ಅಥವಾ

ಒಟ್ಟು 30 ಕಡೆಗಳಲ್ಲಿ , 13 ವಚನಕಾರರು , 20 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

`ಬಸವ' ಎಂಬ ಮೂರಕ್ಷರ ಹೃದಯಕಮಲದಲ್ಲಿ ನೆಲೆಗೊಂಡಡೆ, ಅಭೇದ್ಯ ಭೇದ್ಯವಾಯಿತ್ತು, ಅಸಾಧ್ಯ ಸಾಧ್ಯವಾಯಿತ್ತು. ಇಂತು ಬಸವಣ್ಣನಿಂದ ಲೋಕ¯õ್ಞಕಿಕದ ಕುಭಾಷೆಯ ಕಳೆದು, ಲೋಕಾಚರಣೆಯನತಿಗಳೆದು ಭಕ್ತಿಭರವಪ್ಪುದು, ಕೂಡಲಚೆನ್ನಸಂಗಯ್ಯನಲ್ಲಿ ಬಸವಣ್ಣನ ಕಾರುಣ್ಯದಿಂದ
--------------
ಚನ್ನಬಸವಣ್ಣ
ಎನ್ನ ಕುಲಸೂತಕವ ಕಳೆದಾತ ಬಸವಣ್ಣ. ಎನ್ನ ಛಲಸೂತಕವ ಕಳೆದಾತ ಬಸವಣ್ಣ. ಎನ್ನ ತನುಸೂತಕವ ಕಳೆದಾತ ಬಸವಣ್ಣ. ಎನ್ನ ಮನಸೂತಕವ ಕಳೆದಾತ ಬಸವಣ್ಣ. ಎನ್ನ ನೆನಹುಸೂತಕವ ಕಳೆದಾತ ಬಸವಣ್ಣ. ಎನ್ನ ಭಾವಸೂತಕವ ಕಳೆದಾತ ಬಸವಣ್ಣ. ಎನ್ನ ಅರುಹುಮರಹಿನ ಸಂದುಸಂಶಯವಬಿಡಿಸಿದಾತ ಬಸವಣ್ಣ. ಎನ್ನ ತನ್ನೊಳಗೆ ಇಂಬಿಟ್ಟುಕೊಂಡಾತ ಬಸವಣ್ಣ. ತನ್ನ ಎನ್ನೊಳಗೆ ಇಂಬಿಟ್ಟುಕೊಂಡಾತ ಬಸವಣ್ಣ. ನಿಜದ ನಿರ್ವಯಲ ಬಾಗಿಲ ನಿಜವ ತೋರಿದಾತ ಬಸವಣ್ಣ. ಬಸವಣ್ಣಪ್ರಿಯ ಚೆನ್ನಸಂಗಯ್ಯನ ಹೃದಯಕಮಲದಲ್ಲಿ ನಿಜನಿವಾಸಿಯಾಗಿರಿಸಿದ ಎನ್ನ ತಂದೆ ಸಂಗನಬಸವಣ್ಣನು.
--------------
ನಾಗಲಾಂಬಿಕೆ
ಆಧಾರಲಿಂಗ ಕುಂಡಲಿವಿಡಿದು; ಹೃದಯಕಮಲದಲ್ಲಿ ಬ್ರಹ್ಮ, ನಾಳದಲ್ಲಿ ವಿಷ್ಣು, ನಾಳಾಗ್ರದಲ್ಲಿ ರುದ್ರ, ಭ್ರೂಮಧ್ಯದ ಮೇಲೆ ಈಶ್ವರನು, ಬ್ರಹ್ಮರಂಧ್ರದ ಮೇಲೆ ಸದಾಶಿವನು. ಶಿಖಾಗ್ರದಲ್ಲಿ ಸರ್ವಗತ ಶಿವನು._ ಆದಿ ಅನಾದಿಯಿಲ್ಲದಂದು ಗುಹೇಶ್ವರಲಿಂಗ ನಿರಾಳನು.
--------------
ಅಲ್ಲಮಪ್ರಭುದೇವರು
ಹೋಗುವ ಬನ್ನಿರಯ್ಯ ; ಶಕ್ತಿಪಾತವಾದ ಶಿವಯೋಗೀಶ್ವರರು ಶಿವಭಕ್ತರು ಹೋಗುವ ಬನ್ನಿರಯ್ಯ. ಸುಕ್ಷೇತ್ರದಲ್ಲಿರ್ಪ ಮಹಲಿಂಗದರುಶನಕೆ ಹೋಗುವ ಬನ್ನಿರಯ್ಯ. ಜೀವಸಂಚಾರವೆಂಬ ಪ್ರಾಕೃತವೆನಿಸುವ ಅಧೋಕುಂಡಲಿಸ್ವರೂಪಮಾದ ಅಹಂ ಎಂಬ ಹೆಬ್ಬಟ್ಟೆಯಂ ಬಿಟ್ಟು, ಸಜ್ಜೀವವೆಂಬ ವೈಕೃತವೆನಿಸುವ ಮಧ್ಯಕುಂಡಲಿಸ್ವರೂಪಮಾದ ಸೋಹಮೆಂಬ ಸಣ್ಣಬಟ್ಟೆಯ ಹಿಡಿದು ಹೋಗುವ ಬನ್ನಿರಯ್ಯ ಮಹಲಿಂಗದರುಶನಕೆ. ಕೇವಲ ಶಿವಯೋಗವೆಂಬ ಏಕವೆನಿಸುವ ಊಧ್ರ್ವಕುಂಡಲಿಸ್ವರೂಪಮಾದ ಓಂ ಎಂಬ ನುಸುಳುಗಂಡಿಯಂ ನುಸಿದು ಹೋಗುವ ಬನ್ನಿರಯ್ಯ ಮಹಲಿಂಗದರುಶನಕೆ. ದ್ವಯಮಂಡಲವ ಭ್ರೂಮಧ್ಯವೆಂಬ ಮಹಾಮೇರುವ ಮಧ್ಯದಲ್ಲಿ ಏಕಮಂಡಲಾಕಾರ ಮಾಡಿ, ಆ ಕಮಲಮಧ್ಯದಲ್ಲಿ ಮೂರ್ತಿಗೊಂಡಿಪ್ಪ ಮಹಾಲಿಂಗದಲ್ಲಿ ಜೀವಪರಮರಿಬ್ಬರನೇಕಾರ್ಥವಂ ಮಾಡಿ, ಶಾಂಭವೀಮುದ್ರಾನುಸಂಧಾನದಿಂದೆ ಅಧೋಮುಖಕಮಲವೆಲ್ಲ ಊಧ್ರ್ವಮುಖವಾಗಿ, ಆ ಮಹಾಲಿಂಗವ ನೋಡುತಿರಲು ಆ ಕಮಲಸೂತ್ರವಿಡಿದಿಹ ಷಡಾಧಾರಚಕ್ರಂಗಳ ಊಧ್ರ್ವಮುಖವಾಗಿ ಆ ಕಮಲದಲ್ಲಿ ಅಡಗಿ, ಆ ಕಮಲದ ಎಸಳು ಐವತ್ತೆರಡಾಗಿ ಎಸೆವುತಿರ್ಪವು. ಪರಿಪೂರ್ಣ ಜ್ಞಾನದೃಷ್ಟಿಯಿಂ ಆ ಮಹಾಲಿಂಗಮಂ ನಿರೀಕ್ಷಿಸಲು ಆ ಕಮಲದಲ್ಲಿ ಮಹಾಲಿಂಗಸ್ವರೂಪಮಾಗಿ ಸಕಲ ಕರಣೇಂದ್ರಿಯಂಗಳು ಆ ಮಹಾಲಿಂಗದಲ್ಲಿಯೆ ಅಡಗಿ, ಸುನಾದಬ್ರಹ್ಮವೆಂಬ ಇಷ್ಟವೆ ಮಹಾಲಿಂಗವೆಂದರಿದು ನೋಡುತ್ತಿರಲು, ಜ್ಯೋತಿರ್ಮಯವಾಗಿ ಕಾಣಿಸುತಿಪ್ಪುದು. ಅದೇ ಜೀವಪರಮರೈಕ್ಯವು ; ಅದೇ ಲಿಂಗಾಂಗಸಂಬಂಧವು. ಆ ಮಹಾಲಿಂಗದ ಕಿರಣಂಗಳೆ ಕರಣಂಗಳಾಗಿ ಆ ಕಮಲವು ಅಧೋಮುಖವಾಗಿ ಆ ಮಹಾಲಿಂಗವು ತನ್ನ ನಿಜನಿವಾಸವೆನಿಸುವ `ಅಂತರೇಣ ತಾಲುಕೇ' ಎಂಬ ಶ್ರುತಿ ಪ್ರಮಾಣದಿ ತಾಲುಮೂಲದ್ವಾದಶಾಂತವೆಂಬ ಬ್ರಹ್ಮರಂಧ್ರದ ಮಧ್ಯದಲ್ಲಿ ಪ್ರಕಾಶಿಸುತ್ತಿರ್ಪುದೊಂದು ಶಿವಚಕ್ರವು. ಆ ಶಿವಚಕ್ರವೆ ಶಿವಲೋಕವೆನಿಸುವುದು. ಆ ಶಿವಲೋಕವೆ ಶಾಂಭವಲೋಕವೆನಿಸುವುದು. ಶಾಂಭವಲೋಕವೆ ಶಾಂಭವಚಕ್ರವೆನಿಸುವುದು. ಆ ಶಾಂಭವಚಕ್ರದಲ್ಲಿ ಆಧಾರವಾದಿ ಪಶ್ಚಿಮಾಂತ್ಯವಾದ ನವಚಕ್ರಂಗಳು ಸಂಬಂಧವಾಗಿರುತಿರ್ಪವು. ಅದು ಹೇಗೆಂದೊಡೆ ; ಆ ಶಾಂಭವಚಕ್ರಮಧ್ಯದ ಚತುರ್ದಳಾಗ್ರದಲ್ಲಿ ಅಗ್ನಿಮಂಡಲದಲ್ಲಿ ಅಷ್ಟದಳ ಇರ್ಪುವು. ಆ ಅಷ್ಟದಳ ಚತುರ್ದಳದಲ್ಲಿ `ವಶಷಸ' ಎಂಬ ನಾಲ್ಕಕ್ಷರಯುಕ್ತವಾದ ಆಧಾರಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿ `ನ' ಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ತಾರಕಾಕೃತಿಯಲ್ಲಿ ಸಂಬಂಧವಾಗಿರ್ಪುದು. ಆ ಅಗ್ನಿಮಂಡಲದ ಚತುರ್ದಳದ ಈಶಾನ್ಯ ದಳದಲ್ಲಿ `ಬ ಭ ಮ ಯ ರ ಲ' ಎಂಬ ಆರಕ್ಷರಯುಕ್ತವಾದ ಸ್ವಾದ್ಥಿಷ್ಠಾನಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ `ಮ'ಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ದಂಡಕಾಕೃತಿಯಲ್ಲಿ ಸಂಬಂಧವಾಗಿರ್ಪುದು. ಆ ಅಷ್ಟದಳಾಗ್ರದಲ್ಲಿ ಸೂರ್ಯಮಂಡಲವಿರ್ಪುದು. ಆ ಸೂರ್ಯಮಂಡಲದಲ್ಲಿ `ಡಢಣ ತಥದಧನ ಪಫ' ಎಂಬ ದಶಾಕ್ಷರಯುಕ್ತವಾದ ಮಣಿಪೂರಕಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ `ಶಿ'ಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ಕುಂಡಲಾಕೃತಿಯಲ್ಲಿ ಸಂಬಂಧವಾಗಿರ್ಪುದು. `ಕಖಗಘಙ ಚಛಜಝಞ ಟಠ' ಎಂಬ ದ್ವಾದಶಾಕ್ಷರಯುಕ್ತವಾದ ಅನಾಹತಚಕ್ರವು ಸೂರ್ಯಮಂಡಲದಲ್ಲಿ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ `ವ'ಕಾರವು ಆ ಮಹಾಲಿಂಗಸ್ವರೂಪವಾದಪ್ರಣವದ ಅರ್ಧಚಂದ್ರಾಕೃತಿಯಲ್ಲಿ ಸಂಬಂಧವಾಗಿರ್ಪುದು. ಆ ಅಷ್ಟದಳದಮಧ್ಯದಲ್ಲಿ ಚಂದ್ರಮಂಡಲವಿರ್ಪುದು. ಆ ಚಂದ್ರಮಂಡಲದಲ್ಲಿ- `ಅ ಆ ಇ ಈ ಉ ಊ ಋ Iೂ ಲೃ ಲೂೃ ಏ ಐ ಓ ಔ ಅಂ ಅಃ' ಎಂಬ ಷೋಡಶಾಕ್ಷರಯುಕ್ತವಾದ ವಿಶುದ್ಧಿಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ `ಯ'ಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ದರ್ಪಣಾಕೃತಿಯಲ್ಲಿ ಸಂಬಂಧವಾಗಿರ್ಪುದು. ಆ ಮಹಾಲಿಂಗಕ್ಕೆ ಪೀಠಮಾಗಿರ್ದ ಬಿಂದುಯುಕ್ತಮಾದ ಪ್ರಣವವು ಆ ಮಹಾಲಿಂಗದ ಮುಂದಿರ್ದ `ಹಂ ಳಂ ಹಂ ಕ್ಷಂ' ಎಂಬ ಚುತವರ್ಣಾಕ್ಷರಯುಕ್ತವಾದ ಆಜ್ಞಾಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ ಓಂಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ಜ್ಯೋತಿರಾಕೃತಿಯಲ್ಲಿ ಸಂಬಂಧವಾಗಿರ್ಪುದು. ಚತುರ್ದಳವು ತ್ರಿದಳದಲ್ಲಿ ಕ್ಷ ಉ ಸ ಎಂಬ ತ್ರಯಕ್ಷರಯುಕ್ತವಾದ ಶಿಖಾಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿ `ಕ್ಷ' ಕಾರವು ಆ ಮಹಾಲಿಂಗಸ್ವರೂಪವಾದ ಕುಂಡಲಾಕೃತಿ ಅರ್ಧಚಂದ್ರಾಕೃತಿಗಳಲ್ಲಿ ಸಂಬಂಧವಾಗಿರ್ಪುದು. ಆ ಚತುರ್ದಳದ ಮಧ್ಯದಲ್ಲಿ ಬಟುವೆ ಏಕದಳವೆನಿಸಿಕೊಂಬುದು. ಆ ಏಕದಳದಲ್ಲಿ ಪಶ್ಚಿಮಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ `ಹ್ರಾಂ'ಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ದರ್ಪಣಾಕೃತಿ ಜ್ಯೋತಿರಾಕೃತಿಗಳಲ್ಲಿ ಸಂಬಂಧವಾಗಿರ್ಪುದು. ಹೀಂಗೆ ಅಷ್ಟಚಕ್ರಂಗಳ ತನ್ನೊಳಗೆ ಗಬ್ರ್ಥೀಕರಿಸಿಕೊಂಡು ಬೆಳಗುತ್ತಿರ್ಪುದೊಂದು ಬ್ರಹ್ಮರಂಧ್ರಚಕ್ರವು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ ಹ್ರೀಂ ಕಾರಗಳು. ಆ ಹರದನಹಳ್ಳಿಯ ಪ್ರಭುಲಿಂಗಗುರುಸ್ವಾಮಿಯ ಶಿಷ್ಯರು ನಿಜಾನಂದ ಗುರುಚೆನ್ನಯ್ಯನವರು. ಆ ನಿಜಾನಂದ ಗುರುವಿನ [ಶಿಷ್ಯರು] ಗುರುಸಿದ್ಧವೀರೇಶ್ವರದೇವರು. ಆ ಸಿದ್ಧವೀರೇಶ್ವರದೇವರ ಕರಕಮಲದಲ್ಲಿ ಉದಯವಾದ ಬಾಲಸಂಗಯ್ಯನು ನಾನು. ಆ ನಿರಂಜನ ಗುರುವೆ ತಮ್ಮ ಕೃಪೆಯಿಂದ ತಮ್ಮಂತರಂಗದಲ್ಲಿರ್ದ ಅತಿರಹಸ್ಯವಾದ ಶಾಂಭವಶಿವಯೋಗವೆಂಬ ಮಹಾಜ್ಞಾನೋಪದೇಶಮಂ ಹರಗುರು ವಾಕ್ಯಪ್ರಮಾಣಿನಿಂ ಎನ್ನ ಹೃದಯಕಮಲದಲ್ಲಿ ಕರತಳಾಮಳಕದಂತೆ ತೋರಿ, ಆ ಹೃದಯಕಮಲಕರ್ಣಿಕಾಮಧ್ಯದಲ್ಲಿರ್ಪ ನಿರಂಜನಗುರುವೆ ನಿರಂಜನಮಹಾಲಿಂಗವೆಂದರಿದು ಆ ನಿರಂಜನಮಹಾಲಿಂಗವೆ ಕರಸ್ಥಲದಲ್ಲಿರ್ಪ ಸುನಾದಬ್ರಹ್ಮವೆಂಬ ಇಷ್ಟಲಿಂಗವೆಂದರಿದು, ಆ ಕರಸ್ಥಲದಲ್ಲಿರ್ಪ ಇಷ್ಟಲಿಂಗವೆ ತಾನೆಂದರಿದು ``ಮಂತ್ರಮಧ್ಯೇ ಭವೇತ್‍ಲಿಂಗಂ ಲಿಂಗಮಧ್ಯೇ ಭವೇತ್‍ಮಂತ್ರಂ | ಮಂತ್ರಲಿಂಗದ್ವಯಾದೇಕಂ ಇಷ್ಟಲಿಂಗಂತು ಶಾಂಕರಿ ||' ಎಂದುದಾಗಿ, ಎನ್ನ ಹೃತ್ಕಮಲಕರ್ಣಿಕಾಮಧ್ಯದಲ್ಲಿ ಶಾಂಭವೀಮುದ್ರಾನುಸಂಧಾನದಿಂದ ಆ ಲಿಂಗವೆ ಮಂತ್ರ, ಮಂತ್ರವೆ ಲಿಂಗವೆಂದರಿದು ಓಂ ಓಂ ಎಂದು ಶಿವಸಮಾದ್ಥಿಯ ಜಪಮಂ ಜಪಿಸುತ್ತ ಜ್ಯೋತಿರ್ಲಿಂಗಮಂ ಕೇಳುತ, ಜ್ಯೋತಿರ್ಲಿಂಗದೊಳು ಮುಳುಗಾಡುತ್ತಿರ್ದೆನಯ್ಯಾ ಬಸವಣ್ಣಪ್ರಿಯ ಚೆನ್ನಸಂಗಯ್ಯನೆಂಬ ಗುರುವಿನ ಕೃಪೆಯಿಂದ, ನಿಮ್ಮ ಶರಣರ ಪಡುಗ ಪಾದರಕ್ಷೆಯ ಹಿಡಿವುದಕ್ಕೆ ಯೋಗ್ಯನಾದೆನಯ್ಯ ನಿಮ್ಮ ಕೃಪೆಯಿಂದ.
--------------
ಭಿಕ್ಷದ ಸಂಗಯ್ಯ
ಆದಿ ಅನಾದಿಯಿಲ್ಲದತ್ತಣ ದೂರಕ್ಕೆ ದೂರದಲ್ಲಿ ಭಾವಕ್ಕೆ ನಿರ್ಭಾವಕ್ಕೆ ಬಾರದಿರ್ದ ನಿಷ್ಕಳಂಕ ಪರಬ್ರಹ್ಮವೇ ಮುನ್ನ ನೀನು ಶಾಖೆದೋರುವಲ್ಲಿ ನಿನ್ನೊಳಂಕುರಿಸಿ ನಾನು ತಾಮಸ ಮುಸುಂಕಿ ಜನನ ಮರಣಕ್ಕೊಳಗಾಗಿ ಚೌರಾಶಿ ಎಂಬತ್ತುನಾಲ್ಕು ಲಕ್ಷ ಪ್ರಾಣಿಗಳ ಗರ್ಭದಿಂದ ಬಂದು ಬಂದು ಒಮ್ಮೆ ಮಾನವನಪ್ಪಂದಿಗೆ ನಾನುಂಡು ಮೊಲೆಹಾಲು ಸಪ್ತಸಮುದ್ರಕ್ಕೆ ಸರಿಯಿಲ್ಲವಯ್ಯ. ಇಂತಪ್ಪ ಮಾನವ ಜನ್ಮದಲ್ಲಿ ಬಂದ ಬಂದುದು ಗಣಿತಕ್ಕೆ ಬಾರದಯ್ಯ. ಈ ಜನ್ಮದಲ್ಲಿ ಪಿಂಡೋತ್ಪತ್ತಿಯಲ್ಲಿಯೇ ಶರಣಸತಿ ಲಿಂಗಪತಿಯೆಂಬ ಜ್ಞಾನ ತಲೆದೋರಿ ಶರಣವೆಣ್ಣಾಗಿ ಹುಟ್ಟಿದೆನಯ್ಯ. ಎನಗೆ ನಿನ್ನ ಬಯಕೆಯೆಂಬ ಸಿಂಗಾರದ ಸಿರಿಮುಡಿಯಾಯಿತು. ಎನಗೆ ನಿನ್ನ ನೋಡುವೆನೆಂಬ ಮುಗುಳ್ಮೊಲೆ ಮೂಡಿದವು. ಎನಗೆ ನಿನ್ನೊಳು ನುಡಿಯಬೇಕೆಂಬ ಉರವಣೆಯ ಸಂಪದದ ಜವ್ವನ ಕುಡಿವರಿಯಿತ್ತು. ಎನಗೆ ನಿನ್ನನೊಲಿಸಬೇಕೆಂಬ ಸಂಭ್ರಮದ ಕಾಂಚೀಧಾಮ ಕಟಿಸೂತ್ರ ನೇವುರ ನಿಡುಗೊಂಡೆಯವೆಂಬಾಭರಣ ಅನುಲೇಪನ ವಸ್ತ್ರಂಗಳೆನಗೆ ಅಲಂಕಾರವಾಯಿತ್ತು. ಭಕ್ತಿಯೆಂಬ ವಿರಹಾಗ್ನಿ ಎನ್ನ ಹೃದಯಕಮಲದಲ್ಲಿ ಬೆಳೆದು ಬೀದಿವರಿದು ನಿಂತಲ್ಲಿ ನಿಲಲೀಸದಯ್ಯ. ಕುಳಿತಲ್ಲಿ ಕುಳ್ಳಿರಲೀಸದಯ್ಯ. ಮನ ನಿಂದಲ್ಲಿ ಮನೋಹರವಪ್ಪುದಯ್ಯ. ಅಂಗ ಮನ ಪ್ರಾಣ ನೇತ್ರ ಚಿತ್ತಂಗಳೊಳು ಪಂಚಮುಖವೆಂಬ ಪಂಚಬಾಣಂಗಳು ನೆಟ್ಟವಯ್ಯ. ನಾನು ಧರೆಯೊಳುಳಿವುದರಿದು. ಪ್ರೇಮದಿಂ ಬಂದು ಕಣ್ದುಂಬಿ ನೋಡಿ ಮನವೊಲಿದು ಮಾತಾಡಿ ಕರುಣದಿಂ ಕೈವಿಡಿದು ಅಕ್ಕರಿಂದಾಲಂಗಿಸಿ ದಿಟ್ಟಿಸಿ ಬೊಟ್ಟಾಡಿ ಲಲ್ಲೆವಾತಿಂ ಗಲ್ಲವ ಪಿಡಿದು ಪುಷ್ಪ ಪರಿಮಳದಂತೆ ನಾನು ನೀನುಭಯವಿಲ್ಲದಂತೆ ಕೂಡೆನ್ನ ಪ್ರಾಣೇಶನೇ. ಕೂಡಿದಿರ್ದೊಡೆ ಗಲ್ಲವ ಪಿಡಿ. ಪಿಡಿಯದಿರ್ದೊಡೆ ಬೊಟ್ಟಾಡು. ಬೊಟ್ಟಾಡದಿರ್ದೊಡೆ ಆಲಂಗಿಸು. ಆಲಂಗಿಸದಿರ್ದೊಡೆ ಕೈವಿಡಿ. ಕೈವಿಡಿಯದಿರ್ದೊಡೆ ಮಾತಾಡು. ಮಾತಾಡದಿರ್ದೊಡೆ ನೋಡು. ನೋಡದಿರ್ದೊಡೆ ಬಾ. ಬಾರದಿರ್ದೊಡೆ ಪ್ರಮಥಗಣಂಗಳೊಡನೆನ್ನವಳೆಂದು ನುಡಿ. ನುಡಿಯದಿರ್ದೊಡೆ ನಿನ್ನ ಮನದಲ್ಲಿ ನನ್ನವಳೆಂದು ಭಾವಿಸು. ಭಾವಿಸದಿರ್ದೊಡೆ ಪುಣ್ಯ ಕಣ್ದೆರೆಯದು. ಕರ್ಮ ಕಾಂತಿಯಪ್ಪುದು. ಕಾಮ ಕೈದುಗೊಂಬ, ಕಾಲ ಕಲಿಯಪ್ಪ. ಭವಕ್ಕೆ ಬಲ್ಮೆ ದೊರೆವುದು. ಇಂತೀ ಐವರು ಎನಗೆ ಅವಾಂತರದೊಳಗಾದ ಹಗೆಗಳಯ್ಯ, ಇವರೆನ್ನ ತಿಂದುತೇಗಿ ಹಿಂಡಿ ಹಿಪ್ಪೆಯಮಾಡಿ ನುಂಗಿ ಉಗುಳ್ದು ಹಿಂದಣ ಬಟ್ಟೆಗೆ ನೂಂಕುತಿಪ್ಪರಯ್ಯ. ಹೊಗಲಂಜುವೆನಯ್ಯ. ಹೋದರೆ ಚಂದ್ರಸೂರ್ಯಾದಿಗಳುಳ್ಳನಕ್ಕ ನಿನ್ನ ನೆನವ ಮನಕ್ಕೆ ನಿನ್ನ ಕೊಂಡಾಡುವ ಬಾಯ್ಗೆ ನಿನ್ನ ನೋಡುವ ಕಂಗಳಿಗೆ ಸೆರೆ ಸಂಕಲೆಯಪ್ಪುದಯ್ಯ. ಇಂತಿವಂ ತಿಳಿದು ನಿನ್ನ ಮನದೊಳು ನನ್ನವಳೆಂದರೆ ದಿವಾರಾತ್ರೆಯುಳ್ಳನ್ನಬರ ಎನ್ನ ಮನ ಜಿಹ್ವೆ ನೇತ್ರಂಗಳಿಗೆ ಬಂಧನಗಳೆಂಬಿವು ಮುಂಗೆಡುವುವಯ್ಯ. ನಿನ್ನನು ನೆನೆನೆನೆದು ನನ್ನ ಮನ ಬೀಗಿ ಬೆಳೆದು ತಳಿರಾಗಿ ಹೂ ಮಿಡಿಗೊಂಬುದಯ್ಯ. ನಿನ್ನ ಹಾಡಿ ಹಾಡಿ ನನ್ನ ಜಿಹ್ವೆ ಅಮೃತಸಾಗರದೊಳೋಲಾಡುತ್ತಿಪ್ಪುದಯ್ಯ. ನಿನ್ನಂ ನೋಡಿ ನೋಡಿ ಕಂಗಳು ನಿಜಮೋಕ್ಷಮಂ ಪಡೆವುವಯ್ಯ. ನಾನು ಈರೇಳು ಲೋಕಕ್ಕೆ ಬರುವ ಹಾದಿ ಹಾಳಾಗಿಪ್ಪುದಯ್ಯ. ಶತ್ರುಗಳೆನಗೆ ಮಿತ್ರರಪ್ಪರಯ್ಯ. ಭವದ ಬಳ್ಳಿ ಅಳಿವುದು. ಕಾಲಿನ ಕಲಿತನ ಕೆಡುವುದು. ಕಾಮನ ಕೈದು ಖಂಡಿಸುವುದು. ಕರ್ಮದ ಕಾಂತಿ ಕರಗುವುದು. ಪುಣ್ಯದ ಕಣ್ಣು ಬಣ್ಣಗೆಡುವುದಯ್ಯ. ನಿನಗೊಲಿದವರ ನಿನ್ನಂತೆ ಮಾಡು ಕೃಪಾಕರನೆ. ನಿನಗೆ ಮೆಚ್ಚಿದೆನಯ್ಯ. ನಿನ್ನ ಮೆಚ್ಚಿಸಿಕೊಳ್ಳಲರಿಯದ ಮುಗ್ಧವೆಣ್ಣಿನ ಪತಿಭಕ್ತಿಯಂ ಸಾಧಿಸು. ಎನ್ನವಸ್ಥೆಯಂ ಲಾಲಿಸು, ನಿನ್ನ ಶ್ರೀಪಾದಪದ್ಮದೊಳಗೆನ್ನನೊಡಗೂಡಿಸು. ಎನ್ನ ಬಿನ್ನಪಮಂ ಲಾಲಿಸು, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ಗುರುಸಂಬಂಧಿ ಗುರುಭಕ್ತಯ್ಯನು. ಲಿಂಗಸಂಬಂಧಿ ಪ್ರಭುದೇವರು. ಜಂಗಮಸಂಬಂಧಿ ಸಿದ್ಧರಾಮನು. ಪ್ರಸಾದಸಂಬಂಧಿ ಮರುಳಶಂಕರದೇವರು. ಪ್ರಾಣಲಿಂಗಸಂಬಂಧಿ ಅನಿಮಿಷದೇವರು. ಶರಣಸಂಬಂಧಿ ಘಟ್ಟಿವಾಳಯ್ಯನು. ಐಕ್ಯಸಂಬಂಧಿ ಅಜಗಣ್ಣಯ್ಯನು. ಸರ್ವಾಚಾರಸಂಬಂಧಿ ಚೆನ್ನಬಸವಣ್ಣನು. ಇಂತಿವರಸಂಬಂಧ ಎನ್ನ ಸರ್ವಾಂಗದಲ್ಲಿ ನಿಂದು ಬಸವಣ್ಣಪ್ರಿಯ ಚೆನ್ನಸಂಗಯ್ಯನ ಹೃದಯಕಮಲದಲ್ಲಿ ನಿಜನಿವಾಸಿಯಾಗಿದ್ದೆನು.
--------------
ನಾಗಲಾಂಬಿಕೆ
ಜಂಗಮಮುಖದಲು ಲಿಂಗ ಸರ್ವಾಂಗವಾಯಿತ್ತಾಗಿ ಆರೋಗಿಸಿ ಕೊಡುವುದು ನೋಡಾ ! ಜಂಗಮದಾಪ್ಯಾಯನವೆ ಲಿಂಗದಾಪ್ಯಾಯನ ನೋಡಾ ! ಜಂಗಮತೃಪ್ತಿಯೆ ಲಿಂಗತೃಪ್ತಿನೋಡಾ ! ಜಂಗಮವಾರೋಗಿಸಿ ಡರ್ರನೆ ತೇಗಿದಡೆ ಂಗೈಯಲೆರಗುವುದು ನಮುಕ್ತಿಫ ನೋಡಾ ! ಜಂಗಮಮುಖದಲು ತೃಪ್ತನಾದನೆಂದು `ಬಾರಯ್ಯಾ ಬಸವ್ಡ ಎಂದು ಕೈವಿಡಿದು, ತೆಗೆದಪ್ಪಿ ಮುದ್ದಾಡಿ, ತಕ್ಕೈಸಿಕೊಂಡು, ನಿನ್ನ ಹೊರಗಿರಿಸಲಾರೆನೆಂದು ತನ್ನ ಹೃದಯಕಮಲದಲ್ಲಿ ಇಂಬಿಟ್ಟುಕೊಂಡು ಕೂಡಲಚೆನ್ನಸಂಗಯ್ಯಂಗೆ ಬಸವ ಪ್ರಾಣಲಿಂಗವಾದ.
--------------
ಚನ್ನಬಸವಣ್ಣ
ಆದಿ ಭಕ್ತ, ಅನಾದಿ ಜಂಗಮ, ಆದಿ ಶಕ್ತಿ, ಅನಾದಿ ಶಿವನು ನೋಡಾ. ಎನ್ನ ಆದಿಪಿಂಡಕ್ಕೆ ನೀನೆ ಆಧಾರವಾಗಿ ತೋರಿದಡೆ [ಎನ್ನ] ಹೃದಯಕಮಲದಲ್ಲಿ ನಿಮ್ಮ ಕಂಡೆನು. ಆ ಕಾಂಬ ಜ್ಞಾನವೆ ಜಂಗಮ, ಆ ಜಂಗಮವಿಡಿದಲ್ಲದೆ ಲಿಂಗವ ಕಾಣಬಾರದು. ಆ ಜಂಗಮವಿಡಿದಲ್ಲದೆ ಗುರುವ ಕಾಣಬಾರದು, ಆ ಜಂಗಮವಿಡಿದಲ್ಲದೆ ಪ್ರಸಾದವ ಕಾಣಬಾರದು. ಕಾಯ ಭಕ್ತ, ಪ್ರಾಣ ಜಂಗಮವೆಂಬ ವಚನವ ತಿಳಿಯಲು ಎನ್ನ ಪ್ರಾಣ ನೀವಲ್ಲದೆ ಮತ್ತಾರು ಹೇಳಯ್ಯಾ ಇದು ಕಾರಣ, ನಿಮ್ಮ ಘನವ ಕಿರಿದು ಮಾಡಿ, ಎನ್ನನೊಂದು ಘನವ ಮಾಡಿ ನುಡಿವಿರಿ, ಕೂಡಲಸಂಗಮದೇವಾ.
--------------
ಬಸವಣ್ಣ
`ಮಂತ್ರಪಿಂಡ ಹೃದಂಭೋಜೇ ವಾಸ ಮಂತ್ರಸ್ಯ ಭಾವತಃ| ಆಹ್ವಾಸಾತ್ಸಮ ಸಂಯುಕ್ತೇ ಲಿಂಗೇ ಪೂಜಾತಿಕಂ ಭವೇತ್' ಎಂ[ಬುವ] ಮಂತ್ರಪಿಂಡವಪ್ಪ ತನ್ನ ಹೃದಯಕಮಲದಲ್ಲಿ ಆಹ್ವಾನದ ದೆಸೆಯಿಂದ ಸಂಯುಕ್ತವಾದ ಶಿವಲಿಂಗದಲ್ಲಿ ಮಂತ್ರಪತಿಯಪ್ಪ ವರ್ಣವಾಸ ಮೊದಲಾಗಿ ಶಿವವಾಸ ಪರ್ಯಂತರವಾದ ವಾಸಮಂತ್ರಭಾವದಿಂದ ಲಿಂಗಪೂಜೆಯೆ ಆಧಿಕವಪ್ಪುದು. `ಮಂತ್ರಲಿಂಗ ಶರೀರತಸ್ಯಾತ್ಸ ಉವ ಪರಮ:ಶಿವ:ಅಂತರಂಗಾರ್ಚನೆಯ ಮಾಡುವ ಶುದ್ಧ ಶೈವನು ಮಂತ್ರಸ್ಥರೂಪವಾದ ಶರೀರಿಯಹನು ಅಂತದರಿಂದಾತನು ಪರಮ ಶಿವನಪ್ಪನು ಎಂದು ಶಿವನು ಬೋಧಿಸುತ್ತಿರ್ದನು ಶಾಂತವೀರಪ್ರಭುವೇ.
--------------
ಶಾಂತವೀರೇಶ್ವರ
ನಿಂದೆ, ಎಂಬುದು ಬಂದ ಭವದಲ್ಲಿಯೆ ಹೋಯಿತ್ತು. ಮುಂದೆ ಗುರುಕಾರುಣ್ಯವಾದಲ್ಲಿಯೇ `ಹಿಂದು' ಹರಿಯಿತ್ತು. ಮರ್ತ್ಯಲೋಕದ ಮಹಾಗಣಂಗಳು ಮೆಚ್ಚೆ, ದಾಸೋಹವ ಮಾಡಿದಲ್ಲಿಯೆ ಪ್ರಮಥಗಣಂಗಳು ತಮ್ಮೊಳಗೆ ನಿಮ್ಮನು ಇಂಬಿಟ್ಟುಕೊಂಡು. ಅಂಗದ ಮೇಲೆ ಲಿಂಗವುಳ್ಳುದೆಲ್ಲವೂ ಸಂಗಮನಾಥನೆಂದರಿದು, ನಿನ್ನ ಸರ್ವಾಂಗದಲ್ಲಿ ಲಿಂಗಸನ್ನಹಿತವಾದಲ್ಲಿಯೆ ಪ್ರಾಣಲಿಂಗಸಂಬಂಧವಳವಟ್ಟಿತ್ತು. ಲಕ್ಷದ ಮೇಲೆ ತೊಂಬತ್ತಾರುಸಾವಿರ ಪ್ರಮಥರಿಗೆ ಮಾಡಿದ ಸಯದಾನವ ನಿಮ್ಮ ಲಿಂಗಕ್ಕೆ ಆರೋಗಿಸಲಿತ್ತು ತೃಪ್ತಿಪಡಿಸಿದಲ್ಲಿಯೆ ನಿನ್ನ ತನು ಮನ ಪ್ರಾಣಗಳು ಅರ್ಪಿತವಾದಲ್ಲಿ ಮಹಾಪ್ರಸಾದ ಸಾಧ್ಯವಾಯಿತ್ತು. ಆದಿಯ ಲಿಂಗವಿಡಿದು ನಾನು ನಿಮ್ಮಲ್ಲಿ ಅಡಗಿದ ಬಳಿಕ ಹಿಂದಣ ಸಂಕಲ್ಪವಳಿಯಿತ್ತು. ಸರ್ವಾಚಾರಸಂಪತ್ತು ನಿನ್ನಲ್ಲಿ ಸಯವಾದಲ್ಲಿ ಸರ್ವಸೂತಕ ತೊಡೆಯಿತ್ತು. ಗುಹೇಶ್ವರಲಿಂಗವು ನಿನ್ನ ಹೃದಯಕಮಲದಲ್ಲಿ ನೆಲೆಗೊಂಡು ನಿನ್ನ ಕರಸ್ಥಲದೊಳಗೆ ತೊಳಗೆ ಬೆಳಗುತ್ತೈದಾನೆ. ಇನ್ನೊಮ್ಮೆ ತಿಳಿದು ನೋಡಾ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ಚಿನ್ಮಯ ಚಿತ್ಪ್ರಕಾಶ ಚಿದಾನಂದ ಲಿಂಗವೆ, ಎನ್ನ ಹೃದಯಕಮಲದಲ್ಲಿ ಬೆಳಗಿ ತೋರುವ ಪರಂಜ್ಯೋತಿ, ಎನ್ನ ಕರಸ್ಥಲಕ್ಕನುವಾದ ಧರ್ಮಿ, ಎನ್ನ ಕಂಗಳ ಕೊನೆಯಲ್ಲಿ ಮೂರ್ತಿಗೊಂಡಿಪ್ಪೆಯಯ್ಯಾ, ಕೂಡಲಸಂಗಮದೇವಯ್ಯಾ.
--------------
ಬಸವಣ್ಣ
ಎನ್ನ ತನು ಚೆನ್ನಬಸವಣ್ಣನ ಬಯಲ ಬೆರಸಿತ್ತು. ಎನ್ನ ಮನ ಸಂಗನಬಸವಣ್ಣನ ನಿಜಪದವ ಬೆರಸಿತ್ತು. ಎನ್ನ ಪ್ರಾಣ ಅಲ್ಲಮಪ್ರಭುದೇವರ ಅರಿವ ಬೆರಸಿತ್ತು. ಇಂತೀ ಮೂವರು ಒಂದೊಂದ ಹಂಚಿಕೊಂಡ ಕಾರಣ, ಎನಗೇನೂ ಇಲ್ಲದೆ, ಬಸವಣ್ಣಪ್ರಿಯ ಚೆನ್ನಸಂಗಯ್ಯನ ಹೃದಯಕಮಲದಲ್ಲಿ ನಿಜನಿವಾಸಿಯಾಗಿದ್ದೆನು.
--------------
ನಾಗಲಾಂಬಿಕೆ
ಅಗ್ನಿ ಸರ್ವವ್ಯಾಪಕನಾಗಿರುವಂತೆ, ಚಿದ್ವಹ್ನಿರೂಪನಾದ ಶಿವನು ಸರ್ವವ್ಯಾಪಕನಾಗಿರ್ಪನು. ಹೃದಯಕಮಲವು ಮುಕುರದೋಪಾದಿಯಲ್ಲಿ ಪ್ರಕಾಶಿಸುತಿರ್ದಪುದು. ಆ ಕನ್ನಡಿಯೋಪಾದಿಯ ಹೃದಯಕಮಲದಲ್ಲಿ ವ್ಯಾಪಕನಾದ ಶಿವನು, ಆತ್ಮನೆನಿಸಿಕೊಂಡು ಪ್ರತಿಬಿಂಬಿಸುತಿರ್ದಪನು. ವೇದೋಪನಿಷದ್ಗಾಯತ್ರಿ ಪ್ರಸಿದ್ಧವಾದೀ ರಹಸ್ಯವ ಗುರೂಪದೇಶದಿಂ ತಿಳಿವುದಯ್ಯ ಶ್ರೀ ಚೆನ್ನಮಲ್ಲಿಕಾರ್ಜುನದೇವಾ.
--------------
ಅಕ್ಕಮಹಾದೇವಿ
ಹೃದಯಕಮಲದಲ್ಲಿ ವಾಸವಾಗಿರುವಾತನೊಬ್ಬನು. ಮನದ ಕೊನೆಯಲ್ಲಿ ಇರುವಾತನೊಬ್ಬನು, ಚಿದಾಕಾಶದಲ್ಲಿರುವಾತನೊಬ್ಬನು. ಇವರೆಲ್ಲರಲ್ಲಿ ಇರುವಾತನೊಬ್ಬನು, ನಮ್ಮ ಕಪಿಲಸಿದ್ಧಮಲ್ಲಿಕಾರ್ಜುನನು.
--------------
ಸಿದ್ಧರಾಮೇಶ್ವರ
ಕೇಳಿ ಕೇಳಿರಯ್ಯಾ ಮತ್ರ್ಯಲೋಕದ ಮಹಾಗಣಂಗಳು ನೀವೆಲ್ಲ. ನಾವು ನಮ್ಮ ಲಿಂಗದೊಳಗೆ ಅಂಗಸಹಿತ ಐಕ್ಯವಾಗುವ ಠಾವ ಹೇಳಿಹೆವು ಕೇಳಿರಯ್ಯಾ ! ಕೇಳಿರಯ್ಯಾ, ಏಕಚಿತ್ತರಾಗಿ ಲಾಲಿಸಿರಯ್ಯಾ. ಷಣ್ಮುಖನೆಂಬ ಗಣೇಶ್ವರನ ಹೃದಯಕಮಲದಲ್ಲಿ ಸದಾನಂದನೆಂಬ ಗಣೇಶ್ವರನು ಮೂರ್ತಿಗೊಂಡಿರ್ಪನು. ಆ ಸದಾನಂದನೆಂಬ ಗಣೇಶ್ವರನ ಹೃದಯಕಮಲಕರ್ಣಿಕದಲ್ಲಿ ವಿಶ್ವತೋಮುಖನೆಂಬ ಗಣೇಶ್ವರನು ಮೂರ್ತಿಗೊಂಡಿರ್ಪನು. ಆ ವಿಶ್ವತೋಮುಖನೆಂಬ ಗಣೇಶ್ವರನ ಹೃದಯಕಮಲದಲ್ಲಿ ಆದಿನಾಥನೆಂಬ ಗಣೇಶ್ವರನು ಮೂರ್ತಿಗೊಂಡಿರ್ಪನು. ಆ ಆದಿನಾಥನೆಂಬ ಗಣೇಶ್ವರನ ಹೃದಯಕಮಲದಲ್ಲಿ ಅನಾದಿನಾಥನೆಂಬ ಗಣೇಶ್ವರನು ಮೂರ್ತಿಗೊಂಡಿರ್ಪನು. ಆ ಅನಾದಿನಾಥನೆಂಬ ಗಣೇಶ್ವರನ ಹೃದಯಕಮಲದಲ್ಲಿ ಗೋಳಕನಾಥನೆಂಬ ಗಣೇಶ್ವರನು ಮೂರ್ತಿಗೊಂಡಿರ್ಪನು. ಆ ಗೋಳಕನಾಥನೆಂಬ ಗಣೇಶ್ವರನ ಹೃದಯಕಮಲದಲ್ಲಿ ಅಗಮ್ಮೇಶ್ವರನೆಂಬ ಗಣೇಶ್ವರನು ಮೂರ್ತಿಗೊಂಡಿರ್ಪನು. ಆ ಅಗಮ್ಮೇಶ್ವರನೆಂಬ ಗಣೇಶ್ವರನ ಹೃದಯಕಮಲದಲ್ಲಿ ಅಖಂಡೇಶ್ವರನೆಂಬ ಗಣೇಶ್ವರನು ಮೂರ್ತಿಗೊಂಡಿರ್ಪನು. ಆ ಅಖಂಡೇಶ್ವರನೆಂಬ ಗಣೇಶ್ವರನ ಹೃದಯಕಮಲದಲ್ಲಿ ಜ್ಯೋತಿರ್ಮಯನೆಂಬ ಗಣೇಶ್ವರನು ಮೂರ್ತಿಗೊಂಡಿರ್ಪನು. ಆ ಜ್ಯೋತಿರ್ಮಯನೆಂಬ ಗಣೇಶ್ವರನ ಹೃದಯಕಮಲದಲ್ಲಿ ಅಭೇದ್ಯನೆಂಬ ಗಣೇಶ್ವರನು ಮೂರ್ತಿಗೊಂಡಿರ್ಪನು. ಆ ಅಭೇದ್ಯನೆಂಬ ಗಣೇಶ್ವರನ ಹೃದಯಕಮಲದಲ್ಲಿ ಅಪ್ರಮಾಣನೆಂಬ ಗಣೇಶ್ವರನು ಮೂರ್ತಿಗೊಂಡಿರ್ಪನು. ಆ ಅಪ್ರಮಾಣನೆಂಬ ಗಣೇಶ್ವರನ ಹೃದಯಕಮಲದಲ್ಲಿ ಅವಾಚ್ಯಾತ್ಮಕನೆಂಬ ಗಣೇಶ್ವರನು ಮೂರ್ತಿಗೊಂಡಿರ್ಪನು. ಆ ಅವಾಚ್ಯಾತ್ಮಕನೆಂಬ ಗಣೇಶ್ವರನ ಹೃದಯಕಮಲದಲ್ಲಿ ಸರ್ವಶೂನ್ಯ ನಿರಾಲಂಬನೆಂಬ ಗಣೇಶ್ವರನು ಮೂರ್ತಿಗೊಂಡಿರ್ಪನು. ಆ ಸರ್ವಶೂನ್ಯ ನಿರಾಲಂಬನೆಂಬ ಗಣೇಶ್ವರನ ಹೃದಯಕಮಲಮಧ್ಯದ ಮಹಾಬಯಲೊಳಗೆ ನಮ್ಮ ಅಖಂಡೇಶ್ವರಲಿಂಗಸಹಿತ ನಿರವಯಲಾಗಿ ಮರಳಿ ಇತ್ತ ಬಾರದಿರ್ಪೆವು ಕೇಳಿರಯ್ಯಾ.
--------------
ಷಣ್ಮುಖಸ್ವಾಮಿ
ಇನ್ನಷ್ಟು ... -->