ಅಥವಾ

ಒಟ್ಟು 30 ಕಡೆಗಳಲ್ಲಿ , 14 ವಚನಕಾರರು , 28 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂಧುಗಳ ಬೆಂಬಳಿಯ ಕಳ್ಳನ ಹೆಂಡತಿಗೆ ಭಗ ಮೂರು, ಬಾಯಾರು, ಪೃಷ್ಠ ಎಂಬತ್ತನಾಲ್ಕುಲಕ್ಷ. ರೋಮ ಎಂಟುಕೋಟಿ. ಹಲ್ಲು ಹದಿನಾರು, ನಾಲಗೆ ಏಳು. ಕಿವಿ ಇಪ್ಪತ್ತೈದು, ನಾಡಿ ಶತದಶ. ಮೂಗು ಮೂವತ್ತೇಳು, ಕಾಲೆಂಟು. ಭುಜವೆರಡು, ಕೈವೊಂದೆ. ಹಿಂದೆ ಮುಂದೆ ನೋಡುವ ಕಣ್ಣು, ಅಬ್ಥಿಸಂದ್ಥಿಯೊಳಗೆ ಒಂದೆ ಅದೆ. ಅರ್ಕೇಶ್ವರಲಿಂಗವ ಕಾಣಬಾರದು.
--------------
ಮಧುವಯ್ಯ
ಉರಿವ ಕೊಳ್ಳಿಯ ಮಂಡೆಯಲಿಕ್ಕಿದಡುರಿವುದು ಮಾಬುದೆ ಕಲ್ಲು ಗುಗ್ಗರಿಯ ಮೆಲಿದಡೆ ಹಲ್ಲು ಹೋಹುದು ಮಾಬುದೆ ಶರಣರೊಡನೆ ಸರಸವಾಡಿದಡೆ ನರಕ ತಪ್ಪದು ಕಾಣಾ ಕೂಡಲಸಂಗಮದೇವಾ.
--------------
ಬಸವಣ್ಣ
ಬಾಲತ್ವದಲ್ಲಿ ತನ್ನ ಮಲಮೂತ್ರದೊಡನೆ ಹೊರಳಾಡಿ, ಯೌವನಪ್ರಾಯದಲ್ಲಿ ಮದಮತ್ಸರದಿಂದ ಹೋರಾಡಿ, ಕಾಮದಲ್ಲಿ ಕರಗಿ, ಕ್ರೋಧದಲ್ಲಿ ಕೊರದು, ಲೋಭ ಮೋಹದಿಂದ ಮಗ್ನರಾಗಿ, ಯೌವನಬಲಗುಂದಿ ಮುಪ್ಪುವರಿದು ಹಲ್ಲು ಬಿದ್ದು, ಕಣ್ಣು ಒಳನಟ್ಟು, ಬೆನ್ನು ಬಾಗಿ, ದಮ್ಮು ಹತ್ತಿ, ಗುರುಗೂರಿ ಗರಹತ್ತಿ, ಸಾಯುವ ಮನುಜರಿಗೆ, ವಿಭೂತಿ ವೀಳ್ಯೆ ಎಂದು ಮಾಡಿ, ಅವನ ಪಣೆಯಲ್ಲಿ ವಿಭೂತಿಯ ಧರಿಸಿ, ಸರ್ವಾಂಗದಲ್ಲಿ ವಿಭೂತಿ ಲೇಪನ ಮಾಡಿ, ಸ್ಥಾನಸ್ಥಾನಂಗಳಲ್ಲಿ ರುದ್ರಾಕ್ಷಿಯ ಧರಿಸಿ, ಅವನ ಮನೆಯಲ್ಲಿ ಶಿವಗಣಂಗಳು ಸಲಿಸಿ, ಅವನ ಮಸ್ತಕದ ಮೇಲೆ ಸಕಲ ಗಣಂಗಳು ತಮ್ಮ ಪಾದವನಿಟ್ಟು ಅವನ ಕೈಯಲ್ಲಿ ವಿಭೂತಿ ರುದ್ರಾಕ್ಷಿ ಬಿಲ್ವಪತ್ರಿ ಸುವರ್ಣ ಮೊದಲಾದ ಕಾಂಚನವ ಬ್ಥಿಕ್ಷವ ಕೊಂಡು ಅವನು ಸತ್ತುಹೋದ ಮೇಲೆ ಊರ ಹೊರಗಾಗಲಿ, ಊರೊಳಗಾಗಲಿ, ಲಿಂಗಸ್ಥಾಪನೆಯಿದ್ದ ಮಠಮಾನ್ಯದಲ್ಲಿ ಏಳುಪಾದ ನಿಡಿದು, ಏಳುಪಾದ ಉದ್ದ ಭೂಮಿಯ ಒಳಗೆ, ಐದುಪಾದ ಚೌಕು, ಮೂರುಪಾದ ಅಡ್ಡಗಲ, ಮೂರುಪಾದ ಒಳಯಕ್ಕೆ ತ್ರಿಕೋಣೆ. ಇಂತೀ ಕ್ರಮದಲ್ಲಿ ಕ್ರಿಯಾಸಮಾದ್ಥಿಯ ಮಾಡಿ, ಸುಣ್ಣ ಕೆಂಪುಮಣ್ಣಿನ ಸಾರಣೆಯ ಮಾಡಿ ರಂಗವಾಲಿಯ ತುಂಬಿ, ತಳಿರುತೋರಣವ ಕಟ್ಟಿ, ಕೋಣಿ ಕೋಣಿ ಸ್ಥಾನಕ್ಕೆ ಓಲೆಯ ಮೇಲೆ ಪ್ರಣಮವಂ ಬರೆದು ಆ ಸಮಾದ್ಥಿಯಲ್ಲಿ ಸಂಬಂದ್ಥಿಸಿ, ಮತ್ತಂ, ಅವನ ಶವಕ್ಕೆ ಹಾಗೆ ಪ್ರಣಮವಂ ಬರೆದು ಸಂಬಂದ್ಥಿಸಿ, ಸಂಚರಿಸಿ ಮೇಲೆ ಮೋಕ್ಷವಾಯಿತು ಎಂಬರಯ್ಯಾ; ಮೋಕ್ಷವಾಗಲರಿಯದು. ಅದೆಂತೆಂದಡೆ, ಇಂತಿವೆಲ್ಲವು ಹೊರಗಣ ಉಪಚಾರವು. ಈ ಉಪಚಾರದಿಂದ ಕರ್ಮದೋಷಗಳು ಹರಿದು ಪಿಶಾಚಿಯಾಗನು, ಭವ ಹಿಂಗದು. ಇಂತೀ ಕ್ರಮದಲ್ಲಿ, ಅಂತರಂಗದಲ್ಲಿ ಲಿಂಗಾಂಗಕ್ಕೆ ಸ್ವಾನುಭಾವಜ್ಞಾನಸೂತ್ರದಿಂ ಪ್ರಣವಸಂಬಂಧ ಮಾಡಿಕೊಂಡಡೆ ಅದೇ ಕ್ರಿಯಾಸಮಾದ್ಥಿ, ಗೋಮುಖಸಮಾದ್ಥಿ, ಮಹಾನಿಜ ಅಖಂಡ ಚಿದ್ಬಯಲಸಮಾದ್ಥಿ. ಇಂತಪ್ಪ ಸಮಾದ್ಥಿ ಉಳ್ಳವರಿಗೆ ಭವಬಂಧನ ಹಿಂಗಿ ಮುಂದೆ ಮೋಕ್ಷವಾಗುವದು ನೋಡೆಂದನಯ್ಯ ನಿಮ್ಮ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಗುಡಿಯೊಳಗಿರ್ದು ಗುಡಿಯ ನೇಣ ಕೊಯಿದಡೆ, ಗುಡಿಯ ದಡಿಗೆ ಬಿದ್ದು ಹಲ್ಲು ಹೋಹುದು, ನೋಡಾ, ಪೊಡವಿಗೀಶ್ವರನ ಗರ್ಭಾವಾಸದೊಳಗಿರ್ದು ನುಡಿವರು ಮತ್ತೊಂದು ದೈವವುಂಟೆಂದು. ತುಡುಗುಣಿನಾಯನು ಪಿಡಿತಂದು ಸಾಕಿದಡೆ ತನ್ನೊಡೆಯಂಗೆ ಬಗಳುವಂತೆ ಕಾಣಾ ಕೂಡಲಸಂಗಮದೇವಾ.
--------------
ಬಸವಣ್ಣ
ಮುಪ್ಪುರದರಸಿಂಗೆ ಮುಖವೈದು, ಬಾಯಿ ಹದಿನಾರು, ಹಲ್ಲು ಇನ್ನೂರ ಹದಿನಾರು ನೋಡಾ. ಆರೂಢನಂಗದಲ್ಲಿ ಅರ್ಭುತದ ಕಿಚ್ಚು ಹುಟ್ಟಲು ಮೂರೂರು ಬೆಂದು, ಮುಖವೈದು ಕೆಟ್ಟು, ಬಾಯಿ ಹದಿನಾರು ಮುಚ್ಚಿ, ಇನ್ನೂರಹದಿನಾರು ಹಲ್ಲು ಮುರಿದವು ನೋಡಾ. ಮುಪ್ಪರದರಸ ನುಂಗಿದ್ದ ಕಿಚ್ಚು ನಿಷ್ಪತ್ತಿಯಾಗಲು ಲಿಂಗಾಂಗ ಸಂಯೋಗವಾಯಿತ್ತು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಹಲ್ಲು ಹತ್ತಿ ನಾಲಗೆ ಹೊರಳದಿದ್ದಲ್ಲಿ ಮನವೆರಡಾದಡೆ ಆಣೆ, ನಿಮ್ಮಾಣೆ. ಮಾಡುವ ನೇಮಕ್ಕೆ ಛಲವಿಲ್ಲದಿದ್ದಡೆ ಆಣೆ, ನಿಮ್ಮಾಣೆ. ಕೂಡಲಸಂಗಮದೇವ ಎನ್ನ ಮನವ ನೋಡಲೆಂದಟ್ಟಿದಡೆ ಪ್ರಸಾದವಲ್ಲದೆ ಕೊಂಡೆನಾದಡೆ ಆಣೆ, ನಿಮ್ಮಾಣೆ !
--------------
ಬಸವಣ್ಣ
ಬೆಲ್ಲವ ಮೆಲುವಾತನ ಹಲ್ಲು ಕಹಿಯಾಗಿ, ಹಲ್ಲು ಕಲ್ಲಿನೊಳಗಾಗಿ, ಅಲ್ಲಿಯೆ ಅಡಗಿ ನೋಡುತ್ತದೆ. ಅದ ನಾವು ನೀವು ಎಲ್ಲರೂ ಅರಿವ ಬನ್ನಿ, ಅರ್ಕೇಶ್ವರಲಿಂಗವ ಬಲ್ಲವರಹರೆ.
--------------
ಮಧುವಯ್ಯ
ವನಾಂತರದಲ್ಲಿ ಕೋಗಿಲೆ ಸ್ವರಗೈದಿತೆಂದು ಕುಂಬ್ಥಿನಿಯ ಮೇಲೆ ಕಾಗಿ ತಾ ಕರೆದಂತೆ, ಅರಸಿ ಮಂಚವನೇರಿದಳೆಂದು ಕಸ ನೀರು ಹೊರುವ ದಾಸಿ ತಾ ಹೊರಸನೇರುವಂತೆ, ಮಹಾರಾಜಕುಮಾರನು ಆನೆಯನೇರಿದನೆಂದು ಮಣ್ಣು ಹೊರುವ ಉಪ್ಪರಿಗನಮಗ ತಾ ಕೋಣ[ನ]ನೇರುವಂತೆ, ಮಹಾವೀರಕುಮಾರ ಮಹಾತೇಜಿಯನೇರಿದನೆಂದು ಮೈಲಿಗೆಯ ತೊಳೆಯುವ ಮಡಿವಾಳನಮಗ ತಾ ಮೋಳಿಗೆಯ ಹೇರುವ ಕತ್ತೆಯನೇರುವಂತೆ, ಬಾಲಹನುಮನು ಲಂಕೆಗೆ ಹಾರಿದನೆಂದು ಒಂದು ಮರುಳಕೋತಿ ತಾ ಪರ್ವತವನೇರಿ ಕೆಳಕ್ಕೆ ಬಿದ್ದಂತೆ, ಮಹಾಮಲೆಯೊಳಗೆ ಒಂದು ಮಹಾವ್ಯಾಘ್ರನು ಘುಡುಘುಡಿಸಿ ಲಂಘಿಸಿ ಒಂದು ಪಶುವಿಗೆ ಹಾರಿತೆಂದು ಮಹಾ ಶೀಗರಿಮೆಳೆಯೊಳಗೊಂದು ಮರುಳ ನರಿ ತಾ ಒದರಿ ಹಲ್ಲು ಕಿಸಿದು ಕಣ್ಣು ತೆರೆದೊಂದು ಇಲಿಗೆ ತಾ ಲಂಘಿಸಿ ಹಾರುವಂತೆ. ಇಂತೀ ದೃಷ್ಟಾಂತದಂತೆ ಆದಿ ಆನಾದಿಯಿಂದತ್ತತ್ತಲಾದ ಘನಮಹಾಲಿಂಗದೊಳಗೆ ಜ್ಯೋತಿ ಜ್ಯೋತಿ ಕೂಡಿದಂತೆ, ಬೆರಸದ ಶಿವಶರಣರು ಹಾಡಿದ ವಚನವ ಶಿವಾಂಶಿಕರಾದ ಸಜ್ಜೀವಾತ್ಮರು ಹಾಡಿ ನಿರ್ವಯಲಾದರೆಂದು ತ್ರಿಭುವನ ಮೊದಲಾದ ಚತುರ್ದಶಭುವನದಲ್ಲಿರುವ ದೇವ ದಾನವ ಮಾನವರು ಮೊದಲಾದ ಜೀವಾತ್ಮರು ಇಟ್ಟೆಯ ಹಣ್ಣ ನರಿ ತಾ ತಿಂದು ಪಿಟ್ಟೆಸಿಕ್ಕು ಬಾಯಿತೆರೆದು ಒದರುವಂತೆ ಏಕಲಿಂಗ ನಿಷ್ಠಾಪಾರಿಗಳ ವಚನವ ಮಲತ್ರಯವೆಂಬ ಇಟ್ಟೆಯಹಣ್ಣ ತಿಂದು ಪಿಟ್ಟೆಸಿಕ್ಕು ಬಾಯಿ ತೆರೆದು ಬೇನೆಹಾಯ್ದ ಕುರಿಯಂತೆ ಒದರಿ ಒದರಿ ಸತ್ತು ಭವದತ್ತ ಮುಖವಾಗಿ ಹೋದರಲ್ಲದೆ ಇವರು ಲಿಂಗೈಕ್ಯಗಳಾಗಲರಿಯರು ನೋಡೆಂದನಯ್ಯ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಪಂಚತತ್ತ್ವದೊಳು ಪಂಚಕೃತಿಯೊಳು ಪಂಚತತ್ತ್ವ. ಶರಣನ ಪಂಚೇಂದ್ರಿಯ ಶಿವನ ಪಂಚಮುಖವೆಂದರಿಯದೆ ಹಂಚು ಹಿಡಿದು ಹಲ್ಲು ತೆರೆವಂತೆ ಕಲ್ಲು ಹಿಡಿದು ತನ್ನ ಕಂಡೆನೆಂಬ ಖುಲ್ಲದೇಹಿಗಳಿಗೆ ಶಿವಲಿಂಗ ಮುನ್ನವೆ ಇಲ್ಲವೆಂದ ನಿಮ್ಮ ಶರಣ ಚೆನ್ನಯ್ಯಪ್ರಿಯ ನಿರ್ಮಾಯಪ್ರಭುವೆ.
--------------
ಚೆನ್ನಯ್ಯ
ಒಂದೆ ಕೋಲಿನಲ್ಲಿ ಮೂರುಲೋಕ ಮಡಿಯಿತ್ತು. ಬಿಲ್ಲಿನ ಕೊಪ್ಪು ಹಾರಿ ನಾರಿ ಸಿಡಿದು ನಾರಾಯಣನ ತಾಗಿತ್ತು. ನಾರಾಯಣನ ಹಲ್ಲು ಮುರಿದು ಬ್ರಹ್ಮನ ಹಣೆಯೊಡೆಯಿತ್ತು. ಹಣೆ ಮುರಿದು ರುದ್ರನ ಹಣೆಗಿಚ್ಚಿನಲ್ಲಿ ಬಿದ್ದಿತ್ತು, ನಷ್ಟವಾಯಿತ್ತು; ಗೊಹೇಶ್ವರನ ಶರಣ ಅಲ್ಲಮ ಬದುಕು ನಾಮ ನಷ್ಟವಾಯಿತ್ತು.
--------------
ಗಾಣದ ಕಣ್ಣಪ್ಪ
ಪ್ರಸಾದ ಪ್ರಸಾದವೆಂದು ನುಡಿದುಕೊಂಡುಂಬಿರಿ. ಎಲ್ಲರಿಗೆಲ್ಲಿಹುದೊ ಶಿವಪ್ರಸಾದ ? ಇಂತಪ್ಪ ಪ್ರಸಾದದ ಘನವಬಲ್ಲರೆ ಹೇಳಿರಿ, ಅರಿಯದಿದ್ದರೆ ಕೇಳಿರೋ. ಪ್ರಸಾದವೆಂಬುದು, ಪರಾಪರನಾಮವುಳ್ಳ ಪರಮಾನಂದವೇ ಪ್ರಸಾದ ಕಾಣಿರೋ. ಪ್ರಸಾದವೆಂಬುದು, ಪರಮನಿರಂಜನ ಪರಬ್ರಹ್ಮವೇ ಪ್ರಸಾದ ಕಾಣಿರೋ. ಪ್ರಸಾದವೆಂಬುದು, ಅಖಿಳಕೋಟಿ ಬ್ರಹ್ಮಾಂಡಗಳ ಗಮಿಸುವುದಕ್ಕೆ ಲಯಿಸುವುದಕ್ಕೆ ಮಾತೃಸ್ಥಾನವಾದ ಚಿತ್ಪ್ರಕಾಶವೇ ಪ್ರಸಾದ ಕಾಣಿರೋ. ಪ್ರಸಾದವೆಂಬುದು, ಪರಶಿವತತ್ವ ಪರಿಪೂರ್ಣತ್ವ ಪರಂಜ್ಯೋತಿ ಪರಮಪ್ರಕಾಶವೇ ಪ್ರಸಾದ ಕಾಣಿರೋ. ಇಂತಪ್ಪ ವಿಚಾರವ ತಿಳಿದು ಪ್ರಸಾದವ ಕೊಡಬಲ್ಲರೆ ಗುರುಲಿಂಗಜಂಗಮರೆಂದೆನ್ನಬಹುದು. ಇಂತಪ್ಪ ನಿರ್ಣಯವ ತಿಳಿದು ಪ್ರಸಾದವ ಕೊಳಬಲ್ಲಡೆ ಪ್ರಸಾದಿಗಳೆನ್ನಬಹುದು; ಪ್ರಳಯವಿರಹಿತರೆಂದೆನ್ನಬಹುದು. ಸತ್‍ಸದ್ಭಕ್ತರೆಂದೆನ್ನಬಹುದು. ಇಂತೀ ಭೇದವ ತಿಳಿಯದೆ ನೀರು ಕೂಳಿಗೆ ಪಾದೋದಕ ಪ್ರಸಾದವೆಂದು ಒಡಲಹೊರವುದು ಪ್ರಸಾದವಲ್ಲ. ಅಂತಪ್ಪ ಘನಮಹಾಪ್ರಸಾದದ ಸಕೀಲಸಂಬಂಧವನರಿದು ನಿರ್ಧರಿಸಿದವರಾರೆಂದರೆ, ಹಿಂದಕ್ಕೆ ಬಸವಾದಿ ಪ್ರಭುದೇವರಾಂತ್ಯಮಾದ ಏಳುನೂರಾ ಎಪ್ಪತ್ತು ಪ್ರಮಥಗಣಂಗಳು ಕೊಂಡುದು ಇದೇ ಪ್ರಸಾದ. ಇನ್ನು ಮುಂದಿನವರಿಗಾದಡು ಇದೇ ಪ್ರಸಾದ. ಇಂತಪ್ಪ ಪರತತ್ವಪ್ರಸಾದಕ್ಕೆ ಸುಜ್ಞಾನಿಗಳಾಗಿ ಸತ್ಕ್ರಿಯಾ ಸಮ್ಯಜ್ಞಾನವೆಂಬ ಎರಡುಕಾಲಿಗೆ ಷಡ್ವಿಧಭಕ್ತಿ ಎಂಬ ಹಲ್ಲು ಜೋಡಿಸಿ, ಏಣಿಯ ಹಚ್ಚಿ, ನಿರ್ವಯಲಪದವನೈದಲರಿಯದೆ, ಅಹಂಕಾರ ಮಮಕಾರವೆಂಬ ಎರಡುಕಾಲಿಗೆ ಅಷ್ಟಮದವೆಂಬ ಹಲ್ಲುಜೋಡಿಸಿ ಸಪ್ತವ್ಯಸನಗಳೆಂಬ ಕೀಲುಜಡಿದು ಷಡ್ವರ್ಗಗಳೆಂಬ ಹಗ್ಗದ ಬಿರಿಯ ಬಂಧಿಸಿ, ಏಣಿಯ ಯಮಲೋಕಕ್ಕೆ ಹಚ್ಚಿ, ನರಕವ ಭುಂಜಿಸುವ ನರಕಜೀವಿಗಳಿಗೆ ಪ್ರಸಾದಿಗಳೆಂದಡೆ ನಿಮ್ಮ ಶರಣ ಚೆನ್ನಬಸವಣ್ಣ ಕಂಡು, ಇಂತಪ್ಪ ಮೂಳಹೊಲೆಯರ ಮೂಗಕೊಯ್ದು ಮೆಣಸಿನ ಹಿಟ್ಟು ತುಂಬಿ ಮೂಡಲದಿಕ್ಕಿಗೆ ಅಟ್ಟೆಂದ ಕಾಣಾ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ನರೆ ಕೆನ್ನೆಗೆ, ತೆರೆ ಗಲ್ಲಕೆ, ಶರೀರ ಗೂಡುವೋಗದ ಮುನ್ನ, ಹಲ್ಲು ಹೋಗಿ, ಬೆನ್ನು ಬಾಗಿ, ಅನ್ಯರಿಗೆ ಹಂಗಾಗದ ಮುನ್ನ, ಕಾಲಮೇಲೆ ಕೈಯನೂರಿ ಕೋಲ ಹಿಡಿಯದ ಮುನ್ನ, ಮುಪ್ಪಿಂದೊಪ್ಪವಳಿಯದ ಮುನ್ನ, ಮೃತ್ಯು ಮುಟ್ಟದ ಮುನ್ನ ಪೂಜಿಸು ಕೂಡಲಸಂಗಮದೇವನ161
--------------
ಬಸವಣ್ಣ
ರಂಡೆಮುಂಡೆಯ ಮಗ ರಾಜಕುಮಾರ ಗಗನದಲ್ಲಿ ಪುಟ್ಟಿ, ಭೂಮಿಯಲ್ಲಿ ಬಂದು, ಆ ಭೂಮಿಯ ರಾಜನಲ್ಲಿ ಯುದ್ಭವ ಮಾಡಿ, ಆನೆಯ ಹಲ್ಲು ಕಿತ್ತು, ಕುಂಭವನೊಡೆದು, ಕುದುರೆಯ ಕಾಲ ಮುರಿದು, ನಾಯಿಯ ನಾಲಿಗೆ ಕಿತ್ತು, ಬೆಕ್ಕಿನ ಕಣ್ಣು ಕಳೆದು ಉಣ್ಣದೆ ಉಪವಾಸ ಮಾಡದೆ ಯುದ್ಧದಿಂ ತ್ರಿಲೋಕದ ರಾಜರ ಗೆದ್ದು, ತ್ರಿಲೋಕದ ರಾಜರಲ್ಲಿ ಸತ್ತು ನಿಂದಿತ್ತು. ಈ ಭೇದವ - ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವಿನ ಶರಣರು ಬಲ್ಲರಲ್ಲದೆ ಮಿಕ್ಕಿನ ಜೀವಾತ್ಮರು ಅರಿಯರು.
--------------
ಕಾಡಸಿದ್ಧೇಶ್ವರ
ಶಿವಯೋಗಿ ಶಿವಯೋಗಿಯೆಂದ್ಹೆಸರಿಟ್ಟುಕೊಂಡು ನುಡಿವ ಅಣ್ಣಗಳಿರಾ ! ನಿಮ್ಮ ಧ್ಯಾನಮೂಲವೆಂಬ ಮನೆಯ ಪೂರ್ವಸ್ಥಾನ ಬಾಗಿಲೊಳಗೆ ಬರುವ ಭಾನುವಿನ ಬಟ್ಟೆಯ ಬೆಳಕಿನಲ್ಲಿ ನಿಂದು, ಶ್ರೀರಾಮ ರಾಮನೆಂಬುವ ಸ್ಮರಣೆಯನು ಮಾಡಬಲ್ಲರೆ ಆತನಿಗೆ ತನ್ನ ಕಾಯಪುರವೆಂಬ ಪಟ್ಟಣದೊಳಗೆ ಮೇಲುದುರ್ಗದೊಳಗಿರ್ದು ಅರಸಿನ ದಾಳಿಯನು ಮಾಡಿ ಕೊಳುಕೊಂಡು ಹೋದನೆಂದು ಬರುವ ಕಾಲನ ಪರಿವಾರವ ಕಂಡು, ಮೇಲುದುರ್ಗದೊಳಗಿರ್ದ ಅರಸಿನ ವಲಯಂ ಬಿಟ್ಟು, ಪಟ್ಟಣವ ಹಾಳಕೆಡವಿ ಗೋಳಿಟ್ಟ ಅರಸನಂತೆ, ಬಯಲಿಗೆ ಬಯಲು ಆಕಾರದಲ್ಲಿ ನಿಂದು, ಬರುತ್ತಲಾ ಪರಿವಾರವನ್ನು ಕಂಡು, ಕಾದಿ ಜಗಳವನು ಕೊಟ್ಟು ಹಿಂದಕ್ಕೆ ನೂಕಿ, ಪರಾಲಯದೊಳಗಿರ್ದ ಅರಸನನ್ನು ಮೇಲುದುರ್ಗಕ್ಕೆ ತಂದು ಇಂಬಿಟ್ಟು ಹಾಳ ಪಟ್ಟಣವನ್ನು ತುಂಬಿಸಿ ಮೇಳೈಸಿ ಮನೆಯ ಬಂಧು ದಾಯಾದರೆಲ್ಲರು ಆತಂಗೆ ಕಾಲವಂಚನೆಗೆ ಗೆಲಿದಂಥ ಶಿವಯೋಗೀಶ್ವರನೆಂದೆನ್ನಬಹುದು ಕಾಣಿರೋ. ಇಂತು ಕಾಯದ ಕೀಲನೆ ಅರಿಯದೆ, ಕಾಲವಂಚನೆಗೆ ಒಳಗಾಗಿ, ನಾನು ಶಿವಯೋಗಿ ಶಿವಯೋಗಿಯೆಂದು ಹೆಸರಿಟ್ಟುಕೊಂಡು ಒಬ್ಬರಿಗೊಬ್ಬರು ಗುರೂಪದೇಶವ ಕೊಟ್ಟು, ಉರಿಯ ಸೋಂಕಿದ ಕರ್ಪುರದ ಧೂಪದಂತೆ ಇರಬೇಕೆಂದು, ಹೆಂಡಿರ ಬಿಟ್ಟು ಮಕ್ಕಳ ಬಿಟ್ಟು ಮಂಡೆಯನು ಬೋಳಿಸಿಕೊಂಡು ಮನದ ನಿಲುಗಡೆಯನರಿಯದ ಗೂಬೆಗಳು ಕಾವಿಯ ಅರಿವೆಯನು ಹೊದ್ದುಕೊಂಡು, ದೇವರೊಳಗೆ ದೇವರೆಂದು ಪೂಜೆಗೊಂಡು, ಮಠ ಮನೆಯಲ್ಲಿ ಬಸಲ ಪರ್ಯಾದಿಯಲ್ಲಿ ನಿಂದು, ಬೋನದಾಸೆಗೆ ಜ್ಞಾನಬೋಧೆಯನು ಹೇಳುವ ಗುರುವಿನ ಬ್ರಹ್ಮಕಲ್ಪನೆಯ ಮನ ತುಂಬಿ ಬಿರಿಕಿಕ್ಕಿ ಹೋಗುವಾಗ, ಕಾಲನವರು ತಮ್ಮ ಪತ್ರವನು ನೋಡಿಕೊಂಡು ಬಂದು ಹೋಗಲಿತ್ತ ಕಲಿತ ವಿದ್ಯೆ ಕೈಕಾಲನು ಹಿಡಿದು ಎಳಕೊಂಡು ಹೋಗುವಾಗ ಗಟ್ಟಿನೆಲಕ್ಕೆ ಬಿದ್ದು ಕೆಟ್ಟೆ ಕೆಟ್ಟೆ ಸತ್ತೆ ಸತ್ತೆ ಎಂದು ಹಲ್ಲು ಗಂಟಲ್ಹರಕೊಂಡು ಹೋಗುವಂಥ ಶಿವಯೋಗಿಗಳೆಂಬ ಕುಟಿಲರ ಕಂಡು ನಗುತ್ತಿರ್ದಾತ ಸಿದ್ಧಮಲ್ಲನದಾತ ಮೇಗಣಗವಿಯ ಗುರುಸಿದ್ಧೇಶ್ವರಪ್ರಭುವೆ.
--------------
ಸಿದ್ಧಮಲ್ಲಪ್ಪ
ಇವರೆಲ್ಲರ ಕಂಡು ನಾನವಳಿಗೆ ಹೋಗಲಾಗಿ, ಕುಳ್ಳಿರುವುದಕ್ಕೆ ಮೊದಲೆ ಒದ್ದಳೆನ್ನ ಬಾಯ ಹಲ್ಲು ಮುರಿಯಿತ್ತು. ಗಲ್ಲಮೊಡೆಯಿತ್ತು ನಾಲಗೆ ಉಡುಗಿತ್ತು. ಇನ್ನಿವಳ ಗೊಡವೆ ಬೇಡ ಆತುರವೈರಿ ಮಾರೇಶ್ವರಾ.
--------------
ನಗೆಯ ಮಾರಿತಂದೆ
ಇನ್ನಷ್ಟು ... -->