ಗುರುವೆಂಬವನೇ ಹೊಲೆಯ.
ಲಿಂಗಾಂಗಿ ಎಂಬವನೇ ಮಾದಿಗ.
ಜಂಗಮವೆಂಬವನೇ ಸಮಗಾರ.
ಈ ಮೂವರೊಳಗೆ ಹೊಕ್ಕು ಬಳಕೆಯ ಮಾಡಿದಾತನೇ ಭಕ್ತ.
ಆ ಭಕ್ತನೆಂಬುವನೇ ಡೋರ.
ಇಂತೀ ಚತುರ್ವಿಧ ಭೇದವ ತಿಳಿದು,
ಪಾದೋದಕ ಪ್ರಸಾದವ ಕೊಡಬಲ್ಲರೆ
ಗುರುಲಿಂಗಜಂಗಮವೆಂಬೆ.
ಈ ನಿರ್ಣಯವ ತಿಳಿದು ಪಾದೋದಕ ಪ್ರಸಾದ ಕೊಳ್ಳಬಲ್ಲರೆ
ಭಕ್ತ, ಮಹೇಶ್ವರ, ಪ್ರಸಾದಿ, ಪ್ರಾಣಲಿಂಗಿ,
ಶರಣೈಕ್ಯರೆಂಬ ಷಟ್ಸ್ಥಲಬ್ರಹ್ಮಿ ಎಂಬೆ.
ಆತನೇ ಅಚ್ಚಪ್ರಸಾದಿ, ನಿಚ್ಚಪ್ರಸಾದಿ,
ಸಮಯಪ್ರಸಾದಿ, ಏಕಪ್ರಸಾದಿ.
ಇಂತೀ ಕ್ರಮವರಿತು
ಪಾದೋದಕ ಪ್ರಸಾದವ ಕೊಳ್ಳಬಲ್ಲರೆ
ಮೋಕ್ಷವಾಗುವುದಕ್ಕೆ ತಡವಿಲ್ಲವಯ್ಯ.
ಈ ಭೇದವ ತಿಳಿಯದೆ
ಅಯ್ಯಾ, ಹಸಾದ ಮಹಾಪ್ರಸಾದ
ಪಾಲಿಸಿರೆಂದು, ಕರುಣಿಸಿರೆಂದು ಕೃಪೆ ಮಾಡಿ
ಭೂತದೇಹಿಗಳೆದುರಿಗೆ ಪಾತಕಮನುಜರು
ಅಡ್ಡಡ್ಡ ಬಿದ್ದು ಎದಿ ವಡ್ಡುಗಟ್ಟಿ
ಮೊಳಕಾಲು ಗೂಡುಗಟ್ಟಿ ಹಣೆ ಬುಗುಟಿ ಎದ್ದು
ಈ ಪರಿಯಲ್ಲಿ ಅಯ್ಯಾ ಪ್ರಸಾದ ಪಾಲಿಸೆಂದು ಪಡಕೊಂಡು
ಲಿಂಗಕ್ಕೆ ತೋರಿ ತೋರಿ ತಮ್ಮ ಉದರಾಗ್ನಿ ಅಡಗಿಸಿಕೊಂಡು,
ಕಡೆಯಲ್ಲಿ ಎಣ್ಣೆಯ ನಾತಕ್ಕೆ ಅಲಗ ನೆಕ್ಕುವ ಶ್ವಾನನ ಹಾಗೆ
ತಮ್ಮ ನಾಲಿಗಿಯಲಿ ತಳಗಿ ತಾಬಾಣವ ನೆಕ್ಕಿ ನೆಕ್ಕಿ,
ಆ ತಳಗಿ ತಾಬಾಣ ಸವೆದು ಸಣ್ಣಾಗಿ ಹೋದವಲ್ಲದೆ,
ಇಂತಪ್ಪ ಮತಿಭ್ರಷ್ಟ ಹೊಲೆಯ ಮಾದಿಗರಿಗೆ
ಪರಶಿವನ ಮಹಾಪ್ರಸಾದ ಸಾಧ್ಯವೇ? ಸಾಧ್ಯವಲ್ಲ.
ಮುಂದೆ ಎಂಬತ್ತುನಾಲ್ಕುಲಕ್ಷ
ಯೋನಿದ್ವಾರದಲ್ಲಿ ತಿರುಗಿ ತಿರುಗಿ
ಭವದತ್ತ ಮುಖವಾಗಿ ನರಕವನೆ
ಭುಂಜಿಸುವದು ಉಂಟೆಂದ ನಿಮ್ಮ ಶರಣ ವೀರಾಧಿವೀರ
ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ
ನಿರ್ಮಾಯಪ್ರಭುವೆ.