ಅಥವಾ

ಒಟ್ಟು 54 ಕಡೆಗಳಲ್ಲಿ , 24 ವಚನಕಾರರು , 48 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿಮ್ಮ ನೆನೆವುತ್ತಿದ್ದಿತ್ತು_ನೆನೆವ ಮುಖವಾವುದೆಂದರಿಯದೆ, ಪೂಜೆಯ ಪೂಜಿಸುತ್ತಿದ್ದಿತ್ತು_ಪೂಜೆಯ ಮುಖವಾವುದೆಂದರಿಯದೆ; ಆಡಿ ಹಾಡಿ ಬೇಡುತ್ತಿದ್ದಿತ್ತು_ಬೇಡುವ ಮುಖವಾವುದೆಂದರಿಯದೆ; ಕಾಯದಲ್ಲಿ ಇಲ್ಲ, ಜೀವದಲ್ಲಿಇಲ್ಲ, ಭಾವದಲ್ಲಿ ಇಲ್ಲ; ಭರಿತವು ಅದು ತಾನಪ್ಪುದು. ತಾನಲ್ಲದುದೇನ ಹೇಳುವೆ ಕೌತುಕವ? ಗುಹೇಶ್ವರನೆಂಬ ಹೆಸರೊಳಗಿದ್ದುದ ಬೆಸಗೊಂಬವರಿಲ್ಲ ನಿರಾಳದ ಘನವ !
--------------
ಅಲ್ಲಮಪ್ರಭುದೇವರು
ಅಕ್ಕಿ ಬೇಳೆ ಬೆಲ್ಲ ಉಪ್ಪು ಮೆಣಸು ಅಡಕೆ ಫಲ ರಸ ದ್ರವ್ಯ ಮುಂತಾದ ದ್ರವ್ಯಕ್ಕೆ ವ್ರತವೊ ? ಮುಟ್ಟುವ ತಟ್ಟುವ ಸೋಂಕುವ ಚಿತ್ತಕ್ಕೆ ವ್ರತವೊ ? ಇವು ಬಾಹ್ಯದಲ್ಲಿ ಮಾಡುವ ಸೌಕರಿಯವಲ್ಲದೆ ವ್ರತಕ್ಕೆ ಸಲ್ಲ. ವ್ರತವಾವುದೆಂದಡೆ ತನ್ನಯ ಸ್ವಪ್ನದಲ್ಲಿ ತನಗಲ್ಲದುದ ಕಂಡಡೆ, ತಾ ಮುಟ್ಟದುದ ಮುಟ್ಟಿದಡೆ, ತಾ ಕೊಳ್ಳದುದ ಕೊಂಡಡೆ, ಆ ಸೂಕ್ಷ್ಮತನುವಿನಲ್ಲಿ ಆ ತನುವಂ ಬಿಟ್ಟು ನಿಂದುದು ವ್ರತ. ಸ್ಥೂಲತನುವಿನಲ್ಲಿ ಸರ್ವರ ನಿಂದೆಗೊಡಲಾಗದೆ, ಮಾಡಿಕೊಂಡ ನೇಮಕ್ಕೆ ಕೇಡುಬಂದಲ್ಲಿ ಆ ಅಂಗಕ್ಕೆ ಓಸರಿಸದೆ ನಿಂದುದು ಆಚಾರ. ಇಂತೀ ಅಂತರಂಗದಲ್ಲಿ ವ್ರತ, ಬಹಿರಂಗದಲ್ಲಿ ಆಚಾರ, ಇಂತೀ ಉಭಯ ಸಿದ್ಭವಾಗಿ ನಡೆವುದೆ ವ್ರತ ಆಚಾರz ಇಂತಿವನರಿದು ಮರೆದಲ್ಲಿ, ತಾ ಮಾಡಿಕೊಂಡ ಕುತ್ತಕ್ಕೆ ಹಾಡಿ ಮದ್ದನರೆದಂತೆ, ಜಗಕ್ಕೆ ಭಕ್ತನಾಗಿ ಆತ್ಮಂಗೆ ಅನುಸರಣೆಯಾದಲ್ಲಿ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಕ್ಕೆ ಸಲ್ಲದ ನೇಮ.
--------------
ಅಕ್ಕಮ್ಮ
ಭರಿತಾರ್ಪಣ ಸಹಭೋಜನ ನೈವೇದ್ಯ ಸಹ ಇಂತೀ ತ್ರಿವಿಧಭೇದಂಗಳ ಅಂಗೀಕರಿಸಿದ ಮತ್ತೆ ಕರುಳಿಲ್ಲದ ಕಲಿಯಂತೆ, ಒಡಲಿಲ್ಲದ ಅಂಗದಂತೆ, ಸಂಗವಿಲ್ಲದ ನಿರಂಗದಂತೆ, ದಗ್ಧಪಟದಂತೆ, ಒಂದನೂ ಹೊದ್ದದ ಬಹುವರ್ಣದಂತೆ, ಅಂಗವಿದ್ದೂ ಅಳಿದು ತೋರುವ ನಿರಂಗಿಗಲ್ಲದೆ ಈ ತ್ರಿವಿಧ ವ್ರತ ಪ್ರಸಾದವಿಲ್ಲ. ನಾನು ಎನಗೆ ಬಂದ ಕುತ್ತಕ್ಕೆ ಹಾಡಿ ಹರಸಿ ಮದ್ದನರೆವುತ್ತಿದ್ದೇನೆ, ಎನ್ನ ಕಾಡಬೇಡ. ಕ್ರೀ ತಪ್ಪದೆ ಎನ್ನ ಕೂಡಿಕೊ, ಚೆನ್ನ ಚೆನ್ನ ಕೂಡಲ ರಾಮೇಶ್ವರಲಿಂಗ ಸಂಗ.
--------------
ಭರಿತಾರ್ಪಣದ ಚೆನ್ನಬಸವಣ್ಣ
ತಲೆಯಿಲ್ಲದ ಕಾಗೆ ನೆಲದಲ್ಲಿ ನಡೆಯಿತ್ತು. ಹುಲಿ ನಲಿದು ಗಿಲಿಗಿಸಿ ಗೆಜ್ಜೆಗಟ್ಟಿ ಒಲೆದಾಡಿತ್ತು. ಬಲುಹೆನಿಸಿದ ಕರಡಿ ಹಾಡಿ ಹರಸಿ ಬೆಳೆಯಿತ್ತು. ಕಾಳರಕ್ಕಸಿಯ ಮಗುವು ಚಂದ್ರಸೂರ್ಯರ ರಾಟಾಳದ ಹುರಿಯೊಳಗೆ ತಿರಿಗಿತ್ತು. ಕಳವಳಿಸುವ ಕಪಿಯ ಭೂತ ಹೊಡೆದು, ಚೋಳೂರೆ ಘಾಳಿಯೊಳು ಸಿಕ್ಕಿ, ಸೌರಾಷ್ಟ್ರ ಸೋಮೇಶ್ವರನ ಕಾಣದೆ ಕನ್ನಡಕದ ಕಣ್ಣಿನಂತೆ ಕಣ್ಣೆನಿಸಿ ಕಣ್ಣುಗೆಟ್ಟಿತ್ತು.
--------------
ಆದಯ್ಯ
ಹಾಡಿ ಹಾಡುವ ಹರಕೆಯ ಕೇಡು, ಕೂಡಿ ಮಾಡುವ ಕೂಡಿಕೆಯ ಕೇಡು, ಹಾಡಿ ಮಾಡಿ, ಕೂಡಿ ಮಾಡಿ ಬದುಕಿಗೆ ಕೇಡು ತಂದುಕೊಳ್ಳಲೇತಕೊ? ತನ್ನ ಬೇಡಲಿಕ್ಕೆ ಬಂದ ಜಂಗಮದ ಇರವನರಿತು, ನೀಡ ಕಲಿತರೆ ರೂಡ್ಥಿಯೊಳಗೆ ಆತನೆ ಜಾಣನೆಂದಾತ ನಮ್ಮ ಅಂಬಿಗರ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಎಂಬತ್ತು (ಎರಡೆಂಬತ್ತು?) ಕೋಟಿ ವಚನವ ಹಾಡಿ ಹಲವ ಹಂಬಲಿಸಿತ್ತೆನ್ನ ಮನವು, ಮನ ಘನವನರಿಯದು, ಘನ ಮನವನರಿಯದು. ಗುಹೇಶ್ವರನೆಂಬ ಲಿಂಗವನರಿದ ಬಳಿಕ ಗೀತವೆಲ್ಲ ಒಂದು ಮಾತಿನೊಳಗು !
--------------
ಅಲ್ಲಮಪ್ರಭುದೇವರು
ಹಾಡಿ ಮಾಡುವರೆಲ್ಲ ಹಾದರಗಿತ್ತಿಯ ಮಕ್ಕಳಯ್ಯಾ, ಕೂಡಿ ಮಾಡುವರೆಲ್ಲ ಕುಂಟಣಿಗಿತ್ತಿಯ ಮಕ್ಕಳಯ್ಯಾ, ಬೇಡಿ ಮಾಡುವರೆಲ್ಲ ಬೇಡಿತಿಯ ಮಕ್ಕಳಯ್ಯಾ, ಡಂಬಕತನದಲ್ಲಿ ಮಾಡುವರೆಲ್ಲ ಡೊಂಬಗಿತ್ತಿಯ ಮಕ್ಕಳಯ್ಯಾ, ಅಚ್ಚ ಪ್ರಸಾದಿಗಳೆಂಬವರೆಲ್ಲ ಮುಚ್ಚಗಿತ್ತಿ[ಮಾದಗಿತ್ತಿ ?]ಯ ಮಕ್ಕಳಯ್ಯಾ, ಸಮಯಾಚಾರದಲ್ಲಿಪ್ಪವರೆಲ್ಲ ಸಮ್ಮಗಾರಿಯ ಮಕ್ಕಳಯ್ಯಾ, ಜಂಗಮ ಬಂದ ಬರವ, ನಿಂದ ನಿಲುಕಡೆಯ ನೋಡಿ, ಮಾಡಿ ನೀಡಿ ಸ್ವಯಾನುಭಾವದ ಸಮ್ಯಗ್‍ಜ್ಞಾನವನರಿವವರು ಕೂಡಲಚೆನ್ನಸಂಗನ ಶರಣರಯ್ಯಾ.
--------------
ಚನ್ನಬಸವಣ್ಣ
ಸಂಸಾರವ ಬಿಟ್ಟೆನೆಂದು, ನಿರಾಶಾಪದವ ಮಾಡಿ, ತಲೆಯ ಬೋಳಿಸಿಕೊಂಡು, ಕುದಿದು ಕೋಟಲೆಗೊಂಡು, ಮನೆ ಮನೆ ತಪ್ಪದೆ ಭಿಕ್ಷವ ಬೇಡಿ, ಉಂಡು, ಎದ್ದು ಹೋಗಿ ತತ್ವವ ಬೋಧಿಸಿ, ಉದರವ ಹೊರೆವಂದು ಮುನ್ನವಿಲ್ಲ ಮರುಳಾ ? ಕಾಡಿ ಬೇಡಿ ಹಾಡಿ ಒಡಲ ಹೊರೆವಂಗೆ, ಮುಕ್ತಿಯುಂಟೆ ಮರುಳಾ ? ಜಂಗಮದಂಗವು ನಿರ್ಗಮನಿ, ಭಕ್ತಪ್ರಿಯ ನಮ್ಮ ಗುಹೇಶ್ವರಲಿಂಗದಲ್ಲಿ ಜಂಗಮದ ನಡೆಯಿಲ್ಲ ಕಾಣಾ, ಎಲೆ ಮರುಳಾ.
--------------
ಅಲ್ಲಮಪ್ರಭುದೇವರು
ಲಿಂಗರೂಪಿನ ಸಹಜದುದಯದ ತುಟ್ಟತುದಿಯ ತುರೀಯಾವಸ್ಥೆಯ ಆಡಿ ರೂಪಿಸುವ, ಹಾಡಿ ರೂಪಿಸುವ ಅರಿವಿನುಪಚಾರವುಳ್ಳನ್ನಕ್ಕರ. ಬಯಲು ಬಲಿದು ತಾನು ತಾನಾಗಿಪ್ಪ. ಮಹಾಲಿಂಗ ಕಲ್ಲೇಶ್ವರಾ, ನಿಮ್ಮ ಶರಣನು.
--------------
ಹಾವಿನಹಾಳ ಕಲ್ಲಯ್ಯ
ತನ್ನ ಬುದ್ಧಿ ತನ್ನ ಚಿತ್ತದಲ್ಲಿ ಅಡಗಿದ ಮತ್ತೆ ನಾಡೆಲ್ಲರ ಕೂಡಿ ಓದಿ ಹಾಡಿ ಹೇಳಲೇತಕ್ಕೆ? ತನ್ನ ತಾನರಿದಲ್ಲಿ ಕಾಬ ಇದಿರು ತನಗೆ ಅನ್ಯಬ್ಥಿನ್ನವಿಲ್ಲಾ ಎಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ವನಾಂತರದಲ್ಲಿ ಕೋಗಿಲೆ ಸ್ವರಗೈದಿತೆಂದು ಕುಂಬ್ಥಿನಿಯ ಮೇಲೆ ಕಾಗಿ ತಾ ಕರೆದಂತೆ, ಅರಸಿ ಮಂಚವನೇರಿದಳೆಂದು ಕಸ ನೀರು ಹೊರುವ ದಾಸಿ ತಾ ಹೊರಸನೇರುವಂತೆ, ಮಹಾರಾಜಕುಮಾರನು ಆನೆಯನೇರಿದನೆಂದು ಮಣ್ಣು ಹೊರುವ ಉಪ್ಪರಿಗನಮಗ ತಾ ಕೋಣ[ನ]ನೇರುವಂತೆ, ಮಹಾವೀರಕುಮಾರ ಮಹಾತೇಜಿಯನೇರಿದನೆಂದು ಮೈಲಿಗೆಯ ತೊಳೆಯುವ ಮಡಿವಾಳನಮಗ ತಾ ಮೋಳಿಗೆಯ ಹೇರುವ ಕತ್ತೆಯನೇರುವಂತೆ, ಬಾಲಹನುಮನು ಲಂಕೆಗೆ ಹಾರಿದನೆಂದು ಒಂದು ಮರುಳಕೋತಿ ತಾ ಪರ್ವತವನೇರಿ ಕೆಳಕ್ಕೆ ಬಿದ್ದಂತೆ, ಮಹಾಮಲೆಯೊಳಗೆ ಒಂದು ಮಹಾವ್ಯಾಘ್ರನು ಘುಡುಘುಡಿಸಿ ಲಂಘಿಸಿ ಒಂದು ಪಶುವಿಗೆ ಹಾರಿತೆಂದು ಮಹಾ ಶೀಗರಿಮೆಳೆಯೊಳಗೊಂದು ಮರುಳ ನರಿ ತಾ ಒದರಿ ಹಲ್ಲು ಕಿಸಿದು ಕಣ್ಣು ತೆರೆದೊಂದು ಇಲಿಗೆ ತಾ ಲಂಘಿಸಿ ಹಾರುವಂತೆ. ಇಂತೀ ದೃಷ್ಟಾಂತದಂತೆ ಆದಿ ಆನಾದಿಯಿಂದತ್ತತ್ತಲಾದ ಘನಮಹಾಲಿಂಗದೊಳಗೆ ಜ್ಯೋತಿ ಜ್ಯೋತಿ ಕೂಡಿದಂತೆ, ಬೆರಸದ ಶಿವಶರಣರು ಹಾಡಿದ ವಚನವ ಶಿವಾಂಶಿಕರಾದ ಸಜ್ಜೀವಾತ್ಮರು ಹಾಡಿ ನಿರ್ವಯಲಾದರೆಂದು ತ್ರಿಭುವನ ಮೊದಲಾದ ಚತುರ್ದಶಭುವನದಲ್ಲಿರುವ ದೇವ ದಾನವ ಮಾನವರು ಮೊದಲಾದ ಜೀವಾತ್ಮರು ಇಟ್ಟೆಯ ಹಣ್ಣ ನರಿ ತಾ ತಿಂದು ಪಿಟ್ಟೆಸಿಕ್ಕು ಬಾಯಿತೆರೆದು ಒದರುವಂತೆ ಏಕಲಿಂಗ ನಿಷ್ಠಾಪಾರಿಗಳ ವಚನವ ಮಲತ್ರಯವೆಂಬ ಇಟ್ಟೆಯಹಣ್ಣ ತಿಂದು ಪಿಟ್ಟೆಸಿಕ್ಕು ಬಾಯಿ ತೆರೆದು ಬೇನೆಹಾಯ್ದ ಕುರಿಯಂತೆ ಒದರಿ ಒದರಿ ಸತ್ತು ಭವದತ್ತ ಮುಖವಾಗಿ ಹೋದರಲ್ಲದೆ ಇವರು ಲಿಂಗೈಕ್ಯಗಳಾಗಲರಿಯರು ನೋಡೆಂದನಯ್ಯ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಅಯ್ಯಾ, ಹಿಂದೆಯಾನು ಮಾಡಿದ ಮರಹಿಂದ ಬಂದೆನೀ ಭವದಲ್ಲಿ. ನಿಮ್ಮ ಲೀಲೆ ನಿಮ್ಮ ವಿನೋದ ಸೂತ್ರದಿಂದ, ಲಕ್ಷದ ಮೇಲೆ ತೊಂಬತ್ತಾರು ಸಾವಿರ ಗೀತಂಗಳ ಆಡಿ ಹಾಡಿ, ಆ ದಾಸೋಹವೆಂಬ ಮಹಾಗಣಸಂಕುಳದೊಳೆನ್ನನಿರಿಸಿ, ನಿಮ್ಮ ಭಕ್ತಿಯ ಘನವ ನೀವೆ ಮೆರೆಯಲೆಂದು ಪರವಾದಿ ಬಿಜ್ಜಳನ ತಂದೊಡ್ಡಿ, ಎನ್ನನು ಅವನೊಡನೆ ಹೋರಿಸಿ, ಮುನ್ನೂರ ಅರವತ್ತು ಸತ್ತ ಪ್ರಾಣವನೆತ್ತಿಸಿ, ಮೂವತ್ತಾರು ಕೊಂಡೆಯವ ಗೆಲಿಸಿ, ಎಂಬತ್ತೆಂಟು ಪವಾಡಂಗಳಂ ಕೊಂಡಾಡಿ, ಮತ್ರ್ಯಲೋಕದ ಮಹಾಗಣಂಗಳ ಒಕ್ಕುದನಿಕ್ಕಿ ಎನ್ನ ಸಲಹಿದಿರಿ. ನಿಮ್ಮ ಮಹಾಗಣಂಗಳು ಮೆಚ್ಚೆ, ಎನ್ನ ಸೂತಕವ ತೊಡೆದೆ ಪ್ರಭುದೇವರ ಕರುಣದಿಂದ ಪ್ರಾಣಲಿಂಗಸಂಬಂಧ ಸಯವಾಯಿತ್ತು. ನೀವು ಕಳುಹಿದ ಬೆಸನು ಸಂದಿತ್ತು, ಉಘೇ, ಇನ್ನು ಕೂಡಿಕೊಳ್ಳಾ ಕೂಡಲಸಂಗಮದೇವಾ.
--------------
ಬಸವಣ್ಣ
ಅರುವತ್ತೆಂಟು ಸಾವಿರ ವಚನಂಗಳ ಹಾಡಿ ಹಾಡಿ ಸೋತಿತೆನ್ನ ಮನ ನೋಡಯ್ಯಾ. ಹಾಡುವುದೊಂದೆ ವಚನ, ನೋಡುವುದೊಂದೆ ವಚನ : ವಿಷಯ ಬಿಟ್ಟು ನಿರ್ವಿಷಯನಾಗುವುದೊಂದೆ ವಚನ, ಕಪಿಲಸಿದ್ಧಮಲ್ಲೇಶನಲ್ಲಿ.
--------------
ಸಿದ್ಧರಾಮೇಶ್ವರ
ಕೋಟ್ಯನುಕೋಟಿ ಜಪವ ಮಾಡಿ ಕೋಟಲೆಗೊಳ್ಳಲದೇಕೆ ಮನವೆ ಕಿಂಚಿತು ಗೀತವೊಂದನಂತಕೋಟಿ ಜಪ. ಜಪವೆಂಬುದೇಕೆ, ಮನವೆ ಕೂಡಲಸಂಗನ ಶರಣರ ಕಂಡು, ಆಡಿ ಹಾಡಿ ಬದುಕು ಮನವೆ. 276
--------------
ಬಸವಣ್ಣ
ಗುರುತ್ವವುಳ್ಳ ಮಹದ್ಗುರುವನರಿಯದೆ ನಾನು ಗುರು ತಾನು ಗುರುವೆಂದು ನುಡಿವಿರಿ. ಧನದಲ್ಲಿ ಗುರುವೆ? ಮನದಲ್ಲಿ ಗುರುವೆ? ತನುವಿನಲ್ಲಿ ಗುರುವೆ? ನಿತ್ಯದಲ್ಲಿ ಗುರುವೆ? ವಿದ್ಯೆಯಲ್ಲಿ ಗುರುವೆ? ಭಕ್ತಿಯಲ್ಲಿ ಗುರುವೆ? ಜ್ಞಾನದಲ್ಲಿ ಗುರುವೆ? ವೈರಾಗ್ಯದಲ್ಲಿ ಗುರುವೆ? ದೀಕ್ಷೆಯಲ್ಲಿ ಗುರುವೆರಿ ಶಿಕ್ಷೆಯಲ್ಲಿ ಗುರುವೆರಿ ಸ್ವಾನುಭಾವದಲ್ಲಿ ಗುರುವೆರಿ ಮಾತಾಪಿತರಲ್ಲಿ ಗುರುವೆರಿ ದೇವದಾನವ ಮಾನವರೆಲ್ಲರು ನೀವೆಲ್ಲರು ಆವ ಪರಿಯಲ್ಲಿ ಗುರು ಹೇಳಿರಣ್ಣಾ? ಗುರುವಾರು ಲಘುವಾರೆಂದರಿಯರಿ, ಮನ ಬಂದಂತೆ ನುಡಿದು ಕೆಡುವಿರಾಗಿ. ಹರಿಬ್ರಹ್ಮರು ಗುರುತ್ವಕ್ಕೆ ಸಂವಾದಿಸಿ ಮಹದ್ಗುರುವಪ್ಪ ಪರಂಜ್ಯೋತಿರ್ಲಿಂಗದ ಆದಿಮಧ್ಯಾವಸಾನದ ಕಾಲವನರಿಯದೆ ಲಘುವಾಗಿ ಹೋದರು. ಮತ್ತಂ ಅದೊಮ್ಮೆ ವಿಷ್ಣ್ವಾದಿ ದೇವಜಾತಿಗಳೆಲ್ಲರೂ ನೆರೆದು ನಾ ಘನ, ತಾ ಘನ, ನಾನು ಗುರು, ತಾನು ಗುರುವೆಂದು ಮಹಾಸಂವಾದದಿಂದ ಅತಿತರ್ಕವ ಮಾಡಿ ಗುರುತ್ವವುಳ್ಳ ಪುರುಷನ ನಿಶ್ಚೈಸಲರಿಯದೆ, ಆ ಸಭಾಮಧ್ಯದಿ ಪರಮಾಕಾಶದಿ `ಅತ್ಯತಿಷ*ದ್ದಶಾಂಗುಲನೆನಿಪ' ಮದ್ಗುರುವಪ್ಪ ಮಹಾಲಿಂಗವು ಇವರುಗಳ ಅಜ್ಞಾನವ ಕಂಡು ಮಹಾವಿಪರೀತಕ್ರೀಯಲ್ಲಿ ನಗುತಿರಲು ನಮ್ಮೆಲ್ಲರನೂ ನೋಡಿ ನಗುವ ಪುರುಷನಾರು? ಈ ಪುರುಷನ ನೋಡುವ, ಈ ಪುರುಷನಿಂದ ನಮ್ಮಲ್ಲಿ ಆರು ಘನ ಆರು ಗುರುವೆಂದು ಕೇಳುವೆವೆಂದು ಆ ಮಹಾಪುರುಷನ ಸಮೀಪಕ್ಕೆ ಅಗ್ನಿ ವಾಯು ಮೊದಲಾಗಿಹ ದೇವಜಾತಿಗಳೆಲ್ಲರೂ ಪ್ರತ್ಯೇಕರಾಗಿ ಹೋಗಲು ಅತ್ಯತಿಷ*ದ್ದಶಾಂಗುಲಮಾಗಿರ್ದು ಇವರುಗಳ ಗುರುತ್ವವೆಲ್ಲವನೂ ಒಂದೇ ತೃಣದಲ್ಲಿ ಮುರಿದು ತೃಣದಿಂದವೂ ಕಷ್ಟ ಲಘುತ್ವವ ಮಾಡಿದನು. ಇದು ಕಾರಣ, ಪರಶಿವನೆ ಮದ್ಗುರು ಕಾಣಿರೆ. ಧನದಲ್ಲಿ ಗುರುವೆರಿ ನೀವೆಲ್ಲರು ಧನದಲ್ಲಿ ಗುರುವೆಂಬಡೆ ನೀವು ಕೇಳಿರೆ, ಕಾಣಿವುಳ್ಳವಂಗೆ ಶತಸಂಖ್ಯೆ ಉಳ್ಳವನೆ ಗುರು, ಶತಸಂಖ್ಯೆ ಉಳ್ಳವಂಗೆ ಸಹಸ್ರಸಂಖ್ಯೆ ಉಳ್ಳವನೆ ಗುರು, ಸಹಸ್ರಸಂಖ್ಯೆ ಉಳ್ಳವಂಗೆ ಮಹದೈಶ್ವರ್ಯ ಉಳ್ಳವನೆ ಗುರು, ಮಹದೈಶ್ವರ್ಯ ಉಳ್ಳವಂಗೆ ಕಾಮಧೇನು ಕಲ್ಪವೃಕ್ಷ ಚಿಂತಾಮಣಿ ಮೊದಲಾದ ಮಹದೈಶ್ವರ್ಯವುಳ್ಳ ಇಂದ್ರನೆ ಗುರು. ಇಂದ್ರಂಗೆ ಅನೂನೈಶ್ವರ್ಯವನುಳ್ಳ ಬ್ರಹ್ಮನೆ ಗುರು, ಆ ಬ್ರಹ್ಮಂಗೆ ಐಶ್ವರ್ಯಕ್ಕೆ ಅಧಿದೇವತೆಯಪ್ಪ ಮಹಾಲಕ್ಷ್ಮಿಯನುಳ್ಳ ವಿಷ್ಣುವೆ ಗುರು, ಆ ವಿಷ್ಣುವಿಂಗೆ ಅಷ್ಟಮಹದೈಶ್ವರ್ಯವನುಳ್ಳ ರುದ್ರನೆ ಗುರು, ಆ ರುದ್ರಂಗೆ ಈಶ್ವರನೆ ಗುರು, ಈಶ್ವರಂಗೆ ಸದಾಶಿವನೆ ಗುರು. ಬ್ರಹ್ಮಾ ವಿಷ್ಣುಶ್ಚ ರುದ್ರಶ್ಚ ಈಶ್ವರಶ್ಚ ಸದಾಶಿವಃ ಯೇ ತೇ ಗರ್ಭಗತಾ ಯಸ್ಯ ತಸ್ಮೈ ಶ್ರೀಗುರವೇ ನಮಃ ಎಂದುದಾಗಿ, ಅಂತಹ ಸದಾಶಿವಂಗೆ ಎಮ್ಮ ಪರಶಿವಮೂರ್ತಿ ಶ್ರೀಗುರುವೆ ಗುರು ಕಾಣಿರೆ. ಮನದಲ್ಲಿ ಗುರುವೇ ನೀವೆಲ್ಲರು ದುರ್ಮನಸ್ಸಿಗಳು ಪರಧನ ಪರಸ್ತ್ರೀ ಅನ್ಯದೈವಕ್ಕೆ ಆಸೆ ಮಾಡುವಿರಿ. ಇಂತಹ ದುರ್ಮನಸ್ಸಿನವರನೂ ಸುಮನವ ಮಾಡಿ ಸುಜ್ಞಾನಪದವ ತೋರುವ ಪರಶಿವಮೂರ್ತಿ ಶ್ರೀಗುರುವೆ ಗುರು ಕಾಣಿರೆ. ತನುವಿನಲ್ಲಿ ಗುರುವೆ? ಜನನ ಮರಣ ಎಂಬತ್ತುನಾಲ್ಕು ಲಕ್ಷ ಯೋನಿಯಲ್ಲಿ ಜನಿಸುವ ಅನಿತ್ಯತನು ನಿಮಗೆ. ಇಂತಪ್ಪ ತನುವನುಳ್ಳವರ ಪೂರ್ವಜಾತನ ಕಳೆದು, ಶುದ್ಧತನುವ ಮಾಡಿ ಪಂರ್ಚಭೂತತನುವ ಕಳೆದು, ಶುದ್ಧತನುವ ಮಾಡಿ ಭಕ್ತಕಾಯ ಮಮಕಾಯವೆಂದು ಶಿವನುಡಿದಂತಹ ಪ್ರಸಾದಕಾಯವ ಮಾಡಿ ನಿತ್ಯಸುಖದೊಳಿರಿಸಿದ ಪರಶಿವಮೂರ್ತಿ ಶ್ರೀಗುರುವೇ ಗುರು ಕಾಣಿರೆ. ವಿದ್ಯೆಯಲ್ಲಿ ಗುರುವೆ? ನೀವೆಲ್ಲರು ವೇದದ ಬಲ್ಲಡೆ, ಶಾಸ್ತ್ರವನರಿಯರಿ, ವೇದಶಾಸ್ತ್ರವ ಬಲ್ಲಡೆ, ಪುರಾಣವನರಿಯರಿ, ವೇದಶಾಸ್ತ್ರಪುರಾಣವ ಬಲ್ಲಡೆ, ಆಗಮವನರಿಯರಿ, ವೇದಶಾಸ್ತ್ರಪುರಾಣ ಆಗಮನ ಬಲ್ಲಡೆ ಅವರ ತಾತ್ಪರ್ಯವನರಿಯರಿ, ಅಷ್ಟಾದಶವಿದ್ಯೆಗಳ ಮರ್ಮವನರಿಯರಿ. ವೇದಂಗಳು, `ಏಕ ಏವ ರುದ್ರೋ ನ ದ್ವಿತೀಯಾಯ ತಸ್ಥೇ' ಎಂದವು. ಅದನ್ನರಿಯರಿ ನೀವು, ಅನ್ಯವುಂಟೆಂಬಿರಿ, `ಶಿವ ಏಕೋ ದ್ಯೇಯಃ ಶಿವಶಂಕರಃ ಸರ್ವಮನ್ಯತ್ಪರಿತ್ಯಾಜ್ಯಂ' ಅಂದವು, ನೀವು ಅನ್ಯವ ಧ್ಯಾನಿಸುವಿರಿ, ಅನ್ಯವ ಪೂಜಿಸುವಿರಿ, ವಿದ್ಯೆ ನಿಮಗಿಲ್ಲ, ನಿಮಗೆ ಹೇಳಿಕೊಡುವ ವ್ಯಾಸಾದಿಗಳಿಗಿಲ್ಲ, ಅವರಿಗೆ ಅಧಿಕನಾಗಿಹ ವಿಷ್ಣುಬ್ರಹ್ಮಾದಿಗಳಿಗಿಲ್ಲ, ವೇದಾದಿ ಅಷ್ಟಾದಶವಿದ್ಯೆಗಳ ಶಿವನೆ ಬಲ್ಲನು. ಸರ್ವವಿದ್ಯೆಗಳನೂ ಶಿವನೇ ಮಾಡಿದನು, ಶಿವನೇ ಕರ್ತನು `ಆದಿಕರ್ತಾ ಕವಿಸ್ಸಾಕ್ಷಾತ್ ಶೂಲಪಾಣಿರಿತಿಶ್ರುತಿಃ ಎಂದುದಾಗಿ. `ನಮೋ ಮಂತ್ರಿಣೇ ವಾಣಿಜಾಯ ಕಕ್ಷಾಣಾಂ ಕತಯೇ ನಮಃ ಎಂದುದಾಗಿ, `ಈಶಾನಸ್ಸರ್ವವಿದ್ಯಾನಾಂ ಎಂದುದಾಗಿ, ವಿದ್ಯಾರೂಪನಪ್ಪ ಎಮ್ಮ ಪರಶಿವಮೂರ್ತಿ ಶ್ರೀಗುರುವೇ ವಿದ್ಯೆಯಲ್ಲಿ ಗುರು ಕಾಣಿರೆ, ದೀಕ್ಷೆಯಲ್ಲಿ ಗುರುವೇರಿ ನೀವು `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂಬಿರಿ, ಆ ವಿಷ್ಣುವ ಭಜಿಸಿ ವಿಷ್ಣುವೇ ಗುರುವೆಂಬಿರಿ. ಅಂತಹ ವಿಷ್ಣುವಿಂಗೆಯೂ ಉಪಮನ್ಯು ಗುರು ಕಾಣಿರೆ. ಅಂತಹ ಉಪಮನ್ಯು ಮೊದಲಾದ ದೇವಋಷಿ ಬ್ರಹ್ಮಋಷಿ ರಾಜಋಷಿ ದೇವಜಾತಿ ಮಾನವಜಾತಿಗಳಿಗೆ ಪರಶಿವನಾಚಾರ್ಯನಾಗಿ ಉಪದೇಶವ ಮಾಡಿದನು. ವೇದಶಾಸ್ತ್ರ ಆಗಮ ಪುರಾಣಂಗಳಲ್ಲಿ, ವಿಚಾರಿಸಿ ನೋಡಿರೆ. ಅದು ಕಾರಣ ಮಹಾಚಾರ್ಯನು ಮಹಾದೀಕ್ಷಿತನಪ್ಪ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೆ. ಶಿಕ್ಷೆಯಲ್ಲಿ ಗುರುವೇರಿ ನಿಮಗೆ ಶಿಕ್ಷಾಸತ್ವವಿಲ್ಲ. ವೀರಭದ್ರ ದೂರ್ವಾಸ ಗೌತಮಾದಿಗಳಿಂ ನೀವೆಲ್ಲಾ ಶಿಕ್ಷೆಗೊಳಗಾದಿರಿ. ಶಿಕ್ಷಾಮೂರ್ತಿ ಚರಲಿಂಗವಾಗಿ ಶಿಕ್ಷಿಸಿ ರಕ್ಷಿಸಿದನು ಪರಶಿವನು. ಯೇ ರುದ್ರಲೋಕಾದವತೀರ್ಯ ರುದ್ರಾ ಮಾನುಷ್ಯಮಾಶ್ರಿತ್ಯ ಜಗದ್ಧಿತಾಯ ಚರಂತಿ ನಾನಾವಿಧಚಾರುಚೇಷ್ಟಾಸ್ತೇಭ್ಯೋ ನಮಸ್ತ್ರ್ಯಂಬಕಪೂಜಕೇಭ್ಯಃ ಎಂದುದಾಗಿ, ದಂಡಕ್ಷೀರದ್ವಯಂ ಹಸ್ತೇ ಜಂಗಮೋ ಭಕ್ತಿಮಂದಿರಂ ಅತಿಭಕ್ತ್ಯಾ ಲಿಂಗಸಂತುಷ್ಟಿರಪಹಾಸ್ಯಂ ಯಮದಂಡನಂ ಎಂದುದಾಗಿ, ಶಿಕ್ಷೆಯಲ್ಲಿ ಗುರು ಎಮ್ಮ ಪರಶಿವಮೂರ್ತಿ ಮದ್ಗುರುವೇ ಗುರು ಕಾಣಿರೆ. ಸ್ವಾನುಭಾವದಲ್ಲಿ ಗುರುವೆ? ನೀವು ದೇವದಾನವಮಾನವರೆಲ್ಲರು ದೇಹಗುಣವಿಡಿದು ಮದಾಂಧರಾಗಿ ಸ್ವಾನುಭಾವ[ರಹಿತರಾದಿರಿ]. ಸ್ಕಂದ ನಂದಿ ವೀರಭದ್ರ ಭೃಂಗಿನಾಥ ಬಸವರಾಜ ಮೊದಲಾದ ಎಮ್ಮ ಮಾಹೇಶ್ವರರೇ ಸ್ವಾನುಭಾವಸಂಪನ್ನರು. ಇಂತಹ ಮಹಾಮಹೇಶ್ವರರಿಗೆ ಸ್ವಾನುಭಾವವ ಕರುಣಿಸಬಲ್ಲ ಎಮ್ಮ ಪರಶಿವಮೂರ್ತಿ ಮಹದ್ಗುರು[ವೇ] ಸ್ವಾನುಭಾವದಲ್ಲಿ ಗುರು ಕಾಣಿರೆ. ಮಾತಾಪಿತರ ಗುರುವೆಂಬಿರಿ, ಲಘುವಿನಲ್ಲಿ ತಾವೆಲ್ಲರು ಜನಿಸಿದಿರಿ. ತಮ್ಮ ಸ್ಥಿತಿಯೂ ಲಘು, ಲಘುವಾಗಿ ಲಯವಪ್ಪುದು ಗುರುವೆ? ಅಲ್ಲ. ಸೋಮಃ ಪವತೇ ಜನಿತಾ ಮತೀನಾಂ ಜದಿತಾ ದಿವೋ ಜನಿತಾ ಪೃಥ್ವಿವ್ಯಾ ಜನಿತಾಗ್ನೇರ್ಜನಿತಾ ಸೂರ್ಯಸ್ಯ `ಜನಿತೋಥವಿಷ್ಣೋಃ ಎಂದುದಾಗಿ, `ಶಿವೋ ಮಮೈವ ಪಿತಾ ಎಂದುದಾಗಿ, ಸರ್ವರಿಗೂ ಮಾತಾಪಿತನಪ್ಪ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೊ. ಭಕ್ತಿಯಲ್ಲಿ ಗುರುವೆ? ನಿಮಗೆ ಲವಲೇಶ ಭಕ್ತಿಯಿಲ್ಲ, ನೀವೆಲ್ಲರು ಉಪಾಧಿಕರು. ನಿರುಪಾಧಿಕರು ಎಮ್ಮ ಮಹಾಸದ್ಭಕ್ತರು ತನು ಮನ ಧನವನರ್ಪಿಸಿ ಉಂಡು ಉಣಿಸಿ ಆಡಿ ಹಾಡಿ ಸುಖಿಯಾದರು ಶರಣರು. ಇಂತಹ ಶರಣಭರಿತ ಸದಾಶಿವಮೂರ್ತಿ ಮಹಾಸದ್ಗುರುವೇ ಭಕ್ತಿಯಲ್ಲಿ ಗುರು ಕಾಣಿರೆ. ಜ್ಞಾನದಲ್ಲಿ ಗುರುವೇ? ನೀವೆಲ್ಲರು ದೇವದಾನವ ಮಾನವರು ಅಜ್ಞಾನಿಗಳು. ಜ್ಞಾತೃ ಜ್ಞಾನ ಜ್ಞೇಯವಪ್ಪ ಪರಶಿವಲಿಂಗವನರಿಯದೆ ಅಹಂಕಾರದಿಂ ಲಘುವಾದಿರಿ. ಪರಧನ ಪರಸ್ತ್ರೀ ಪರಕ್ಷೇತ್ರಕ್ಕೆ ಆಸೆಮಾಡಿ ಲಘುವಾದಿರಿ ನಿರಾಶಸಂಪೂರ್ಣರು ಶಿವಜ್ಞಾನಸಂಪನ್ನರು ಎಮ್ಮ ಮಾಹೇಶ್ವರರು ಇಂತಹ ಮಾಹೇಶ್ವರರಿಂಗೆ ಶಿವಜ್ಞಾನವ ಕರುಣಿಸುವ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೆ. ವೈರಾಗ್ಯದಲ್ಲಿ ಗುರುವೆ? ನೀವು ಆಶಾಬದ್ಧರು, ನಿರಾಶಾಸಂಪೂರ್ಣರು ಎಮ್ಮ ಸದ್ಭಕ್ತರು. ಇಂತಹ ಭಕ್ತದೇಹಿಕನಪ್ಪ ದೇವ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ವೈರಾಗ್ಯದಲ್ಲಿ ಗುರು ಕಾಣಿರೆ. ಇದು ಕಾರಣ, ನಿತ್ಯದಲ್ಲಿ, ಸತ್ಯದಲ್ಲಿ, ಅಷ್ಟಮಹದೈಶ್ವರ್ಯದಲ್ಲಿ ದೀಕ್ಷೆಯಲ್ಲಿ, ಸ್ವಾನುಭಾವದಲ್ಲಿ, ಜ್ಞಾನದಲ್ಲಿ ವಿದ್ಯೆಯಲ್ಲಿ, ಬುದ್ಧಿಯಲ್ಲಿ, ವೈರಾಗ್ಯದಲ್ಲಿ, ಮಾತಾಪಿತರಲ್ಲಿ ಉಪಮಾತೀತನಪ್ಪ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೆ. `ನಾಸ್ತಿ ತತ್ತ್ವಂ ಗುರೋಃ ಪರಂ' ಎಂದುದಾಗಿ, ಮಹಾಘನತರವಪ್ಪ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೆ. ಲಲಾಟಲೋಚನಂ ಚಾಂದ್ರೀಂ ಕಲಾಮಪಿ ಚ ದೋದ್ರ್ವಯಂ ಅಂತರ್ನಿಧಾಯ ವರ್ತೇ[s]ಹಂ ಗುರುರೂಪೋ ಮಹೇಶ್ವರಿ ಎಂದುದಾಗಿ ಪರಶಿವನೇ ಗುರು, ಶ್ರೀಗುರುವೇ ಪರಶಿವನು. ಇಂತಹ ಮಹಾಸದ್ಗುರುವಪ್ಪ ಪರಶಿವಮೂರ್ತಿ ಕಾರುಣ್ಯವ ಮಾಡಿ, ಸದ್ಭಕ್ತಿಪದವ ತೋರಿದ ಎಮ್ಮ ಗಣನಾಥದೇವರೇ ಗುರು ಕಾಣಿರೆ. ಇದು ಕಾರಣ, ಶರಣಮೂರ್ತಿ ಶ್ರೀಗುರು. ಶ್ರೀಗುರು ಲಿಂಗ ಜಂಗಮ ಒಂದೆಯಾಗಿ ಶ್ರೀಗುರುವೇ ಗುರು, ಉಳಿದದ್ದೆಲ್ಲಾ ಲಘು. ಪರಶಿವಲಿಂಗವೇ ಗುರು, ಉಳಿದವೆಲ್ಲವೂ ಲಘು. ಜಂಗಮವೇ ಗುರು, ಉಳಿದವೆಲ್ಲವೂ ಲಘು. ಇದನರಿದು ಶ್ರೀಗುರುವನೇ ನಂಬುವುದು. ತನು ಮನ ಧನವನರ್ಪಿಸುವುದು, ನಿರ್ವಂಚಕನಾಗಿ ನಿರುಪಾಧಿಕನಾಗಿ ನಿರಾಶಾಸಂಪೂರ್ಣನಾಗಿ, ಧ್ಯಾನಿಸಿ ಪೂಜಿಸಿ ಸದ್ಭಕ್ತಿಯಿಂ ವರ್ತಿಸಿ ಪ್ರಸಾದವ ಪಡೆದು ಮುಕ್ತನಪ್ಪುದಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಇನ್ನಷ್ಟು ... -->