿಂಗವಾಗಿ ಮೂರ್ತಿಗೊಂಡನಯ್ಯಾ, ಮರುಳಶಂಕರದೇವರು, ಎನ್ನ ಹೃದಯದಲ್ಲಿ ಮಹಾಲಿಂಗವಾಗಿ ಮೂರ್ತಿಗೊಂಡನಯ್ಯಾ, ಪ್ರಭುದೇವರು. ಎನ್ನ ಸರ್ವಾಂಗದಲ್ಲಿ ಮೂರ್ತಿಗೊಂಡರು ಪ್ರಮಥರು. ಗವರೇಶ್ವರಲಿಂಗದಲ್ಲಿ ಸುಖಿಯಾಗಿ ಬದುಕಿದೆನು ಕಾಣಾ, ಮಡಿವಾಳ ಮಾಚಯ್ಯ.
--------------
ಮೇದರ ಕೇತಯ್ಯ
ಆದಿ ಅನಾದಿಯೆಂಬವು ಸಂಗಷ್ಟವಾಗಿರ್ದು, ವಿಭೇದವಾಗುವಲ್ಲಿ ಕುಂಡಲಿಯ ಶಕ್ತಿಯಲ್ಲಿ ಪ್ರಾಣವಾಯು ಪ್ರಣವಸ್ವರವನೊಡಗೂಡಿ ಬ್ರಹ್ಮಸ್ಥಾನದಲ್ಲಿ ಸ್ಥಾಪ್ಯ ಶಿವನಾಗಿ, ಭ್ರೂಮಧ್ಯಕಂಠಸ್ಥಾನದಲ್ಲಿ ನಿಃಕಲಸ್ವರೂಪನಾಗಿ, ಹೃದಯನಾಬ್ಥಿಯಲ್ಲಿ ಸಕಲನಿಃಕಲನಾಗಿ, ಸ್ವಾದ್ಥಿಷ್ಠಾನ ಆಧಾರದಲ್ಲಿ ಕೇವಲಸಖನಾಗಿ, ಆ ಸಕಲಕ್ಕೆ ಎರಡು ಪಾದವನಿತ್ತು, ಒಂದು ಪಾದಕ್ಕೆ ಕ್ರಿಯಾಶಕ್ತಿ, ಒಂದು ಪಾದಕ್ಕೆ ಜ್ಞಾನಶಕ್ತಿಯ ಮಾಡಿ ನಿಲ್ಲಿಸಿ, ಮೇಲಣ ಸಕಲ ನಿಃಕಲತತ್ತ್ವಕೈದಿ, ಅಲ್ಲಿಗೆ ಎರಡು ಹಸ್ತವನಿತ್ತು, ಒಂದು ಹಸ್ತಕ್ಕೆ ಆದಿಶಕ್ತಿ, ಒಂದು ಹಸ್ತಕ್ಕೆ ಇಚ್ಛಾಶಕ್ತಿಯನಾದಿ ಮಾಡಿ ನಿಲಿಸಿ, ಮೇಲಣ ನಿಃಕಲತತ್ತ್ವವನೈದಿ, ಅಲ್ಲಿಗೆ ನಾಲ್ಕು ಪಾದವನಿತ್ತು, ಅವು ಆವವು ಎಂದಡೆ, ಜಿಹ್ವೆ ಘ್ರಾಣ ನೇತ್ರ ಶ್ರೋತ್ರವೆಂಬ ನಾಲ್ಕು ಪಾದ ವನಾದಿಮಾಡಿ ನಿಲ್ಲಿಸಿ, ನಾಲ್ಕು ಪಾದವಂ ನಿಲ್ಲಿಸಿದುದರಿಂದ ನಂದಿಯೆಂಬ ನಾಮವಾಯಿತ್ತು. ಆ ನಂದೀಶ್ವರಂಗೆ ಚಿತ್‍ಶಕ್ತಿಯೆ ಅಂಗ, ಪರಶಕ್ತಿಯೆ ಮುಖ. ಇಂತಪ್ಪ ನಂದೀಶ್ವರ ನಲಿದಾಡಿ ಅನಾದಿ ಪರಶಿವ ಅಖಿಳ ಬ್ರಹ್ಮಾಂಡವ ಹೊತ್ತಿಪ್ಪನಲಾಯೆಂದರಿದು, ಆದಿವಾಹನವಾದನು, ಅದೀಗ ಆದಿವೃಷಭನೆಂಬ ನಾಮವಾಯಿತ್ತು. ಆದಿವೃಷಭನ ಆದಿಯಲ್ಲಿ ಪರಶಿವನಿಪ್ಪನು, ಆ ಪರಶಿವನಾದಿಯಲ್ಲಿ ನಿಃಕಲವಿಪ್ಪುದು, ಆ ನಿಃಕಲದಾದಿಯಲ್ಲಿ ಸಕಲ ನಿಃಕಲವಿಪ್ಪುದು. ಆ ಸಕಲ ನಿಃಕಲದಾದಿಯಲ್ಲಿ ಕೇವಲ ಸಕಲವಿಪ್ಪುದು. ಆ ಸಕಲವೆಂದರೆ ಅನಂತತತ್ತ್ವ. ಬ್ರಹ್ಮಾಂಡ ಕೋಟ್ಯಾನುಕೋಟಿ ಲೋಕಾಲೋಕಂಗಳು ದೇವದಾನವ ಮಾನವರು ಸಚರಾಚರ ಎಂಬತ್ತನಾಲ್ಕು ಲಕ್ಷ ಜೀವಜಂತುಗಳುದ್ಭವಿಸಿದವು. ಆ ಪಿಂಡ ಬ್ರಹ್ಮಾಂಡದ ಹೊರೆಯಲ್ಲಿ ಸಕಲಪದಾರ್ಥಗಳುದ್ಭವಿಸಿದವು. ಸಕಲಪದಾರ್ಥಂಗಳ ಪುಣ್ಯಪಾಪದ ಸಾರವ ಕೈಕೊಂಬುದಕ್ಕೆ ದೇವನಾವನುಂಟೆಂದು ಆಹ್ವಾನಿಸಿ ನೋಡಲು, ಆ ನಿಃಕಲ ಮಹಾಲಿಂಗವೆ ಕ್ರಿಯಾಶಕ್ತಿಯ ಮುಖದಲ್ಲಿ ಇಷ್ಟಲಿಂಗವಾಗಿ ಬಂದು, ಜ್ಞಾನಶಕ್ತಿಮುಖದಲ್ಲಿ ಸಕಲಪದಾರ್ಥಂಗಳ ಕೈಕೊಂಬಲ್ಲಿ, ಪುಣ್ಯಪಾಪಂಗಳ ಸಾರವಳಿದು, ಲಿಂಗ ಸಾರವಾದ ರೂಪ ಇಷ್ಟಲಿಂಗಕ್ಕೆ ಕೊಟ್ಟು, ಆ ರುಚಿಪ್ರಸಾದವ ಜ್ಞಾನಶಕ್ತಿ ಆದಿಶಕ್ತಿ ಕೈಯಲ್ಲಿಪ್ಪ ಪ್ರಾಣಲಿಂಗಕ್ಕೆ ಇಚ್ಛಾಶಕ್ತಿಯ ಮುಖದಲ್ಲಿ ಕೊಡಲು, ಆ ರುಚಿ ಪ್ರಸಾದವ ಪ್ರಾಣಲಿಂಗವಾರೋಗಿಸಿ, ಪರಮ ಪರಿಣಾಮವನೈದಲು, ಆ ಪರಿಣಾಮ ಪ್ರಸಾದವ ಜ್ಞಾನಶಕ್ತಿಯು ನಂದೀಶ್ವರಂಗೆ ಕೊಡಲು, ಆ ಪರಮ ತೃಪ್ತಿಯ ಶೇಷ ನಂದೀಶ್ವರ ಆರೋಗಿಸಿ ಪರವಶವನೈದಲು, ಆ ಪರವಶದ ಶೇಷವ ಜ್ಞಾನಶಕ್ತಿ ಆರೋಗಿಸಿ, ಅಡಿಮುಡಿಗೆ ತಾನೆ ಆದಿಯಾಗಲು, ಅದೀಗ ಅಡಿಮುಡಿಯ ಶೇಷ ಹೊತ್ತಿಪ್ಪನೆಂದು ವೇದಾಗಮಶಾಸ್ತ್ರಪುರಾಣಪುರುಷರು ನುಡಿಯುತಿಪ್ಪರು. ಇಂತಪ್ಪ ಬಸವನ ಆದಿಮೂಲವ ಬಲ್ಲ ಶರಣನಾಯಿತ್ತು ತೊತ್ತು ಮುಕ್ಕುಳಿಸಿ ಉಗುಳುವ ಪಡುಗ, ಮೆಟ್ಟುವ ಚರ್ಮ ಹಾವುಗೆಯಾಗಿ ಬದುಕಿದೆನು ಕಾಣಾ, ಬಸವಪ್ರಿಯ ಕೂಡಲ[ಚೆನ್ನ]ಸಂಗಮದೇವಾ, ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಸಂಗಮೇಶ್ವರದ ಅಪ್ಪಣ್ಣ
ಭಕ್ತ ಜಂಗಮದ ಸಕೀಲಸಂಬಂಧವೆಂತಿಪ್ಪುದೆಂಬುದನಾರು ಬಲ್ಲರಯ್ಯಾ ? ಅದು ಉಪಮಾತೀತ ! ಭಕ್ತನೊಳಗೆ ಜಂಗಮವಡಗಿದಡೆ ಭಕ್ತನಾಗಿ ಕ್ರಿಯಾನಿಷ್ಪತ್ತಿಯಲ್ಲಿ ಸಮರಸಸುಖಿಯಾಗಿಪ್ಪ ನೋಡಯ್ಯಾ. ಜಂಗಮದೊಳಗೆ ಭಕ್ತನಡಗಿದಡೆ, ಕರ್ತೃಭೃತ್ಯಭಾವವಳಿದು ಸಂಬಂಧ ಸಂಶಯದೋರದೆ, ಅರಿವರತು ಮರಹು ನಷ್ಟವಾಗಿ, ಸ್ವತಂತ್ರ ಶಿವಚಾರಿಯಾಗಿರಬೇಕು ನೋಡಯ್ಯಾ. ಈ ಉಭಯಭಾವಸಂಗದ ಪರಿಣಾಮವ ಕಂಡು ಕೂಡಲಚೆನ್ನಸಂಗಯ್ಯನಲ್ಲಿ ಬಸವಪ್ರಭುದೇವರ ಶ್ರೀಪಾದಕ್ಕೆ ನಮೋ ನಮೋ ಎಂದು ಬದುಕಿದೆನು
--------------
ಚನ್ನಬಸವಣ್ಣ
ನಿಮ್ಮ ಜಂಗಮಮೂರ್ತಿಯಲ್ಲಿಯೆ ನಿಂದಿತ್ತು. ಅರ್ಥ ಪ್ರಾಣ ಅಬ್ಥಿಮಾನ ನಿಮ್ಮ ಜಂಗಮಮೂರ್ತಿಯಲ್ಲಿಯೆ ನಿಂದಿತ್ತು. ಅಂಗಲಿಂಗಸಂಗ ನಿಮ್ಮ ಜಂಗಮಮೂರ್ತಿಯಲ್ಲಿಯೆ ನಿಂದವು. ಎನ್ನ ನಡೆಗೆಟ್ಟಿತ್ತು, ನಿಮ್ಮ ಜಂಗಮಮೂರ್ತಿಯಿಂದ. ಎನ್ನ ನುಡಿಗೆಟ್ಟಿತ್ತು, ನಿಮ್ಮ ಜಂಗಮಮೂರ್ತಿಯಿಂದ. ಎನ್ನ ನೋಟಗೆಟ್ಟಿತ್ತು, ನಿಮ್ಮ ಜಂಗಮಮೂರ್ತಿಯಿಂದ. ಎನ್ನ ಮಾಟ ಸಮಾಪ್ತವಾಯಿತ್ತು, ನಿಮ್ಮ ಜಂಗಮಮೂರ್ತಿಯಿಂದ. ನಿಮ್ಮ ಪ್ರಸಾದದಿಂದ ಎನ್ನ ತನು ಶುದ್ಧವಾಯಿತ್ತು. ಬಸವಣ್ಣನ ತೋರಿದ ಕಾರಣ, ನಿಮ್ಮ ಜಂಗಮಮೂರ್ತಿಯ ಕಂಡು, ಬದುಕಿದೆನು ಕಾಣಾ, ಕಲಿದೇವರದೇವಯ್ಯಾ.
--------------
ಮಡಿವಾಳ ಮಾಚಿದೇವ
ಅರಮನೆಯ ಕೂಳನಾದಡೆಯು ತಮ್ಮುದರದ ಕುದಿಹಕ್ಕೆ ಲಿಂಗಾರ್ಪಿತವೆಂದೆಡೆ ಅದು ಲಿಂಗಾರ್ಪಿತವಲ್ಲ ಆನರ್ಪಿತ. ಅದೆಂತೆಂದೆಡೆ : ಅರ್ಪಿತಂಚ ಗುರೋರ್ವಾಕ್ಯಂ ಕಿಲ್ಬಿಷಸ್ಯ ಮನೋ[s]ರ್ಪಿತಂ ಅನರ್ಪಿತಸ್ಯ ಭುಂಜಿಯಾನ್ ರೌರವಂ ನರಕಂ ವ್ರಜೇತ್ ಎಂದುದಾಗಿ ತನ್ನ ಒಡಲಕಕ್ಕುಲತೆಗೆ ಆಚಾರವನನುಸರಿಸಿ ಭವಿಶೈವ ದೈವ ತಿಥಿವಾರಂಗಳ ಹೆಸರಿನಲ್ಲಿ ಅಟ್ಟಿ ಕೂಳತಂದು ತಮ್ಮ ಇಷ್ಟಲಿಂಗಕ್ಕೆ ಕೊಟ್ಟು ಹೊಟ್ಟೆಯ ಹೊರೆವ ಆಚಾರಭ್ರಷ್ಟ ಪಂಚಮಹಾಪಾತಕರಿಗೆ ಗುರುವಿಲ್ಲ ಲಿಂಗವಿಲ್ಲ ಜಂಗಮವಿಲ್ಲ ಪಾದೋದಕವಿಲ್ಲ ಪ್ರಸಾದವಿಲ್ಲ, ಪ್ರಸಾದವಿಲ್ಲವಾಗಿ ಮುಕ್ತಿಯಿಲ್ಲ. ಮುಂದೆ ಅಘೋರ ನರಕವನುಂಬರು. ಇದನರಿದು ನಮ್ಮ ಬಸವಣ್ಣನು ತನುವಿನಲ್ಲಿ ಆಚಾರಸ್ವಾಯತವಾಗಿ. ಮನದಲ್ಲಿ ಅರಿವು ಸಾಹಿತ್ಯವಾಗಿ ಪ್ರಾಣದಲ್ಲಿ ಪ್ರಸಾದ ಸಾಹಿತ್ಯವಾಗಿ ಇಂತೀ ತನು-ಮನ-ಪ್ರಾಣಂಗಳಲ್ಲಿ ಸತ್ಯ ಸದಾಚಾರವಲ್ಲದೆ ಮತ್ತೊಂದನರಿಯದ ಭಕ್ತನು ಭವಿಶೈವ ದೈವ ತಿಥಿ ಮಾಟ ಕೂಟಂಗಳ ಮನದಲ್ಲಿ ನೆನೆಯ. ತನುವಿನಲ್ಲಿ ಬೆರಸ ಭಾವದಲ್ಲಿ ಬಗೆಗೊಳ್ಳ ಏಕಲಿಂಗ ನಿಷ್ಠಾಪರನು ಪಂಚಾಚಾರಯುಕ್ತನು ವೀರಶೈವ ಸಂಪನ್ನ ಸರ್ವಾಂಗಲಿಂಗಿ ಸಂಗನಬಸವಣ್ಣನು ಈ ಅನುವ ಎನಗೆ ಅರುಹಿಸಿ ತೋರಿದ ಕಾರಣ ನಾನು ಬದುಕಿದೆನು ಕಾಣಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಬಡವಂಗೆ ನಿಧಾನ ಕಡವರ ಕೈಸಾರಿತ್ತಯ್ಯಾ. ಕಾಣಬಾರದ ಬಯಲು ರೂಪುಗೊಂಡಿತ್ತಯ್ಯಾ. ನಿರಾಳ ನಿರ್ಣಯದ ಮೇಲೆ ನಿಂದಿತ್ತಯ್ಯಾ. ಎನ್ನ ಭಾವದ ಕೊನೆಯ ಮೊನೆಯ ಮೇಲೆ, ಮನೆಯ ಮಾಡಿಕೊಂಡಿಪ್ಪ ಪ್ರಭುವ ಕಂಡು, ಬದುಕಿದೆನು ಕಾಣಾ, ನಿಃಕಳಂಕ ಮಲ್ಲಿಕಾರ್ಜುನ.
--------------
ಮೋಳಿಗೆ ಮಾರಯ್ಯ
ಮಾಡಬಾರದ ಭಕ್ತಿಯನೆ ಮಾಡಿ, ನೋಡಬಾರದ ನೋಟವನೆ ಕೂಡಿ, ಸ್ತುತಿಸುವರೆ ಸ್ತುತಿಗೆ ಬಾರದೆ, ಮುಟ್ಟುವ[ರೆ] ಮುಟ್ಟಬಾರದೆ ಬಟ್ಟಬಯಲಾಗಿ ಹೋದ ಮರುಳುಶಂಕರದೇವರ ಮಹಾತ್ಮೆಗೆ ನಮೋ ನಮೋ ಎಂದು ಬದುಕಿದೆನು ಕಾಣಾ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಭಕ್ತಿಯುಕ್ತಿಯ ಹೊಲಬ ಬಲ್ಲವರ, ಮೂರುಲೋಕದೊಳಗಾರನೂ ಕಾಣೆ. ಲಿಂಗದಲ್ಲಿ ಭಕ್ತಿಯ ಮಾಡಿದಡೆ ಭವ ಹರಿಯದೆಂದು ಜಂಗಮಮುಖ ಲಿಂಗವೆಂದರಿದು ಅರ್ಚಿಸಿ ಪೂಜಿಸಿ ದಾಸೋಹವ ಮಾಡಿ ಪ್ರಸನ್ನತೆಯ ಹಡೆದ ಬಸವಣ್ಣನು. ಆ ಪ್ರಸನ್ನತೆಯ ರುಚಿಯನುಪಮಿಸಬಾರದು. ಆ ಬಸವಣ್ಣನ ಪ್ರಸಾದವ ಕೊಂಡು ನಾನು ಬದುಕಿದೆನು. ಆ ಬಸವಣ್ಣನ ಭಕ್ತಿಪ್ರಸಾದವ ಕೊಂಡು ಅಲ್ಲಮಪ್ರಭು ತೃಪ್ತನಾದನು. ಅಲ್ಲಮಪ್ರಭು ಕೊಂಡ ಪ್ರಸಾದದ ತೃಪ್ತಿ ಲಕ್ಷದಮೇಲೆ ತೊಂಬತ್ತಾರುಸಾವಿರ ಜಂಗಮ ತೃಪ್ತಿಯಾಯಿತು; ಆ ಲಕ್ಷದ ಮೇಲೆ ತೊಂಬತ್ತಾರುಸಾವಿರ ಜಂಗಮ ತೃಪ್ತಿಯಾದಲ್ಲಿ ಸಚರಾಚರವೆಲ್ಲ ಕೂಡೆ ತೃಪ್ತಿಯಾಯಿತ್ತೆಂದಡೆ, ಇಲ್ಲವೆಂದು ಬಿಜ್ಜರಿ ತರ್ಕಿಸಲು, ಕಪ್ಪೆಯ ಒಡಲೊಳಗೆ ಪ್ರಭುವಿನ ಪ್ರಸಾದವ ತೋರನೆ ಬಸವಣ್ಣನು ? ಇದು ಕಾರಣ ಕೂಡಲಚೆನ್ನಸಂಗಮದೇವರಲ್ಲಿ ಬಸವಣ್ಣ ಪ್ರಭುದೇವರ ಪ್ರಸಾದದ ಘನವು ತ್ರೈಲೋಕ್ಯದೊಳಗೆ ಬೆಳವಿಗೆಯಾಯಿತ್ತು !
--------------
ಚನ್ನಬಸವಣ್ಣ
ಇನ್ನಷ್ಟು ... -->