ಅಥವಾ

ಒಟ್ಟು 38 ಕಡೆಗಳಲ್ಲಿ , 16 ವಚನಕಾರರು , 38 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಷ್ಟಲಿಂಗದ ಪೂಜೆಯಾವುದು, ಪ್ರಾಣಲಿಂಗದ ಪೂಜೆಯಾವುದು, ಭಾವಲಿಂಗದ ಪೂಡೆಯಾವುದುಯೆಂದರೆ ಹೇಳಿಹೆ ಕೇಳಿರಯ್ಯ. ಇಷ್ಟಲಿಂಗಕ್ಕೆ ಅಷ್ಟವಿಧಾರ್ಚನೆಯ ಮಾಡುವುದು, ಅದು ಇಷ್ಟಲಿಂಗದ ಪೂಜೆ. ಆ ಲಿಂಗವನು ಮನಸ್ಸಿನಲ್ಲಿ ಧ್ಯಾನಿಸಿ ಮನೋಮಧ್ಯದಲಿಪ್ಪ ನಿಃಕಲ ಬ್ರಹ್ಮವನು ಧ್ಯಾನವೆಂಬ ಹಸ್ತದಲ್ಲಿ ಹಿಡಿದು ಕರಸ್ಥಲದಲ್ಲಿಪ್ಪ ಲಿಂಗದ ಗೊತ್ತಿನಲ್ಲಿ ಕಟ್ಟಿ ನೆರೆವುದೀಗ ಪ್ರಾಣಲಿಂಗದ ಪೂಜೆಯೆಂದು ಹೇಳಲ್ಪಟ್ಟಿತ್ತಯ್ಯ. ಮನಸು ಲಿಂಗದಲ್ಲಿ ತಲ್ಲೀಯವಾಗಿ ನಚ್ಚಿ ಮಚ್ಚಿ ಅಚ್ಚೊತ್ತಿ ಅಪ್ಪಿ ಅಗಲದಿಪ್ಪುದೇ ಭಾವಲಿಂಗದ ಪೂಜೆಯೆಂದು ಹೇಳಲ್ಪಟ್ಟಿತ್ತಯ್ಯ. ಇವು ಮೂರು ಲಿಂಗದ ಅರ್ಚನೆ. ಮೂರು ಲಿಂಗದ ಉಪಚಾರ. ಶಿವಾರ್ಥಿಗಳಾದ ವೀರಶೈವರುಗಳು ಮಾಡುವ ಲಿಂಗಾರ್ಚನೆಯ ಕ್ರಮವೆಂದು ಹೇಳಲ್ಪಟ್ಟಿತ್ತಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಪ್ರಸಾದಿಗೆ ಲಕ್ಷಣವಾವುದೆಂದರೆ ಹೇಳಿಹೆ ಕೇಳಿ[ರಯ]. ಕಾಯದಿಂದ ಮನಸ್ಸಿನಿಂದ ವಾಕ್ಯದಿಂದ ಸತ್ಯಶುದ್ಧವಾಗಿ, ವಿಶ್ವಾಸ ಶ್ರದ್ಧೆಯೆಡೆಗೊಂಡು ಶರೀರವನು ಪ್ರಾಣವನು ಒಡೆಯೆಂಗೆ ಸಮರ್ಪಿಸಿ ಪ್ರಸಾದವ ಕೈಕೊಳಬಲ್ಲರೆ ಪ್ರಸಾದಿಯೆಂಬೆ. ಹೀಂಗಲ್ಲದೆ ಕುಳವೆಂಬ ಕೋಳಕ್ಕೆ ಸಿಲ್ಕಿದ ಕಾಳ್ವಿಚಾರಿ ಋಣಪಾತಕರ ಪ್ರಸಾದಿ ಸದ್ಭಾವಿಯೆಂತೆಂಬೆನಯ್ಯಾ? ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಪ್ರಾರಬ್ಧ ಪ್ರಯತ್ನಗಳ ತಾರತಮ್ಯವನಿಲ್ಲಿ ಹೇಳಿಹೆ ಕೇಳಿರಯ್ಯಾ: ಪ್ರಯತ್ನದ ಹೆಚ್ಚು ಕುಂದಿನಂತೆ, ಇಂದಾಗಲಿ ಮುಂದಾಗಲಿ ಪ್ರಾರಬ್ಧವು ಫಲಪದವನೀವುದಲ್ಲವೆ ? ``ಅತ್ಯುತ್ಕಟೈಃ ಪುಣ್ಯಪಾಪೈರಿಹೈವ ಫಲಮಶ್ನುತೇ ಎಂದುದಾಗಿ ಪಿರಿದಪ್ಪ ಪುಣ್ಯಪಾಪಂಗಳು ಇದೆ ಜನ್ಮದಲ್ಲಿಯೆ ಫಲವನೀಯದೆ ಮಾಣವು. ವಿಶ್ವಾಮಿತ್ರನು ಕ್ಷತ್ರಿಯನಾದಡೆಯೂ, ತನ್ನ ತಪಃಪ್ರಭಾವದಿಂದ ಬ್ರಾಹ್ಮಣನಾಗಲಿಲ್ಲವೆ ? ಮಾರ್ಕಂಡೇಯನು ಅತ್ಯುತ್ಕಟವಾದ ಶಿವಭಕ್ತಿಯಿಂದ ಚಿರಂಜೀವಿಯಾಗಲಿಲ್ಲವೆ ? ರಾವಣ ಕೀಚಕಾದಿಗಳು ಪಾಪಾಧಿಕ್ಯದಿಂದ ಹತಭಾಗ್ಯರಾಗಲಿಲ್ಲವೆ ? ಅದು ಕಾರಣ_ತಾನು ಕೈಕೊಂಡ ಕಜ್ಜದಲ್ಲಿ ಪ್ರಯತ್ನವೆ ಪ್ರಾರಬ್ಧವಾಗಿ ಫಲವೀವುದರಿಂದ ಪ್ರಾರಬ್ಧಕ್ಕಿಂತ ಪ್ರಯತ್ನವೇ ಮಿಗಿಲಾಗಿಪ್ಪುದು ಕಾಣಾ, ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಯೋಗವನರಿದೆನೆಂಬೆ, ಯೋಗವನರಿದೆನೆಂಬೆ ; ಯೋಗದ ನೆಲೆಯನಾರು ಬಲ್ಲರು? ಯೋಗದ ನೆಲೆಯ ಹೇಳಿಹೆ ಕೇಳಾ- ತಾತ್ಪರ್ಯಕರ್ಣಿಕೆಯ ಮಸ್ತಕದಲ್ಲಿದ್ದ ಕುಂಭದೊಳಗೆ ತೋರುತ್ತದ್ಞೆ; ಹಲವು ಬಿಂಬ ಹೋಗುತ್ತಿದೆ, ಹಲವು ರೂಪ ಒಪುತ್ತಿದೆ ; ಏಕ ಏಕವಾಗಿ ಆನಂದಸ್ಥಾನದಲ್ಲಿ ಅನಿಮಿಷವಾಗುತ್ತಿದೆ ; ಪೂರ್ವಾಪರ ಮಧ್ಯ ಶುದ್ಧ ಪಂಚಮವೆಂಬ ಸ್ಥಾನಂಗಳಲ್ಲಿ ಪ್ರವೇಶಿಸುತ್ತಿದೆ ತಾನು ತಾನೆಯಾಗಿ. ಅರಿಯಾ ಭೇದಂಗಳ- ಬಿಂದು ಶ್ವೇತ ಪೂರ್ವಶುದ್ಧ ಆನಂದ ಧವಳ ಅನಿಮಿಷ ಸಂಗಮ ಶುದ್ಧ ಸಿದ್ಧ ಪ್ರಸಿದ್ಧ ತತ್ವವೆಂಬ ಪರಮಸೀಮೆ ಮುಖಂಗಳಾಗಿ, ಅಜಲೋಕದಲ್ಲಿ ಅದ್ವಯ, ನೆನಹಿನ ಕೊನೆಯ ಮೊನೆಯಲ್ಲಿ ಒಪ್ಪಿ ತೋರುವ ಧವಳತೆಯ ಬೆಳಗಿನ ರಂಜನ ಪ್ರವಾಹ ಮಿಗಿಲಾಗಿ, `ತ್ವಂ' ಪದವಾಯಿತ್ತು, ಮೀರಿ `ತ್ವಮಸಿ'ಯಾಯಿತ್ತು ಕಪಿಲಸಿದ್ಧಮಲ್ಲಿಕಾರ್ಜುನನೆಂಬ ನಾಮವ ನುಂಗಿಲೀಯವಾಯಿತ್ತು.
--------------
ಸಿದ್ಧರಾಮೇಶ್ವರ
ಗುರುವಿನಿಂದ ಉಪದೇಶವ ಪಡೆದು, ಗುರುಪುತ್ರನೆನಿಸಿಕೊಂಡ ಬಳಿಕ ಪೂರ್ವದ ತಾಯಿತಂದೆಯೆಂದು, ಬಂಧುಗಳೆಂದು, ಮಲಸಂಬಂಧವ ನೆನೆಯಲಾಗದು ಕಾಣಿರೊ. ಇನ್ನಿವ ನೆನೆದಿರಾದರೆ ಶಿವದ್ರೋಹ ತಪ್ಪದಯ್ಯ. ಇನ್ನು ನಿಮಗೆ ತಾಯಿ ತಂದೆಗಳ ಹೇಳಿಹೆ ಕೇಳಿರೆ. ಗುರುವೇ ತಾಯಿ, ಗುರುವೇ ತಂದೆ, ಗುರುವೇ ಬಂಧುಗಳು. ಗುರುವಿನಿಂದ ಪರವಿನ್ನಾರೂ ಇಲ್ಲವೆಂದು ನಂಬಬಲ್ಲರೆ ಶಿಷ್ಯನೆಂಬೆನಯ್ಯಾ. ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ವಸ್ತುವೆಂದಡೆ:ಹೇಂಗಾಯಿತ್ತಯ್ಯಾಯೆಂದಡೆ, ಹೇಳಿಹೆ ಕೇಳಯ್ಯಾ ಮಗನೆ. ಕಾಷ್ಟದಲ್ಲಿ ಅಗ್ನಿ ಹೇಂಗೆ ಹಾಂಗಿಪ್ಪುದು; ಕ್ಷೀರದೊಳಗೆ ಘೃತ ಹೇಂಗೆ ಹಾಂಗಿಪ್ಪುದು; ತಿಲದಲ್ಲಿ ತೈಲ ಹೇಂಗೆ ಹಾಂಗಿಪ್ಪುದು; ಜಲದೊಳಗೆ ಸೂರ್ಯ ಹೇಂಗೆ ಹಾಂಗಿಪ್ಪುದು; ಕನ್ನಡಿಯೊಳಗೆ ಪ್ರತಿಬಿಂಬ ಹೇಂಗೆ ಹಾಂಗಿಪ್ಪುದು; ಸರ್ವತ್ರ ಎಲ್ಲಾ ಠಾವಿನಲ್ಲಿಯೂ ವಸ್ತುವಿನ ಕಳೆ ಪರಿಪೂರ್ಣವಾಗಿಪ್ಪುದೆಂಬೆನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಪ್ರಾಣಾದಿ ವಾಯುಗಳ ಕಳೆದು ಭಕ್ತರಾದರೆಮ್ಮವರು, _ಅದೆಂತೆಂದಡೆ: ಅಲ್ಲಲ್ಲಿರ್ದ ದಶವಾಯುಗಳ ದಶಸ್ಥಾನದಲ್ಲಿ ನಿಲಿಸಿ ಭಕ್ತಿಯ ಮಾಡುವ ಪರಿಯ ಹೇಳಿಹೆ ಕೇಳಿರಣ್ಣಾ: ಪ್ರಾಣವಾಯುವ ನಿಲಿಸಿದರು ಪ್ರಾಣಲಿಂಗದಲ್ಲಿ, ಅಪಾನವಾಯುವ ನಿಲಿಸಿದರು ಪ್ರಸಾದಲಿಂಗದಲ್ಲಿ, ವ್ಯಾನವಾಯುವ ನಿಲಿಸಿದರು ಚತುರ್ವಿಧಪದದ ಬಯಕೆಯಳಿದ ಲಿಂಗಧ್ಯಾನದಲ್ಲಿ. ಉದಾನ ವಾಯುವ ನಿಲಿಸಿದರು ಉದ್ದೇಶದಿಂದ ನಡೆವ ಅನ್ಯಗಮನವ ಕೆಡಿಸಿ
--------------
ಚನ್ನಬಸವಣ್ಣ
ಭವಿಯಾಚಾರವ ಬಿಡದೆ ಭಯಾಗರವ ಹೊಗದೆ, ಶಿವಾಚಾರದಲ್ಲಿ ನಡೆವ ನಾಯಿಗಳು ಬರಿದೆ ನಾವು ಶಿವಾಚಾರಿಗಳೆಂದರೆ ನಮ್ಮ ಶಿವಾಚಾರಿ ಶರಣ ಬಸವಣ್ಣ ಮೆಚ್ಚ ನೋಡಯ್ಯ. ಶಿವಾಚಾರದ ಮಾರ್ಗವನು, ಶಿವಾಚಾರದ ಮರ್ಮವನು, ಶಿವಾಚಾರದ ವಿಸ್ತಾರವನು ನಮ್ಮ ಶರಣ ಬಸವಣ್ಣ ಬಲ್ಲನಲ್ಲದೆ ಉದರವ ಹೊರವ ವೇಷಧಾರಿಗಳೆತ್ತಬಲ್ಲರಯ್ಯ ? ಅಂತಪ್ಪ ಶಿವಾಚಾರದ ವಿಸ್ತಾರ ಸಕೀಲ ಹೇಳಿಹೆ ಕೇಳಿರಣ್ಣ. ಅದೆಂತೆಂದೊಡೆ v ಲಿಂಗಾಚಾರವೆಂದು, ಸದಾಚಾರವೆಂದು, ಶಿವಾಚಾರವೆಂದು, ಭೃತ್ಯಾಚಾರವೆಂದು, ಗಣಾಚಾರವೆಂದು ಶಿವಾಚಾರವು ಐದುತೆರನಾಗಿಪ್ಪುದು ನೋಡಯ್ಯಾ. ಶ್ರೀ ಗುರು ಕರುಣಿಸಿಕೊಟ್ಟ ಲಿಂಗವನಲ್ಲದೆ ಅನ್ಯದೈವಂಗಳಿಗೆರಗದಿಹುದೇ ಲಿಂಗಾಚಾರ ನೋಡಯ್ಯ. ತಾ ಮಾಡುವ ಸತ್ಯ ಕಾಯಕದಿಂದ ಬಂದ ಅರ್ಥಾದಿಗಳಿಂದ ತನ್ನ ಕುಟುಂಬ ರಕ್ಷಣೆಗೊಂಬ ತೆರದಿ ಗುರುಲಿಂಗಜಂಗಮ ದಾಸೋಹಿಯಾಗಿಪ್ಪುದೇ ಸದಾಚಾರ ನೋಡಯ್ಯ. ಶಿವಭಕ್ತರಾದ ಲಿಂಗಾಂಗಿಗಳಲ್ಲಿ ಪೂರ್ವದ ಜಾತಿಸೂತಕಾದಿಗಳನ್ನು ವಿಚಾರಿಸದೆ ಅವರ ಮನೆಯಲ್ಲಿ ತಾ ಹೊಕ್ಕು ಒಕ್ಕು ಮಿಕ್ಕ ಪ್ರಸಾದವ ಕೊಂಬುದೇ ಶಿವಾಚಾರ ನೋಡಯ್ಯ. ಲಿಂಗಾಂಗಿಗಳಾದ ಶಿವಭಕ್ತರೇ ಮರ್ತ್ಯದಲ್ಲಿ ಮಿಗಿಲಹರೆಂದು ತಾನು ಅವರ ಭೃತ್ಯನೆಂದರಿದು ಅಂತಪ್ಪ ನಿಜಲಿಂಗಾಂಗಿಗಳ ಚಮ್ಮಾವುಗೆಯ ಕಾಯ್ದಿಪ್ಪುದೇ ಭೃತ್ಯಾಚಾರ ನೋಡಯ್ಯ. ಗುರುಲಿಂಗಜಂಗಮ ಪಾದೋದಕ ಪ್ರಸಾದ ರುದ್ರಾಕ್ಷಿ ಮಂತ್ರಗಳೆಂಬಷ್ಟಾವರಣಂಗಳು ತನ್ನ ಪ್ರಾಣಸ್ವರೂಪವಾಗಿ ಅವುಗಳ ನಿಂದೆಯನ್ನು ಕೇಳಿ ಸೈರಿಸದೆ ಶಿಕ್ಷಿಸುವೆನೆಂಬ ನಿಷ್ಠೆಗೊಂಡುದೇ ಗಣಾಚಾರ ನೋಡಯ್ಯ. ಇದಕ್ಕೆ ಸಾಕ್ಷಿ - ಪರಮರಹಸ್ಯೇ- 'ಲಿಂಗಾಚಾರಸ್ಸದಾಚಾರಶ್ಶಿವಾಚಾರಸ್ತಥವಚ ಭೃತ್ಯಾಚಾರೋ ಗಣಾಚಾರಃ ಪಂಚಾಚಾರಃ ಪ್ರಕೀರ್ತಿತಃ || ಗುರೂಣಾ ದತ್ತಲಿಂಗಂಚ ನಾಸ್ತಿ ದೈವಂ ಮಹೀತಲೇ' ಇತಿ ಭಾವಾನುಸಂಧಾನೋ ಲಿಂಗಾಚಾರಸ್ಸಮುಚ್ಯತೇ || ಧರ್ಮಾರ್ಜಿತವಿತ್ತೇನ ತೃಪ್ತಿಶ್ಚ ಕ್ರಿಯತೇ ಸದಾ ಗುರುಜಂಗಮಲಿಂಗಾನಾಂ ಸದಾಚಾರಃ ಪ್ರಕೀರ್ತಿತಃ || ಅವಿಚಾರೇಷು ಭಕ್ತೇಷು ಜಾತಿಧರ್ಮಾದಿ ಸೂತಕಾನ್ ೀ ತದ್ಗøಹೇಷ್ವನ್ನಪಾನಾದಿ ಭೋಜನಂ ಕ್ರಿಯತೇ ಸದಾ || ತಚ್ಫಿವಾಚಾರಮಿತ್ಯಾಹುರ್ವೀರಶೈವಪರಾಯಣಾ ಶಿವಭಕ್ತಜನಾ ಸರ್ವೇ ವರಿಷ್ಠಾಃ ಪೃಥಿವೀತಲೇ || ತೇಷಾಂ ಭೃತ್ಯೋಹಮಿತ್ಯೇತದ್ಭೃತ್ಯಾಚಾರಸ್ಸ ಉಚ್ಯತೇ ೀ ಗುರುಲಿಂಗ ಜಂಗಮಶ್ಚೈವ ಪಾದತೀರ್ಥಃ ಪ್ರಸಾದತಃ ೀ ಇತಿ ಪಂಚಸ್ವರೂಪೋ[s]ಯಹಂ ಗಣಾಚಾರಃ ಪ್ರಕೀರ್ತಿತಃ ||ú ಎಂದುದಾಗಿ, ಇಂತಪ್ಪ ಶಿವಾಚಾರದ ಆಚಾರವನರಿಯದೆ ನಾ ಶಿವಭಕ್ತ ನಾ ಶಿವಭಕ್ತೆ ನಾ ಶಿವಾಚಾರಿ ಎಂದು ಕೊಂಬ ಶೀಲವಂತರ ನೋಡಿ ಎನ್ನ ಮನ ನಾಚಿ ನಿಮ್ಮಡಿಮುಖವಾಯಿತ್ತಯ್ಯ ಶ್ರೀಗಿರಿ ಚೆನ್ನಮಲ್ಲಿಕಾರ್ಜುನಯ್ಯ.
--------------
ಅಕ್ಕಮಹಾದೇವಿ
ಅಷ್ಟಾವರಣಗಳು ಯಾರಿಗೆ ಸಾಧ್ಯವಾಯಿತ್ತೆಂದಡೆ ಹೇಳಿಹೆ ಕೇಳಿರಣ್ಣ : ಗುರು ಸಾಧ್ಯವಾಯಿತ್ತು ಗುರುಭಕ್ತಂಗೆ ; ಲಿಂಗ ಸಾಧ್ಯವಾಯಿತ್ತು ನೀಲಲೋಚನೆತಾಯಿಗೆ ; ಜಂಗಮವು ಸಾಧ್ಯವಾಯಿತ್ತು ಬಸವೇಶ್ವರದೇವರಿಗೆ ; ಪಾದೋದಕ ಸಾಧ್ಯವಾಯಿತ್ತು ವೇಮನಾರಾಧ್ಯಂಗೆ ; ಪ್ರಸಾದ ಸಾಧ್ಯವಾಯಿತ್ತು ಬಿಬ್ಬಿಬಾಚಯ್ಯಂಗೆ ; ವಿಭೂತಿ ಸಾಧ್ಯವಾಯಿತ್ತು ಓಹಿಲಯ್ಯಗಳಿಗೆ ; ರುದ್ರಾಕ್ಷಿ ಸಾಧ್ಯವಾಯಿತ್ತು ಚೇರಮರಾಯಗೆ ; ಪಂಚಾಕ್ಷರಿ ಸಾಧ್ಯವಾಯಿತ್ತು ಅಜಗಣ್ಣಂಗೆ. ಇನ್ನು ಷಟ್‍ಸ್ಥಲದ ನಿರ್ಣಯವ ಕೇಳಿ : ಭಕ್ತಸ್ಥಲ ಬಸವಣ್ಣಂಗಾಯಿತ್ತು ; ಮಾಹೇಶ್ವರಸ್ಥಲ ಮಡಿವಾಳಯ್ಯಂಗಾಯಿತ್ತು ; ಪ್ರಸಾದಿಸ್ಥಲ ಚೆನ್ನಬಸವಣ್ಣಂಗಾಯಿತ್ತು ; ಪ್ರಾಣಲಿಂಗಿಸ್ಥಲ ಸಿದ್ಭರಾಮಯ್ಯಂಗಾಯಿತ್ತು ; ಶರಣಸ್ಥಲ ಪ್ರಭುದೇವರಿಗಾಯಿತ್ತು; ಐಕ್ಯಸ್ಥಲ ಅಜಗಣ್ಣಂಗಾಯಿತ್ತು. ಇನ್ನು ಷಡುಸ್ಥಲದ ವಿವರವಂ ಪೇಳ್ವೆನು.- ಭಕ್ತಸ್ಥಲದ ವಿವರವು : ಗುರುಲಿಂಗಜಂಗಮವು ಒಂದೆಯೆಂದು ಕಂಡು ಸದಾಚಾರದಲ್ಲಿ ನಡೆವನು, ತ್ರಿಕಾಲ ಮಜ್ಜನವ ನೀಡುವನು, ಲಾಂಛನಧಾರಿಗಳ ಕಂಡಡೆ ವಂದನೆಯ ಮಾಡುವನು, ಆಪ್ಯಾಯನಕ್ಕೆ ಅನ್ನವ ನೀಡುವನು, ಜಂಗಮಕ್ಕೆ ಪ್ರತಿ ಉತ್ತರವ ಕೊಡನು. ಪೃಥ್ವಿ ಅಂಗವಾಗಿಪ್ಪುದೆ ಭಕ್ತಿಸ್ಥಲವು. ಸಾಕ್ಷಿ : 'ಮಜ್ಜನಂ ತು ತ್ರಿಕಾಲೇಷು ಶುಚಿಪಾಕಸಮರ್ಪಿತಂ | ಭವಿಸಂಗಪರಿತ್ಯಾಗಂ ಇತ್ಯೇತೇ ಭಕ್ತಿಕಾರಣಂ || ಸದಾಚಾರೇ ಶಿವಭಕ್ತಿಃ ಲಿಂಗಜಂಗಮೇಕಾದ್ಥಿಕಂ | ಲಾಂಛನೇನ ಶರಣ್ಯಂ ಚ ಭಕ್ತಿಸ್ಥಲಂ ಮಹೋತ್ತಮಂ ||' ಇನ್ನು ಮಾಹೇಶ್ವರಸ್ಥಲದ ವಿವರವು : ಪರಸ್ತ್ರೀ ಪರನಿಂದೆ ಪರದ್ರವ್ಯ ಪರಹಿಂಸೆ ಅನೃತ ಇವು ಪಂಚಮಹಾಪಾತಕವು, ಇವ ಬಿಟ್ಟು ಲಿಂಗನಿಷ್ಠೆಯಲ್ಲಿ ಇರ್ದು ಜಲವೆ ಅಂಗವಾಗಿಪ್ಪುದೆ ಮಾಹೇಶ್ವರಸ್ಥಲವು. ಸಾಕ್ಷಿ : 'ಪರಸ್ತ್ರೀಯಂ ಪರಾರ್ಥಂ ಚ ವರ್ಜಿತೋ ಭಾವಶುದ್ಧಿಮಾನ್ | ಲಿಂಗನಿಸ್ಸಂಗಿಯುಕ್ತಾತ್ಮಾ ಮಹೇಶಸ್ಥಲಮುತ್ತಮಂ ||' ಇನ್ನು ಪ್ರಸಾದಿಸ್ಥಲದ ವಿವರ : ಲಿಂಗಕ್ಕೆ ಅರ್ಪಿಸಿದುದ ಲಿಂಗನೆನಹಿನಿಂದೆ ಸ್ವೀಕರಿಸುವುದು, ಅನರ್ಪಿತವ ವರ್ಜಿಸುವುದು, ಲಿಂಗದೊಡನೆ ಉಂಬುವುದು, ಅಗ್ನಿಯೆ ಅಂಗವಾಗಿಪ್ಪುದೆ ಪ್ರಸಾದಿಸ್ಥಲ. ಇನ್ನು ಪ್ರಾಣಲಿಂಗಿಸ್ಥಲದ ವಿವರವು : ಸುಗುಣ ದುರ್ಗುಣ ಉಭಯವನತಿಗಳೆದು ಸುಖ ದುಃಖ ಸ್ತುತಿ ನಿಂದೆ ಶತ್ರು ಮಿತ್ರಾದಿಗಳೆಲ್ಲರಂ ಸಮಾನಂಗಂಡು ವಾಯುವೆ ಅಂಗವಾಗಿಪ್ಪುದೆ ಪ್ರಾಣಲಿಂಗಿಸ್ಥಲ. ಇನ್ನು ಶರಣಸ್ಥಲದ ವಿವರವು : ಸತಿಪತಿಭಾವ ಅಂಗಲಿಂಗವಾಗಿಪ್ಪುದು, ಪಂಚೇಂದ್ರಿಯಸುಖ ನಾಸ್ತಿಯಾಗಿಪ್ಪುದು, ಆಕಾಶವೆ ಅಂಗವಾಗಿಪ್ಪುದು, ಇದು ಶರಣಸ್ಥಲವು. ಸಾಕ್ಷಿ : 'ಪತಿರ್ಲಿಂಗಂ ಸತೀ ಚಾsಹಂ ಇತಿ ಯುಕ್ತಂ ಸನಾತನಃ | ಪಂಚೇಂದ್ರಿಯಸುಖಂ ನಾಸ್ತಿ ಶರಣಸ್ಥಲಮುತ್ತಮಂ ||' ಇನ್ನು ಐಕ್ಯಸ್ಥಲದ ವಿವರವು : ಅರಿಷಡ್ವರ್ಗಂಗಳಿಲ್ಲದಿಹರು, ನಿರ್ಭಾವದಲ್ಲಿಹರು, ಷಡೂರ್ಮಿಗಳಿಲ್ಲದಿಹರು, ಅಷ್ಟವಿಧಾರ್ಚನೆ ಇಲ್ಲದಿಹರು, ಉರಿಯುಂಡ ಕರ್ಪುರದ ಹಾಗೆ ಇಹರು, ಆತ್ಮನೆ ಅಂಗವಾಗಿಪ್ಪುದು ಐಕ್ಯಸ್ಥಲವು. ಸಾಕ್ಷಿ : 'ಷಡೂರ್ಮಿಯೋಗಷಡ್ವರ್ಗಂ ನಾಸ್ತಿ ಚಾಷ್ಟವಿಧಾರ್ಚನಂ | ನಿರ್ಭಾವಂ ಶಿವಲಿಂಗೈಕ್ಯಂ ಶಿಖಿಕರ್ಪೂರಸಯೋಗವತ್||' ಹೀಗೆ ಗಣಂಗಳು ನಡೆದ ಮಾರ್ಗದಲ್ಲಿ ನಡೆದಡೆ ಅಂದೇನೊ ಇಂದೇನೊ ? ಇಂತೀ ಅಷ್ಟಾವರಣಗಳ, ಷಡುಸ್ಥಲದ ಮಾರ್ಗವನು ಎನ್ನೊಳು ಅರುಹಿದಾತ, ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಗುರುಶಿಷ್ಯಸಂಬಂಧವೆಂತಿಪ್ಪುದೆಂದಡೆ, ಹೇಳಿಹೆ ಕೇಳಿರೋ, ಅರಿಮರುಳುಗಳಿರಾ. ಕಾಯಗುಣವಳಿದುದೇ ಗುರು, ಜೀವಗುಣವಳಿದುದೇ ಲಿಂಗ, ಪ್ರಾಣಗುಣವಳಿದುದೇ ಜಂಗಮ. ಈ ತ್ರಿವಿಧವನರಿದು ಆ ತ್ರಿವಿಧ ನಿಕ್ಷೇಪವನರುಹಿಸಿಕೊಟ್ಟವನೀಗ ಗುರು. ಅಲ್ಲಿ ಉಪದೇಶವ ಕೊಂಡವನೀಗ ಶಿಷ್ಯ. ಹೀಗಿರುವುದೀಗ ಗುರುಶಿಷ್ಯಸಂಬಂಧ. ಅದಕ್ಕೆ ನಮೋ ನಮೋ ಎಂಬೆ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಇಷ್ಟಲಿಂಗದ ಮುಖವಾವುದು? ಪ್ರಾಣಲಿಂಗದ ಮುಖವಾವುದು? ಭಾವಲಿಂಗದ ಮುಖವಾವುದು ಎಂದರೆ ಹೇಳಿಹೆ ಕೇಳಿರಣ್ಣ: ಇಷ್ಟಲಿಂಗದ ಮುಖವೈದು: ಪ್ರಾಣ ವಾಯುಗಳ ಮುಖವನೆಯ್ದಿ ಪ್ರಾಣಲಿಂಗವೆನಿಸಿಕೊಂಡಿತ್ತು. ಭಾವವನೆಯ್ದಿ ಭಾವಲಿಂಗವೆನಿಸಿಕೊಂಡಿತ್ತು. ಒಂದೇ ಲಿಂಗ ತನುತ್ರಯಂಗಳಲ್ಲಿ ಇಷ್ಟ ಪ್ರಾಣ ಭಾವ ರೂಪಕವಾಗಿಪ್ಪುದು. ಜೀವತ್ರಯಂಗಳಲ್ಲಿ ಮಂತ್ರ ಜ್ಞಾನ ಧ್ಯಾನ ರೂಪಕವಾಗಿಪ್ಪುದು. ಅವಸ್ಥಾನತ್ರಯಂಗಳಲ್ಲಿ ಸತ್ಕಿ ್ರಯಾಚರಣೆ ತದ್ವಾಸನೆ ತಲ್ಲೀಯ್ಯವಾಗಿಪ್ಪುದು. ಮಲತ್ರಯಂಗಳಲ್ಲಿ ಸ್ವಯ ಚರ ಪರ ರೂಪಕವಾಗಿಪ್ಪುದು. ಈಷಣತ್ರಯಂಗಳಲ್ಲಿ ಲಿಂಗ ಪ್ರೇಮರತಿಗೆ ಸಕಲಸಾಧನಂಗಳಾಗಿ ಮಾಯಾಭ್ರಾಂತಿಯನು ನಿಭ್ರಾಂತಿಯೆನಿಸಿ ಶುದ್ಧ ಪ್ರಭಾ ಪರಿಪೂರ್ಣ ಲಿಂಗ ತಾನೆ ಪ್ರಸನ್ನ ಪ್ರಸಾದ ರೂಪಕನಾಗಿರುತಿರ್ದೆನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಮನವ ನಿಲಿಸಿಹೆನೆಂದು ನುಡಿವ ಅಣ್ಣಗಳ ಕಣ್ಣಗೆಡಿಸಿ ಬಣ್ಣಗುಂದಿಸಿ ಬಂಧನಕ್ಕೊಳಗುಮಾಡಿ ಭವದಲ್ಲಿ ಸೆರೆಹಿಡಿದಿರ್ಪುದು ನೋಡಾ ಮನವು. ಅದೆಂತೆಂದೊಡೆ : ವ್ರತವುಳ್ಳವರ ಭ್ರಾಂತುಗೆಡಿಸಿತ್ತು ನೋಡಾ ಮನವು. ಯತಿಗಳೆಂಬವರ ಮತಿಹೀನರ ಮಾಡಿತ್ತು ನೋಡಾ ಮನವು. ಕಣ್ಣುಮುಚ್ಚಿ ಧ್ಯಾನಿಸುವ ಅಣ್ಣಗಳ ಕಳವಳಗೊಳಿಸಿತ್ತು ನೋಡಾ ಮನವು. ಏಕಾಂತವಾಸಿಗಳೆಲ್ಲರ ಹಿಡಿತಂದು ಲೋಕದ ಮಧ್ಯದೊಳಗಿರಿಸಿ ಕಾಕುತನದಲ್ಲಿ ಕಾಡಿ ಏಡಿಸಿತ್ತು ನೋಡಾ ಮನವು. ಯೋಗಿಗಳೆಂಬವರ ಭೋಗಕ್ಕೊಳಗುಮಾಡಿ ಕಾಡಿತ್ತು ನೋಡಾ ಮನವು. ಇಂತೀ ಮನವ ನಿಲಿಸಿಹೆವೆಂದು ನುಡಿದು ಮತಿಗೆಟ್ಟು ಮಣ್ಣುಮಸಿಯಾಗಿ ಹೋದರು ನೋಡಾ ಹಲಕೆಲಬರು. ಅವರಂತಿರಲಿ. ಇನ್ನು ಮನವ ನಿಲಿಸುವ ಭೇದವ ಹೇಳಿಹೆ ಕೇಳಿರೆ. ಆದಿ-ಅನಾದಿ, ಸುರಾಳ-ನಿರಾಳ, ಶೂನ್ಯ-ನಿಃಶೂನ್ಯ, ಸಾಕಾರ-ನಿರಾಕಾರ, ಸಗುಣ-ನಿರ್ಗುಣ, ಮೂರ್ತಿ-ಅಮೂರ್ತಿ, ಶಿವ-ಶಕ್ತಿ, ನಾಮ-ರೂಪು-ಕ್ರಿಯೆ ಸಕಲ ಬ್ರಹ್ಮಾಂಡ ಸಚರಾಚರಾದಿ ನಾನಾ ತೋರಿಕೆಯೆಲ್ಲವು ತಾನೆ ಎಂದು ತಿಳಿಯಲು ಆ ತಿಳಿದಮಾತ್ರದಲ್ಲಿಯೆ ಮನದ ಕಲ್ಪಿತವಳಿದು ಕಾಯಿ ಹಣ್ಣಾದಂತೆ, ಆ ಮನವು ಮಹಾಘನಪರಬ್ರಹ್ಮವೆ ಅಪ್ಪುದು. ಆ ಮನವು ಮಹಾಘನವಾದಲ್ಲಿಯೆ ಶರಣನ ಹುಟ್ಟು ಹೊಂದು ನಷ್ಟವಾಗಿರ್ಪುದು. ಆ ಶರಣನ ಹುಟ್ಟು ಹೊಂದು ನಷ್ಟವಾದಲ್ಲಿಯೆ ಅಖಂಡೇಶ್ವರನೆಂಬ ಕುರುಹು ನಿರ್ವಯಲು ನೋಡಾ.
--------------
ಷಣ್ಮುಖಸ್ವಾಮಿ
ಶುದ್ಧ ಸಿದ್ಧ ಪ್ರಸಿದ್ಧ ಪ್ರಸಾದವೆಂತುಟೆಂದು ಹೇಳಿಹೆ ಕೇಳಿರೇ: ಶುದ್ಧಪ್ರಸಾದವು ಗುರುವಿನಲ್ಲಿ, ಸಿದ್ಧಪ್ರಸಾದವು ಲಿಂಗದಲ್ಲಿ, ಪ್ರಸಿದ್ಧಪ್ರಸಾದವು ಜಂಗಮದಲ್ಲಿ. ಇದರೊಳಗಾವುದು ಘನವೆಂಬೆನಾವುದು ಕಿರಿದೆಂಬೆ? ಘನಕ್ಕೆ ಘನ ಮಹಾಘನ ಪ್ರಸಾದವು. ಕೂಡಲಚೆನ್ನಸಂಗನಲ್ಲಿ ತ್ರಿವಿಧಪ್ರಸಾದವನು ಸುಯಿಧಾನದಲ್ಲಿ ಕೊಳಬಲ್ಲನಯ್ಯಾ ಬಸವಣ್ಣನು.
--------------
ಚನ್ನಬಸವಣ್ಣ
ಅನುಭಾವಿಗೆ ಅಂಗಶೃಂಗಾರವುಂಟೆ ? ಅನುಭಾವಿಗೆ ಕಾಮಕ್ರೋಧವುಂಟೆ ? ಅನುಭಾವಿಗೆ ನಾಹಂ ಕೋಹಂ ಸೋಹಂ ಎಂಬ ಭ್ರಾಂತಿನ ಭ್ರಮೆಯುಂಟೆ ? ಅನುಭಾವಿಗೆ ನನ್ನವರು ತನ್ನವರೆಂಬ ಗನ್ನಗದಕಿನ ಮಾತುಂಟೆ ? ಅನುಭಾವಿಗಳೆಂಬವರು ಅಲ್ಲಿಗಲ್ಲಿಗೆ ತಮ್ಮ ಅನುಭಾವಂಗಳ ಬೀರುವರೆ ? ಅನುಭಾವಿಗಳ ಪರಿಯ ಹೇಳಿಹೆ ಕೇಳಿರಣ್ಣಾ ; ನೀರಮೇಲಣ ತೆಪ್ಪದಂತೆ, ಸಮುದ್ರದೊಳಗಣ ಬೆಂಗುಂಡಿನಂತೆ ಇರಬಲ್ಲಡೆ ಅನುಭಾವಿಗಳೆಂಬೆನಯ್ಯಾ. ವಚನಂಗಳ ಓದಿ ವಚನಂಗಳ ಕೇಳಿ ಕಂಡ ಕಂಡ ಠಾವಿನಲ್ಲಿ ಬಂಡುಗೆಲೆವ ಜಗಭಂಡರ, ಆತ್ಮತೇಜಕ್ಕೆ ತಿರುಗುವ ವೇಷಧಾರಿಗಳ ಕಂಡು ಅನುಭಾವಿಗಳೆಂದಡೆ ಅಘೋನರಕ ತಪ್ಪದು ಕಾಣಾ, ಅಮುಗೇಶ್ವರಾ.
--------------
ಅಮುಗೆ ರಾಯಮ್ಮ
ಪಂಚಾಂಗ ಪಂಚಾಂಗವೆಂದು ಕಳವಳಗೊಂಡು ಜೋಯಿಸನ ಕರೆಯಿಸಿ, ಕೈಮುಗಿದು ಕಾಣಿಕೆಯನಿಕ್ಕಿ ಎಲೆ ಅಡಿಕೆಯಂ ಕೊಟ್ಟು, ಜೋಯಿಸನ ವಾಕ್ಯವು ಸಕಲ ಕಾರ್ಯಕ್ಕೆ ಸಿದ್ಧಿಯೆಂದು, ಅವನ ಬಾಯ ತೊಂಬುಲವ ತಿಂಬ ಹಂದಿಗಳಿರಾ ಎತ್ತ ಬಲ್ಲಿರಯ್ಯಾ ಶಿವಾಚಾರದ ಪದ್ಧತಿಯನು ? ಪಂಚಾಂಗವೆಂಬ ಶಬ್ದಕ್ಕೆ ಅರ್ಥವ ಹೇಳಲರಿಯದೆ ಜೋಯಿಸರು ಕೆಟ್ಟರು ; ಕೇಳಲರಿಯದೆ ಅನಂತ ಹಿರಿಯರು ನರಕಕ್ಕೆ ಇಳಿದರು. ಪಂಚಾಂಗವೆಂದರೆ ಹೇಳಿಹೆ ಕೇಳಿರಣ್ಣಾ. ಪಂಚ ಅಂದರೆ ಐದು ; ಅಂಗವೆಂದರೆ ದೇಹ, ಪೃಥ್ವಿ ಅಪ್ಪು ತೇಜ ವಾಯು ಆಕಾಶ- ಈ ಐದು ಕೂಡಿ ದೇಹವಾಯಿತ್ತು. ಆ ದೇಹದೊಳಗೆ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರದಚ್ಚು ಮುರಿಯುವುದೇ ಪಂಚಾಂಗ. ಸತ್ವ ರಜ ತಮವೆಂಬ ಅಹಂಕಾರವ ತುಳಿವುದೆ ಪಂಚಾಂಗ. ಆಣವಮಲ ಮಾಯಾಮಲ ಕಾರ್ಮಿಕಮಲವ ಮುಟ್ಟದಿರುವುದೇ ಪಂಚಾಂಗ. ತನ್ನ ಸತಿಯ ಸಂಗವಲ್ಲದೆ ಪರಸತಿಯರ ಮುಟ್ಟದಿರುವುದೇ ಪಂಚಾಂಗ. ತನ್ನ ಇಷ್ಟಲಿಂಗವಲ್ಲದೆ ಭೂಮಿಯ ಮೇಲೆ ಇಟ್ಟು ಪೂಜೆಯ ಮಾಡುವ ದೇವರಿಗೆ ಕೈಮುಗಿಯದಿರುವುದೆ ಪಂಚಾಂಗ. ಜಾತಿಸೂತಕ ಜನನಸೂತಕ ಉಚ್ಫಿಷ್ಟಸೂತಕ ಮೃತ್ಯುಸೂತಕ ರಜಸ್ಸೂತಕ - ಈ ಪಂಚಸೂತಕವ ಶರಣರು ಕಳೆವರಾಗಿ, ನಮ್ಮ ಶಿವಭಕ್ತರಿಗೆ ಸಲ್ಲದೆಂಬುದೆ ಪಂಚಾಂಗ. ಸೂತಕ ನಾಸ್ತಿಯಾದುದೆ ಪಂಚಾಂಗ. ಗುರು ಲಿಂಗ ಜಂಗಮ ಪಾದೋದಕ ಪ್ರಸಾದವೆ ಪಂಚಾಂಗ. ಲಿಂಗಾಚಾರ ಸರ್ವಾಚಾರ ಭೃತ್ಯಾಚಾರ ಶಿವಾಚಾರ ಗಣಾಚಾರವೆ ಪಂಚಾಂಗ. ಗುರುಪ್ರಸಾದ, ಲಿಂಗಪ್ರಸಾದ, ಜಂಗಮಪ್ರಸಾದ, ಗಣಪ್ರಸಾದ, ಮಹಾಪ್ರಸಾದವ ಕೊಂಬುವುದೆ ಪಂಚಾಂಗ. ಇಂತೀ ಪಂಚಾಂಗದ ನಿಲವನರಿಯದೆ ಪಂಚಸೂತಕದೊಳಗೆ ಹೊಡೆದಾಡುವ ಪಂಚಮಹಾಪಾತಕರ ಎನಗೊಮ್ಮೆ ತೋರದಿರಯ್ಯ ನಿಸ್ಸಂಗ ನಿರಾಳ ನಿಜಲಿಂಗಪ್ರಭುವೆ.
--------------
ನಿರಾಲಂಬ ಪ್ರಭುದೇವ
ಇನ್ನಷ್ಟು ... -->