ಹಾಕಿದ ಮುಂಡಿಗೆಯ ಎತ್ತುವರಿಲ್ಲ.
ಎತ್ತಿದ ಮುಂಡಿಗೆಯ ದೃಷ್ಟದಲ್ಲಿ , ಶ್ರುತದಲ್ಲಿ ಗೆದ್ದು , ಇಸಕೊಂಬವರಿಲ್ಲ .
ಈ ಉಭಯದ ಗೊತ್ತನರಿಯದೆ ಕೆಟ್ಟರು,
ನಾವು ಭಕ್ತ ಜಂಗಮರೆಂಬುವರೆಲ್ಲ . ಅದಂತಿರಲಿ.
ನಾನು ನೀನು ಎಂಬುಭಯದ ಗೊತ್ತನರಿದು,
ದೃಷ್ಟದಲ್ಲಿ ಶ್ರುತದಲ್ಲಿ ಗೆದ್ದು ಕೊಟ್ಟು, ನ್ಯಾಯದಲ್ಲಿ
ಜಗವನೊಡಂಬಡಿಸಿ ಕೊಟ್ಟು,
ಆ ಸಿಕ್ಕಿಹೋಗುವ ಮುಂಡಿಗೆಯ ಎತ್ತಿಕೊಂಡು,
ಸುತ್ತಿ ನೋಡಿದರೆ ಬಟ್ಟಬಯಲಾಗಿರ್ದಿತ್ತು .
ಆ ಬಟ್ಟಬಯಲ ದಿಟ್ಟಿಸಿ ನೋಡಲು, ನೆಟ್ಟಗೆ ಹೋಗುತ್ತಿದೆ .
ಹೋಗಹೋಗುತ್ತ ನೋಡಿದರೆ, ನಾ ಎತ್ತ ಹೋದೆನೆಂದರಿಯೆನಯ್ಯಾ,
ಬಸವಪ್ರಿಯ ಕೂಡಲಚೆನ್ನಬಸವಣ್ಣ.