ಅಥವಾ

ಒಟ್ಟು 47 ಕಡೆಗಳಲ್ಲಿ , 21 ವಚನಕಾರರು , 41 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹಿಂದಣಜನ್ಮದ ಸಂಸಾರವ ಮರೆದು, ಮುಂದಣ ಭವಬಂಧನಂಗಳ ಜರಿದು, ಸಂದೇಹ ಸಂಕಲ್ಪಗಳ ಹರಿದು, ನಿಮ್ಮ ಅವಿರಳಭಕ್ತಿಯ ಬೆಳಗಿನಲ್ಲಿ ಬೆರೆದು ಓಲಾಡುವ ಮಹಾಮಹಿಮರ ತೋರಿ ಬದುಕಿಸಯ್ಯ ಎನ್ನ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಮಕ್ಕಳು ಮರಿಗಳು ಸತ್ತು ನಷ್ಟವಾಗಿ, ಕಷ್ಟ ದುಃಖ ನೆಲೆಗೊಂಡಿತ್ತೆಂದು ತನ್ನಿಷ್ಟಲಿಂಗಪೂಜೆಯನಗಲಿಸಿ, ಬಿಟ್ಟಿಯ ಮಾಡಬಹುದೇನಯ್ಯಾ? ಜಂಗಮವು ಬಂದು ತನ್ನ ವ್ರತ ನೇಮಕ್ಕೆ ಬೇಡಿದಡೆ ನಿಮ್ಮ ಉಪದ್ರವೇನೆಂದು ಭಕ್ತಿಯ ಮಾಡಬಹುದೇನಯ್ಯಾ? ಸಕಲದುಃಖಂಗಳು ತಮ್ಮಿಂದ ತಾವೇ ಬರಲರಿಯವು. ಭಕ್ತಿಯನ್ನು ಮರೆದು, ಮರವೆಯಲ್ಲಿ ಬೆರೆದು, ಭವಭವದಲ್ಲಿ ಬರುವುದು ಅದೇ ದುಃಖವು, ನಿಶ್ಚಯವೆಂದಾತ ನಮ್ಮ ಅಂಬಿಗರ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಆತ್ಮ ತೇಜಕ್ಕೆ ಬೀಗಿ ಬೆರೆದು, ಶಾಸ್ತ್ರದ ಸಂತೋಷಕ್ಕೆ ಸಾಧ್ಯವಾದಿಹಿತೆಂದು, ವಚನದ ರಚನೆಗೆ ರಚಿಸಿದೆನೆಂದು, ತರ್ಕಕ್ಕೆ ಹೊತ್ತು ಹೋರುವನ್ನಕ್ಕರ ಗುರುವೆಂತಾದಿರೊ? ಘಟದ ಮಧ್ಯದಲ್ಲಿ ಪೂಜಿಸಿಕೊಂಬವನಾರೆಂದು ಅರಿಯದೆ, ಫಲವ ಹೊತ್ತಿರ್ಪ ಮರನಂತೆ, ಕ್ಷೀರವ ಹೊತ್ತಿರ್ಪ ಕೆಚ್ಚಲಂತೆ, ನಿನ್ನ ನೀನೆ ತಿಳಿದು ನೋಡಾ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಪ್ರಣವಸ್ವರೂಪಮಾದ ಪರಬ್ರಹ್ಮವೇ ತಾನು ತನ್ನ ನಿಜಲೀಲಾನಿಮಿತ್ತ ತ್ರಿವರ್ಣರೂಪಕಮಾಗಿ, ಅದೇ ಹರಿಹರಬ್ರಹ್ಮಸ್ವರೂಪಮಾಗಿ, ಹರಿಯೇ ಶರೀರಮಾಗಿ, ಹರನೇ ಜೀವಮಾಗಿ, ಬ್ರಹ್ಮನೇ ಮನಸ್ಸಾಗಿ, ಆ ಬ್ರಹ್ಮಸ್ವರೂಪಮಾದ ಕಲೆಯೇ ಶರೀರಕ್ಕೆ ಶಕ್ತಿಯಾಗಿ, ಆ ಶರೀರಸ್ವರೂಪಮಾದ ಬಿಂದುವೇ ಪ್ರಾಣಕ್ಕೆ ಶಕ್ತಿಯಾಗಿ, ಆ ಪ್ರಾಣಸ್ವರೂಪಮಾದ ನಾದವೇ ಮನಶ್ಶಕ್ತಿಯಾಗಿ, ಆ ಪ್ರಾಣಕ್ಕೆ ನಾಸಿಕವೇ ಸ್ಥಾನಮಾಗಿ, ಮನಸ್ಸಿಗೆ ಜಿಹ್ವೆಯೇ ಸ್ಥಾನಮಾಗಿ, ಶರೀರಕ್ಕೆ ನೇತ್ರವೇ ಸ್ಥಾನಮಾಗಿ, ತನು ಸ್ಪರುಶನಸ್ವರೂಪು, ಮನಸ್ಸು ಶಬ್ದಸ್ವರೂಪು, ಪ್ರಾಣ ಆತ್ಮಸ್ವರೂಪು. ಈ ತನು ಮನಃಪ್ರಾಣಂಗಳಿಂದೊಗೆದ ಆತ್ಮಾದಿ ಷಡ್ಭೂತಂಗಳಿಗೆ ಆತ್ಮಾದಿ ಷಡ್ಭೂತವೇ ಕಾರಣಮಾಗಿ, ಜೀವನದಲ್ಲಿ ಹುಟ್ಟಿದ ಸತ್ವಗುಣವು ಶರೀರವನಾವರಿಸಿ, ಆ ಜೀವನಿಗೆ ತಾನೇ ಸ್ಥಿತಿಕರ್ತೃವಾಯಿತ್ತು. ಶರೀರದಲ್ಲಿ ಹುಟ್ಟಿದ ತಮೋಗುಣವು ಜೀವನನಾವರಿಸಿ, ಆ ಶರೀರಕ್ಕೆ ತಾನೇ ಸಂಹಾರಕರ್ತೃವಾಯಿತ್ತು. ಆ ಶರೀರ ಜೀವಸಂಗದಿಂದೊಗೆದ ಅಹಂಕಾರಸ್ವರೂಪಮಾದ ರಜೋಗುಣವು ಮನಮನಾವರಿಸಿ, ಈ ಎರಡಕ್ಕೂ ತಾನೇ ಸೃಷ್ಟಿಕರ್ತೃವಾಯಿತ್ತು. ಆ ನಾದವೇ ವಾಗ್ದೇವಿಯಾಗಿ, ಬಿಂದುವೇ ಮಹಾದೇವಿಯಾಗಿ, ಕಳೆಯೇ ಮಹಾಲಕ್ಷ್ಮಿಯಾಗಿ, ಈ ತನು ಮನಃಪ್ರಾಣಂಗಳನು ಮರುಳುಮಾಡಿತ್ತು. ಜಾಗ್ರತ್ಸ್ವಪ್ನಸುಷುಪ್ತ್ಯಾದ್ಯವಸ್ಥೆಗಳೊಳಗೆ ಹೊಂದಿಸಿ, ಮುಂದುಗಾಣಲೀಯದೆ, ಸೃಷ್ಟಿಸ್ಥಿತಿಸಂಹಾರಂಗಳಲ್ಲಿ ತೊಳಲಿಬಳಲಿಸುತ್ತಿರಲು, ಆ ಕಳೆಯಲ್ಲಿ ಕೂಡಿ ಶರೀರವು ಉಬ್ಬುತ್ತಾ, ಆ ನಾದದಲ್ಲಿ ಕೂಡಿ ಮನಸ್ಸು ಕೊಬ್ಬುತ್ತಾ, ಆ ಶಕ್ತಿಯಲ್ಲಿ ಕೂಡಿ ಪ್ರಾಣ ಬೆಬ್ಬನೆ ಬೆರೆವುತ್ತಾ, ಭವಭವದೊಳು ತೊಳಲುತ್ತಿರಲು, ಗುರುಕಟಾಕ್ಷದಿಂ ಕರ್ಮವು ಸಮೆದು ಧರ್ಮವು ನೆಲೆಗೊಳ್ಳಲು, ಆ ಮೇಲೆ ಮಹಾಜ್ಞಾನಶಕ್ತಿಯಾಯಿತ್ತು ಆ ಬಿಂದುವೇ ಆನಂದಶಕ್ತಿಯಾಯಿತ್ತು ಆ ಕಳೆಯೇ ನಿಜಶಕ್ತಿಯಾಯಿತ್ತು ಇಂತು ಸತ್ಯಜ್ಞಾನಾನಂದಸ್ವರೂಪಮಾದ ಶಕ್ತಿಮಹಿಮೆಯಿಂದ ಶರೀರವೇ ವಿಷ್ಣುವಾಗಲು, ಅಲ್ಲಿ ಶ್ರೀಗುರುಸ್ವರೂಪಮಾದ ಇಷ್ಟಲಿಂಗವು ಸಾಧ್ಯಮಾಯಿತ್ತು. ಆ ಪ್ರಾಣವೇ ರುದ್ರಸ್ವರೂಪವಾಗಲು, ಜಂಗಮಮೂರ್ತಿಯಾದ ಪ್ರಾಣಲಿಂಗವು ಸಾಧ್ಯವಾಯಿತ್ತು. ಮನಸ್ಸೇ ಬ್ರಹ್ಮಸ್ವರೂಪವಾಗಲು, ಲಿಂಗಾಕಾರಮಾದ ಭಾವಲಿಂಗವು ಸಾಧ್ಯಮಾಯಿತ್ತು. ಆ ಲಿಂಗಗಳೇ ಆತ್ಮಾದಿ ಷಡ್ಭೂತಂಗಳಲ್ಲಿ ಆಚಾರಾದಿ ಮಹಾಲಿಂಗಂಗಳಾದವು. ಆ ಶಕ್ತಿಗಳೇ ಕ್ರಿಯಾದಿ ಶಕ್ತಿಯರಾದರು. ಆ ಶಕ್ತಿಮುಖದಲ್ಲಿ ತಮ್ಮಲ್ಲಿ ಹುಟ್ಟಿದ ನಾನಾವಿಷಯ ಪದಾರ್ಥಂಗಳನ್ನು ಆಯಾ ಲಿಂಗಂಗಳಿಗರ್ಪಿಸಿ, ತತ್ಸುಖಾನುಭವದೊಳೋಲಾಡುತ್ತಿರಲು, ಆ ಶಕ್ತಿಗಳೇ ಲಿಂಗಶಕ್ತಿಗಳಾಗಿ, ತಾವೇ ಆಯಾ ಲಿಂಗಸ್ವರೂಪ ಶರೀರ ಪ್ರಾಣ ಮನೋಭಾವಂಗಳಳಿದು, ಲಿಂಗಭಾವ ನೆಲೆಗೊಂಡಲ್ಲಿ, ಸತ್ವರಜಸ್ತಮೋಗುಣಗಳು ಜ್ಯೋತಿಯೊಳಗಡಗಿದ ಕತ್ತಲೆಯಂತೆ, ತಮ್ಮ ನಿಜದಲ್ಲಿ ತಾವೇ ಲೀನವಾದವು. ಬಿಂದು, ಶರೀರದೊಳಗೆ ನಿಂದು ಆನಂದರೂಪಮಾಯಿತ್ತು. ನಾದವು ಪ್ರಾಣದೊಳಗೆ ಬೆರೆದು ನಿಶ್ಶಬ್ದನಿರೂಪಮಾದ ಜ್ಞಾನಮಾಯಿತ್ತು. ಕಳೆ ಮನದೊಳಗೆ ಬೆರದು, ಪರಬ್ರಹ್ಮ ಸ್ವರೂಪಮಾಗಿ ನಿಜಮಾಯಿತ್ತು . ಆ ಆನಂದವೇ ಇಷ್ಟಲಿಂಗರೂಪಮಾಗಿ, ಜ್ಞಾನವೇ ಪ್ರಾಣಲಿಂಗಸ್ವರೂಪಮಾಗಿ, ಆ ನಿಜವೇ ಭಾವಲಿಂಗಮೂರ್ತಿಯಾಗಲು, ಆ ಕರ್ಮ ಧರ್ಮ ವರ್ಮಂಗಳಡಗಿದವು. ಆತ್ಮಾದಿ ಷಡ್ಭೂತಂಗಳು ಆಚಾರಾದಿ ಮಹಾಲಿಂಗಂಗಳೊಳಗೆ ಲೀನಮಾಗಲು, ಆ ಆರುಲಿಂಗಂಗಳೇ ಈ ಮೂರುಲಿಂಗಂಗಳೊಳಗೆ ಬೆರೆದು, ಇಷ್ಟವೇ ಪ್ರಾಣಮಾಗಿ, ಭಾವಸಂಗದೊಳಗೆ ಪರವಶಮಾಗಿ, ತಾನುತಾನೆಯಾಗಿ, ತನ್ನಿಂದನ್ಯವೇನೂ ಇಲ್ಲದೆ ನಿಬ್ಬೆರಗಾಯಿತ್ತು ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಶಬ್ದಮಧ್ಯದಲ್ಲಿರ್ಪ ಅರ್ಥವೇ ಜೀವನು, ತಮೋರೂಪಮಾಗಿಹನು. ಜ್ಞಾನಮಧ್ಯದಲ್ಲಿರ್ಪ ಅರ್ಥವೇ ಪರಮನು, ಸತ್ವರೂಪಮಾಗಿಹನು. ಜ್ಞಾನಶರೀರದಲ್ಲಿರ್ಪ ಪರಮಾರ್ಥಭಾವವೆಂಬ ಹಸ್ತದಲ್ಲಿ ಬುದ್ಧಿಯೆಂಬ ತ್ರಿಗುಣಾತ್ಮಕಮಪ್ಪ ಮುನ್ಮೊನೆಯಲಗಂ ಪಿಡಿದು, ಆ ಶಬ್ದಶರೀರಂ ಭೇದಿಸಿ, ತನ್ಮಧ್ಯದಲ್ಲಿರ್ಪ ಅರ್ಥವನ್ನು ಆ ಜ್ಞಾನವು ಗ್ರಹಿಸಿದಲ್ಲಿ, ಜ್ಞಾನಾರ್ಥದೊಳಗೆ ಬೆರೆದು, ಎರಡೂ ಒಂದಾಗಿ, ಆ ಅರ್ಥವೇ ಸತ್ಯವಾಗಿ ಆನಂದಮಯಮಪ್ಪುದು. ಜ್ಞಾನವು ಗ್ರಹಿಸದೇ ಬಿಟ್ಟರೆ ಶಬ್ಧಾರ್ಥವೇ ದುರರ್ಥವಾಗಿ, ಸೃಷ್ಟಿಸ್ಥತಿಸಂಹಾತಂಗಳಲ್ಲಿ ಕೋಟಲೆಗೊಳ್ಳುತ್ತಿರ್ಪುದೇ ಜೀವನು, ಅದೇ ಪರಮನು. ತತ್ಪರಿಗ್ರಹವೇ ಐಕ್ಯಮಾದಲ್ಲಿ ಎರಡೂ ಒಂದೇ ಆಗಿರ್ಪುದೇ ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ನಾದ-ಬಿಂದು-ಕಲಾಸಂಚ ನಿರಂಜನಲಿಂಗವನು ಪರಮಗುರುಮುಖದಿಂದೆ ಸಾದ್ಥಿಸಿ, ಕರಕಂಜದೊಳಗಿರಿಸಿ, ಉರವಣಿ ಬಟ್ಟೆಗಳ ಸವರಿ, ಕಳೆವ ಕರಡವಿಯೊಳೆಸೆವುತ, ಪರಿಪರಿಯಿಂದೆ ಅಣುಮಾತ್ರ ಮೂರು ವಿದ್ಯೆಕೆ ಮರವೆಯ ತಾರದೆ, ಎಡಬಲದ ನಡೆನುಡಿ ಜಾಣರನೊಳಕೊಳ್ಳದೆ ಹಿಡಿತ ಬಿಡಿತಗಳರಿದು, ಜರೆದು ನೂಂಕುತ ಹಿಡಿದುಕೊಂಬುತ ಶರಣು ಶರಣೆಂದು ಬೆರೆದು ಬೆರಗಾಗಿರ್ಪ ಗುರುನಿರಂಜನ ಚನ್ನಬಸವಲಿಂಗದಲ್ಲಿ ಪರಮಮಾಹೇಶ್ವರ.
--------------
ದೇಶಿಕೇಂದ್ರ ಸಂಗನಬಸವಯ್ಯ
ಶಿಲೆ ಭಾವ ಹಿಂಗಿ ಕುರುಹಾಯಿತ್ತು, ಕಾರುಕನ ಕೈಯಲ್ಲಿ, ಪಾಷಾಣ ಭಾವ ಹಿಂಗಿ ಕಳೆಯಾಯಿತ್ತು. ಆಚಾರ್ಯನ ಕೈಯಲ್ಲಿ. ಕಳೆ ನೆಲೆಯಾಯಿತ್ತು, ಪೂಜಿಸುವಾತನ ಚಿತ್ತದಲ್ಲಿ. ಚಿತ್ತ ವಸ್ತುವಿನಲ್ಲಿ ಬೆರೆದು ಕಾಲಾಂತಕ ಬ್ಥೀಮೇಶ್ವರಲಿಂಗವಾಯಿತ್ತು
--------------
ಡಕ್ಕೆಯ ಬೊಮ್ಮಣ್ಣ
ಲಿಂಗಪೂಜೆಯುಳ್ಳನ್ನಕ್ಕ ಲಿಂಗವಿಲ್ಲ. ಲಿಂಗದ ನೆನವು ಉಳ್ಳನ್ನಕ್ಕ ಲಿಂಗವಿಲ್ಲ. ಲಿಂಗವ ಕೂಡಬೇಕು, ಲಿಂಗವನರಿಯಬೇಕೆಂಬನ್ನಕ್ಕ ಲಿಂಗವಿಲ್ಲ. ಲಿಂಗವನರಿಯದಿರ್ದು, ಲಿಂಗವನರಿದು, ಲಿಂಗದಲ್ಲಿ ಬೆರೆದು, ಸುಖಿಯಾದೆನೆಂಬನ್ನಕ್ಕ ಲಿಂಗವಿಲ್ಲ. ನಾ ನನ್ನ ನಿಜವನರಿದು ಪರಿಣಾಮಿಯಾದೆನೆಂಬನ್ನಕ್ಕ ಲಿಂಗವಿಲ್ಲ. ಲಿಂಗೈಕ್ಯನಾದೆನೆಂದು ಪರರ ಮುಂದೆ ಬೀರುವನ್ನಕ್ಕ ಎಂದೆಂದಿಗೂ ಮುನ್ನವೆ ಲಿಂಗವಿಲ್ಲ. ಮತ್ತಂ, ಲಿಂಗವನರಿಯಬೇಕು, ಲಿಂಗವ ಕೊಡಬೇಕು, ಭವಬಂಧವ ಕಡಿಯಬೇಕೆಂದು ದೇಶದೇಶವ ತಿರುಗಿದರಿಲ್ಲ. ಊರಬಿಟ್ಟು ಅರಣ್ಯವ ಸೇರಿದರಿಲ್ಲ, ಹೊನ್ನು ಹೆಣ್ಣು ಮಣ್ಣು ಮೊದಲಾದ ಮನೆಮಾರು ತೊರೆದು ಸನ್ಯಾಸಿಯಾಗಿ ವೈರಾಗ್ಯತೊಟ್ಟು ವನವಾಸಗೈದರಿಲ್ಲ. ಅಶನ ವ್ಯಸನವ ಬಿಟ್ಟು, ಹಸಿವು ತೃಷೆಗಳ ತೊರೆದು, ಪರ್ಣಾಹಾರ ಕಂದಮೂಲ ತಿಂದು, ತನುಮನಧನವನೊಣಗಿಸಿದರಿಲ್ಲ. ಮಾತನಾಡಿದರಿಲ್ಲ, ಮಾತುಬಿಟ್ಟು ಮೌನದಿಂದಿದ್ದರೂ ಇಲ್ಲ. ಕ್ರೀಯ ಬಿಟ್ಟರಿಲ್ಲ, ಕ್ರೀಯ ಮಾಡಿದರಿಲ್ಲ. ಏನು ಮಾಡಿದರೇನು ವ್ಯರ್ಥವಲ್ಲದೆ ಸ್ವಾರ್ಥವಲ್ಲ. ಅದೇನುಕಾರಣವೆಂದರೆ, ತಮ್ಮ ನಿಲವು ತಾವು ಅರಿಯದ ಕಾರಣ. ನಮ್ಮ ಗುಹೇಶ್ವರಲಿಂಗವ ಬೆರೆಸಬೇಕಾದರೆ ಸಕಲಸಂಶಯ ಬಿಟ್ಟು, ಉಪಾದ್ಥಿರಹಿತನಾಗಿ, ಎರಡಳಿದು ಕರಕಮಲದಲ್ಲಿ ಅಡಗಬಲ್ಲರೆ ಪರಶಿವಲಿಂಗದಲ್ಲಿ ಅಚ್ಚಶರಣ ತಾನೇ ಎಂದನಯ್ಯ ನಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಕಾಮದ ಕಳವಳದಲ್ಲಿ ಕಂಗೆಡುವನಲ್ಲ ಶರಣ. ಜೀವನುಪಾದ್ಥಿಕೆಯ ಹೊದ್ದವನಲ್ಲ ಶರಣ. ಭಾವದ ಭ್ರಮೆಯಲ್ಲಿ ಸುಳಿವನಲ್ಲ ಶರಣ. ಮನದ ಮರವೆಯಲ್ಲಿ ಮಗ್ನನಲ್ಲ ಶರಣ. ಕರಣಂಗಳ ಕತ್ತಲೆಯಲ್ಲಿ ಸುತ್ತಿ ಬೀಳುವನಲ್ಲ ಶರಣ. ಇಂದ್ರಿಯಂಗಳ ವಿಕಾರದಲ್ಲಿ ಹರಿದಾಡುವನಲ್ಲ ಶರಣ. ಪರತರಲಿಂಗದ ಬೆಳಗಿನೊಳಗೆ ಬೆರೆದು ತೆರಹಿಲ್ಲದೆ ಬೆಳಗುವ ಪರಮಗಂಬ್ಥೀರ ಶರಣನ ನಿಲವಿಂಗೆ ನಮೋ ನಮೋ ಎಂಬೆನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಹೋಗುತ್ತ ಹೋಗುತ್ತ ಹೊಲಬುದಪ್ಪಿತ್ತು, ತನ್ನ ನೆಲೆಯ ತಿಳಿದಿತ್ತು. ಕತ್ತಲೆಯೊಳಗೆ ನಿಂದು ನೋಡುತ್ತಿರಲು, ನೋಟ ಹಿಂದಾಯಿತ್ತು; ಆಟವಡಗಿತ್ತು; ಮಾಟ ನಿಂದಿತ್ತು; ಬೇಟ ಬೆರಗಾಯಿತ್ತು. ಊಟವನುಂಡು ಕೂಟವ ಕೂಡಿ ಉನ್ಮನಿಯ ಬೆಳಗಿನೊಳಗೆ ಒಂದೆಂದರಿದು, ತನ್ನಂದವ ತಿಳಿದು, ಲಿಂಗದಲ್ಲಿ ಸಂದು, ಜಂಗಮದೊಳು ಬೆರೆದು, ಮಂಗಳದ ಮಹಾಬೆಳಗಿನೊಳಗೆ ಆಡುವ ಶರಣ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ ತಾನೆ ನೋಡಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಶಿವತತ್ವ ಐದು ಅವಾವೆಂದಡೆ; ಶಿವ, ಶಕ್ತಿ, ಸಾದಾಖ್ಯ, ಈಶ್ವರ, ಶುದ್ಧ ವಿದ್ಯೆ- ಇಂತು ಶಿವತತ್ವ ಐದು. ಇನ್ನು ವಿದ್ಯಾತತ್ತ್ವವೆಂತೆಂದಡೆ: ಕಲೆ, ರಾಗ, ನಿಯತಿ, ವಿದ್ಯೆ, ಪುರುಷ, ಪ್ರಕೃತಿ - ಇಂತು ವಿದ್ಯಾತತ್ತ್ವ ಏಳು. ಇನ್ನು ಕರಣಂಗಳೆಂತೆಂದಡೆ: ಚಿತ್ತ, ಬುದ್ಧಿ, ಅಹಂಕಾರ, ಮನ - ಇವು ಕರಣತತ್ತ್ವ ನಾಲ್ಕು. ಇನ್ನು ಇಂದ್ರಿಯಂಗಳೆಂತೆಂದಡೆ: ಶ್ರೋತ್ರ, ತ್ವಕ್ಕು, ನೇತ್ರ, ಜಿಹ್ವೆ, ಘ್ರಾಣ - ಇಂತು ಬುದ್ಧೀಂದ್ರಯಂಗಳು ಐದು. ಇನ್ನು ಕರ್ಮೇಂ್ರಯಂಗಳೆಂತೆಂದಡೆ: ವಾಕ್ಕು, ಪಾದ, ಪಾಣಿ, ಗುಹ್ಯ, ಪಾಯು - ಇಂತು ಕರ್ಮೇಂ್ರಯಂಗಳು ಐದು. ಇನ್ನು ತನ್ಮಾತ್ರಂಗಳೆಂತೆಂದಡೆ: ಶಬ್ದ, ಸ್ಪರ್ಶ, ರೂಪು, ರಸ ಗಂಧ - ಇಂತು ಜ್ಞಾನೇಂದ್ರಿಯ ವಿಷಯ ಐದು. ಇನ್ನು ಕರ್ಮೇಂ್ರಯ ವಿಷಯವೆಂತೆಂದಡೆ: ವಚನ, ಗಮನ, ಆದಾನ, ಆನಂದ, ವಿಸರ್ಜನ ಇಂತು ಕರ್ಮೇಂ್ರಯ ವಿಷಯ ಐದು. ಇನ್ನು ವಾಕ್ಕುಗಳಾವುವೆಂದಡೆ: ಪರಾ, ಪಶ್ಯಂತಿ, ಮಧ್ಯಮೆ, ವೈಖರಿ - ಇಂತು ವಾಕ್ಕು ನಾಲ್ಕು. ಸಾತ್ಪಿ, ರಾಜಸ, ತಾಮಸ - ಇಂತು ಗುಣ ಮೂರು. ರಾಜಸಹಂಕಾರ, ವೈಖರಿಯಹಂಕಾರ, ಭೂತಾಯಹಂಕಾರ -ಇಂತು ಅಹಂಕಾರ ಮೂರು. ಪೃಥ್ವಿ, ಅಪ್ಪು, ಅಗ್ನಿ, ವಾಯು, ಆಕಾಶ - ಇಂತು ಭೂತಂಗಳು ಐದು. ಭೂತಕಾರ್ಯ ಇಪ್ಪತ್ತೈದು - ಅವಾವೆಂದಡೆ: ಅಸ್ಥಿ, ಮಾಂಸ, ತ್ವಕ್, ನಾಡಿ, ರೋಮ - ಈ ಐದು ಪೃಥ್ವೀಪಂಚಕ. ಲಾಲಾ, ಮೂತ್ರ, ಸ್ವೇದ, ಶುಕ್ಲ, ಶೋಣಿಕ - ಈ ಐದು ಅಪ್ಪುವಿನ ಪಂಚಕ. ಕ್ಷುಧೆ, ತೃಷೆ, ನಿದ್ರೆ, ಆಲಸ್ಯ, ಸ್ತ್ರೀಸಂಗ - ಈ ಐದು ಅಗ್ನಿಪಂಚಕ. ಪರಿವ, ಪಾರುವ, ಸುಳಿವ, ನಿಲುವ, ಅಗಲುವ - ಈ ಐದು ವಾಯುಪಂಚಕ. ರಾಗ, ದ್ವೇಷ, ಭಯ, ಲಜ್ಜೆ, ಮೋಹ - ಈ ಐದು ಆಕಾಶವಂಚಕ. ಇಂತೀ ಇಪ್ಪತ್ತೈದು ಭೂತಕಾರ್ಯ ಪಂಚೀಕೃತಗಳು. ಇನ್ನು ದಶವಾಯುಗಳು: ಪ್ರಾಣ, ಅಪಾನ, ವ್ಯಾನ, ಉದಾನ, ಸಮಾನ, ನಾಗ, ಕೂರ್ಮ, ಕೃಕರ, ದೇವದತ್ತ, ಧನಂಜಯ - ಈ ಹತ್ತು ವಾಯುಗಳು, ಇನ್ನು ದಶನಾಡಿಗಳು: ಇಡಾ, ಪಿಂಗಳಾ, ಸುಷುಮ್ನಾ, ಗಾಂಧಾರಿ, ಹಸ್ತಿ, ಜಿಹ್ವೆ, ಪುಷ್ಕರ, ಪಯಸ್ವಿನಿ, ಆಲಂಬು, ಲಕುಹ, ಶಂಕಿನಿ - ಇಂತೀ ಹತ್ತು ನಾಡಿಗಳು. ಇಂತು ತತ್ವ ತೊಂಬತ್ತಾರು ಕೂಡಿಕೊಂಡು ಆತ್ಮನು ಭೂಮಧ್ಯದಲ್ಲಿರ್ದು ಅವಸ್ಥೆಬಡುವುದನು ಹೇಳಿಹೆನು. ಅದೆಂತೆಂದಡೆ ಅವಸ್ಥೆಯ ಕ್ರಮ: ಪ್ರೇರಕಾವಸ್ಥೆ ಒಂದು, ಅಧೋವಸ್ಥೆ ಐದು, ಊಧ್ರ್ವಾವಸ್ಥೆ ಐದು, ಮಧ್ಯಾವಸ್ಥೆ ಐದು, ಕೇವಲಾವಸ್ಥೆ ಒಂದು, ಸಕಲಾವಸ್ಥೆ ಒಂದು, ಶುದ್ಧಾವಸ್ಥೆ ಒಂದು, ನಿರ್ಮಲಾವಸ್ಥೆ ಐದು, ಅಂತೂ ಅವಸ್ಥೆ ಇಪ್ಪತ್ತನಾಲ್ಕು, ಅವರಲ್ಲಿ ಪ್ರೇರಕಾವಸ್ಥೆಯೆಂತೆಂದಡೆ: ತತ್ತ್ವಸಮೂಹಂಗಳನು ಕೂಡಿಕೊಂಡು ಇರ್ದಲ್ಲಿ ಆ ಪುರುಷನು ಪಂಚೇಂ್ರಯಂಗಳಲ್ಲಿ ವಿಷಯಂಗಳು ಅತಿ ಚಮತ್ಕಾರದಲ್ಲಿ ಅರಿವವೇಳೆ ಪ್ರೇರಕಾವಸ್ಥೆಯೆಂದು. ಅದಕ್ಕೆ ಪ್ರೇರಿಸುವ ತತ್ತ್ವಂಗಳಾವುವೆಂದಡೆ- ಶಿವತತ್ತ್ವ ಐದು, ವಿದ್ಯಾತತ್ತ್ವ ಏಳು, ಕರಣಂಗಳು ನಾಲ್ಕು, ಭೂತಂಗಳಲ್ಲಿ ಒಂದು, ಇಂದ್ರಿಯಂಗಳಲ್ಲಿ ಒಂದು -ಇಂತೀ ಹದಿನೆಂಟು ತತ್ವಂಗಳಲ್ಲಿ ವಿಷಯಂಗಳನರಿವನು. ಅದು ಹೇಗೆಂದಡೆ - ಶಿವತತ್ತ್ವ ಐದು, ವಿದ್ಯಾತತ್ತ್ವ ಏಳು, ಕರಣಂಗಳು ನಾಲ್ಕು - ಇಂತು ಹದಿನಾರು ತತ್ತ್ವ. ಆಕಾಶಭೂತವೂ ಶ್ರೋತ್ರೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಶಬ್ದವನದಲ್ಲಿರಿವ; ವಾಯುಭೂತವೂ ತ್ವಗೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಶಬ್ದವನರಿವ; ವಾಯುಭೂತವೂ ತ್ವಗೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಸೋಂಕನರಿವ; ತೇಜಭೂತವೂ ನಯನೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ರೂಪವನರಿವ; ಅಪ್ಪುಭೂತವೂ ಜಿಹ್ವೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ರಸವನರಿವ; ಪೃಥ್ವಿಭೂತವೂ ಪ್ರಾಣೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಗಂಧವನರಿವ. ಇಂತೀ ವಿಷಯಂಗಳನರಿವುದು. ಇದು ಪ್ರೇರಕಾವಸ್ಥೆಯೆಂದೆನಿಸುವದು. ಇನ್ನು ಅಧೋವಸ್ಥೆ ಐದಕ್ಕೆ ವಿವರ: ಪ್ರಥಮದಲ್ಲಿ ಜಾಗ್ರಾವಸ್ಥೆ ಅದಕ್ಕೆ ಪ್ರೇರಿಸುವ ತತ್ತ್ವಂಗಳು ಬಿಟ್ಟಿಹವಾವುವೆಂದಡೆ: ಶಿವತತ್ತ್ವ ಐದು, ಮಾಯಾತತ್ತ್ವ ಒಂದು, ವಿದ್ಯಾತತ್ತ್ವ ಆರು, ಭೂತಂಗಳು ಐದು ಇಂತು ಹದಿನೇಳು ಬಿಟ್ಟಿಹುದು. ಇನ್ನು ಜಾಗ್ರಾವಸ್ಥೆಯಲ್ಲಿಹ ತತ್ತ್ವಗಳೆಷ್ಟೆಂದಡೆ: ಕರಣ ನಾಲ್ಕು, ಬುದ್ಧೀಂದ್ರಿಯ ಐದು, ಕರ್ಮೇಂದ್ರಿಯ ಐದು, ವಿಷಯ ಹತ್ತು, ವಾಯು ಹತ್ತು. ಇಂತು ಮೂವತ್ತನಾಲ್ಕು ತತ್ತ್ವಂಗಳಲ್ಲಿ ಆ ತನು ಕೇಳದೆ ಕೇಳುವ, ಮಾತಾಡದ ಹಾಂಗೆ ಆಲಸ್ಯದಲ್ಲಿ ಮಾತನಾಡುತ್ತಿಹನು, ಇಂತು ಜಾಗ್ರಾವಸ್ಥೆ. ಇನ್ನು ಸ್ವಪ್ನಾವಸ್ಥೆ. ಅದಕ್ಕೆ ಹತ್ತು ತತ್ತ್ವಂಗಳು ಬಿಟ್ಟಿಹವು. ಅವಾವುವೆಂದಡೆ:ಬುದ್ಧೀಂ್ರಯ ಐದು, ಕರ್ಮೇಂದ್ರಿಯ ಐದು. ಲಲಾಟದಲ್ಲಿ ನಿಲುವು ಕಂಠಸ್ಥಾನದಲ್ಲಿ ಇಪ್ಪತ್ತೈದು ತತ್ತ್ವಂಗಳು ಕೂಡಿಕೊಂಡಿಹುದು. ಅದೆಂತೆಂದಡೆ:ಮಾಯೆ ಒಂದು, ವಾಯು ಹತ್ತು, ವಿಷಯ ಹತ್ತು, ಕರಣ ನಾಲ್ಕು ಇಂತು ಇಪ್ಪತ್ತೈದು ತತ್ತ್ವಂಗಳು ಕೂಡಿಕೊಂಡು ಸ್ವಪ್ನಂಗಳ ಕಾಣುತಿಹನು. ಇದು ಸ್ವಪ್ನಾವಸ್ಥೆ. ಇನ್ನು ಸುಷುಪ್ತಾವಸ್ಥೆಗೆ ಬಹಲ್ಲಿ ಕಂಠಸ್ಥಾನದಲ್ಲಿ ನಿಂದ ತತ್ತ್ವಂಗಳಾವಾವವೆಂದಡೆ- ಮಾಯೆ ಒಂದು, ವಾಯು ಒಂಬತ್ತು ವಿಷಯ ಹತ್ತು, ಕರಣ ಮೂರು- ಇಂತು ಇಪ್ಪತ್ತಮೂರು ತತ್ತ್ವ. ಇನ್ನು ಹೃದಯಸ್ಥಾನದಲ್ಲಿ ಕೂಡಿಹ ತತ್ತ್ವ ಆವಾವೆಂದಡೆ: ಪ್ರಾಣವಾಯು ಒಂದು, ಪ್ರಕೃತಿ ಒಂದು, ಚಿತ್ತ ಒಂದು -ಇಂತು ಸುಷುಪ್ತಾವಸ್ಥೆಯಲ್ಲಿ ತತ್ತ್ವ. ಇನ್ನು ತೂರ್ಯಾವಸ್ಥೆಗೆ ಬಹಾಗ ಹೃದಯದಲ್ಲಿ ನಿಂದ ತತ್ತ್ವ ಚಿತ್ತ ಒಂದು. ನಾಬ್ಥಿಸ್ಥಾನದಲ್ಲಿ ತೂರ್ಯಾವಸ್ಥೆಯಲ್ಲಿಹ ತತ್ತ್ವ ಪ್ರಾಣವಾಯು ಒಂದು, ಪ್ರಕೃತಿ ಒಂದು. ಅತೀತಾವಸ್ಥೆಗೆ ಹೋಹಾಗ ನಾಬ್ಥಿಸ್ಥಾನದಲ್ಲಿ ತೂರ್ಯಾವಸ್ಥೆಯಲ್ಲಿ ಪ್ರಾಣವಾಯುವುಳಿದು ಅತೀತಾವಸ್ಥೆಯಲ್ಲಿ ಪ್ರಕೃತಿಗೂಡಿ ಮೂಲಾಧಾರದಲ್ಲಿ ಆಣವಮಲಯುಕ್ತವಾಗಿ ಏನೆಂದರಿಯದೆ ಇಹುದು, ಇಂತಿದು ಅಧೋವಸ್ಥೆ. ಇನ್ನು ಊಧ್ರ್ವಾವಸ್ಥೆ, ಅತೀತದಲ್ಲಿ ಪ್ರಕೃತಿಕಾರ್ಯಂಗಳೆಲ್ಲವನೂ ಬಿಟ್ಟು, ತತ್ತ್ವಂಗಳೊಂದೂ ಇಲ್ಲದೆ, ಅಣವಮಲಸ್ವರೂಪವಾಗಿ ಮೂಲಾಧಾರದಲ್ಲಿ ಬ್ದಿರ್ದ ಆತ್ಮನಿಗೆ ಪರಮೇಶ್ವರನ ಕರುಣದಿಂದ ಕ್ರಿಯಾಶಕ್ತಿ, ಶಕ್ತಿತತ್ತ್ವಮಂ ಪ್ರೇರಿಸುವುದು. ಆ ಶಕ್ತಿ ಕಲೆ, ಕಾಲ, ನಿಯತಿಗಳಂ ಪ್ರೇರಿಸುವುದು. ಆ ವೇಳೆಯಲ್ಲಿ ಸೂಕ್ಷೆ ್ಮಯೆಂಬ ವಾಕ್ಕು ಕೂಡುವುದು. ಇಂತು ಅತೀತದಲ್ಲಿ ಅರುಹಿಸುವ ತತ್ತ್ವಂಗಳು: ಶಕ್ತಿತತ್ತ್ವ, ಕಲೆ, ಕಾಲ, ನಿಯತಿ, ಸೂಕ್ಷೆ ್ಮ ಇಂತು ತತ್ತ್ವಂಗಳು ಐದು. ಇನ್ನು ತೂರ್ಯಾವಸ್ಥೆಗೆ ಬಹಾಗ ಹಿಂದೆ ಹೇಳಿದ ತತ್ತ್ವ ಐದು, ಪಶ್ಯಂತಿಯೆಂಬ ವಾಕ್ಕು, ಪ್ರಾಣವಾಯು ಕೂಡಿ ತತ್ತ್ವ ಏಳು ತೂರ್ಯಾವಸ್ಥೆಯಲ್ಲಿ ಪ್ರೇರಿಸುವುದು: ಹಿಂದೆ ಹೇಳಿದ ತತ್ತ್ವ ಏಳು ಕೂಡಿ, ಹೃದಯಸ್ಥಾನದಲ್ಲಿ ಮಧ್ಯಮೆ, ಚಿತ್ತ - ಎರಡು ಕೂಡುತ್ತಿಹವು. ಆ ವೇಳೆಯಲ್ಲಿ ಜ್ಞಾನಶಕ್ತಿ ಶುದ್ಧವಿದ್ಯಾತತ್ತ್ವಮಂ ಪ್ರೇರಿಸುವುದು. ಆ ಶುದ್ಧವಿದ್ಯಾತತ್ತ್ವ ಆತ್ಮಂಗೆ ಅರಿವನೆಬ್ಬಿಸುವುದು. ಇಚ್ಛಾಶಕ್ತಿ ಈಶ್ವರತತ್ತ್ವಮಂ ಪ್ರೇರಿಸುವುದು; ಈಶ್ವರತತ್ತ್ವ ರಾಗತತ್ತ್ವಮಂ ಪ್ರೇರಿಸುವುದು; ರಾಗತತ್ತ್ವ ಆತ್ಮಂಗೆ ಇಚ್ಛೆಯನೆಬ್ಬಿಸುವುದು. ಆಶಕ್ತಿ ಸಾದಾಖ್ಯತತ್ತ್ವಮಂ ಪ್ರೇರಿಸುವುದು; ಸಾದಾಖ್ಯತತ್ತ್ವ ಪ್ರಕ್ಕೃತಿತ್ತ್ವಮಂ ಪ್ರೇರಿಸುವುದು; ಪರಾಶಕ್ತಿ ಶಿವತತ್ತ್ವಮಂ ಪ್ರೇರಿಸುವುದು; ಶಿವತತ್ತ್ವ ಗುಣತತ್ತ್ವಮಂ ಪ್ರೇರಿಸುವುದು. ಇಂತು ಹದಿನೆಂಟು ತತ್ತ್ವ ಆವಾವವೆಂದಡೆ: ಪಂಚಶಕ್ತಿ ಹೊರಗಾಗಿ ಶಿವತತ್ತ್ವ ಐದು, ವಿದ್ಯಾತತ್ತ್ವ ಐದು, ಪ್ರಾಣವಾಯು ಒಂದು, ಪ್ರಕೃತಿ ಒಂದು, ಗುಣ ಮೂರು, ಚಿತ್ತ ಒಂದು, ಪುರುಷ ಒಂದು. ಇಂತು ತತ್ತ್ವ ಹದಿನೇಳು ಸುಷುಪ್ತಾವಸ್ಥೆಯಲ್ಲಿ ಅರುಹಿಸುವುವು. ಇನ್ನು ಸ್ವಪ್ನಾವಸ್ಥೆಯ ಕಂಠದಲ್ಲಿಹ ತತ್ತ್ವ: ಜ್ಞಾನೇಂದ್ರಿಯ ವಿಷಯ ಹತ್ತು, ಕರ್ಮೇಂದ್ರಿಯ ವಿಷಯ ಹತ್ತು, ಪ್ರಾಣವಾಯು ಉಳಿಯೆ, ವಾಯುಚಿತ್ತ ಉಳಿಯೆ, ತ್ರಿಕರಣ ಅಹಂಕಾರ ಮೂರು, ವೈಖರಿಯ ವಾಕ್ಕು ಒಂದು ಇಂತು ಇಪ್ಪತ್ತನಾಲ್ಕು ತತ್ತ್ವ. ಸುಷುಪ್ತಾವಸ್ಥೆಯಲ್ಲಿ ಹಿಂದೆ ಹೇಳಿದ ತತ್ತ್ವ ಹದಿನೇಳು ಕೂಡಿ ತತ್ತ್ವ ನಲವತ್ತೊಂದು ಸ್ವಪ್ನಾವಸ್ಥೆಯಲ್ಲಿ ಕೂಡಿಹವು. ಆಗ ತನ್ನೊಳಗೆ ಅರುಹಿಸುವ ಪ್ರಕಾರವೆಂತೆಂದಡೆ: ಚಿತ್ತ, ಬುದ್ಧಿ, ಅಹಂಕಾರ, ಮನ, ಹೃದಯ ಈ ಐದು. ಚಿತ್ತವನು ಆಕಾರ ಪ್ರೇರಿಸುವುದು. ಆ ಅಕಾರವನು ಬ್ರಹ್ಮ ಪ್ರೇರಿಸುವನು, ಬುದ್ಧಿಯನು ಉಕಾರ ಪ್ರೇರಿಸುವುದು; ಉಕಾರವನು ವಿಷ್ಣು ಪ್ರೇರಿಸುವನು, ಅಹಂಕಾರವನು ಮಕಾರ ಪ್ರೇರಿಸುವುದು; ಮಕಾರವನು ರುದ್ರ ಪ್ರೇರಿಸುವನು, ಮನವನು ಬಿಂದು ಪ್ರೇರಿಸುವುದು; ಬಿಂದುವನು ಈಶ್ವರ ಪ್ರೇರಿಸುವನು; ಹೃದಯವನು ನಾದ ಪ್ರೇರಿಸುವುದು; ನಾದವನು ಸದಾಶಿವ ಪ್ರೇರಿಸುವನು. ಈ ಹದಿನೈದು ತನ್ನೊಳಗೆ ಸೂಕ್ಷ ್ಮಶರೀರದಲ್ಲಿಹುದು. ...........ಗೀ(?) ಅಷ್ಟತನುವಿನಿಂದ ಸ್ವರ್ಗನರಕವನರಿವನು. ಮುಂದೆ ಜಾಗ್ರಾವಸ್ಥೆಯಲ್ಲಿ ಅರುಹಿಸುವ ತತ್ತ್ವ ಅವಾವವೆಂದಡೆ- ಭೂತ ಐದು, ಉಭಯೇಂದ್ರಿಯ ಹತ್ತು, ಭೂತಕಾರ್ಯ ಇಪ್ಪತ್ತೈದು, ನಾಡಿ ಹತ್ತು, ಅಂತು ತತ್ತ್ವ ನಲವತ್ತೊಂದು. ಅಂತು ಕೂಡಿ ತತ್ತ್ವ ತೊಂಬತ್ತೊಂದು. ಇಂತಿದು ಊಧ್ರ್ವಾವಸ್ಥೆ. ಇನ್ನು ಸಕಲಾವಸ್ಥೆಯೆಂತೆಂದಡೆ: ತೊಂಬತ್ತೊಂದು ತತ್ತ್ವ ಅವರಲ್ಲಿ ಪ್ರೇರಕತತ್ವವೊಂದು ಪ್ರೇರಿಸುವಲ್ಲಿ ಸಕಲಾವಸ್ಥೆ. ಅದು ಶಿವನನೂ ತನ್ನನೂ ಪಾಶಪಂಚಕವನು ಅರಿಯದೆ ಎಲ್ಲ ವಿಷಯಂಗಳನು ಅರಿವುತ್ತಿಹುದು. ಇನ್ನು ಮಧ್ಯಮಾವಸ್ಥೆಯೆಂತೆಂದಡೆ- ಹಿಂದೆ ಕಂಡವನ ಈಗಲೆಂದು ಅರಿಯಹುದೀಗ ಜಾಗ್ರ ಅತೀತ. ಹಿಂದೆ ಕಂಡವನ ಅರಿದ ಹಾಂಗಿಹುದೀಗ ಜಾಗ್ರ ತುರೀಯ. ಹಿಂದೆ ಕಂಡವನ ಮೆಲ್ಲನೆಚ್ಚತ್ತು ಅರಿವುದು ಜಾಗ್ರದ ಸುಷುಪ್ತಿ. ಹಿಂದೆ ಕಂಡವನ ಕಂಡಾಗಲೆ ಅರಿವುದು ಜಾಗ್ರದ ಸ್ವಪ್ನ. ಹಿಂದೆ ಕಂಡವನ ಹೆಸರು, ಇದ್ದ ಸ್ಥಲ, ಅವನ ಕಾಯಕ ಮುಂತಾಗಿ ಚೆನ್ನಾಗಿ ಅರಿವುದು ಜಾಗ್ರದ ಜಾಗ್ರ. ಅದೆಂತೆಂದಡೆ, ಜಾಗ್ರದಲ್ಲಿ ಪುರುಷತತ್ತ್ವದಲ್ಲಿ ಎಲ್ಲ ತತ್ತ್ವಗಳು ಕೂಡಿದ ಕಾರಣಂದ ತಾನೇನ ನೆನೆದಿದ್ದುದನು ಮರೆವುದು ಜಾಗ್ರ ಅತೀತ. ಆ ಪುರುಷತತ್ತ್ವದಲ್ಲಿ ಪ್ರಾಣವಾಯು ಕೂಡಲು ನೆನೆದುದನು ಹೇಳಿಹೆನೆಂದಡೆ ತೋರುವ ಹಾಂಗೆ ಇಹುದು ತೋರದಿಹುದು ಜಾಗ್ರದ ತುರೀಯ. ಆ ಪುರುಷತತ್ತ್ವದಲ್ಲಿ ಪ್ರಾಣವಾಯು ಚಿತ್ತವು ಕೂಡಲು ನೆನೆದುದನು ಮೆಲ್ಲನೆಚ್ಚತ್ತು ಅರಿದು ಹೇಳುವುದು ಜಾಗ್ರದ ಸುಷುಪ್ತಿ, ಆ ಪುರುಷತತ್ತ್ವದಲ್ಲಿ ಕರಣ ನಾಲ್ಕು, ಇಂದ್ರಿಯ ಹತ್ತು, ವಾಯು ಹತ್ತು, ವಿಷಯ ಹತ್ತು ಅಂತೂ ತತ್ತ್ವ ಮೂವತ್ತನಾಲ್ಕು ಕೂಡಲಾಗಿ, ತಾ ನೆನೆದುದನು ಇದ್ದುದನು ಚೆನ್ನಾಗಿ ಅರಿದು ವಿವರದಿಂದ ಹೇಳುವುದು ಇದು ಜಾಗ್ರದ ಜಾಗ್ರ. ಇಂತಿದು ಮಾಧ್ಯಮಾವಸ್ಥೆ. ಇನ್ನು ಕೇವಲಾವಸ್ಥೆಯೆಂತೆಂದಡೆ: ಶುದ್ಧತತ್ತ್ವ ವಿದ್ಯಾತತ್ತ್ವವನೆಲ್ಲವ ಬಿಟ್ಟು ಆಣವಮಲದಲ್ಲಿ ಆಣವಸ್ವರೂಪಾಗಿ ಕಣ್ಗತ್ತಲೆಯಲ್ಲಿ ಏನೂ ಕಾಣದ ಕಣ್ಣಿನ ಹಾಂಗೆ ಇದ್ದುದೀಗ ಕೇವಲಾವಸ್ಥೆ. ಇನ್ನು ಶುದ್ಧಾವಸ್ಥೆಯೆಂತೆಂದಡೆ: ಕರ್ಮಸಮಾನದಲ್ಲಿ ಶಕ್ತಿಪಾತವಾಗಿ,ತ್ರಿಪದಾರ್ಥಜ್ಞಾನವಾಗಿ, ದಿಟವೆಂಬಂತೆ ತೋರುತ್ತಿಹ ದೇಹಾಪ್ರಪಂಚುವನು ಸಟೆಯೆಂದು ಕಸವ ಕಳೆವ ಹಾಂಗೆ ಕಳೆದು, ತತ್ತ್ವಂಗಳೊಳಗೆ ಇದ್ದು ತತ್ತ್ವಂಗಳಿಗೆ ಅನ್ಯವಾಗಿ, ಆ ತತ್ತ್ವಂಗಳನು ಅರಿದ ಸಕಲಾವಸ್ಥೆಯೆಂಬ ಕೇವಲಾವಸ್ಥೆಯೆಂಬ ಈ ಎರಡು ಅವಸ್ಥೆಗಳೂ ತನ್ನನು ಶಿವನನು ಅರಿವುದಕ್ಕೆ ಪ್ರಯೋಜನವಲ್ಲವೆಂದು ಎರಡವಸ್ಥೆಯನೂ ಬಿಟ್ಟು ಸಕಲವನೂ ಹೊದ್ದದೆ ಕೇವಲವನೂ ಹೊದ್ದದೆ ತ್ರಾಸಿನ ಮುಳ್ಳು ನಿಂದ ಹಾಂಗೆ ನಿಂದುದು ಶುದ್ಧಾವಸ್ಥೆ. ಇದು ಶಿವನ ಶರಣರಿಗಲ್ಲದೆ ಇಲ್ಲ. ಇನ್ನು ನಿರ್ಮಲಾವಸ್ಥೆ ಎಂತೆಂದಡೆ- ಶಿವಜ್ಞಾನದಲ್ಲಿ ಬೋಧವನಳಿದು ಜ್ಞೇಯದೊಳು ಕೂಡಿಹ ಜೀವನ್ಮುಕ್ತರಿಗೆ ಪಂಚಾವಸ್ಥೆಗಳು. ಆ ಅವಸ್ಥೆಗಳಲ್ಲಿ ತತ್ತ್ವಗಳಾವಾವೆಂದಡೆ: ಶಿವತತ್ತ್ವ, ಶಕ್ತಿತತ್ತ್ವ, ಸಾದಾಖ್ಯತತ್ತ್ವ, ಈಶ್ವರತತ್ತ್ವ, ಶುದ್ಧ ವಿದ್ಯಾತತ್ತ್ವ ಈ ಐದು ಮೊದಲಾಗಿ ಪರಾ, ಆದಿ, ಇಚ್ಛೆ, ಜ್ಞಾನ, ಕ್ರಿಯೆಯೆಂಬ ಶಕ್ತಿ ಪಂಚಕಗಳು ಉಸುರಾಗಿ ಜಾಗ್ರಾವಸ್ಥೆಯಲ್ಲಿ ಅರಿವುತ್ತಿಹನು. ಕ್ರಿಯಾಶಕ್ತಿ ಶಕ್ತಿತತ್ತ್ವಮಂ ಬಿಟ್ಟು ಉಳಿದ ಶಕ್ತಿ ನಾಲ್ಕು ಒಡಲುಸುರಾಗಿ ಅರಿಯೆ ಸ್ವಪ್ನಾವಸ್ಥೆ. ಜ್ಞಾನಶಕ್ತಿ ಶುದ್ಧವಿದ್ಯಾತತ್ತ್ವಮಂ ಬಿಟ್ಟು ಕಳೆದು ಉಳಿದ ಶಕ್ತಿ ಮೂರರಲ್ಲಿ ಅರಿಯೆ ಸುಷುಪ್ತಾವಸ್ಥೆ. ಇಚ್ಛಾಶಕ್ತಿ ಈಶ್ವರತತ್ತ್ವಮಂ ಬಿಟ್ಟು ಕಳೆದು ಉಳಿದ ಶಕ್ತಿ ಎರಡರಲ್ಲಿ ಅರಿವುದು ತೂರ್ಯಾವಸ್ಥೆ. ಆಶಕ್ತಿ ಸಾದಾಖ್ಯತತ್ತ್ವವೂ ಬಿಟ್ಟು ಕಳೆದು ಉಳಿದ ಪರಾಶಕ್ತಿ ಒಂದು ಶಿವತತ್ತ್ವ ಒಂದರಲ್ಲಿ ಅರಿಯೆ ನಿರ್ಮಲದ ಅತೀತಾವಸ್ಥೆ. ಇನ್ನು ಈ ಶಕ್ತಿ ಶಿವತತ್ತ್ವಂಗಳೆ ಒಡಲುಸುರಾಗಿ ಇದ್ದಲ್ಲಿ ಶಿವನಲ್ಲದೆ ಮತ್ತೊಂದು ಏನೂ ತೋರದು. ಅಂಥ ಜೀವನ್ಮುಕ್ತರು ನಿರ್ಮಲಜಾಗ್ರದಲ್ಲಿ ಎಂತು ಅರಿವುತ್ತಿಪ್ಪರೆಂದಡೆ ಆ ಪರಮಾವಸ್ಥೆಯನೂ ಅನುಭವದಲ್ಲಿ ಅರಿವುದು, ಮಲಪಂಚಕಗಳನು ಅರುಹಿಸುವ ಸದಮಲ ಶಿವಜ್ಞಾನ ಪರೆ ಮೊದಲಾದ ಪೂರ್ಣ ಬೋಧದಲ್ಲಿ ಕೂಡಿ ತಾನು ಇಲ್ಲದಿರುವಂಧು ಏನೂ ತೋರದ ಪೂರ್ಣ ಬೋಧವಾಗಿ ನಿಂದುದು ನಿರ್ಮಲಜಾಗ್ರ. ಇನ್ನು ಪರಾಶಕ್ತಿಯನೂ ಶಿವತತ್ತ್ವವನೂ ಮೀರಿ, ಪರದಲಿ ಬೆರೆದು, ಅದ್ವೆ ೈತವೂ ಅಲ್ಲದೆ, ದ್ವೆ ೈತವೂ ಅಲ್ಲದೆ, ದ್ವೆ ೈತಾದ್ವೆ ೈತವೂ ಅಲ್ಲದೆ ಇನತೇಜದಲ್ಲಿ ಕಣ್ಣು ತೇಜ ಕೂಡಿದ ಹಾಂಗೆ ಆಣವದ ಅಣುವಿನ ಹಾಂಗೆ ತಾನು ಇಲ್ಲದೆ ಇಹನು. ಇದು ಶಿವಾದ್ವೆ ೈತ. ಇಂತಲ್ಲದೆ ಆತ್ಮ ಆತ್ಮ ಕೆಟ್ಟಡೆ, ಆತ್ಮವರ್ಗ ಮುಕ್ತಿಸುಖವಿಲ್ಲ, ಅಳಿದ ಠಾವಿನಲ್ಲಿ ಹುಟ್ಟುವುದಾಗಿ, ಶಿವ ತಾನೆ ಆತ್ಮನಾಗಿ ಹುಟ್ಟುವನಹುದು: ಶಿವನಲ್ಲಿ ಹುಟ್ಟಿ ಮಲ ಉಳ್ಳದಹುಲ್ಲ. ಶಿವ ತಾನೆ ಹುಟ್ಟಿಸಿ ನರಕ - ಸ್ವರ್ಗದ ಮಾನವನಹನು, ಪಕ್ಷಪ್ಕಾಯಹನು, ನಿಃಕರುಣಿಯಹನು, ವಿಕಾರಿಯಹನು. ಶಿವನ್ಲ ಕೂಡದೆ ಬೇರಾಗಿ ಇಹನೆಂದಡೆ, ಮುಕ್ತಿಯೆಂಬ ಮಾತು ಇಲ್ಲವಹುದು. ಪಂಚಕೃತ್ಯವ ಮಾಡಲು ಕಾರಣವಿಲ್ಲ ಒಂದಾಗೆ! ಎರಡಾಗದೆ ಭೇದಾಭೇದವಾಗಿಹನೆಂದಡೆ ಶಿವಭಕ್ತಿಯನೂ ಶಿವಕ್ರಿಯೆಗಳನೂ ಮಾಡಿ ಶಿವನ ಕೂಡಿಹನೆಂದೆನ್ನಬೇಡ! ಮುನ್ನವೆ ಒಂದಾಗಿ ಇದ್ದನಾಗಿ, ಈ ಭೇದವ ತಿಳಿಯಬಲ್ಲಡೆ ಆತನೆ ಶರಣ ಕಾಣಾ, ಕಪಿಲಸಿದ್ಧಮಲ್ಲಿಕಾರ್ಜುನಾ
--------------
ಸಿದ್ಧರಾಮೇಶ್ವರ
ಸತ್ಯವೇ ಪರಮನು, ಜ್ಞಾನನವೇ ಜೀವನು, ಆನಂದವೇ ಶರೀರವು. ಅದೆಂತೆಂದೊಡೆ: ಶರೀರಾದಿ ಸಕಲಪ್ರಪಂಚಕ್ಕೂ ಜ್ಞಾನವೇ ಮೂಲವಾಗಿರ್ಪುದು. ಆನಂದಮುಖದೊಳ್ ಬಿಂದು ಜನಿಸಿ, ಆ ಬಿಂದುವೇ ಪೃಥ್ವೀರೂಪದಲ್ಲಿ ಘನೀಭವಿಸಿ, ಪಿಂಡಾಕಾರಮಾಗಿ ಶರೀರಮಪ್ಪಂತೆ, ಜ್ಞಾನಮುಖದಲ್ಲಿ ವಾಯುವು ಜನಿಸಿ, ತೇಜೋರೂಪದಲ್ಲಿ ಘನೀಭವಿಸಿ, ಜೀವನಾರ್ಪುದು. ನಿಜದಲ್ಲಾತ್ಮನು ಜನಿಸಿ, ಆಕಾಶರೂಪದಲ್ಲಿ ಘನೀಭವಿಸಿ ಪರಮನಾಗಿರ್ಪನು. ಆನಂದಬಿಂದುಮುಖದಿಂದ ಅಹಂಕಾರವು ಜನಿಸಿ, ಜ್ಞಾನವಾಯುಗಳ ಸಂಗದಿಂ ಮನವು ಪುಟ್ಟಿತ್ತು. ನಿಜಾತ್ಮಗಳ ಸಂಗದಿಂ ಭಾವವು ಹುಟ್ಟಿತ್ತು. ತತ್ಸಾಧ್ಯಕ್ಕವೇ ಸಾಧನಗಳಾಗಿರ್ಪುದರಿಂ ಇವೇ ಕರಣಂಗಳಾಗಿ, ಅವೇ ಕರಣಂಗಳಾಗಿರ್ಪವು. ಪೃಥ್ವವೀಬೀಜಗಳಸಂಗದಿಂದ ಬೀಜಮಧ್ಯದಲ್ಲಿ ವೃಕ್ಷವು ಜನಿಸಿತ್ತು. ವೃಕ್ಷವು ಬಲಿದಲ್ಲಿ ಬೀಜವು ನಷ್ಟಮಾಗಿ, ತದಗ್ರದಲ್ಲಿರ್ಪ ಫಲಮಧ್ಯದಲ್ಲಿ ಅನೇಕಮುಖಮಾಗಿ ತೋರುತ್ತರ್ಪಂತೆ, ಜ್ಞಾನವಾಯುಗಳಸಂಗದಿಂ ಜ್ಞಾನಮಧ್ಯದಲ್ಲಿ ಮನಸ್ಸು ಹುಟ್ಟಿ, ಅದು ಬಲಿದಲ್ಲಿ. ಆ ಮೂಲಜ್ಞಾನವಳಿದು, ತತ್ಫಲರೂಪಮಾದ ಇಂದ್ರಿಯಮಧ್ಯದಲ್ಲಿ ತೋರುತ್ತಿರ್ಪುದು. ಜಲವು ಆ ಬೀಜವಂ ಭೇದಿಸಿ, ತನ್ಮಧ್ಯದಲ್ಲಿ ವೃಕ್ಷವಂ ನಿರ್ಮಿಸುವಂತೆ, ಮನಸ್ಸೇ ಜಾಗ್ರತ್ಸ್ವರೂಪದಲ್ಲಿ ಜ್ಞಾನಬ್ಥಿನ್ನವಂ ಮಾಡಿ, ತನ್ಮಧ್ಯದಲ್ಲಾನಂದವಂ ನಿರ್ಮಿಸುತ್ತಿರ್ಪುದು. ಆನಂದವೂ ನಿರಾಕಾರವೂ ಬಿಂದುವು ಸಾಕಾರವೂ ಆದುದರಿಂದ ಆನಂದವಂ ಬಿಂದುವು ಬಂದ್ಥಿಸಿರ್ಪಂತೆ, ವಾಯುವು ಜ್ಞಾನವಂ ಬಂದ್ಥಿಸಿರ್ಪುದು. ಆನಂದವು ಜ್ಞಾನದೊಳ್ಬೆರೆದಲ್ಲಿ ಶರೀರವು ಜೀವನಳೈಕ್ಯಮಾಯಿತ್ತು. ಆ ಜ್ಞಾನವು ನಿಜದೊಳ್ಬೆರೆದಲ್ಲಿಜೀವನು ಪರಮನೊಳೈಕ್ಯಮಾಯಿತ್ತು. ನಿಜಾನಂದ ಶಿವಶಕ್ತಿಗಳೇಕಮಾದಲ್ಲಿ ಜ್ಞಾನವದೊರಲಗೆ ಬೆರೆದು, ಭೇದವಡಗಿ ಅವರೆಡರ ಸಂಯೋಗ ವಿಯೋಗಕ್ಕೆ ತಾನೇ ಕಾರಣಮಾಗಿ, ನಿಜಾನಂದವೇ ತೋರುತ್ತಾ, ತಾನೊಪ್ಪುತ್ತಿರ್ಪುದೇ ಲಿಂಗೈಕ್ಯ ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ನವಭಕ್ತಿರಸವಕೊಂಡು ಶಿವಪ್ರಸಾದವನಿತ್ತ ಬಳಿಕ ಆ ಪ್ರಸಾದವನೊಂದೆರಡು ಮೂರಾರು ಮತ್ತೆ ಮುಖಮುಖವರಿದು ವೇದ್ಥಿಸಿದಲ್ಲಿ ಕಿರಿಕುಳವಲ್ಲುಂಟೆ ? ಬರಿಕುಳವಿಲ್ಲುಂಟೆ ? ಕುಳಂಗಳ ನಿಲಿಸಿ ಕೂರ್ಪರೊಳು ಬೆರೆದು ಕೂಡಬಾರದು. ಅದು ಕಾರಣ ಸೂತ್ರದ ಸುಳುಹು ಕಳಚಲಾಗದು ಕನಸಿನಲ್ಲಿ. ಕಾರಣಮೂರ್ತಿಯ ಕಲ್ಪಿತಕ್ಕೆ ಇದೇ ಕುರುಹು ಗುರುನಿರಂಜನ ಚನ್ನಬಸವಲಿಂಗದಲ್ಲಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ನೋಡುವೆನೆಂದಡೆ ನೋಟವಿಲ್ಲ; ಕೇಳುವೆನೆಂದಡೆ ಕಿವಿಯಿಲ್ಲ; ವಾಸಿಸುವೆನೆಂದಡೆ ನಾಸಿಕವಿಲ್ಲ; ನುಡಿವೆನೆಂದಡೆ ಬಾಯಿಯಿಲ್ಲ; ಹಿಡಿವೆನೆಂದಡೆ ಹಸ್ತವಿಲ್ಲ; ನಡೆವೆನೆಂದಡೆ ಕಾಲಿಲ್ಲ; ನೆನೆವೆನೆಂದಡೆ ಮನವಿಲ್ಲ. ಇಂತು ನೆನೆಹು ನಿಷ್ಪತ್ತಿಯಾಗಿ, ಶರಣರ ಪಾದದಲ್ಲಿಯೆ ಬೆರೆದು ಸುಖಿಯಾದೆನಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಅಟ್ಟುದನು ಅಡಲುಂಟೆ? ಸುಟ್ಟುದ ಸುಡಲುಂಟೇ ಅಯ್ಯ? ಬೆಂದ ಮಡಕೆ ಮರಳಿ ಧರೆಯ ಕೂಡಬಲ್ಲುದೇ ಅಯ್ಯ? ಕರ್ಪೂರವ ಅಗ್ನಿ ನುಂಗಿದ ಬಳಿಕ ಕರಿಯುಂಟೇ ಅಯ್ಯ? ಶರಣನ ಲಿಂಗ ನುಂಗಿ, ಲಿಂಗವ ಶರಣ ನುಂಗಿ, ನದಿಯೊಳಗೆ ನದಿ ಬೆರೆಸಿದಂತೆ ಬೆರೆದು, ಶುದ್ಧ ನಿರ್ಮಲನಾದ ಲಿಂಗೈಕ್ಯಂಗೆ, ಭಿನ್ನಾಭಿನ್ನವ ಕಲ್ಪಿಸುವ ಅಜ್ಞಾನಿಗಳ ಎನಗೊಮ್ಮೆ ತೋರದಿರಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಇನ್ನಷ್ಟು ... -->