ಅಥವಾ

ಒಟ್ಟು 13 ಕಡೆಗಳಲ್ಲಿ , 6 ವಚನಕಾರರು , 9 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆದಿ ಅನಾದಿ ಇಲ್ಲದಂದು, ಸ್ಥಿತಿಗತಿ ಉತ್ಪನ್ನವಾಗದಂದು ಭಕ್ತಿಯನುಭಾವಿಯ ಬಸುರೊಳಗೆ ಸತ್ಯಜ್ಞಾನವೆಂಬ ಶಾಸ್ತ್ರಂಗಳು ಹುಟ್ಟಿದವು. ಆ ಶಾಸ್ತ್ರದೊಳಡಗಿದವು ವೇದಪುರಾಣಾಗಮಂಗಳು. ಆ ಆಗಮಂಗಳೊಳಡಗಿದವು ಐವತ್ತೆರಡಕ್ಷರಂಗಳು ಆ ಅಕ್ಷರಂಗಳೊಳಡಗಿದವು ಇಪ್ಪತ್ತೇಳು ನಕ್ಷತ್ರಂಗಳು. ಆ ಇಪ್ಪತ್ತೇಳು ನಕ್ಷತ್ರಂಗಳೊಳಡಗಿದವು ಈರೇಳು ಲೋಕದ ಗಳಿಗೆ ಜಾವ ದಿನ ಮಾಸ ಸಂವತ್ಸರಂಗಳು. ಇಂತಿವೆಲ್ಲವನು ಒಳಗಿಟ್ಟುಕೊಂಡಿಹಾತ `ಓಂ ನಮಃ ಶಿವಾಯ ಎಂಬಾತ ಕಾಣಿರೆ ! ಹೊರಗಿಪ್ಪಾತನು `ಓಂ ನಮಃ ಶಿವಾಯ ಎಂಬಾತ ಕಾಣಿರೆ ! ಉಳಿದಿಪ್ಪಾತನು `ಓಂ ನಮಃ ಶಿವಾಯ ಎಂಬಾತ ಕಾಣಿರೆ ! ಮತ್ತಿದ್ದ ಯೋನಿಜರೆಲ್ಲರೂ ಶಾಪಹತರಾಗಿ ಹೋದರು. ಇದು ಕಾರಣ- `ಓಂ ನಮಃ ಶಿವಾಯ ಎಂಬಾತನೆ ಲಿಂಗವು ಪಂಚಾಕ್ಷರಿಯೆ ಪರಮೇಶ್ವರನು, ಪಂಚಾಕ್ಷರಿಯೆ ಪರಮತತ್ವ, ಪಂಚಾಕ್ಷರಿಯೆ ಪರಮಯೋಗ, ಪಂಚಾಕ್ಷರಿಯೆ ಪರಂಜ್ಯೋತಿ, ಪಂಚಾಕ್ಷರಿಯೆ ಪಾಪಾಂತಕ. `ನ ಎಂಬಕ್ಷರವೆ ದೇವರ ಚರಣ, `ಮ ಎಂಬಕ್ಷರವೆ ದೇವರ ಒಡಲು, `ಶಿ ಎಂಬಕ್ಷರವೆ ದೇವರ ಹಸ್ತ, `ವಾ ಎಂಬಕ್ಷರವೆ ದೇವರ ನಾಸಿಕ, `ಯ ಎಂಬಕ್ಷರವೆ ದೇವರ ನೇತ್ರ. ಮತ್ತೆ ; `ನ ಎಂಬಕ್ಷರವೆ ದೇವರ ದಯೆ, `ಮ ಎಂಬಕ್ಷರವೆ ದೇವರ ಶಾಂತಿ, `ಶಿ ಎಂಬಕ್ಷರವೆ ದೇವರ ಕ್ರೋಧ, `ವಾ ಎಂಬಕ್ಷರವೆ ದೇವರ ದಮನ, `ಯ ಎಂಬ ಅಕ್ಷರವೆ ದೇವರ ಶಬ್ದ, ಮತ್ತೆ ; `ನ ಎಂಬಕ್ಷರವೆ ಪೃಥ್ವಿ, `ಮ ಎಂಬಕ್ಷರವೆ ಅಪ್ಪು, `ಶಿ` ಎಂಬಕ್ಷರವೆ ಅಗ್ನಿ, `ವಾ ಎಂಬಕ್ಷರವೆ ವಾಯು, `ಯ ಎಂಬಕ್ಷರವೆ ಆಕಾಶ. ಮತ್ತೆ; `ನ ಎಂಬಕ್ಷರವೆ ಬ್ರಹ್ಮ, `ಮ ಎಂಬಕ್ಷರವೆ ವಿಷ್ಣು, `ಶಿ ಎಂಬಕ್ಷರವೆ ರುದ್ರ, `ವಾ ಎಂಬಕ್ಷರವೆ ಶಕ್ತಿ, `ಯ ಎಂಬಕ್ಷರವೆ ಲಿಂಗ, ಇಂತು ಪಂಚಾಕ್ಷರದೊಳಗಳಿವಕ್ಷರ ನಾಲ್ಕು, ಉಳಿವಕ್ಷರ ಒಂದು. ಈ ಪಂಚಾಕ್ಷರವನೇಕಾಕ್ಷರವ ಮಾಡಿದ ಬಳಿಕ ದೇವನೊಬ್ಬನೆ ಎಂದರಿದು, ಬ್ರಹ್ಮ ದೈವವೆಂಬ ಬ್ರಹ್ಮೇತಿಕಾರರನೇನೆಂಬೆನಯ್ಯ ! ವಿಷ್ಣು ದೈವವೆಂಬ ವಿಚಾರಹೀನರನೇನೆಂಬೆನಯ್ಯ ! ಅಶ್ವಿನಿ ಭರಣಿ ಕೃತ್ತಿಕೆ ಮೊದಲಾದ ಇಪ್ಪತ್ತೇಳು ನಕ್ಷತ್ರಂಗಳೊಳಗೆ, ಮೂಲಾನಕ್ಷತ್ರದಲ್ಲಿ (ವಿಷ್ಣು) ಹುಟ್ಟಿದನಾಗಿ ಮೂಲನೆಂಬ ಹೆಸರಾಯಿತ್ತು. ದೇವರ ಸೇವ್ಯಕಾರ್ಯಕ್ಕೆ ಪ್ರಾಪ್ತನೆಂದು ವೇದಂಗಳು ಬಿನ್ನೈಸಲು, ಜ್ಯೋತಿಷ್ಯಜ್ಞಾನ ಶಾಸ್ತ್ರಂಗಳು ಹುಸಿಯಾದೆವೆಂದು ನಿಮ್ಮ ಹರಿಯ ಅಡವಿಯಲ್ಲಿ ಬೀಸಾಡಲು, ಅಲ್ಲಿ ಆಳುತ್ತಿದ್ದ ಮಗನ ಭೂದೇವತೆ ಸಲಹಿ, ಭೂಕಾಂತನೆಂಬ ಹೆಸರುಕೊಟ್ಟು, ಭೂಚಕ್ರಿ ತನ್ನ ಪ್ರತಿರೂಪ ತೋಳಲ್ಲಿ ಸೂಡಿಸಿ ಶಿವಧರ್ಮಾಗಮ ಪೂಜೆ ಭಕ್ತಿಯಲ್ಲಿ ಯುಕ್ತನ ಮಾಡಿದ ಬಳಿಕ, ಮತ್ತೆ ನಮ್ಮ ದೇವರ ಶ್ರೀಚರಣದಲ್ಲಿರ್ದು ಒಳಗೆ ತೋರಲು ದೇವರು ಪುರಾಣಂಗ? ಕರೆದು ವಿಷ್ಣುವಿನ ಪಾಪಕ್ಷಯವ ನೋಡಿ ಎಂದರೆ ಆ ಪುರಾಣಂಗಳಿಂತೆಂದವು; ``ಪಾಪಂತು ಮೂಲನಕ್ಷತ್ರಂ ಜನನೀವರಣಂ ಪುನಃ ಪಾಪಂ ತು ಪರ್ವತಸ್ಥೂಲಂ ಶಿವೇ ವೈರಮತಃ ಪರಂ ಶಿವದಾಸೋಹಭಾವೇನ ಪಾಪಕ್ಷಯಮವಾಪ್ನುಯಾತ್ ಎಂದು ಪುರಾಣಂಗಳು ಹೇಳಲಾಗಿ; ವಿಷ್ಣು ಕೇಳಿ, ಪುರಾಣದ ಕೈಯಲು ದೀಕ್ಷಿತನಾಗೆ, ಪುರಾಣ ಪುರುಷೋತ್ತಮನೆಂಬ ಹೆಸರು ಬಳಿಕಾಯಿತ್ತು. ಮತ್ತೆ ನಮ್ಮ ದೇವರ ಪಾದರಕ್ಷೆಯ ತಲೆಯಲ್ಲಿ ಹೊತ್ತುಕೊಂಡು ಭೂತಂಗಳಿಗಂಜಿ ಶಂಖಮಂ ಪಿಡಿದುಕೊಂಡು, ದುರಿತಂಗಳಿಗಂಜಿ ನಾಮವನಿಟ್ಟು, ಪ್ರಳಯಂಗಳಿಗಂಜಿ ವೇಷವ ತೊಟ್ಟು. ರಾಕ್ಷಸರಿಗಂಜಿ ಚಕ್ರಮಂ ಪಿಡಿದು, ಶಿವನ ದಾಸೋಹದ ದಾಸಿಯೆಂದು ಕಸಕಿಲಂ ಪಿಡಿದು ಬಯಲನುಡುಗಿ, ಹೊತ್ತ ನೀರಲ್ಲಿ ಪುತ್ಥಳಿಯ ¸õ್ಞಖ್ಯಮಂ ಮಾಡಿ ಇಪ್ಪತ್ತೇಳು ಲಕ್ಷವರುಷ ಶಿವನ ಸೇವೆಯಂ ಮಾಡಿ ಮತ್ತೆ ಗರುಡವಾಹನ ಸತಿಲಕ್ಷ್ಮಿ ವಾರ್ಧಿಜಯಮಂ ಪಡೆದು ದೇವರ ಎಡದ ಗದ್ದುಗೆಯನೋಲೈಸಿಪ್ಪವನ ದೇವರೆಂದರೆ ನೀವೆಂದಂತೆ ಎಂಬರೆ ? ಕೇಳಿರಣ್ಣಾ ! ವಚನಶುದ್ಧ ಭಾವದಲ್ಲಿ ಭಕ್ತಿಯುಳ್ಳವರು ನೀವು ಹೊತ್ತಿದ್ದ ವೇಷದಲ್ಲಿ ತಿಳಿದು ನೋಡಿ. ತಂದೆತಾಯಿ ಇಂದ್ರಿಯದಲ್ಲಿ ಬಂದವರು ದೇವರೆ ? ಸಂದೇಹ ಭ್ರಮೆಯೊಳಗೆ ಸಿಕ್ಕಿದವರು ದೇವರೆ ? ಶುಕ್ಲ ಶೋಣಿತದೊಳಗೆ ಬೆಳೆದವರು ದೇವರೆ ? ಆ ತಂದೆ ತಾಯ ಹುಟ್ಟಿಸಿದರಾರೆಂದು ಕೇಳಿರೆ; ಹಿಂದೆ ಸಂದ ಯುಗಂಗಳು ಶತಕೋಟಿ ಸಂಖ್ಯೆಯ ಮೇಲೆ ಏಳುನೂರೆಪ್ಪತ್ತುಸಾವಿರ ಯುಗಂಗಳು, ಇದಕ್ಕೆ ನವಕೋಟಿ ನಾರಾಯಣರಳಿದರು, ಶತಕೋಟಿ ಸಂಖ್ಯೆ ಬ್ರಹ್ಮರಳಿದರು ಉಳಿದವರ ಪ್ರಳಯವ ಹೊಗಳಲಿನ್ನಾರ ವಶ ? ಇಂತಿವೆಲ್ಲವನು ಬಿಟ್ಟು ಉಳಿದಿಪ್ಪಾತನೊಬ್ಬನೆ, ಆತಂಗೆ ನಮೋ ಎಂಬೆ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಆ ಅಖಂಡ ಮಹಾಮೂಲಸ್ವಾಮಿಯ ಸ್ಥಲದ ವಚನವೆಂತೆಂದೊಡೆ : ನಿರಂಜನಾತೀತಪ್ರಣವ, ಅವಾಚ್ಯಪ್ರಣವ, ಕಲಾಪ್ರಣವ, ಅನಾದಿಪ್ರಣವ, ಆದಿಪ್ರಣವ ಶಿವಪ್ರಣವ, ಶಕ್ತಿಪ್ರಣವ, ಶಿವಶಕ್ತಿರಹಿತವಾಗಿಹ ಮಹಾಪ್ರಣವ ಮೊದಲಾದ ಅನಂತಕೋಟಿ ಪ್ರಣವಂಗಳಿಲ್ಲದಂದು, ಚಿತ್ಪ್ರಕಾಶ ಚಿದಾಕಾಶ ಮಹದಾಕಾಶ ಮಹಾಕಾಶ ಶಿವಾಕಾಶ ಬಿಂದ್ವಾಕಾಶ ನಾದಾಕಾಶ ಕಲಾಕಾಶ ಪ್ರಣವಾಕಾಶ ಮೊದಲಾಗಿ ಅನಂತಕೋಟಿ ಮಹಾಪ್ರಣವಾಕಾಶ, ಅತಿಪ್ರಣವಾಕಾಶ ಅತಿಮಹಾತೀತಪ್ರಣವಾಕಾಶಗಳಿಲ್ಲದಂದು, ಆದಿ ಅನಾದಿ ಸಂಗತ ಅನಂತ ಅರ್ಭಕ ತಮಂಧ ತಾರಜ ತಂಡಜ ಬ್ಥಿನ್ನಜ ಬ್ಥಿನ್ನಾಯುಕ್ತ ಅವ್ಯಕ್ತ ಅಮದಾಯುಕ್ತ ಮಣಿರಣ ಮಾನ್ಯರಣ ವಿಶ್ವಾರಣ ವಿಶ್ವಾವಸು ಅಲಂಕೃತ ಕೃತಯುಗ ತ್ರೇತಾಯುಗ ದ್ವಾಪರಯುಗ ಕಲಿಯುಗಂಗಳೆಂಬ ಇಪ್ಪತ್ತೊಂದು ಯುಗ ಮೊದಲಾಗಿ ಅನಂತಕೋಟಿ ಯುಗಂಗಳು ಅತಿಮಹಾಯುಗಂಗಳು, ಅತಿಮಹಾತೀತಮಹಾಯುಗಂಗಳಿಲ್ಲದಂದು, ಆದಿಮೂಲ ಅನಾದಿಮೂಲಂಗಳಿಗತ್ತತ್ತವಾದ ಮಹಾಮೂಲಸ್ವಾಮಿಯ ಮೀರಿದ ಅತಿಮಹಾಮೂಲಸ್ವಾಮಿಗತ್ತತ್ತವಾಗಿಹ ಅಖಂಡ ಮಹಾಮೂಲಸ್ವಾಮಿಯು ಇದ್ದನಯ್ಯ ಇಲ್ಲದಂತೆ ನಮ್ಮ ಅಪ್ರಮಾಣ ಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ನೇಮವೆಂದೇನು ? ನಿತ್ಯವೆಂದೇನು ? ಆಗಮವೆಂದೇನು ? ಆಚಾರವೆಂದೇನು ? ಲಿಂಗಜಂಗಮದ ಕುಳವೊಂದೇ ಎಂದು ಸಂಪಾದಿಸಲ[ರಿಯ]ದೆ ನಾಲ್ಕು ಯುಗಂಗಳು ಇಂತೆ ಹೋದವು. ಕಂಡು ಹೇಳರು, ತಂದು ತೋರರು, ಅವರು ಮಹಂತರೇ ? ಕೂಡಲಚೆನ್ನಸಂಗಮದೇವ ಸುಲಭವಾಗಿ ಶರಣಸನ್ನಿಹಿತ ಲಿಂಗವು.
--------------
ಚನ್ನಬಸವಣ್ಣ
ಕೃತಯುಗ, ತ್ರೇತಾಯುಗ, ದ್ವಾಪರಯುಗ, ಕಲಿಯುಗಂಗಳು ಭವರಾಟಳದಲ್ಲಿ ತಿರುಗುತ್ತಿಪ್ಪಲ್ಲಿ ಅನಂತ ಕೋಟ್ಯನುಕೋಟಿ ಯುಗಂಗಳು ಮಡಿದುಹೋದವು, ಅನಂತ ಜಲಪ್ರಳಯಂಗಳು ಸುರಿದು ಹೋದವು. ಹದಿನಾಲ್ಕು ಲೋಕಂಗಳೆಂಬ ಅನಂತಕೋಟಿ ಬ್ರಹ್ಮಾಂಡಗಳೆಲ್ಲ ಲಯವಾಗಿ ಹೋದವು. ಇದರೊಳಗೆ ಆವ ಲೋಕದಲ್ಲಿ ಆವ ಯುಗದಲ್ಲಿ ಪ್ರಾಣಲಿಂಗ, ಲಿಂಗಪ್ರಾಣವೆಂಬ ಭೇದವನರುಹಿದವರಾರು ಹೇಳಾ ಗಂಗೆ ಗೌರೀವಲ್ಲಭರು ಮೊದಲಾದ ಅನಂತಕೋಟಿ ರುದ್ರಾದಿಗಳೆಲ್ಲರೂ ಪ್ರಾಣಲಿಂಗಸಂಬಂಧದ ಹೊಲಬನರಿಯದೆ ಅಣಿಮಾದಿ ಚತುರ್ವಿಧ ಫಲಪ್ರಾಪ್ತಿಗೆ ಒಳಗಾದರು. ಶಿವಾಚಾರದ ವಿಚಾರವನರಿಯದೆ ಜಗವು ಕೆಟ್ಟುಹೋಹುದೆಂದು ಪರಮಪುರುಷಾರ್ಥಕಾರಣವಾಗಿ ಮತ್ರ್ಯದಲ್ಲಿ ಅವತರಿಸಿ,ಗುರುಲಿಂಗಜಂಗಮಪಾದೋದಕಪ್ರಸಾದವೆಂಬ ಪಂಚಾಚಾರಸ್ಥಲವ ನೆಲೆಗೊಳಿಸಿ, ಷಡುಸ್ಥಲವೆಂಬ ಮಹಾನುಭಾವಮಂ ಕರತಳಾಮಳಕವಾಗಿ ಸ್ಥಿತಗೊಳಿಸಿ, ಪ್ರಾಣಲಿಂಗ, ಲಿಂಗಪ್ರಾಣವೆಂಬ ಭೇದವನೆನಗೆ ತಿಳುಹಿ, ಎನ್ನ ಭ್ರಾಂತಿಸೂತಕವ ಬಿಡಿಸಿ, ಲಿಂಗೈಕ್ಯವೆಂಬುದೆನಗೆ ತೋರಿದೆಯಾಗಿ ನಿನ್ನಿಂದಲಾನು ಸಂಗನಬಸವಣ್ಣನೆಂಬ ಹೆಸರುವಡೆದನು. ಕೂಡಲಸಂಗಮದೇವರು ಸಾಕ್ಷಿಯಾಗಿ ಎನಗೆ ನೀನು ಪರಮಾರಾಧ್ಯ ಕಾಣಾ, ಚೆನ್ನಬಸವಣ್ಣಾ.
--------------
ಬಸವಣ್ಣ
ಕಾಲಚಕ್ರದ ವಚನ : ಏಕಂ ಏಕವಾದ ವಸ್ತುವ ಲೋಕಾಲೋಕಂಗಳರಿಯವು ಸ್ಥೂಲ ಸೂಕ್ಷ್ಮವೆನುತಿರ್ಪರೆಲ್ಲರೂ, ಆತನೀತ ಬೇರೆ ಮತ್ತೊಬ್ಬಾತನೆಂಬ ಭ್ರಮೆಯಲ್ಲಿ ಭೂತಪ್ರಾಣಿಗಳವರೆತ್ತ ಬಲ್ಲರು ಆತನ ಘನವ. ಚಿಟುಕು ಮುನ್ನೂರರವತ್ತು ಕೂಡಿದಡೆ ಒಂದು ವಿಘಳಿಗೆ, ಆ ವಿಘಳಿಗೆ ಅರುವತ್ತು ಕೂಡಿದೊಡೆ ಒಂದು ಘಳಿಗೆ, ಆ ಘಳಿಗೆ ಅರುವತ್ತು ಕೂಡಿದೊಡೆ ಒಂದು ದಿನ. ದಿನ ಮೂವತ್ತು ಕೂಡಿದೊಡೆ ಒಂದು ಮಾಸ ಮಾಸ ಹನ್ನೆರಡು ಕೂಡಿದೊಡೆ ಒಂದು ವರುಷ ವರುಷ ಅರುವತ್ತು ಕೂಡಿದೊಡೆ ಒಂದು ಸಂವತ್ಸರ_ ಇಂತೀ ಕಾಲಚಕ್ರಂಗಳು ಈ ಪರಿಧಿಯಲ್ಲಿ ತಿರುಗಿ ಬರುತ್ತಿಹವು ಕಾಣಿರೆ. ನಾಲ್ಕು ಯುಗಂಗಳು ಬೇರೆ ಬೇರೆ ಕಟ್ಟಿದ ಕಟ್ಟಳೆಯೊಳು, ತಿರುಗಿ ಬರುತ್ತಿಹವು ಕಾಣಿರೆ. ಕೃತಯುಗ ಹದಿನೇಳು ಲಕ್ಷವು ಇಪ್ಪತ್ತೆಂಟುಸಾವಿರವರ್ಷ ವರ್ತಿಸಿ ನಿಂದಿತ್ತು. ತ್ರೇತಾಯುಗ ಹನ್ನೆರಡು ಲಕ್ಷವು ತೊಂಬತ್ತಾರುಸಾವಿರ ವರ್ಷ ವರ್ತಿಸಿ ನಿಂದಿತ್ತು. ದ್ವಾಪರಯುಗ ಎಂಟು ಲಕ್ಷವು ಅರುವತ್ತುನಾಲ್ಕುಸಾವಿರ ವರ್ಷ ವರ್ತಿಸಿ ನಿಂದಿತ್ತು. ಕಲಿಯುಗ ನಾಲ್ಕುಲಕ್ಷವು ಮೂವತ್ತೆರಡುಸಾವಿರ ವರ್ಷ ವರ್ತಿಸಿ ನಿಂದಿತ್ತು. _ಇಂತೀ ನಾಲ್ಕು ಯುಗಂಗಳು ಕೂಡಿ ಒಂದಾಗಿ ಮೇಳಯಿಸಿದೊಡೆ, ನಾಲ್ವತ್ತು ಮೂರು ಲಕ್ಷವು ಇಪ್ಪತ್ತುಸಾವಿರ ವರುಷ ಕಟ್ಟಳೆಯಾಯಿತ್ತು. ಈ ನಾಲ್ಕುಯುಗಂಗಳು ಇಪ್ಪತ್ತೊಂದು ಬಾರಿ ತಿರುಗಿದಡೆ ಸುರಪತಿಗೆ ಪರಮಾಯು, ಬ್ರಹ್ಮಂಗೆ ಜಾವ, ಅಷ್ಟಾಶಿತಿ ಸಹಸ್ರ ಋಷಿಯರು ಸಾವಿರಬಾರಿ ತಿರುಗಿದಡೆ ಬ್ರಹ್ಮಂಗೆ ಆಯುಷ್ಯ ನೂರಪ್ಪುದು, ವಿಷ್ಣುವಿಂಗೆ ಜಾವಪ್ಪುದು. ಆ ವಿಷ್ಣುವಿನ ಒಂದು ದಿನ(ಜಾವ?)ದೊಳಗೆ ನಾಲ್ಕು ಬಾರಿ ಹುಟ್ಟಿ ನಾಲ್ಕು ಬಾರಿ ಹೊಂದುವ ಬ್ರಹ್ಮನು, ಆ(ದಿ) ವಿಷ್ಣುವಿನ ಒಂದು ದಿನವಪ್ಪುದು, (ಅಂಥ ವಿಷ್ಣುವಿನ ಒಂದು ದಿನದಲ್ಲಿ) ಸಮಸ್ತ ಈರೇಳು ಭುವನಂಗಳೆಲ್ಲ ಭೂತಸಂಹಾರ , ಅಂಥಾ ಭೂತಸಂಹಾರಗಳು ಹದಿನೆಂಟು ಲಕ್ಷವು ಇಪ್ಪತ್ತೆಂಟುಸಹಸ್ರ ವರುಷ ತಿರುಗಲು ಪೃಥ್ವಿಯೆಲ್ಲಾ ಜಲಪ್ರಳಯ. ಅಂಥಾ ಜಲಪ್ರಳಯವೆಂಟು ಬಾರಿ ತಿರುಗಿದಡೆ ವಿಷ್ಣುವಿಂಗೆ ಮರಣ, ರುದ್ರಂಗೆ ನಿಮಿಷ. ಅಂಥಾ ರುದ್ರನ ಒಂದು ನಿಮಿಷದಲ್ಲಿ ಅತಳ ವಿತಳ ಸುತಳ ಮಹೀತಳ ರಸಾತಳ ತಳಾತಳ ಪಾತಾಳ_ ಇಂತು ಕೆಳಗೇಳು ಭುವನಂಗಳು, ಮೇಲೆ, ಸತ್ಯಲೋಕ ಜನರ್ಲೋಕ ತಪೋಲೋಕ ಮಹರ್ಲೋಕ, ಸ್ವರ್ಲೋಕ ಭುವರ್ಲೋಕ ಭೂಲೋಕ ಮೊದಲಾಗಿ_ಇಂತೀ ಲೋಕಾಲೋಕಂಗಳೆಲ್ಲ ಮುಳುಗಿ ಮಹಾಪ್ರಳಯವಾದಲ್ಲಿ ರುದ್ರಲೋಕವೊಂದುಳಿಯೆ, ಆ ರುದ್ರಂಗೆ ಒಂದುದಿನ. ಅಂಥಾದಿನ ಮುನ್ನೂರರವತ್ತು ಕೂಡಿದಡೆ ಒಂದು ವರುಷ. ಅಂಥಾ ವರುಷ ಶತಕೋಟಿ ಕೂಡಿದಡೆ ರುದ್ರಂಗೆ ಪರಮಾಯು. ಅಂಥಾ ರುದ್ರರು ಅನೇಕರು ಹೋದರಲ್ಲಾ, ಮತ್ತಂ ಪಶುಪತಿ, ಶಂಕರ, ಶಶಿಧರ, ಸದಾಶಿವ, ಗೌರೀಪತಿ, ಮಹಾದೇವ ಈಶ್ವರರೆಂಬವರು ಆ ದಿನದಲ್ಲಿ ಇವರು ಪ್ರಮಥಗಣೇಶ್ವರರು, ತಪೋರಾಜ್ಯವನುಂಬರು. ತಪಕ್ಕೆ ಬಿಜಯಂಗೈವರು ಆ ರುದ್ರರು. ಲೋಕಾಲೋಕಂಗಳು ಕೂಡಿ ಭೂತ ವರ್ತಿಸುತ್ತಿದ್ದಿತ್ತೊಂದು ಕೆಲವು ಕಾಲ, ಅದು ತೊಡೆದು ಹೋಯಿತ್ತು. ಬಳಿಕ ಶೂನ್ಯವರ್ತಿಸುತ್ತಿದ್ದಿತ್ತೊಂದು ಕೆಲವು ಕಾಲ, ಅದು ತೊಡೆದು ಹೋಯಿತ್ತು ಬಳಿಕ ಕಾಳಾಂಧರ ವರ್ತಿಸುತ್ತಿದ್ದಿತ್ತೊಂದು ಕೆಲವು ಕಾಲ, ಅದು ತೊಡೆದು ಹೋಯಿತ್ತು_ಬಳಿಕ ಮಹಾ ಪ್ರಕಾಶದ ಬೆಳಗು. ಇಂತಹ ಕಾಲಂಗಳು ಈ ಪರಿಯಲ್ಲಿ ತಿರುಗಿ ಬರುತ್ತಿಹವು ಕಾಣಿರೆ ! ಅಂತಹ ಕಾಲಂಗಳೂ ಅರಿಯವು, ಅಂತಹ ದಿನಂಗಳೂ ಅರಿಯವು ಅಂತಹ ದೇವತೆಗಳೂ ಅರಿಯರು,_ ಅಪ್ರಮಾಣ ಅಗಮ್ಯ ಅಗೋಚರ ಉಪಮಿಸಬಾರದು ಅಂತಿಂತೆನಲಿಲ್ಲ ಗುಹೇಶ್ವರಲಿಂಗ ನಿರಂಜನ ನಿರಾಳ ! ನಿರಾಮಯ !
--------------
ಅಲ್ಲಮಪ್ರಭುದೇವರು
ಹಿಂದೆ ಅನಾದಿಕಾಲದಲ್ಲಿ ಲೆಕ್ಕವಿಲ್ಲದ ಯುಗಂಗಳು ಹೋದವು. ದ್ವಯಮುಖರು ಅದ್ವಯಮುಖರು ಸ್ವತಂತ್ರಮುಖರು ಸನ್ನಹಿತಮುಖರು ಉಗ್ರಮುಖರು ಉತ್ಪತ್ಯಕ್ಕೆ ಹೊರಗಾದ ಮುಖರು ಸ್ಥಿತಿಗತಿಯಿಂದರಿಯದ ಮುಖರು ಸರ್ವವಿಸ್ತೀರ್ಣದೊಳಗುಳ್ಳ ಮುಖರು ಅಷ್ಟತನುಮೂರ್ತಿ ಮೊದಲಾದ ಅನಂತಮೂರ್ತಿಗಳೆಲ್ಲ ದೇವಾರಾಧನೆ ಪೂಜಕರಾದರಲ್ಲದೆ ಭಕ್ತಮುಖರಲ್ಲ. ಸಂಸಾರ ಸಂಗದೊಳಗಿದ್ದವರಲ್ಲ. ಇಂಥ ಮುಖರೆಲ್ಲ ಅಂತಿರಲಿ. ಇಲ್ಲದ ನಿರವಯವ ಆಕಾರಕ್ಕೆ ತಂದು, ಜಂಗಮಲಿಂಗವೆನಿಸಿ ಸಾಹಿತ್ಯವ ಮಾಡಿದಾತ ಬಸವಣ್ಣನು. ಇದನರಿದು ಧನ್ಯನಾದೆನೆಂಬೀತ ಪರುಷದೊಳಗು. ಈ ಕ್ರಮವನರಿಯದೆ, ಅನಂತ ಮತವ ಹಿಡಿದು ಭೂಭಾರಕರಾದರು. ಅವರ ಮುಟ್ಟಿ, ಲಿಂಗಕ್ಕೆ ಕೊಟ್ಟು ಕೊಂಡಡೆ ಪ್ರಸಾದವಾಗದೆಂದು ಜಂಗಮಕ್ಕೆ ಅರ್ಪಿಸಿದ ನಿತ್ಯಪ್ರಸಾದವೆನಗೆ ಬಸವಣ್ಣನ ಪ್ರಸಾದ. ಆ ಬಸವಣ್ಣನ ಪ್ರಸಾದವೆ ಎನಗೂ ನಿನಗೂ ವಿಸ್ತಾರವಾಗಿತ್ತು ಕಾಣಾ, ಕಲಿದೇವಯ್ಯ.
--------------
ಮಡಿವಾಳ ಮಾಚಿದೇವ
ನಾಲ್ಕು ಯುಗಂಗಳು ಸಹಸ್ರ ವೇಳೆ ತಿರುಗಿದಡೆ, ಬ್ರಹ್ಮಂಗೊಂದು ಬ್ರಹ್ಮನಂದು ಸಹಸ್ರ ವೇಳೆ ತಿರುಗಿದಡೆ, ವಿಷ್ಣುವಿಗೊಂದು ಗಳಿಗೆ. ವಿಷ್ಣು ತಾನು ಹನ್ನೆರಡು ಲಕ್ಷ[ವೇಳೆ]ತಿರುಗಿದಡೆ, ಮಹೇಶ್ವರಂಗೊಂದು ನಿಮಿಷ. ಅಂತಪ್ಪ ಮಹೇಶ್ವರರನೇಕ ಲೀಲೆ ಧರಿಸಿದಲ್ಲಿ, ನಮ್ಮ ಕಪಿಲಸಿದ್ಧಮಲ್ಲಿಕಾರ್ಜುನನ ಪೂಜೆ ಸಮಾಪ್ತಿ, ನೋಡಯ್ಯಾ ಬಾಚರಸರೆ.
--------------
ಸಿದ್ಧರಾಮೇಶ್ವರ
ಹಿಂದೆ ಹಲವು ಯುಗಂಗಳು ತಿರುಗಿ ಬಪ್ಪಾಗ ಅವನ್ನು ನೀ ಮಾಡಿದೆಯಲ್ಲದೆ ತಮ್ಮಾಜ್ಞೆಯಲಿ ಬಂದುಲ್ಲ. ಅಯ್ಯ, ನಿನ್ನಾಜ್ಞೆಯಲಿ ಬಂದ ಯುಗಂಗಳು ಭವಭವದಲ್ಲಿ ಎನ್ನನೆ ಕಾಡಿದುವು, ಸಂಸಾರವಾಗಿ ಎನ್ನನೆ ಕಾಡಿದುವು, ಹೊನ್ನು ಹೆಣ್ಣು ಮಣ್ಣು ತ್ರಿವಿಧವಾಗಿ ಎನ್ನನೆ ಕಾಡಿದುವು, ಆಶಾಪಾಶಂಗಳಾಗಿ ಗುರುವೆ ಬಸವಣ್ಣ ಅವೆಲ್ಲಾ ನಿಮ್ಮ ಅಧೀನದವು ಮಾಡಿದಡಾದವು, ಬೇಡಾಯೆಂದಡೆ ಮಾದವು. ಅವಕ್ಕೆ ಎನ್ನನೊಪ್ಪಿಸದೆ, ನಿನ್ನವ ನಿನ್ನವನೆನಿಸಾ ಕಪಿಲಸಿದ್ಧಮಲ್ಲಿಕಾರ್ಜುನನ ತೋರಿದ ಗುರು ಬಸವಣ್ಣಾ.
--------------
ಸಿದ್ಧರಾಮೇಶ್ವರ
ಅಯ್ಯಾ, ಹಿಂದೆ ಹಲವು ಯುಗಂಗಳು ತಿರುಗಿ ಬರುತ್ತಿಪ್ಪಲ್ಲಿ, ಅವನು ನೀ ಮಾಡಿದೆಯಲ್ಲದೆ ತಮ್ಮಾಜ್ಞೆಯಿಂದ ಬಂದುಲ್ಲವಯ್ಯಾ. ಬಸವಣ್ಣಾ, ನಿಮ್ಮಾಜ್ಞೆಯಲ್ಲಿ ಯುಗಂಗಳು ಭವಭವದಲ್ಲಿ ಕಾಡಿದವು. ಬಸವಣ್ಣಾ ಸಂಸಾರವಾಗಿ ಎನ್ನನೆ ಕಾಡಿದವು. ಬಸವಣ್ಣಾ, ಹೊನ್ನು ಹೆಣ್ಣು ಮಣ್ಣು ತ್ರಿವಿಧವಾಗಿ ಎನ್ನನೆ ಕಾಡಿದವು. ಬಸವಣ್ಣಾ, ಆಶಾಪಾಶಂಗಳಾಗಿ ಎನ್ನನೆ ಕಾಡಿದವು. ಬಸವಣ್ಣಾ, ಗುರು ಬಸವಣ್ಣಾ, ಇವೆಲ್ಲಾ ನಿಮ್ಮಾಧೀನದವು; ನೀ ಮಾಡಿದಡಾದವು, ಬೇಡಾ ಎಂದಡೆ ಮಾದವು. ಅವಕ್ಕೆ ಎನ್ನನೊಪ್ಪಿಸದೆ, `ನಿನ್ನವ ನಿನ್ನವ' ಎನಿಸಾ, ಕಪಿಲಸಿದ್ಧಮಲ್ಲಿಕಾರ್ಜುನನ ತೋರಿದ ಗುರು ಬಸವಣ್ಣಾ
--------------
ಸಿದ್ಧರಾಮೇಶ್ವರ
-->