ಅಥವಾ

ಒಟ್ಟು 10 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆ ಪೃಥ್ವಿ ಅಪ್ಪು ತೇಜ ವಾಯುವಾಕಾಶವೆಂಬ ಪಂಚಭೂತ ಬ್ರಹ್ಮಾಂಡಕಪಾಲದೊಳು ಚತುರ್ದಶಭುವನಂಗಳು, ಸಪ್ತಸಮುದ್ರಂಗಳು, ಸಪ್ತದ್ವೀಪಂಗಳು, ಸಪ್ತಕುಲಪರ್ವತಂಗಳು, ಸಮಸ್ತ ಗ್ರಹರಾಶಿ ತಾರಾಪಥಂಗಳಿಹ ಕ್ರಮವೆಂತೆಂದಡೆ : ಆ ಭೂತಬ್ರಹ್ಮಾಂಡಕಪಾಲದಲ್ಲಿ ಅತಳಲೋಕವಿಹುದು. ಆ ಅತಳಲೋಕದಿಂದ ಮೇಲೆ ವಿತಳಲೋಕವಿಹುದು. ಆ ವಿತಳಲೋಕದಿಂದ ಮೇಲೆ ಸುತಳಲೋಕವಿಹುದು. ಆ ಸುತಳಲೋಕದಿಂದ ಮೇಲೆ ತಳಾತಳಲೋಕವಿಹುದು. ಆ ತಳಾತಳಲೋಕದಿಂದ ಮೇಲೆ ರಸಾತಳಲೋಕವಿಹುದು. ಆ ರಸಾತಳಲೋಕದಿಂದ ಮೇಲೆ ಮಹಾತಳಲೋಕವಿಹುದು. ಆ ಮಹಾತಳಲೋಕದಿಂದ ಮೇಲೆ ಪಾತಾಳಲೋಕವಿಹುದು. ಆ ಪಾತಾಳಲೋಕದಿಂದ ಮೇಲೆ ಜಲಪ್ರಳಯವಿಹುದು. ಆ ಜಲಪ್ರಳಯದ ಮೇಲೆ ಮಹಾಕಮಠನಿಹುದು. ಆ ಮಹಾಕಮಠನ ಮೇಲೆ ಮಹಾವಾಸುಗಿ ಇಹುದು. ಆ ಮಹಾವಾಸುಗಿಯ ಸುತ್ತುವಳಯಾಕೃತವಾಗಿ ಅಷ್ಟದಿಕ್‍ಮಹಾಗಜಂಗಳಿಹವು. ಆ ಅಷ್ಟದಿಕ್‍ಮಹಾಗಜಂಗಳ ಮೇಲೆ ಭೂಲೋಕವಿಹುದು. ಆ ಭೂಲೋಕದಲ್ಲಿ ಸಪ್ತಸಮುದ್ರಂಗಳು, ಸಪ್ತದ್ವೀಪಂಗಳು, ಸಪ್ತಕುಲಪರ್ವತಂಗಳಿಹವು. ಆ ಸಪ್ತಸಮುದ್ರಂಗಳ ಸಪ್ತದ್ವೀಪಂಗಳ ಸಪ್ತಕುಲಪರ್ವತಂಗಳ ಸುತ್ತುವಳಯಾಕೃತವಾಗಿ ಸಮಸ್ತ ಲೋಕಾಲೋಕ ಪರ್ವತವಿಹುದು. ಆ ಸಪ್ತಸಮುದ್ರಂಗಳ ಸಪ್ತದ್ವೀಪಂಗಳ ಸಪ್ತಕುಲಪರ್ವತಂಗಳ ವಿಸ್ತೀರ್ಣವೆಂತೆಂದಡೆ : ಪಂಚಾಶತಕೋಟಿ ವಿಸ್ತೀರ್ಣದ ಮಧ್ಯಭೂಮಿ. ಆ ಮಧ್ಯಭೂಮಿ ಮಂಡಲವಳಯದಲ್ಲಿ ಮಹಾಮೇರುಪರ್ವತದ ವಿಸ್ತೀರ್ಣವೆಂತೆಂದಡೆ : ಒಂದುಕೋಟಿಯು ಇಪ್ಪತ್ತಾರುಲಕ್ಷದ ಮೇಲೆ ಎಂಬತ್ತೈದುಸಾವಿರ ಯೋಜನಪ್ರಮಾಣು. ಆ ಮೇರುಮಂದಿರದ ಶಿರದ ಮೇಲೆ ಮೂವತ್ತುಮೂರುಕೋಟಿ ದೇವರ್ಕಳು, ನಾಲ್ವತ್ತೆಂಟುಸಾವಿರ ಮುನಿಗಳು, ಬ್ರಹ್ಮ ವಿಷ್ಣು ರುದ್ರ ಈಶ್ವರ ಸದಾಶಿವ ನಂದಿವಾಹ ಗಣಂಗಳು, ದ್ವಾದಶಾದಿತ್ಯರು, ನಾರದಮುನಿ ಯೋಗೀಶ್ವರರು, ಅಷ್ಟದಿಕ್ಪಾಲರು, ಏಕಾದಶರುದ್ರರು ಮುಖ್ಯವಾದ ಅಸಂಖ್ಯಾತ ಮಹಾಗಣಂಗಳು ಶಿವಸುಖ ಸಂಗೀತ ವಿನೋದದಿಂದ ರಾಜ್ಯಂಗೆಯ್ಯುತ್ತಿರಲು, ಆ ಮೇರುಮಂದಿರದ ಶಿಖರದ ಕೆಳಗೆ ಜಂಬೂದ್ವೀಪವಿಹುದು. ಆ ಜಂಬೂದ್ವೀಪವು ಒಂದು ಲಕ್ಷದ ಮೇಲೆ ಇಪ್ಪತ್ತೈದುಸಾವಿರ ಯೋಜನಪ್ರಮಾಣು. ಒಂದುಲಕ್ಷದ ಮೇಲೆ ಇಪ್ಪತ್ತೈದುಸಾವಿರ ಯೋಜನದಗಲವಾಗಿ ಲವಣಸಮುದ್ರವು ಆ ಜಂಬೂದ್ವೀಪಮಂ ವಳಯಾಕೃತವಾಗಿ ಸುತ್ತಿಕೊಂಡಿಹುದು. ಎರಡು ಲಕ್ಷದ ಮೇಲೆ ಐವತ್ತುಸಾವಿರ ಯೋಜನ ಪ್ರಮಾಣದಲ್ಲಿ ಇಕ್ಷುಸಮುದ್ರವು ಆ ಪ್ಲಕ್ಷದ್ವೀಪಮಂ ವಳಯಾಕೃತವಾಗಿ ಸುತ್ತಿಕೊಂಡಿಹುದು. ಮೂರುಲಕ್ಷದ ಮೇಲೆ ಎಪ್ಪತ್ತುಸಾವಿರದಯಿನೂರು ಯೋಜನಪ್ರಮಾಣದಗಲವಾಗಿ ಕುಶದ್ವೀಪವಂ ಆ ಇಕ್ಷುಸಮುದ್ರವಂ ವಳಯಾಕೃತವಾಗಿ ಸುತ್ತಿಕೊಂಡಿಹುದು. ನಾಲ್ಕುಲಕ್ಷದ ಮೇಲೆ ಮೂರುಸಾವಿರ ಯೋಜನಪ್ರಮಾಣದಗಲವಾಗಿ ಸುರೆಯ ಸಮುದ್ರವು ಆ ಕುಶದ್ವೀಪವಂ ವಳಯಾಕೃತವಾಗಿ ಸುತ್ತಿಕೊಂಡಿಹುದು. ಐದುಲಕ್ಷ ಯೋಜನಪ್ರಮಾಣದಗಲವಾಗಿ ಶಾಕದ್ವೀಪವು ಆ ಸುರೆಯ ಸಮುದ್ರವಂ ವಳಯಾಕೃತವಾಗಿ ಸುತ್ತಿಕೊಂಡಿಹುದು. ಹದಿನಾಲ್ಕುಲಕ್ಷ ಯೋಜನಪ್ರಮಾಣದಗಲವಾಗಿ ಘೃತಸಮುದ್ರವು ಆ ಶಾಕದ್ವೀಪವಂ ವಳಯಾಕೃತವಾಗಿ ಸುತ್ತಿಕೊಂಡಿಹುದು. ಇಪ್ಪತ್ತುಲಕ್ಷ ಯೋಜನಪ್ರಮಾಣದಗಲವಾಗಿ ಶಾಲ್ಮಲೀದ್ವೀಪ ಆ ಘೃತಸಮುದ್ರವಂ ವಳಯಾಕೃತವಾಗಿ ಸುತ್ತಿಕೊಂಡಿಹುದು. ಇಪ್ಪತ್ತು ಲಕ್ಷ ಯೋಜನಪ್ರಮಾಣದಗಲವಾಗಿ ದಧಿಸಮುದ್ರವು ಆ ಶಾಲ್ಮಲೀದ್ವೀಪವಂ ವಳಯಾಕೃತವಾದಿ ಸುತ್ತಿಕೊಂಡಿಹುದು. ನಾಲ್ವತ್ತುಲಕ್ಷ ಯೋಜನಪ್ರಮಾಣದಗಲವಾಗಿ ಪುಷ್ಕರದ್ವೀಪ ಆ ದಧಿಸಮುದ್ರವಂ ವಳಯಾಕೃತವಾಗಿ ಸುತ್ತಿಕೊಂಡಿಹುದು. ನಾಲ್ವತ್ತುಲಕ್ಷ ಯೋಜನಪ್ರಮಾಣದಗಲವಾಗಿ ಕ್ಷೀರಸಮುದ್ರವು ಆ ಪುಷ್ಕರದ್ವೀಪವಂ ವಳಯಾಕೃತವಾಗಿ ಸುತ್ತಿಕೊಂಡಿಹುದು. ಎಂಬತ್ತುಲಕ್ಷ ಯೋಜನಪ್ರಮಾಣದಗಲವಾಗಿ ಕ್ರೌಂಚದ್ವೀಪವು ಆ ಕ್ಷೀರಸಮುದ್ರಮಂ ವಳಯಾಕೃತವಾಗಿ ಸುತ್ತಿಕೊಂಡಿಹುದು. ಎಂಬತ್ತುಲಕ್ಷ ಯೋಜನಪ್ರಮಾಣದಗಲವಾಗಿ ಸ್ವಾದೋದಕಸಮುದ್ರವು ಆ ಕ್ರೌಂಚದ್ವೀಪವಂ ವಳಯಾಕೃತವಾಗಿ ಸುತ್ತಿಕೊಂಡಿಹುದು. ಸಪ್ತದ್ವೀಪಂಗಳ ಸುತ್ತುವಳಯಾಕೃತವಾಗಿ ಲೋಕಾಲೋಕ ಪರ್ವಂತಗಳಿಹವು. ಆ ಲೋಕಾಲೋಕ ಪರ್ವತಂಗಳ ಸುತ್ತುವಳಯಾಕೃತವಾಗಿ ಚಕ್ರವಾಳಗಿರಿ ಇಹುದು. ಆ ಚಕ್ರವಾಳಗಿರಿಗತ್ತತ್ತ ಭೂಮಿ ಪರ್ವತಾಕಾರವಾಗಿಹುದು. ಆ ಭೂಮಿಯಿಂದಂ ಮೇಲೆ ಮೇಘಮಂಡಲಂಗಳಿಹವು. ಆ ಮೇಘಮಂಡಲಂಗಳ ಮೇಲೆ ಭುವರ್ಲೋಕವಿಹುದು. ಆ ಭುವರ್ಲೋಕದಿಂದ ಮೇಲೆ ಸ್ವರ್ಗಲೋಕವಿಹುದು. ಆ ಸ್ವರ್ಗಲೋಕದಿಂದ ಮೇಲೆ ನಕ್ಷತ್ರಾದಿಮಂಡಲವಿಹುದು. ಆ ನಕ್ಷತ್ರಾದಿ ಮಂಡಲಂಗಳಿಂದತ್ತ ಮೇಲೆ ಮಹರ್ಲೋಕವಿಹುದು. ಆ ಮಹರ್ಲೋಕದಿಂದತ್ತ ಮೇಲೆ ಜನರ್ಲೋಕವಿಹುದು. ಆ ಜನರ್ಲೋಕದಿಂದತ್ತ ಮೇಲೆ ತಪರ್ಲೋಕವಿಹುದು. ಆ ತಪರ್ಲೋಕದಿಂದತ್ತ ಮೇಲೆ ಸತ್ಯರ್ಲೋಕವಿಹುದು. ಆ ಸತ್ಯರ್ಲೋಕದಿಂದತ್ತ ಮೇಲೆ ತ್ರಿಲಕ್ಷಕೋಟಿಯೋಜನ ಪರಿಪ್ರಮಾಣದುದ್ದದಲ್ಲಿ ಮಹಾಪ್ರಳಯಜಲವಿಹುದು. ಆ ಮಹಾಪ್ರಳಯಜಲದಿಂದತ್ತ ಮೇಲೆ ಶಿವಾಂಡ ಚಿದ್ಬ್ರಹ್ಮಾಂಡವಿಹುದು. ಇಂಥ ಅನಂತಕೋಟಿ ಚಿದ್ಬ್ರಹ್ಮಾಂಡಗಳು, ಅನಂತಕೋಟಿ ಲೋಕಾಲೋಕಂಗಳೆಲ್ಲ ಒಂದರಲ್ಲೊಂದಡಗಿ ಅಪ್ರಮಾಣ ಕೂಡಲಸಂಗಯ್ಯನು ತನ್ನ ಲೀಲಾವಿನೋದದಿಂದ ನಿಂದರಾಗಿ ನಿಲುವುದು ಕಾಣಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
-->