ಅಥವಾ

ಒಟ್ಟು 51 ಕಡೆಗಳಲ್ಲಿ , 28 ವಚನಕಾರರು , 44 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಿಂಗ ಸಹಿತವಾಗಿ ಸರ್ವಗುಣಂಗಳ ಭೋಗಿಸಬೇಕೆಂಬಲ್ಲಿ ಲಿಂಗಕ್ಕೆ ಕೊಟ್ಟು ತಾ ಕೊಂಬ ತೆರನಾವುದು? ಹೆಣ್ಣ ಕೊಡುವಲ್ಲಿ ತನ್ನಯ ವಿಕಾರವೊ ಲಿಂಗದ ಸುಖವೊ? ಹೊನ್ನ ಹಿಡಿವಲ್ಲಿ ತನ್ನಯ ಬಯಕೆಯೊ ಲಿಂಗದ ಭೋಗವೊ? ಮಣ್ಣ ಹಿಡಿವಲ್ಲಿ ತನ್ನಯ ಬೆಳೆಯೊ ಲಿಂಗದ ಇರವೊ? ಇಂತೀ ತ್ರಿವಿಧದ ಬಿಡುಮುಡಿಯನರಿತು, ಹೆಣ್ಣ ಬೆರಸಿದಲ್ಲಿ ಹೆಣ್ಣಿಗೆ ವಿಷಯಸುಖ ತೋರಿ ತನಗೆ ಆ ವ್ಯಾಪಾರ ಹಿಂಗಿ ನಿಂದ ನಿಜದುಳುಮೆ ಲಿಂಗಸುಖಿ. ಹೊನ್ನು ತನ್ನ ತಾ ಬಂದಲ್ಲಿ ಮುಟ್ಟಿ ಕೊಟ್ಟೆನೆಂಬುದನರಿಯದೆ ಅದು ದೃಷ್ಟದಿಂದ ಬಂದುದ, ತನ್ನಷ್ಟವೆಂಬುದನರಿದಿಪ್ಪಾತನೆ ನಿಸ್ಪ ೃಹ. ಮಣ್ಣ ಅಡಿವಿಡಿದು ಹಿಡಿದಲ್ಲಿ ಕರ್ಮರುಗಳಂತೆ ಕಾದರೆ ಅವು ಮುನ್ನಿನಂತೆ ಇರಲಿ ಎಂಬುದು ಪರಮ ನಿರ್ವಾಣ. ಇಂತೀ ತ್ರಿವಿಧ ಮಲಂಗಳಲ್ಲಿ ಅಮಲನಾಗಿ ಸರ್ವಗುಣ ಸಂಪನ್ನನಾದುದು ಲಿಂಗ ಭೋಗೋಪಭೋಗಿಯ ಅಂಗನಿರತ, ಸ್ವಯಾನುಭಾವಿಯ ಲಿಂಗಾಂಗ ಯೋಗ ಸಂಬಂಧ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 81 ||
--------------
ದಾಸೋಹದ ಸಂಗಣ್ಣ
ಹಣ್ಣ ಮೆದ್ದ ಬಳಿಕ ಆ ಮರನನಾರು ತರಿದಡೇನು ? ಹೆಣ್ಣ ಬಿಟ್ಟ ಬಳಿಕ ಆಕೆಯನಾರು ಕೂಡಿದಡೇನು ? ಮಣ್ಣ ಬಿಟ್ಟ ಬಳಿಕ ಆ ಕೆಯ್ಯನಾರು ಉತ್ತಡೇನು ? ಚೆನ್ನ ಮಲ್ಲಿಕಾರ್ಜುನನರಿಯದ ಬಳಿಕ ಆ ಕಾಯವ ನಾಯಿ ತಿಂದಡೇನು, ನೀರು ಕುಡಿದಡೇನು?
--------------
ಅಕ್ಕಮಹಾದೇವಿ
ಧರಣಿಯನಾಳುವ ಅರಸಿಂಗೆ, ಮಾರಿಯ ಭಯ, ಭೂರಿಯ ಭಯ, ಚೋರ ಭಯ. ಅಗ್ನಿಯ ಭಯ, ಹಿರಿದಪ್ಪ ಅರಿರಾಯರ ಭಯ. ಇವೈದು ಭಯಕಂಜಿ, ಅಷ್ಟದಳಮಂಟಪದ ಕೋಣೆಯ ನೆರೆ ಪೂರ್ವದಿಕ್ಕಿನ ರಾಜ್ಯಕ್ಕೊಳಿತಂ ಬಯಸಿ, ಅಗ್ನಿಕೋಣೆಯ ರಾಜ್ಯವ ಭಕ್ಷಿಪೆನೆಂದು, ಯಮದಿಕ್ಕಿನ ರಾಜ್ಯವ ಕ್ರೋಧದಲ್ಲುರುಹುವೆನೆಂದು, ನೈಋತ್ಯದಿಕ್ಕಿನ ರಾಜ್ಯವ ಮರತು ಮಲಗಿಸುವೆನೆಂದು, ವರುಣದಿಕ್ಕಿನ ರಾಜ್ಯಕ್ಕೆ ಸತ್ಯವ ಬಯಸಿ, ವಾಯುವ್ಯದಿಕ್ಕಿನ ರಾಜ್ಯವ ಗಾಳಿಗಿಕ್ಕಿ ಹಾರಿಸುವೆನೆಂದು, ಕುಬೇರದಿಕ್ಕಿನ ರಾಜ್ಯಕ್ಕೆ ಧರ್ಮನು ಬಯಸಿ ಈಶಾನ್ಯಕೋಣೆಯ ರಾಜ್ಯದ ಹೆಣ್ಣ ವಿಷಯತೂರ್ಯದಲ್ಲಿ ದಳೆಯ ಹಿಡಿವೆನೆಂದು, ಅಷ್ಟದಿಕ್ಕಿನ ರಾಜ್ಯದ ನಟ್ಟನಡುವೆ ಕಷ್ಟಬಡುತಿರ್ಪ ಅರಸಿನ ಕಳವಳಿಕೆ ; ಬುದ್ಧಿಗುಡುವ ಮಂತ್ರಿ, ಕಪಿಚಾಷ್ಠಿ ತಂತ್ರಿ, ತಾಮಸಬುದ್ಧಿ ದಳವಾಯಿಗಳು, ದಶಗುಣಿಗಳು ಮನ್ನೆಯ ನಾಯಕರು, ಮದಡರು ಪಾಯದಳ. ಪರಿಯಾಟಗೊಳಿಸುವ ಅರಸಿನ ಪ್ರಜೆ ಪರಿವಾರ ಮಂತ್ರಿಮನ್ನೆಯರನೆಲ್ಲ ಕೈಸೆರೆಯ ಹಿಡಿದು ಆಳುವ ಅಂಗನೆ ರಾಜ್ಯಾದ್ಥಿಪತಿಯಾದುದೇನು ಚೋದ್ಯ ಹೇಳಾ ! ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಮಣ್ಣ ಮೆಚ್ಚಿ ಗುರುವಿಗೆ ಹೊರತಾದೆ, ಹೆಣ್ಣ ಮೆಚ್ಚಿ ಲಿಂಗಕ್ಕೆ ಹೊರತಾದೆ, ಹೊನ್ನ ಮೆಚ್ಚಿ ಜಂಗಮಕ್ಕೆ ಹೊರತಾದೆ. ಇಂತೀ ತ್ರಿವಿಧವ ಮೆಚ್ಚಿ ಅಕಟಕಟಾ ಕೆಟ್ಟೆನೆಂದು ಗುರೂಪಾವಸ್ತೆಯಂ ಮಾಡಿ, ಗುರುವಾಕ್ಯ ಪ್ರಮಾಣವಿಡಿದು, ಆಚರಿಸುವ ಜ್ಞಾನಕಲಾತ್ಮನಿಗೆ ಈ ಲೋಕದ ಜಡಜೀವರು ಕಡುಪಾತಕರು ಬಂದು ಈ ಸಂಸಾರದಲ್ಲಿ ಪಾರಮಾರ್ಥವುಂಟು, ಇದರೊಳಗೆ ಸಾದ್ಥಿಸಬೇಕೆಂದು ಇಹ ಬಿಟ್ಟು ವೈರಾಗ್ಯದಲ್ಲಿ ಮೋಕ್ಷವಿಲ್ಲೆಂದು ಹೇಳುವರು. ಇದಕ್ಕೆ ಉಪಮೆ- ಹಿಂದೆ ಕಲ್ಯಾಣಪಟ್ಟಣಕ್ಕೆ ತಮ್ಮ ತಮ್ಮ ದೇಶವ ಬಿಟ್ಟು ಬಂದ ಗಣಂಗಳಾರಾರೆಂದಡೆ: ಮೋಳಿಗೆ ಮಾರತಂದೆಗಳು ಕಾಶ್ಮೀರದೇಶದ ಅರಸು. ನಿಜಗುಣಸ್ವಾಮಿಗಳು ಕೈಕಾಡದೇಶದ ಅರಸು. ನುಲಿಯ ಚಂದಯ್ಯನವರು ಕೈಕಾಣ್ಯದೇಶದ ಅರಸುಗಳು. ಇಂತಿವರು ಮೊದಲಾದ ಬಸವಾದಿ ಪ್ರಭುದೇವರಾಂತ್ಯಮಾದ ಏಳನೂರೆಪ್ಪತ್ತು ಪ್ರಮಥಗಣಂಗಳು. ತಮ್ಮ ತಮ್ಮ ದೇಶವ ಬಿಟ್ಟು ಕಲ್ಯಾಣಕ್ಕೆ ಬಂದರು. ಅವರೆಲ್ಲರು ಹುಚ್ಚರು, ನೀವೇ ಬಲ್ಲವರು. ಬಸವೇಶ್ವರದೇವರು ಮೊದಲಾಗಿ ಏಳನೂರೆಪ್ಪತ್ತು ಪ್ರಮಥಗಣಂಗಳು ಕೂಡಿ ತಮ್ಮ ತಮ್ಮ ಹೃನ್ಮಂದಿರದಲ್ಲಿ ನೆಲಸಿರುವ ಪರಶಿವಲಿಂಗಲೀಲಾವಿನೋದದಿಂ ಎರಡೆಂಬತ್ತೆಂಟುಕೋಟಿ ವಚನಗಳನ್ನು ಹಾಡಿಕೊಂಡರು. ಇದರನುಭಾವವ ತಿಳಿಯಬಲ್ಲರೆ ಹೇಳಿರಿ; ಅರಿಯದಿದ್ದರೆ ಕೇಳಿರಿ. ತನು-ಮನ-ಧನ ನೀನಲ್ಲ, ಪಂಚವಿಂಶತಿತತ್ವ ನೀನಲ್ಲ, ಪಂಚಭೂತಪ್ರಕೃತಿ ನೀನಲ್ಲ, ಮನ ಮೊದಲಾದ ಅರವತ್ತಾರುಕೋಟಿ ಕರಣಾದಿ ಗುಣಂಗಳು ನೀನಲ್ಲ. ಇಂತೀ ಎಲ್ಲವನು ನೀನಲ್ಲ, ನೀನು ಸಾಕಾರಸ್ವರೂಪಲ್ಲವೆಂದು ಸ್ವಾನುಭಾವಜ್ಞಾನಗುರುಮುಖದಿಂದ ತಿಳಿದು ಸಕಲಪ್ರಪಂಚವನೆಲ್ಲವ ನಿವೃತ್ತಿಯ ಮಾಡಿ, ಸಕಲಸಂಶಯವಂ ಬಿಟ್ಟು, ನಿಶ್ಚಿಂತನಾಗಿ, ಏಕಾಗ್ರಚಿತ್ತದಲ್ಲಿ ಸ್ವಸ್ಥಿರನಾಗಿ ಮುಂದೆ ಶಿವಪಥವ ಸಾದ್ಥಿಸೆಂದು ಹಾಡಿದರಲ್ಲದೆ ಅವರೇನು ದಡ್ಡರೇ? ನೀವೇ ಬಲು ಬುದ್ಧಿವಂತರು, ಬಲುಜಾಣರು ! ಇಂಥ ಯುಕ್ತಿ ವಿಚಾರವ ಹೇಳುವ ಮತಿಭ್ರಷ್ಟ ಹೊಲೆಯರ ಕಾಲು ಮೇಲಕ್ಕೆ ಮಾಡಿ, ತಲೆ ಕೆಳಯಕ್ಕೆ ಮಾಡಿ ಅವರಂಗದ ಮೇಲಿನ ಚರ್ಮವ ಹೋತು ಕುರಿಗಳ ಚರ್ಮವ ಹರಿದ ಹಾಗೆ ಹರಿದು, ಅವರ ತಿದಿಯನೆ ಹಿರಿದು, ಅವರ ಕಂಡವ ಕಡಿದು, ಚಿನಿಪಾಲವ ಮಾಡಿ, ಹದ್ದು ಕಾಗೆ ನಾಯಿ ನರಿಗಳಿಗೆ ಹಾಕೆಂದ ಕಾಣಾ ನಿಮ್ಮ ಶರಣ ವೀರಾದ್ಥಿವೀರ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಮಹಾಶ್ರೀಗುರುವೆ ತಂದೆ, ಮಹಾಜಂಗಮವೆ ತಾಯಿ. ಇವರಿಬ್ಬರ ಸಂಗಸಂಯೋಗದಿಂದ ನಾನು ಹುಟ್ಟಿದೆ ನೋಡಿರಯ್ಯಾ. ಸರ್ವಾಂಗಸಾಹಿತ್ಯ ನಾನು ಹುಟ್ಟಿದ ಬಳಿಕ. ತಂದೆ ತಾಯಿಗಳಿಬ್ಬರು ಲಿಂಗವೆಂಬ ಹೆಣ್ಣ ತಂದು, ಎನ್ನ ಕೊರಳಲ್ಲಿ ಕಟ್ಟಿ ಮದುವೆಯ ಮಾಡಿದರಯ್ಯಾ. ಆ ಹೆಣ್ಣಿನ ಕೈಹಿಡಿದು ನಾನು ಬದುಕಿದೆನು. ಆ ಹೆಣ್ಣಿನ ಸಂಯೋಗದಿಂದ ಮಗನೆಂಬ ಮಹಾಲಿಂಗ ಹುಟ್ಟಿದನಯ್ಯಾ. ಆ ಮಗ ಹುಟ್ಟಿದ ಮುನ್ನವೆ ಎನಗೆ ಮರಣವಾಯಿತ್ತು. ಲಿಂಗವೆಂಬ ಹೆಂಡತಿ ಮುಂಡೆಯಾದಳು. ತಂದೆ ತಾಯಿಗಳಿವರಿಬ್ಬರೂ ನನ್ನ ಒಂದಾಗಿ ಅಡಗಿ ಹೋದರು. ಇನ್ನು ಮುನ್ನಿನ ಪರಿ ಎಂತುಟಲ್ಲವಾಗಿ ನಾನು ಬದುಕಿದೆ ಕಾಣಾ, ಶುದ್ಭ ಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚನ್ನ ಮಲ್ಲಿಕಾರ್ಜುನದೇವಯ್ಯಾ. ನಿಮ್ಮ ಶರಣರ ಕರುಣದಿಂದ ಎನ್ನ ಕರ್ಮ ನಿರ್ಮಳವಾಯಿತ್ತಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಮರುಳಶಂಕರದೇವ
ಗಂಡು ಮೋಹಿಸಿ ಹೆಣ್ಣ ಹಿಡಿದಡೆ ಅದು ಒಬ್ಬರ ಒಡವೆ ಎಂದು ಅರಿಯಬೇಕು. ಹೆಣ್ಣು ಮೋಹಿಸಿ ಗಂಡ ಹಿಡಿದಡೆ ಉತ್ತರವಾವುದೆಂದರಿಯಬೇಕು. ಈ ಎರಡರ ಉಭಯವ ಕಳೆದು ಸುಖಿ ತಾನಾಗಬಲ್ಲಡೆ ನಾಸ್ತಿನಾಥನು ಪರಿಪೂರ್ಣನೆಂಬೆ.
--------------
ಗೊಗ್ಗವ್ವೆ
ನಲ್ಲನ ಕೂಡುವ ಸುಖಭೋಗದ್ರವ್ಯವನೆಲ್ಲಿಂದ ತಪ್ಪೆನು ಹೇಳಾ ಕೆಳದಿ ? ನಲ್ಲನ ಬೇಡಲು ನಾಚಿಕೆ ಎನಗೆ, ಮತ್ತೆಲ್ಲಿಯು ನಿಲ್ಲೆನು. ಕೂಡುವ [ಶಕ್ತಿ]ಯ ತಾನರಿದಿಹನು ಕೇಳಾ ಕೆಳದಿ. ಹೆಣ್ಣು ಹೆಣ್ಣ ಕೂಡುವ ಸುಖವ ಮಣ್ಣಿನಲ್ಲಿ ನೆರಹುವೆನು, ಉರಿಲಿಂಗದೇವನ ಕೂಡುವೆನು.
--------------
ಉರಿಲಿಂಗದೇವ
ಲಿಂಗವೆ ನಿಮ್ಮ ನೆನೆವ ಮನಕ್ಕೆ ಹೊನ್ನ ತೋರಿ, ನಿಮ್ಮ ನೋಡುವ ನೋಟಕ್ಕೆ ಹೆಣ್ಣ ತೋರಿ, ನಿಮ್ಮ ಪೂಜಿಸುವ ಕೈಗೆ ಮಣ್ಣ ತೋರಿ, ಮತ್ತೆ ಗಣಂಗಳ ಸಾಕ್ಷಿಯಾಗಿದ್ದುದ ತಿಳಿದು ಅವರಿಗೆ ಅಂಜಿ ಮನದ ಕೊನೆಯಲ್ಲಿ ಮಂತ್ರರೂಪಾಗಿ ನಿಂದ ಕಾರಣ ಹೊನ್ನಿನ ನೆನಹು ಕೆಟ್ಟಿತ್ತು ನೋಡಾ ! ಪರಶಿವಮೂರ್ತಿಯ ಮುದ್ದುಮೊಗದ ತುಟಿಯಲ್ಲಿ ಹುಟ್ಟಿದ ಓಂಕಾರನಾದಾಮೃತವ ಚುಂಬನವ ಮಾಡಲಿಕ್ಕೆ ಹೆಣ್ಣಿನ ನೋಟ ಕೆಟ್ಟಿತ್ತು. ಕರಕಮಲ ಗದ್ದುಗೆಯ ಮಾಡಿದ ಕಾರಣ ಮಣ್ಣಿನ ಧಾವತಿ ಬಿಟ್ಟುಹೋಯಿತ್ತು. ಇಂತು ಮಾಡಿದಿರಿ ಲಿಂಗವೆ, ಮತ್ತೆ ನಿಮ್ಮ ಬೇಡಿದಡೆ ಅಷ್ಟೈಶ್ವರ್ಯ ಚತುರ್ವಿಧಪದಗಳನು ಕೊಡುವಿರಿ. ಇವೆಲ್ಲ ಅಲ್ಪಸುಖ, ತಾಮಸಕಿಕ್ಕುವವು. ಮತ್ತೆ ನಮ್ಮ ಗಣಂಗಳ ಮನೆಯಲ್ಲಿ ಕೇಡಿಲ್ಲದಂತಹ ನಿತ್ಯವಾದ ವಸ್ತು ಅಷ್ಟೈಶ್ವರ್ಯಗಳುಂಟು, ನಿದ್ಥಿ ನಿಧಾನಗಳುಂಟು, ಇದಕ್ಕೆ ನಾವು ನೀವು ಬೇಡಿಕೊಂಬುವ ಬನ್ನಿರಿ. ಅವರಿರುವ ಸ್ಥಲವ ತೋರಿಕೊಡಿ ಎಲೆ ಲಿಂಗವೆ. ಅವರು ಎಲ್ಲಿ ಐದಾರೆಯೆಂದಡೆ : ಏಳುಪ್ಪರಿಗೆಯೊಳಗಿಪ್ಪರು. ಅವರ ನಾಮವ ಪೇಳ್ವೆನು - ಪಶ್ಚಿಮಚಕ್ರದಲ್ಲಿ ನಿರಂಜನ ಜಂಗಮವು, ಗುರು-ಹಿರಿಯರು ಅಸಂಖ್ಯಾತ ಮಹಾಗಣಂಗಳು ಸಹವಾಗಿಪ್ಪರು. ಅವರ ಮಧ್ಯದಲ್ಲಿ ನೀವೆ ನಾವಾಗಿ ಬೇಡಿಕೊಂಬೆವು. ಬೇಡಿಕೊಂಡ ಮೇಲೆ ಅವರು ಕೊಟ್ಟ ವಸ್ತುವ ಹೇಳಿಹೆನು ಕೇಳಿರೆ ಲಿಂಗವೆ. ಅವು ಯಾವುವೆಂದಡೆ : ಜೀವಾತ್ಮ ಅಂತರಾತ್ಮ ಪರಮಾತ್ಮರೆಂಬ ಆತ್ಮತ್ರಯರು, ಹೇಮಾದ್ರಿ ರಜತಾದ್ರಿ ಮಂದರಾದ್ರಿಯೆಂಬ ಮೇರುಗಳ ಸೆಜ್ಜೆಯ ಮಾಡಿ, ವಾಯುವನೆ ಶಿವದಾರವ ಮಾಡಿ, ತನುತ್ರಯವನೆ ವಸ್ತ್ರವ ಮಾಡಿ, ಇವುಗಳನೆ ಅವರು ನಮಗೆ ಕೊಟ್ಟರು. ಅಲ್ಲದೆ ಪರಸ್ತ್ರೀಯರ ಅಪ್ಪದ ಹಾಗೆ ನಿಃಕಾಮವೆಂಬ ಉಡುಗೊರೆಯ ಮಾಡಿ ಕಟ್ಟಿನಲ್ಲಿಟ್ಟರು. ಕುಶಬ್ದವ ಕೇಳದ ಹಾಗೆ ಬಲದ ಕರ್ಣದಲ್ಲಿ ಷಡಕ್ಷರವೆಂಬ ವಸ್ತುವ ಮಾಡಿಯಿಟ್ಟರು. ಪಂಚಾಂಗುಲಿಗೆ ಪಂಚಾಕ್ಷರವೆ ಐದುಂಗುರವ ಮಾಡಿಯಿಟ್ಟರು. ನೂರೆಂಟು ನಾಮ ಹರಗÀಣ ಕೊರಳಲಿ ಹಾಕಿದರು. ಆಪತ್ತಿಗೆ ಅಂಜಬೇಡೆಂದು ವಿಭೂತಿಧೂಳನ ಧಾರಣವಮಾಡಿ ಜೋಡಂಗಿಯ ಮಾಡಿ ತೊಡಿಸಿದರು. ಗಣಂಗಳು ಹೋದ ಹಾದಿಯನೆ ಮುಂಡಾಸವ ಮಾಡಿ ತಲೆಗೆ ಸುತ್ತಿದರು. ಆವ ಕಂಟಕವು ಬಾರದ ಹಾಗೆ ಗಣಂಗಳ ಪಾದಧೂಳನವ ಸೆಲ್ಲೆಯ ಮಾಡಿ ಹೊದಿಸಿದರು. ಭಕ್ತಿಯೆಂಬ ನಿಧಾನವ ಕೊಟ್ಟು, ಭಾವದಲ್ಲಿ ಬಚ್ಚಿಟ್ಟುಕೊಳ್ಳಿರಿ ಎಂದರು. ಅಷ್ಟಾವರಣವೆ ನಿದ್ಥಿನಿಧಾನವೆಂದು ಹೇಳಿದರು. ಇವೆಲ್ಲ ವಸ್ತುಗಳ ನಿಮ್ಮ ನೋಡಿ ಕೊಟ್ಟರಲ್ಲದೆ ಬೇರಿಲ್ಲ. ನಿಮ್ಮ ದಾಸಾನುದಾಸಯೆಂದು ನಿಮ್ಮೊಡವೆಯ ನಿಮಗೊಪ್ಪಿಸು ಎಂದರುಹಿದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಹೊನ್ನ ಬಿಟ್ಟು, ಹೆಣ್ಣ ಬಿಟ್ಟು, ಮಣ್ಣ ಬಿಟ್ಟು, ಮಂಡೆಯ ಬೋಳಿಸಿಕೊಂಡು ಬೋಳಾದ ಬಳಿಕ ನಿರಾಸಕ್ತನಾಗಿ, ಭಿಕ್ಷಾಹಾರಿಯಾಗಿ ಶಿವಧ್ಯಾನಪರಾಯಣನಾಗಿಪ್ಪುದೀಗ ಪ್ರಥಮ ಬೋಳು. ಲಿಂಗಾಣತಿಯಿಂದ ಬಂದುದ ಕೈಕೊಂಡು ಲಿಂಗ ಸಾವಧಾನವಾಗಿಪ್ಪುದೀಗ ದ್ವಿತೀಯಬೋಳು. ಶರಣಸತಿ ಲಿಂಗಪತಿಯೆಂಬುಭಯವಳಿದು ಪರಮಾನಂದದಲ್ಲಿಪ್ಪುದೀಗ ತೃತೀಯಬೋಳು. ಈ ಬೋಳಿನ ಅನುವ ಕೂಡಲಚೆನ್ನಸಂಗಯ್ಯನಲ್ಲಿ ಅಲ್ಲಯ್ಯ ಬಲ್ಲ.
--------------
ಚನ್ನಬಸವಣ್ಣ
ತನುವಿಕಾರ, ಮನವಿಕಾರ, ಜನನಮರಣಸ್ಥಿತಿ ಕಾರಣ, ಹೊನ್ನ ತೋರಿದೆ, ಜಗದ ಕಣ್ಣ ಮೊದಲಿಗೆ. ಹೆಣ್ಣ ಸುಳಿಸಿದೆ, ಜಗದ ಕಣ್ಣ ಮೊದಲಿಗೆ. ಮಣ್ಣ ಹರಹಿದೆ, ಜಗದ ಕಣ್ಣ ಮೊದಲಿಗೆ. ತನುವ ತಪ್ಪಿಸಿ, ಜಗವ ಸಂಸಾರಕ್ಕೊಪ್ಪಿಸಿ, ನುಣ್ಣನೆ ಹೋದನುಪಾಯದಿ ದೇವರಾಯಸೊಡ್ಡಳ.
--------------
ಸೊಡ್ಡಳ ಬಾಚರಸ
ಪಡುವಣ ಹೆಣ್ಣ ಮೂಡಣ ಮಣ್ಣ ತೆಂಕ ಬಡಗಲ ಹೊನ್ನ ಆಳುವ ಚಾಂಚೆಳಸಂಚೂರ ಪಂಚಾನನನ ಸಂಚಿಗವ... ಸಿಮ್ಮಲಿಗೆಯ ಚೆನ್ನರಾಮನೊಲ್ಲ.
--------------
ಚಂದಿಮರಸ
ಕುಲವಳಿದ ಹೆಣ್ಣ ಕಣ್ಣ ಬಯಲ ಕಂಡು ಕುಲವಡಗಿ ಸಂಗಸ್ವಯರೂಪಾಯಿತ್ತಯ್ಯ. ಪ್ರಭೆಯರಿದು ಪ್ರಸನ್ನರೂಪವ ಕಂಡು ಪ್ರಕಾಶಮೂರ್ತಿಯಾದನಯ್ಯ. ಪ್ರಣಮಾಕ್ಷರ ಕಾಯರೂಪು ನಿರೂಪಾಯಿತ್ತಯ್ಯಾ. ಅಪ್ರಮಾಣವಧಿಕಸ್ಥಲ ಸಂಬಂಧವಯ್ಯ ಸಂಗಯ್ಯ.
--------------
ನೀಲಮ್ಮ
ಹೊನ್ನ ಬಿಟ್ಟು ಲಿಂಗವನೊಲಿಸಬೇಕೆಂಬರು, ಹೊನ್ನಿಂಗೆಯೂ ಲಿಂಗಕ್ಕೆಯೂ ವಿರುದ್ಧವೆ ? ಹೆಣ್ಣ ಬಿಟ್ಟು ಲಿಂಗವನೊಲಿಸಬೇಕೆಂಬರು, ಹೆಣ್ಣಿಂಗೆಯೂ ಲಿಂಗಕ್ಕೆಯೂ ವಿರುದ್ಧವೆ ? ಮಣ್ಣ ಬಿಟ್ಟು ಲಿಂಗವನೊಲಿಸಬೇಕೆಂಬರು, ಮಣ್ಣಿಂಗೆಯೂ ಲಿಂಗಕ್ಕೆಯೂ ವಿರುದ್ಧವೆ ? ಅಂಗವ ಬಿಟ್ಟು ಲಿಂಗವನೊಲಿಸಬೇಕೆಂಬರು, ಅಂಗಕ್ಕೆಯೂ ಲಿಂಗಕ್ಕೆಯೂ ವಿರುದ್ಧವೆ ? ಇಂದ್ರಿಯಂಗಳ ಬಿಟ್ಟು ಲಿಂಗವನೊಲಿಸಬೇಕೆಂಬರು, ಇಂದ್ರಿಯಂಗಳಿಗೆಯೂ ಲಿಂಗಕ್ಕೆಯೂ ವಿರುದ್ಧವೆ ? ಜಗವ ಬಿಟ್ಟು ಲಿಂಗವನೊಲಿಸಬೇಕೆಂಬರು, ಜಗಕ್ಕೆಯೂ ಲಿಂಗಕ್ಕೆಯೂ ವಿರುದ್ಧವೆ ? ಇದು ಕಾರಣ, ಪರಂಜ್ಯೋತಿ ಪರಮಕರುಣಿ ಪರಮಶಾಂತನೆಂಬ ಲಿಂಗವು ಕೋಪದ ಮುನಿಸನರಿದಡೆ ಕಾಣಬಹುದು, ಮರೆದಡೆ ಕಾಣಬಾರದು. ಅರಿವಿಂದ ಕಂಡೊದಗಿದ ಸುಖವು ಮಸಣಯ್ಯಪ್ರಿಯ ಗಜೇಶ್ವರಾ
--------------
ಗಜೇಶಮಸಣಯ್ಯಗಳ ಪುಣ್ಯಸ್ತ್ರೀ
ಹೆಣ್ಣ ಬಿಟ್ಟೆ, ಮಣ್ಣ ಬಿಟ್ಟೆ ಹೊನ್ನ ಬಿಟ್ಟೆನೆಂದು ಜಗದ ಕಣ್ಣ ಕಟ್ಟಿ ಮೆರೆವ ಕಣ್ಣ ಬೇನೆಯ ಬಣ್ಣದ ಅಣ್ಣಗಳು ನೀವು ಕೇಳಿಭೋ. ಮಾತಿನಲ್ಲಿ ಬಿಟ್ಟಿರೋ, ಮನದಲ್ಲಿ ಬಿಟ್ಟಿರೋ? ಈ ನೀತಿಯ ಹೇಳಿರಿ ಎನಗೊಮ್ಮೆ. ತನುಮನದ ಮಧ್ಯದಲ್ಲಿ ಇವರ ನೆನಹು ಕೆಟ್ಟು ಲಿಂಗದ ನೆನಹಿನ ಆಯತವೇ ಸ್ವಾಯತವಾಗಿರಬಲ್ಲರೆ ಇವ ಬಿಟ್ಟರೆಂದೆಂಬೆನಯ್ಯ. ಮಾತಿನಲ್ಲಿ ಬಿಟ್ಟು, ಮನದಲ್ಲಿ ಉಳ್ಳರೆ ಭವಭವದಲ್ಲಿ ತಂದು ಕುನ್ನಿ ನಾಯ, ಕೆರವ ಕಚ್ಚಿಸುವ ಹಾಂಗೆ ಕಚ್ಚಿಸಿದಲ್ಲದೆ ಮಾಣದು ಕಾಣಿರಯ್ಯ. ಹಿಡಿದು ಸಂಸಾರಿಗಳಲ್ಲ. ಬಿಟ್ಟು ನಿಸ್ಸಂಸಾರಿಗಳಲ್ಲ. ಎರಡೂ ಅಲ್ಲದ ಎಟುವರನೇನೆಂಬೆನಯ್ಯಾ? ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಹೆಣ್ಣ ಹಿಡಿದು ಹೆಣ್ಣ ಭೋಗಿಸಬಾರದು; ಮಣ್ಣ ಹಿಡಿದು ಮಣ್ಣ ಭೋಗಿಸಬಾರದು; ಹೊನ್ನ ಹಿಡಿದು ಹೊನ್ನ ಭೋಗಿಸಬಾರದು; ಈ ಅಣಕದ ಭೇದವನಾರೂ ಅರಿಯರು. ಅದೆಂತು ಭಕ್ತಿಸ್ಥಲವಳವಡುವುದು? ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಇನ್ನಷ್ಟು ... -->