ಮನದಲ್ಲಿ ಮಹವನರಿದು ಮನ ನಿರ್ದೇಶವಾಗಿ
ದೇಶಾಂತರಿಯಾಗದೆ, ಮನ ವಿಕಳವಾಗಿ ಹೊರಹೊಂಟುದು
ವೇಷಾಂತರವಯ್ಯಾ.
ಕಂಡವರ ಕಾಡಿ, ನಿಂದವರ ಬೇಡಿ,
[ಜಾತಿ ಎನ್ನದೆ] ಅಜಾತಿ ಎನ್ನದೆ,
ಆಚಾರವೆನ್ನದೆ, ಅನಾಚಾರವೆನ್ನದೆ, ತಿರಿದುಂಡು
ವೇಷಡಂಭಕತ್ವದಿಂ ಲಾಂಛನವ ಹೊತ್ತು ಕಂಡಲ್ಲಿ ಲಜ್ಜೆಗೆಡುವುದು
ತನ್ನ ಮುನ್ನಿನ ದುಷ್ಕೃತ ಪೂರ್ವಕರ್ಮದ ಫಲವಯ್ಯ.
ಮತ್ತೆಂತೆಂದಡೆ :
ಮನ ನಿರ್ವಾಣವಾಗಿ ವಿವೇಕಜ್ಞಾನಪರಮಾರ್ಥದಲ್ಲಿ ಪರಿಣಾಮಿಯಾಗಿ
ಸುಳಿದು ಸೂತಕಿಯಲ್ಲದೆ, ನಿಂದು ಬದ್ಧನಲ್ಲದೆ,
ಸುಜ್ಞಾನದಲ್ಲಿ ಸುಳಿದು, ನಿರ್ಮಲದಲ್ಲಿ ನಿಂದವರು
ಅವರು ಪರದೇಶಾಂತರಿಗಳು, ಅವರು ನಿಜನಿವಾಸಿಗಳು,
ಅವರುಗಳಿಗೆ ನಮೋ ಎಂಬೆ,
ಉರಿಲಿಂಗಿಪೆದ್ದಿಪ್ರಿಯ ವಿಶ್ವೇಶ್ವರ.