ಅಥವಾ

ಒಟ್ಟು 31 ಕಡೆಗಳಲ್ಲಿ , 16 ವಚನಕಾರರು , 27 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡಿಹೆ ಕೇಳಿಹೆನೆಂದು ಮುಂದುಗಾಣದೆ ಸಂದೇಹದಲ್ಲಿ ಮುಳುಗಿ. ಕಳವಳಿಸಿ ಕಾತರಿಸುವ ಅಣ್ಣಗಳಿರಾ, ನೀವು ಕೇಳಿರೆ, ಹೇಳಿಹೆನು. ಕಾಣಬಾರದ ಘನವ ಹೇಳಬಾರದಾಗಿ, ಹೇಳುವುದಕ್ಕೆ ನುಡಿಯಿಲ್ಲ, ನೋಡುವುದಕ್ಕೆ ರೂಪಿಲ್ಲ. ಇಂತಪ್ಪ ನಿರೂಪದ ಮಹಾಘನವು ಶರಣರ ಹೃದಯದಲ್ಲಿ ನೆಲೆಗೊಂಬುದಲ್ಲದೆ, ಈ ಜನನ ಮರಣಕ್ಕೊಳಗಾಗುವ ಮನುಜರೆತ್ತ ಬಲ್ಲರು ಆ ಮಹಾಘನದ ನೆಲೆಯ, ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ ?
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಇತ(ದಿ?)ರ ಭ್ರಮಿತನು ಭಕ್ತನಲ್ಲ, ಲೋಕೋಪಚಾರಿ ಜಂಗಮವಲ್ಲ. ಹೇಳಿಹೆನು ಕೇಳಿರಣ್ಣಾ: ಜಂಗಮ ಪ್ರೇಮಿಯಾದರೆ ಭಸಿತ ರುದ್ರಾಕ್ಷೆ ಸಹ ಶಿವಸ್ವರೂಪ ಕಾಣುತ್ತ, ನಮಸ್ಕರಿಸಿ ಬಿಜಯಂ ಮಾಡಿಕೊಂಡು ಬಂದು ಮನಹರುಷದಲ್ಲಿ ಭೋಜನವ ಮಾಡಿಸೂದೀಗ ಭಕ್ತಂಗೆ ಲಕ್ಷಣ. ಕಾಡೊಳಗಿರಲಿ ಊರೊಳಗಿರಲಿ ಮಠದಲ್ಲಿರಲಿ ಮನೆಯಲ್ಲಿರಲಿ ಲಿಂಗವಂತರು ಕರೆಯಬಂದರೆ, ಹೋಗಬೇಕೆಂಬ ಅಭಿಲಾಷೆಯುಳ್ಳಡೆ, ತಾನಿದ್ದಲ್ಲಿ ತಾ ಮಾಡುವಂಥ ಅಷ್ಟವಿಧಾರ್ಚನೆ ಷೋಡಶೋಪಚಾರ ಲಿಂಗಕ್ರಿಯೆಗಳು ನಿತ್ಯನೇಮವು ಆದ ಬಳಿಕ ಮತ್ತೆ ತಾ ಹೋಗಿ ತನ್ನ ಗುಂಪ ತೋರದೆ, ಭಕ್ತರಾಶ್ರಯದಲ್ಲಿ ಭೋಜನವ ಮಾಡುವುದೀಗ ಜಂಗಮಕ್ಕೆ ಲಕ್ಷಣ. ಅಂತಲ್ಲದೆ ಗ್ರಹಸ್ಥಾಶ್ರಮದಲ್ಲಿ ಕ್ರಿಯೆ ಮಾಡಿದರೆ ಜಂಗಮಕ್ಕೆ ಹೇಳುವ ಅರಿವು ಕೊರಮಜೀವಿಯಂತಾಯಿತ್ತಾಗಿ_ ಇದು ಕಾರಣ ಲೋಕೋಪಚಾರಿಗಳಾಗಿ ಒಡಲ ಹೊರೆವವರ ನಮ್ಮ ಗುಹೇಶ್ವರಲಿಂಗವು ಬಲ್ಲನಾಗಿ ಅವರ ಒಲ್ಲನಯ್ಯಾ.
--------------
ಅಲ್ಲಮಪ್ರಭುದೇವರು
ಮುನಿಯದಿರಿ ಮುನಿಯದಿರಿ ನಿಮಗೊಂದು ಯುಕ್ತಿಯ ಹೇಳಿಹೆನು, ಅದೆಂತೆಂದಡೆ: ನೀವೆನ್ನ ವಂಶೀಭೂತರಾದ ಕಾರಣ_ನಿಮ್ಮ ಹೆಚ್ಚು ಕುಂದು ಎನ್ನದಾಗಿ, ನಿಮ್ಮ ಅಸ್ತಿ ನಾಸ್ತಿ ಎನ್ನದಾಗಿ, ನಿಮ್ಮ ಹಾನಿವೃದ್ಧಿ ಎನ್ನದಾಗಿ. ಹಾವ ಹಡದವರು ಬೇಲಿಯ ಹೊಗುವರೆ ಹೋಹುದೆ ಅಯ್ಯಾ ? ವ್ಯಾಧನು ಸೂಸಲ ಚೆಲ್ಲಿ ಜಂತ್ರವ ಹಣ್ಣಿ, ಅಡಿಗಲ್ಲನೊಡ್ಡಿ ಹೋದಬಳಿಕ ಸೂಸಲ ಕಂಪಿಗೆ ಹೆಗ್ಗಣ ಬಂದು ಬಿದ್ದಂತೆ ಬಿದ್ದಿರಲ್ಲಾ ಮಾಯದ ಬಲೆಯಲ್ಲಿ ! ಕೋಪವೆಂಬ ಅಡಗನೊಡ್ಡಿ ತಾಪವೆಂಬ ಅರೆಗಲ್ಲನಿರಿಸಿ ಹುಸಿಯೆಂಬ ಮೀಟುಗವಣೆಯ ಜಂತ್ರಿಸಿ, ಹೊನ್ನು ಹೆಣ್ಣು ಮಣ್ಣೆಂಬ ಅಡಿಗಲ್ಲನೊಡ್ಡಿ ಕೆಡಹಿದನಲ್ಲಾ ನಿಷ್ಕರುಣಿ ಮುಕ್ಕಣ್ಣ ವ್ಯಾಧನು ! ಅದೆಂತೆಂದಡೆ, ಶಿವರಹಸ್ಯದಲ್ಲಿ: ``ನಿಸ್ಸಂಗತ್ವಂ ನಿರಾಭಾರೀ ನಿಸ್ಸೀಮಂ ನಿರುಪಾಧಿಕಂ ನಿರ್ದೇಹಂ ನಿರ್ಮಲಂ ನಿತ್ಯಂ ಸತ್ಯಂ ಜಂಗಮಲಕ್ಷಣಂ ಇಂತೆಂಬ ಶ್ರುತ್ಯರ್ಥವ ಕೇಳದೆ, ಜಂಗಮವಾಗಿ ಸುಳಿವ ಮರುಳುಗಳಿರಾ ಕೇಳಿರೆ, ಇದಕ್ಕೆ ಮತ್ತೆಯೂ ಶ್ರುತಿ: ``ಸುಖಂ ಚ ಬಿಂದುಮಾತ್ರೇಣ ದುಃಖಂ ಪರ್ವತ ಏವ ಚ ಹರಿಣೀಪಾದಮಾತ್ರೇಣ ಬಂಧನಂ ತು ಜಗತ್ರಯಂ ಇಂತೆಂಬ ಶ್ರುತಿಗೊಳಗಾಗದೆ ಹೊನ್ನು ಹೆಣ್ಣು ಮಣ್ಣಿನಾಸೆಯಂ ಬಿಟ್ಟು ಕೋಪ ತಾಪಮಂ ಬಿಟ್ಟು, ಭ್ರಾಂತು ಭ್ರಮೆಯಂ ಬಿಟ್ಟು ಜಂಗಮವಾಗಬೇಕು ಕಾಣಿರೆ ಮರುಳುಗಳಿರಾ. ಇಂತೀ ಷಡುಲೋಭದ ರುಚಿ ಹಿಂಗಿ ಜಂಗಮವಾದಲ್ಲದೆ ಭವ ಹಿಂಗದು ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಶಿವಶಿವಾ ದ್ವಿಜರೆಂಬ ಪಾತಕರು ನೀವು ಕೇಳಿ ಭೋ ! ನೀವು ಎಲ್ಲಾ ಜಾತಿಗೂ ನಾವೇ ಮಿಗಿಲೆಂದು, `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂದು, ಬಳ್ಳಿಟ್ಟು ಬಾಸ್ಕಳಗೆಡವುತಿಪ್ಪಿರಿ ನೋಡಾ. `ಆದಿ ಬಿಂದುದ್ಭವೇ ಬೀಜಂ' ಎಂಬ ಶ್ರುತಿಯಿಂ ತಿಳಿದು ನೋಡಲು ಆದಿಯಲ್ಲಿ ನಿಮ್ಮ ಮಾತಾಪಿತರ ಕೀವು ರಕ್ತದ ಮಿಶ್ರದಿಂದ ನಿಮ್ಮ ಪಿಂಡ ಉದಯಿಸಿತ್ತು. ಆ ಕೀವು ರಕ್ತಕ್ಕೆ ಆವ ಕುಲ ಹೇಳಿರೆ ? ಅದೂ ಅಲ್ಲದೆ ಪಿಂಡ ಒಂಬತ್ತು ತಿಂಗಳು ಒಡಲೊಳಗೆ ಕುರುಳು, ಮಲಮೂತ್ರ, ಕೀವು, ದುರ್ಗಂಧ, ರಕ್ತ ಖಂಡಕಾಳಿಜ ಜಂತುಗಳೊಳಗೆ, ಪಾತಾಳದೊಳಗಣ ಕ್ರಿಮಿಯಂತೆ ಹೊದಕುಳಿಗೊಂಬಂದು ನೀನಾವ ಕುಲ ಹೇಳಿರೆ ? ಅದುವಲ್ಲದೆ ಮೂತ್ರದ ಕುಳಿಯ ಹೊರವಡುವಾಗ, ಹೊಲೆ ಮುಂತಾಗಿ ಮುದುಡಿ ಬಿದಲ್ಲಿ, ಹೆತ್ತವಳು ಹೊಲತಿ, ಹುಟ್ಟಿದ ಮಗುವು ಹೊಲೆಯನೆಂದು ನಿಮ್ಮ ಕುಲಗೋತ್ರ ಮುಟ್ಟಲಮ್ಮದೆ, ಹನ್ನೆರಡು ದಿನದೊಂದು ಪ್ರಾಯಶ್ಚಿತ್ತವನಿಕ್ಕಿಸಿಕೊಂಡು ಬಂದು ನಿನ್ನಾವ ಕುಲ ಹೇಳಿರೆ ? ಮುಂಜಿಗಟ್ಟದ ಮುನ್ನ ಕೀಳುಜಾತಿ, ಮುಂಜಿಗಟ್ಟಿದ ಬಳಿಕ ಮೇಲುಜಾತಿಗಳು ಎಂಬ ಪಾತಕರು ನಿಮ್ಮ ನುಡಿ ಕೊರತೆಗೆ ನೀವು ನಾಚಬೇಡವೆ ? ನೀವು ನಾಚದಿರ್ದಡೆ ನಾ ನಿಮ್ಮ ಕುಲದ ಬೇರನೆತ್ತಿ , ತಲೆಕೆಳಗು ಮಾಡಿ ತೋರಿಹೆನು. ನಾನು ಉತ್ತಮದ ಬ್ರಾಹ್ಮಣರೆಂಬ ನಿಮ್ಮ ದೇಹ ಬ್ರಹ್ಮನೊ ? ನಿಮ್ಮ ಪ್ರಾಣ ಬ್ರಹ್ಮನೊ ? ಆವುದು ಬ್ರಾಹ್ಮಣ್ಯ ? ಬಲ್ಲಡೆ ಬಗುಳಿರಿ ! ಅರಿಯದಿರ್ದಡೆ ಕೇಳಿರಿ. ದೇಹ ಕುಲಜನೆಂದಡೆ ಚರ್ಮಕ್ಕೆ ಕುಲವಿಲ್ಲ, ಖಂಡಕ್ಕೆ ಕುಲವಿಲ್ಲ, ನರವಿಂಗೆ ಕುಲವಿಲ್ಲ, ರಕ್ತಕ್ಕೆ ಕುಲವಿಲ್ಲ, ಕೀವಿಂಗೆ ಕುಲವಿಲ್ಲ. ಕರುಳಿಂಗೆ ಕುಲವಿಲ್ಲ, ಮಲಮೂತ್ರಕ್ಕಂತೂ ಕುಲವಿಲ್ಲ, ಒಡಲೆಂಬುದು ಅಪವಿತ್ರವಾಯಿತ್ತು, ಕುಲವೆಲ್ಲಿಯದೊಡಲಿಂಗೆ ? ಅವಂತಿರಲಿ ; ಇನ್ನು ನಿಮ್ಮ ಪ್ರಾಣಕ್ಕೆ ಕುಲವುಂಟೆಂದಡೆ. ಪ್ರಾಣ ದಶವಾಯುವಾದ ಕಾರಣ, ಆ ವಾಯು ಹಾರುವನಲ್ಲ. ಅದುವಲ್ಲದೆ ನಿಮ್ಮ ಒಡಲನಲಗಾಗಿ ಇರಿವ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳು ಉತ್ತಮ ಕುಲವೆಂಬ ಅವು ಮುನ್ನವೆ ಪಾಪಕಾರಿಗಳಾದ ಕಾರಣ, ಅವಕ್ಕೆ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಳಗಣ ಸಪ್ತವ್ಯಸನಂಗಳು ಉತ್ತಮ ಕುಲವೆಂಬ ಅವು ಮುನ್ನವೆ ದುರ್ವ್ಯಸನಂಗಳಾದ ಕಾರಣ, ಅದಕೆಂದೂ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮ ಅಷ್ಟಮದಂಗಳು ಉತ್ತಮ ಕುಲವೆಂಬ ಅವು ನಿನ್ನ ಸುರೆಯ ಸವಿದ ಕೋಡಗದ ಹಾಂಗೆ ನಿಮ್ಮ ಗಾಣಲೀಯವಾದ ಕಾರಣ, ಅವು ಕುಲವಿಲ್ಲ. ನಿಲ್ಲು ! ಬಗುಳದಿರು ! ಇನ್ನು ಒಡಲ ತಾಪತ್ರಯಂಗಳು ಉತ್ತಮ ಕುಲವೆಂಬ ಅವು ನಿಮ್ಮ ಇರಿದಿರಿದು ಸುಡುವ ಒಡಗಿಚ್ಚುಗಳು. ಅವು ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಡಲ ಮುಚ್ಚಿದ ಮಲಮೂತ್ರಂಗಳ ಕುಲವುಂಟೆ ? ಅವು ಅರಿಕೆಯಲಿ ಮಲಮೂತ್ರಂಗಳಾದ ಕಾರಣ, ಅವಕ್ಕೆ ಕುಲವಿಲ್ಲ ನಿಲ್ಲು ! ಮಾಣು ! ಇನ್ನು ಉಳಿದ ಅಂತಃಕರಣಂಗಳಿಗೆ ಉತ್ತಮ ಕುಲವೆಂಬಿರಿ. ಅವ ನೀವು ಕಾಣಿರಿ, ನಿಮ್ಮನವು ಕಾಣವು. ಅದು ಕಾರಣ ಬಯಲಭ್ರಮೆಗೆ ಉತ್ತಮ ಕುಲವುಂಟೆ ? ಇಲ್ಲ ! ಇಲ್ಲ !! ನಿಲ್ಲು ! ಮಾಣು ! ಇಂತು ನಿಮ್ಮ ಪಂಚಭೂತ ಸಪ್ತಧಾತು ಪಂಚೇಂದ್ರಿಯಂಗಳು ಉತ್ತಮ ಕುಲವೆಂಬ ಅವು ಎಲ್ಲಾ ಜೀವರಾಶಿಗೂ ನಿಮಗೂ ಒಂದೇ ಸಮಾನ. ಅದೆಂತೆಂದಡೆ : ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸಮಾಯುಕ್ತಂ ವರ್ಣಾನಾಂ ಕಿಂ ಪ್ರಯೋಜನಂ || ಎಂದುದಾಗಿ, ನಿಮ್ಮ ದೇಹಕ್ಕೆ ಕುಲವಾವುದು ಹೇಳಿರೆ ! ಇದಲ್ಲದೆ ಆತ್ಮನು ದೇಹವ ಬಿಟ್ಟು, ಒಂದು ಘಳಿಗೆ ತೊಲಗಿರಲು ಆ ದೇಹ ಹಡಿಕೆಯಾಗಿ ಹುಳಿತು, ನಾಯಿ ನರಿ ತಿಂಬ ಕಾರಣ ನಿಮ್ಮ ದೇಹ ಅಪವಿತ್ರ ಕಾಣಿರೆ ! ಇಂತಪ್ಪ ಅಪವಿತ್ರ ಕಾರ್ಯಕ್ಕೆ ಕುಲವಿಲ್ಲ. ಆ ಕಾರ್ಯಕ್ಕೆ ಕುಲವುಂಟೆಂದಡೆ ಮೇಲುಜಾತಿಯ ದೇಹದೊಳಗೆ ಹಾಲುವುಳ್ಳಡೆ ಕೀಳುಜಾತಿಯ ದೇಹದೊಳಗೆ ರಕ್ತವುಳ್ಳಡೆ ಅದು ಕುಲವಹುದು ! ಅಂಥಾ ಗುಣ ನಿಮಗಿಲ್ಲವಾಗಿ, ಎಲ್ಲಾ ಜೀವರಾಶಿಯ ದೇಹವು, ನಿಮ್ಮ ದೇಹವು ಒಂದೇ ಸಮಾನವಾದ ಕಾರಣ ನಿಮಗೆ ಕುಲವಿಲ್ಲ ! ನಿಲ್ಲು ! ಮಾಣು ! ಒಡಲು ಕರಣಾದಿಗಳು ಕುಲವಿಲ್ಲದೆ ಹೋದಡೂ ಎಲ್ಲವೂ ಅರಿವ ಚೈತನ್ಯಾತ್ಮಕನೆ, ಸತ್ಕುಲಜನೆ ಆತ್ಮನು, ಆವ ಕುಲದೊಳಗೂ ಅಲ್ಲ. ಶರೀರ ಬೇರೆ, ಆತ್ಮ ಬೇರೆ. ಅದೆಂತೆಂದಡೆ : ಭೂದೇವಮೃದ್ಭಾಂಡಮನೇಕ ರೂಪಂ ಸುವರ್ಣಮೇಕಂ ಬಹುಭೂಷಣಾನಾಂ | ಗೋಕ್ಷೀರಮೇಕಂ ಬಹುವರ್ಣಧೇನುಃ | ಶರೀರಭೇದಸ್ತೆ ್ವೀಕಃ ಪರಮಾತ್ಮಾ || ಎಂದುದಾಗಿ, ಶರೀರಂಗಳು ಅನಂತ, ಆತ್ಮನೊಬ್ಬನೆ. ಅದು ಕಾರಣ, ಆ ಆತ್ಮನು ಆವ ಕುಲದಲ್ಲೂ ಅಲ್ಲ. ಇನ್ನು ಆವ ಠಾವಿನಲ್ಲಿ ನಿಮ್ಮ ಕುಲದ ಪ್ರತಿಷ್ಠೆಯ ಮಾಡಿ ತೋರಿವಿರೊ ? ದೇಹದ ಮೃತ್ತಿಕೆ ಆತ್ಮ ನಿರಾಕಾರನೆನುತ್ತಿರಲು, ಇನ್ನಾವ ಪರಿಯಲ್ಲಿ ನಾ ಉತ್ತಮ ಕುಲಜರೆಂಬಿರೊ ? ಜೀವಶ್ಶಿವೋ ಶಿವೋ ಜೀವಸ್ಸಜೀವಃ ಕೇವಲಃ ಶಿವಃ | ಪಾಶಬದ್ಧಸ್ಥಿತೋ ಜೀವಃ ಪಾಶಮುಕ್ತಃ ಸದಾಶಿವಃ || ಎಂಬ ಶ್ರುತಿಯಂ ತಿಳಿದು ನೋಡಲು, ನೀವೆಲ್ಲಾ ಪಾಶಬದ್ಧ ಜೀವಿಗಳಾಗುತ್ತ ಇರಲು, ನಿಮಗೆಲ್ಲಿಯ ಉತ್ತಮ ಕುಲ ? ಪಾಶಮುಕ್ತರಾದ ಎಮ್ಮ ಶಿವಭಕ್ತರೆ ಕುಲಜರಲ್ಲದೆ ನಿಮಗೆ ಉತ್ತಮ ಕುಲ ಉಂಟಾದಡೆ, ನಿಮ್ಮ ದೇಹದೊಳಗೆ ಹೊರಗೆ ಇಂಥಾ ಠಾವೆಂದು ಬೆರಳುಮಾಡಿ ತೋರಿ ! ಅದೂ ಅಲ್ಲದೆ ಒಂದು ಪಕ್ಷಿಯ ತತ್ತಿಯೊಳಗೆ ಹಲವು ಮರಿ ಹುಟ್ಟಿದಡೆ ಒಂದರ ಮರಿಯೋ, ಹಲವು ಪಕ್ಷಿಯ ಮರಿಯೋ ? ತಿಳಿದು ನೋಡಿದಡೆ ಅದಕ್ಕೆ ಬೇರೆ ಬೇರೆ ಪಕ್ಷಿಗಳೆಂಬ ಕುಲವಿಲ್ಲ. ಅಹಂಗೆ ಒಬ್ಬ ಬ್ರಹ್ಮನ ಅಂಡವೆಂಬ ತತ್ತಿಯೊಳಗೆ ಸಕಲ ಜೀವರಾಶಿ ಎಲ್ಲಾ ಉದಯಿಸಿದವು. ಅದೆಂತೆಂದಡೆ : ಪೃಥಿವ್ಯಾಕಾಶಯೋರ್ಭಾಂಡಂ ತಸ್ಯಾಂಡಂ ಜಾಯತೇ ಕುಲಂ | ಅಂತ್ಯಜಾತಿದ್ರ್ವಿಜಾತಿರ್ಯಾ ಏಕಯೋನಿಸಹೋದರಾ || ಎಂದುದಾಗಿ, ಇರುಹೆ ಮೊದಲು, ಆನೆ ಕಡೆಯಾದ ಸಚರಾಚರವೆಲ್ಲವು ಒಬ್ಬ ಬ್ರಹ್ಮನ ಅಂಡದೊಳಗೆ ಹುಟ್ಟಿ, ಏಕಯೋನಿ ಸಹೋದರರೆಂದು ಪ್ರತಿಷ್ಠಿಸುತ್ತಿರಲು, ನಿಮಗೆಲ್ಲಿಯ ಕುಲವೊ ? ಶಿವಭಕ್ತರೆ ಉತ್ತಮ ಕುಲಜರೆಂದು, ಮಿಕ್ಕಿನವರೆಲ್ಲಾ ಕೀಳುಜಾತಿ ಎಂಬುದನು ಓದಿ ಬರಿದೊರೆಯಾದಡು ನಾನು ನಿಮಗೆ ಹೇಳಿಹೆನು ಕೇಳಿ ಶ್ವಪಚೋಪಿ ಮುನಿಶ್ರೇಷ್ಠಶ್ಶಿವ ಸಂಸ್ಕಾರಸಂಯುತಃ | ಶಿವಸಂಸ್ಕಾರಹೀನಶ್ಚ ಬ್ರಾಹ್ಮಣಃ ಶ್ವಪಚಾಧಮಃ || ಎಂಬ ಶ್ರುತಿಗೆ ಇದಿರುತ್ತರವ ಕೊಟ್ಟಡೆ, ಬಾಯಲ್ಲಿ ಕಾಷ್ಟವ ಮೂಡುವುದಾಗಿ ನೀವೇ ಕೀಳುಜಾತಿಗಳು, ಅರಿದ ಶಿವಭಕ್ತರು ಸತ್ಕುಲಜರೆಂದು ಸುಮ್ಮನಿರಿರೋ. ಅಲ್ಲದ ಅಜ್ಞಾನರಾದುದೆಲ್ಲಾ ಒಂದು ಕುಲ. ಸುಜ್ಞಾನರಾದುದೆಲ್ಲಾ ಒಂದು ಕುಲವೆಂದು ಶಾಸ್ತ್ರಗಳು ಹೇಳುತ್ತಿದಾವೆ. ಅದೆಂತೆಂದಡೆ : ಆಹಾರನಿದ್ರಾಭಯಮೈಥುನಂ ಚ ಸಾಮಾನ್ಯಮೇತತ್ಪಶುಬ್ಥಿರ್ನರಾಣಾಂ | ಜ್ಞಾನಂ ಹಿ ತೇಷಾಂ ಅದ್ಥಿಕೋ ವಿಶೇಷಃ ಜ್ಞಾನೇನ ಹೀನಾಃ ಪಶುಬ್ಥಿಃ ಸಮಾನಾಃ || ಎಂದುದಾಗಿ, ಅಜ್ಞಾನತಂತುಗಳು ನೀವೆಲ್ಲರೂ ಕರ್ಮಪಾಶಬದ್ಧರು. ನಿಮಗೆಲ್ಲಿಯದೊ ಸತ್ಕುಲ ? ಇದು ಅಲ್ಲದೆ ನಿಮ್ಮ ನುಡಿಯೊಡನೆ ನಿಮಗೆ ಹಗೆಮಾಡಿ ತೋರಿಹೆನು. ಕೇಳೆಲವೊ ನಿಮಗೆ ಕುಲವು ವಶಿಷ್ಟ, ವಿಶ್ವಾಮಿತ್ರ, ಭಾರದ್ವಾಜ, ಕೌಂಡಿಲ್ಯ, ಕಾಶ್ಯಪನೆಂಬ ಋಷಿಗಳಿಂದ ಬಂದಿತ್ತೆಂಬಿರಿ. ಅವರ ಪೂರ್ವವನೆತ್ತಿ ನುಡಿದಡೆ ಹುರುಳಿಲ್ಲ. ಅವರೆಲ್ಲಾ ಕೀಳುಜಾತಿಗಳಾದ ಕಾರಣ, ನೀವೇ ಋಷಿಮೂಲವನು, ನದಿಮೂಲವನೆತ್ತಲಾಗದೆಂಬಿರಿ. ಇನ್ನು ನಿಮ್ಮ ನುಡಿ ನಿಮಗೆ ಹಗೆಯಾಯಿತ್ತೆಂದೆ ಕೇಳಿರೊ. ಆ ಋಷಿಗಳ ಸಂತಾನವಾಗಿ ನಿಮ್ಮ ಮೂಲವನೆತ್ತಿದಡೂ ಹುರುಳಿಲ್ಲ. ಅದಂತಿರಲಿ. ನಿಮ್ಮ ಕುಲಕೆ ಗುರುವೆನಿಸುವ ಋಷಿಗಳೆಲ್ಲರೂ ಲಿಂಗವಲ್ಲದೆ ಪೂಜಿಸರು, ವಿಭೂತಿ ರುದ್ರಾಕ್ಷಿಯನಲ್ಲದೆ ಧರಿಸರು, ಪಂಚಾಕ್ಷರಿಯನಲ್ಲದೆ ಜಪಿಸರು, ಜಡೆಯನ್ನಲ್ಲದೆ ಕಟ್ಟರು. ಹಾಗೆ ನೀವು ಲಿಂಗವ ಪೂಜಿಸಿ, ವಿಭೂತಿ ರುದ್ರಾಕ್ಷಿಯ ಧರಿಸಿ, ಪಂಚಾಕ್ಷರಿಯ ಜಪಿಸಿ, ಜಡೆಯ ಕಟ್ಟಿ, ಈಶ್ವರನ ಲಾಂಛನವ ಧರಿಸಿದಡೆ ನೀವು ಋಷಿಮೂಲದವರಹುದು. ಹೇಗಾದಡೂ ಅನುಸರಿಸಿಕೊಳಬಹುದು. ಅದು ನಿಮಗಲ್ಲದ ಮಟ್ಟಿಯನ್ನಿಟ್ಟು ವಿಷ್ಣುವಂ ಪೂಜಿಸಿ ಮುಡುಹಂ ಸುಡಿಸಿಕೊಂಡು, ಸಾಲಿಗ್ರಾಮ, ಶಕ್ತಿ, ಲಕ್ಷ್ಮಿ, ದುರ್ಗಿ ಎಂಬ ಕಿರುಕುಳದೈವವಂ ಪೂಜಿಸಿ, ನರಕಕ್ಕಿಳಿದು ಹೋಹರಾದ ಕಾರಣ, ನೀವೇ ಹೀನಜಾತಿಗಳು. ನಿಮ್ಮ ಋಷಿಮಾರ್ಗವ ವಿಚಾರಿಸಿ ನಡೆಯಿರಾಗಿ ನೀವೇ ಲಿಂಗದ್ರೋಹಿಗಳು. ಲಿಂಗವೆ ದೈವವೆಂದು ಏಕನಿಷ್ಠೆಯಿಂದಲಿರಿರಾಗಿ ನೀವೇ ಲಿಂಗದ್ರೋಹಿಗಳು. ಪಂಚಾಕ್ಷರಿಯ ನೆನೆಯಿರಾಗಿ ಮಂತ್ರದ್ರೋಹಿಗಳು. ರುದ್ರಾಕ್ಷಿಯ ಧರಿಸರಾದ ಕಾರಣ ನೀವು ಶಿವಲಾಂಛನ ದ್ರೋಹಿಗಳು. ಶಿವಭಕ್ತರಿಗೆರಗದ ಕಾರಣ ನೀವು ಶಿವಭಕ್ತರಿಗೆ ದ್ರೋಹಿಗಳು. ನಿಮ್ಮ ಮುಖವ ನೋಡಲಾಗದು. ಬರಿದೆ ಬ್ರಹ್ಮವನಾಚರಿಸಿ ನಾವು ಬ್ರಹ್ಮರೆಂದೆಂಬಿರಿ. ಬ್ರಹ್ಮವೆಂತಿಪ್ಪುದೆಂದರಿಯಿರಿ. ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಸತ್ಯಂ ಬ್ರಹ್ಮ ಶುಚಿಬ್ರ್ರಹ್ಮ ಇಂದ್ರಿಯನಿಗ್ರಹಃ | ಸರ್ವಜೀವದಯಾಬ್ರಹ್ಮ ಇತೈ ್ಯೀದ್ಬ್ರಹ್ಮ ಲಕ್ಷಣಂ | ಸತ್ಯಂ ನಾಸ್ತಿ ಶುಚಿರ್ನಾಸ್ತಿ ನಾಸ್ತಿ ಚೇಂದ್ರಿಯ ನಿಗ್ರಹಃ | ಸರ್ವಜೀವ ದಯಾ ನಾಸ್ತಿ ಏತಚ್ಚಾಂಡಾಲ ಲಕ್ಷಣಂ || ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಬ್ರಹ್ಮವೆ ನಿಃಕರ್ಮ, ನೀವೇ ಕರ್ಮಿಗಳು. ಮತ್ತೆಂತೊ `ಬ್ರಹ್ಮಂ ಚರೇತಿ ಬ್ರಹ್ಮಣಾಂ' ಎಂದು ಗಳವುತ್ತಿಹಿರಿ. ಗಾಯತ್ರಿಯ ಜಪಿಸಿ ನಾವು ಕುಲಜರೆಂಬಿರಿ. ಆ ಗಾಯತ್ರಿ ಕರ್ಮವಲ್ಲದೆ ಮುಕ್ತಿಗೆ ಕಾರಣವಿಲ್ಲ. ಅಂತು ಗಾಯತ್ರಿಯಿಂದ ನೀವು ಕುಲಜರಲ್ಲ. ವೇದವನೋದಿ ನಾವೇ ಬ್ರಹ್ಮರಾದೆವೆಂಬಿರಿ. ವೇದ ಹೇಳಿದ ಹಾಂಗೇ ನಡೆಯಿರಿ. ಅದೆಂತೆಂದಡೆ : ``ದ್ಯಾವಾಭೂವಿೂ ಜನಯನ್ ದೇವ ಏಕಃ'' ಎಂದೋದಿ ಮರದು, ವಿಷ್ಣು ವನೆ ಭಜಿಸುವಿರಿ. ನೀವೇ ವೇದವಿರುದ್ಧಿಗಳು. ``ವಿಶ್ವತೋ ಮುಖ ವಿಶ್ವತೋ ಚಕ್ಷು ವಿಶ್ವತೋ ಬಾಹು'' ಎಂದೋದಿ ಮತ್ತೆ , ``ಏಕೋ ರುದ್ರೋ ನ ದ್ವಿತೀಯಾಯ ತಸ್ಥೇ'' ಎಂದು ಮರದು, ಬೇರೊಬ್ಬ ದೈವ ಉಂಟೆಂದು ಗಳಹುತ್ತಿದಿರಿ. ನೀವೇ ವೇದದ್ರೋಹಿಗಳು. ``ಏಕಮೇವಾದ್ವಿತಿಯಂ ಬ್ರಹ್ಮ''ವೆಂದೋದಿ, ಕರ್ಮದಲ್ಲಿ ಸಿಕ್ಕಿದೀರಿ. ನೀವೇ ದುಃಕರ್ಮಿಗಳು. ``ಅಯಂ ಮೇ ಹಸ್ತೋ ಭಗವಾನ್, ಅಯಂ ಮೇ ಭಗವತ್ತರಃ |'' ಎಂದೋದಿ, ಅನ್ಯಪೂಜೆಯ ಮಾಡುತಿದೀರಿ. ನೀವೇ ಪತಿತರು. ``ಶಿವೋ ಮೇ ಪಿತಾ'' ಎಂದೋದಿ, ಸನ್ಯಾಸಿಗಳಿಗೆ ಮಕ್ಕಳೆಂದಿರಿ. ನೀವೇ ಶಾಸ್ತ್ರವಿರುದ್ಧಿಗಳು. ಸದ್ಯೋಜಾತದ್ಭವೇದ್ಭೂಮಿರ್ವಾಮದೇವಾದ್ಭವೇಜ್ಜಲಂ | ಅಘೋರಾದ್ವನ್ಹಿರಿತ್ಯುಕ್ತಸ್ತತ್ಪುರುಷಾದ್ವಾಯುರುಚ್ಯತೇ || ಈಶಾನ್ಯಾದ್ಗಗನಾಕಾರಂ ಪಂಚಬ್ರಹ್ಮಮಯಂ ಜಗತ್ | ಎಂದೋದಿ, ಸರ್ವವಿಷ್ಣುಮಯ ಎನ್ನುತ್ತಿಪ್ಪಿರಿ. ನಿಮ್ಮಿಂದ ಬಿಟ್ಟು ಶಿವದ್ರೋಹಿಗಳಾರೊ ? ``ಭಸ್ಮ ಜಲಮಿತಿ ಭಸ್ಮ ಸ್ಥಲಮಿತಿ ಭಸ್ಮ |'' ಎಂದೋದಿ, ಮರದು ವಿಭೂತಿಯ ನೀಡಲೊಲ್ಲದೆ ಮಟ್ಟಿಯಂ ನೀಡುವಿರಿ. ನಿಮ್ಮಿಂದ ಪತಿತರಿನ್ನಾರೊ ? ``ರುದ್ರಾಕ್ಷಧಾರಣಾತ್ ರುದ್ರಃ'' ಎಂಬುದನೋದಿ ರುದ್ರಾಕ್ಷಿಯಂ ಧರಿಸಲೊಲ್ಲದೆ, ಪದ್ಮಾಕ್ಷಿ ತೊಳಸಿಯ ಮಣಿಯಂ ಕಟ್ಟಿಕೊಂಬಿರಿ. ನಿಮ್ಮಿಂದ ಪಾಪಿಗಳಿನ್ನಾರೊ ? ``ಪಂಚಾಕ್ಷರಸಮಂ ಮಂತ್ರಂ ನಾಸ್ತೀ ತತ್ವಂ ಮಹಾಮುನೇ '' ಎಂಬುದನೋದಿ, ಪಂಚಾಕ್ಷರಿಯ ಜಪಿಸಲೊಲ್ಲದೆ, ಗೋಪಳಾ ಮಂತ್ರವ ನೆನವಿರಿ ಎಂತೊ ? ನಿಮ್ಮ ನುಡಿ ನಿಮಗೆ ವಿರುದ್ಧವಾಗಿರಲು, ನಿಮ್ಮ ಓದು ವೇದ ನಿಮಗೆ ವಿರುದ್ಧವಾಗಿರಲು, ನಿಮ್ಮ ಉತ್ತಮ ಕುಲಜರೆಂದು ವಂದಿಸಿದವರಿಗೆ ಶೂಕರ ಜನ್ಮದಲ್ಲಿ ಬಪ್ಪುದು ತಪ್ಪದು ನೋಡಿರೆ ! ವಿಪ್ರಾಣಾಂ ದರಿಶನೇ ಕಾಲೇ ಪಾಪಂ ಭುಂಜಂತಿ ಪೂಜಕಾಃ | ವಿಪ್ರಾಣಾಂ ವದನೇನೈವ ಕೋಟಿಜನ್ಮನಿ ಶೂಕರಃ || ಇಂತೆಂದುದಾಗಿ, ನಿಮ್ಮೊಡನೆ ಮಾತನಾಡಿದಡೆ ಪಂಚಮಹಾಪಾತಕಃ ನಿಮ್ಮ ಮುಖವ ನೋಡಿದಡೆ ಅಘೋರನರಕ. ಅದೆಂತೆಂದಡೆ : ಒಬ್ಬ ಹಾರುವನ ದಾರಿಯಲ್ಲಿ ಕಂಡದಿರೆ ಇರಿದು ಕೆಡಹಿದಲ್ಲದೆ ಹೋಗಬಾರದೆಂದು ನಿಮ್ಮ ವಾಕ್ಯವೆಂಬ ನೇಣಿಂದ ಹೆಡಗುಡಿಯ ಕಟ್ಟಿಸಿಕೊಳುತಿಪ್ಪಿರಿ. ಮತ್ತು ನಿಮ್ಮ ದುಶ್ಯರೀರತ್ರಯವನೆಣಿಸುವಡೆ ``ಅಣೋರಣೀಯಾನ್ ಮಹತೋ ಮಹೀಯಾನ್'' ಎಂಬುದ ನೀವೇ ಓದಿ, ಪ್ರಾಣಿಯಂ ಕೊಂದು ಯಾಗವನ್ನಿಕ್ಕಿ, ದೇವರ್ಕಳುಗಳಿಗೆ ಹೋಮದ ಹೊಗೆಯಂ ತೋರಿ, ಕೊಬ್ಬು ಬೆಳೆದ ಸವಿಯುಳ್ಳ ಖಂಡವನೆ ತಿಂದು, ಸೋಮಪಾನವೆಂಬ ಸುರೆಯನೆ ಕುಡಿದು, ನೊಸಲಕಣ್ಣ ತೋರುವಂತಹ ಶಿವಭಕ್ತನಾದಡೂ ನಿಂದಿಸಿ ನುಡಿವುತಿಪ್ಪಿರಿ. ನಿಮ್ಮೊಡನೆ ನುಡಿವಡೆ ಗುರುಲಿಂಗವಿಲ್ಲದವರು ನುಡಿವರಲ್ಲದೆ, ಗುರುಲಿಂಗವುಳ್ಳವರು ನುಡಿವರೆ ? ಇದು ಶ್ರುತ ದೃಷ್ಟ ಅನುಮಾನದಿಂದ ವಿಚಾರಿಸಿ ನೋಡಲು, ನೀವೇ ಪಂಚಮಹಾಪಾತಕರು. ಶಿವಭಕ್ತಿಯರಿಯದ ನರರು ಪೀನಕುರಿಗಳು. ನಿಮ್ಮಿಂದ ಏಳುಬೆಲೆ ಹೊರಗಾದ ಹೊಲೆಯನೆ ಉತ್ತಮ ಕುಲಜನೆಂದು ಮುಂಡಿಗೆಯ ಹಾಕಿದೆನು, ಎತ್ತಿರೊ ಸತ್ಯವುಳ್ಳಡೆ ! ಅಲ್ಲದಡೆ ನಿಮ್ಮ ಬಾಯಬಾಲವ ಮುಚ್ಚಿಕೊಳ್ಳಿರೆ. ಎಮ್ಮ ಶಿವಭಕ್ತರೇ ಅದ್ಥಿಕರು, ಎಮ್ಮ ಶಿವಭಕ್ತರೇ ಕುಲಜರು, ಎಮ್ಮ ಶಿವಭಕ್ತರೇ ಸದಾಚಾರಿಗಳು, ಎಮ್ಮ ಶಿವಭಕ್ತರೇ ಪಾಪರಹಿತರು, ಎಮ್ಮ ಶಿವಭಕ್ತರೇ ಸರ್ವಜೀವ ದಯಾಪಾರಿಗಳು, ಎಮ್ಮ ಶಿವಭಕ್ತರೇ ಸದ್ಯೋನ್ಮುಕ್ತರಯ್ಯಾ, ಘನಗುರು ಶಿವಲಿಂಗ ರಾಮನಾಥ.
--------------
ವೀರಶಂಕರದಾಸಯ್ಯ
ಶಿವತತ್ವ ಐದು ಅವಾವೆಂದಡೆ; ಶಿವ, ಶಕ್ತಿ, ಸಾದಾಖ್ಯ, ಈಶ್ವರ, ಶುದ್ಧ ವಿದ್ಯೆ- ಇಂತು ಶಿವತತ್ವ ಐದು. ಇನ್ನು ವಿದ್ಯಾತತ್ತ್ವವೆಂತೆಂದಡೆ: ಕಲೆ, ರಾಗ, ನಿಯತಿ, ವಿದ್ಯೆ, ಪುರುಷ, ಪ್ರಕೃತಿ - ಇಂತು ವಿದ್ಯಾತತ್ತ್ವ ಏಳು. ಇನ್ನು ಕರಣಂಗಳೆಂತೆಂದಡೆ: ಚಿತ್ತ, ಬುದ್ಧಿ, ಅಹಂಕಾರ, ಮನ - ಇವು ಕರಣತತ್ತ್ವ ನಾಲ್ಕು. ಇನ್ನು ಇಂದ್ರಿಯಂಗಳೆಂತೆಂದಡೆ: ಶ್ರೋತ್ರ, ತ್ವಕ್ಕು, ನೇತ್ರ, ಜಿಹ್ವೆ, ಘ್ರಾಣ - ಇಂತು ಬುದ್ಧೀಂದ್ರಯಂಗಳು ಐದು. ಇನ್ನು ಕರ್ಮೇಂ್ರಯಂಗಳೆಂತೆಂದಡೆ: ವಾಕ್ಕು, ಪಾದ, ಪಾಣಿ, ಗುಹ್ಯ, ಪಾಯು - ಇಂತು ಕರ್ಮೇಂ್ರಯಂಗಳು ಐದು. ಇನ್ನು ತನ್ಮಾತ್ರಂಗಳೆಂತೆಂದಡೆ: ಶಬ್ದ, ಸ್ಪರ್ಶ, ರೂಪು, ರಸ ಗಂಧ - ಇಂತು ಜ್ಞಾನೇಂದ್ರಿಯ ವಿಷಯ ಐದು. ಇನ್ನು ಕರ್ಮೇಂ್ರಯ ವಿಷಯವೆಂತೆಂದಡೆ: ವಚನ, ಗಮನ, ಆದಾನ, ಆನಂದ, ವಿಸರ್ಜನ ಇಂತು ಕರ್ಮೇಂ್ರಯ ವಿಷಯ ಐದು. ಇನ್ನು ವಾಕ್ಕುಗಳಾವುವೆಂದಡೆ: ಪರಾ, ಪಶ್ಯಂತಿ, ಮಧ್ಯಮೆ, ವೈಖರಿ - ಇಂತು ವಾಕ್ಕು ನಾಲ್ಕು. ಸಾತ್ಪಿ, ರಾಜಸ, ತಾಮಸ - ಇಂತು ಗುಣ ಮೂರು. ರಾಜಸಹಂಕಾರ, ವೈಖರಿಯಹಂಕಾರ, ಭೂತಾಯಹಂಕಾರ -ಇಂತು ಅಹಂಕಾರ ಮೂರು. ಪೃಥ್ವಿ, ಅಪ್ಪು, ಅಗ್ನಿ, ವಾಯು, ಆಕಾಶ - ಇಂತು ಭೂತಂಗಳು ಐದು. ಭೂತಕಾರ್ಯ ಇಪ್ಪತ್ತೈದು - ಅವಾವೆಂದಡೆ: ಅಸ್ಥಿ, ಮಾಂಸ, ತ್ವಕ್, ನಾಡಿ, ರೋಮ - ಈ ಐದು ಪೃಥ್ವೀಪಂಚಕ. ಲಾಲಾ, ಮೂತ್ರ, ಸ್ವೇದ, ಶುಕ್ಲ, ಶೋಣಿಕ - ಈ ಐದು ಅಪ್ಪುವಿನ ಪಂಚಕ. ಕ್ಷುಧೆ, ತೃಷೆ, ನಿದ್ರೆ, ಆಲಸ್ಯ, ಸ್ತ್ರೀಸಂಗ - ಈ ಐದು ಅಗ್ನಿಪಂಚಕ. ಪರಿವ, ಪಾರುವ, ಸುಳಿವ, ನಿಲುವ, ಅಗಲುವ - ಈ ಐದು ವಾಯುಪಂಚಕ. ರಾಗ, ದ್ವೇಷ, ಭಯ, ಲಜ್ಜೆ, ಮೋಹ - ಈ ಐದು ಆಕಾಶವಂಚಕ. ಇಂತೀ ಇಪ್ಪತ್ತೈದು ಭೂತಕಾರ್ಯ ಪಂಚೀಕೃತಗಳು. ಇನ್ನು ದಶವಾಯುಗಳು: ಪ್ರಾಣ, ಅಪಾನ, ವ್ಯಾನ, ಉದಾನ, ಸಮಾನ, ನಾಗ, ಕೂರ್ಮ, ಕೃಕರ, ದೇವದತ್ತ, ಧನಂಜಯ - ಈ ಹತ್ತು ವಾಯುಗಳು, ಇನ್ನು ದಶನಾಡಿಗಳು: ಇಡಾ, ಪಿಂಗಳಾ, ಸುಷುಮ್ನಾ, ಗಾಂಧಾರಿ, ಹಸ್ತಿ, ಜಿಹ್ವೆ, ಪುಷ್ಕರ, ಪಯಸ್ವಿನಿ, ಆಲಂಬು, ಲಕುಹ, ಶಂಕಿನಿ - ಇಂತೀ ಹತ್ತು ನಾಡಿಗಳು. ಇಂತು ತತ್ವ ತೊಂಬತ್ತಾರು ಕೂಡಿಕೊಂಡು ಆತ್ಮನು ಭೂಮಧ್ಯದಲ್ಲಿರ್ದು ಅವಸ್ಥೆಬಡುವುದನು ಹೇಳಿಹೆನು. ಅದೆಂತೆಂದಡೆ ಅವಸ್ಥೆಯ ಕ್ರಮ: ಪ್ರೇರಕಾವಸ್ಥೆ ಒಂದು, ಅಧೋವಸ್ಥೆ ಐದು, ಊಧ್ರ್ವಾವಸ್ಥೆ ಐದು, ಮಧ್ಯಾವಸ್ಥೆ ಐದು, ಕೇವಲಾವಸ್ಥೆ ಒಂದು, ಸಕಲಾವಸ್ಥೆ ಒಂದು, ಶುದ್ಧಾವಸ್ಥೆ ಒಂದು, ನಿರ್ಮಲಾವಸ್ಥೆ ಐದು, ಅಂತೂ ಅವಸ್ಥೆ ಇಪ್ಪತ್ತನಾಲ್ಕು, ಅವರಲ್ಲಿ ಪ್ರೇರಕಾವಸ್ಥೆಯೆಂತೆಂದಡೆ: ತತ್ತ್ವಸಮೂಹಂಗಳನು ಕೂಡಿಕೊಂಡು ಇರ್ದಲ್ಲಿ ಆ ಪುರುಷನು ಪಂಚೇಂ್ರಯಂಗಳಲ್ಲಿ ವಿಷಯಂಗಳು ಅತಿ ಚಮತ್ಕಾರದಲ್ಲಿ ಅರಿವವೇಳೆ ಪ್ರೇರಕಾವಸ್ಥೆಯೆಂದು. ಅದಕ್ಕೆ ಪ್ರೇರಿಸುವ ತತ್ತ್ವಂಗಳಾವುವೆಂದಡೆ- ಶಿವತತ್ತ್ವ ಐದು, ವಿದ್ಯಾತತ್ತ್ವ ಏಳು, ಕರಣಂಗಳು ನಾಲ್ಕು, ಭೂತಂಗಳಲ್ಲಿ ಒಂದು, ಇಂದ್ರಿಯಂಗಳಲ್ಲಿ ಒಂದು -ಇಂತೀ ಹದಿನೆಂಟು ತತ್ವಂಗಳಲ್ಲಿ ವಿಷಯಂಗಳನರಿವನು. ಅದು ಹೇಗೆಂದಡೆ - ಶಿವತತ್ತ್ವ ಐದು, ವಿದ್ಯಾತತ್ತ್ವ ಏಳು, ಕರಣಂಗಳು ನಾಲ್ಕು - ಇಂತು ಹದಿನಾರು ತತ್ತ್ವ. ಆಕಾಶಭೂತವೂ ಶ್ರೋತ್ರೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಶಬ್ದವನದಲ್ಲಿರಿವ; ವಾಯುಭೂತವೂ ತ್ವಗೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಶಬ್ದವನರಿವ; ವಾಯುಭೂತವೂ ತ್ವಗೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಸೋಂಕನರಿವ; ತೇಜಭೂತವೂ ನಯನೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ರೂಪವನರಿವ; ಅಪ್ಪುಭೂತವೂ ಜಿಹ್ವೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ರಸವನರಿವ; ಪೃಥ್ವಿಭೂತವೂ ಪ್ರಾಣೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಗಂಧವನರಿವ. ಇಂತೀ ವಿಷಯಂಗಳನರಿವುದು. ಇದು ಪ್ರೇರಕಾವಸ್ಥೆಯೆಂದೆನಿಸುವದು. ಇನ್ನು ಅಧೋವಸ್ಥೆ ಐದಕ್ಕೆ ವಿವರ: ಪ್ರಥಮದಲ್ಲಿ ಜಾಗ್ರಾವಸ್ಥೆ ಅದಕ್ಕೆ ಪ್ರೇರಿಸುವ ತತ್ತ್ವಂಗಳು ಬಿಟ್ಟಿಹವಾವುವೆಂದಡೆ: ಶಿವತತ್ತ್ವ ಐದು, ಮಾಯಾತತ್ತ್ವ ಒಂದು, ವಿದ್ಯಾತತ್ತ್ವ ಆರು, ಭೂತಂಗಳು ಐದು ಇಂತು ಹದಿನೇಳು ಬಿಟ್ಟಿಹುದು. ಇನ್ನು ಜಾಗ್ರಾವಸ್ಥೆಯಲ್ಲಿಹ ತತ್ತ್ವಗಳೆಷ್ಟೆಂದಡೆ: ಕರಣ ನಾಲ್ಕು, ಬುದ್ಧೀಂದ್ರಿಯ ಐದು, ಕರ್ಮೇಂದ್ರಿಯ ಐದು, ವಿಷಯ ಹತ್ತು, ವಾಯು ಹತ್ತು. ಇಂತು ಮೂವತ್ತನಾಲ್ಕು ತತ್ತ್ವಂಗಳಲ್ಲಿ ಆ ತನು ಕೇಳದೆ ಕೇಳುವ, ಮಾತಾಡದ ಹಾಂಗೆ ಆಲಸ್ಯದಲ್ಲಿ ಮಾತನಾಡುತ್ತಿಹನು, ಇಂತು ಜಾಗ್ರಾವಸ್ಥೆ. ಇನ್ನು ಸ್ವಪ್ನಾವಸ್ಥೆ. ಅದಕ್ಕೆ ಹತ್ತು ತತ್ತ್ವಂಗಳು ಬಿಟ್ಟಿಹವು. ಅವಾವುವೆಂದಡೆ:ಬುದ್ಧೀಂ್ರಯ ಐದು, ಕರ್ಮೇಂದ್ರಿಯ ಐದು. ಲಲಾಟದಲ್ಲಿ ನಿಲುವು ಕಂಠಸ್ಥಾನದಲ್ಲಿ ಇಪ್ಪತ್ತೈದು ತತ್ತ್ವಂಗಳು ಕೂಡಿಕೊಂಡಿಹುದು. ಅದೆಂತೆಂದಡೆ:ಮಾಯೆ ಒಂದು, ವಾಯು ಹತ್ತು, ವಿಷಯ ಹತ್ತು, ಕರಣ ನಾಲ್ಕು ಇಂತು ಇಪ್ಪತ್ತೈದು ತತ್ತ್ವಂಗಳು ಕೂಡಿಕೊಂಡು ಸ್ವಪ್ನಂಗಳ ಕಾಣುತಿಹನು. ಇದು ಸ್ವಪ್ನಾವಸ್ಥೆ. ಇನ್ನು ಸುಷುಪ್ತಾವಸ್ಥೆಗೆ ಬಹಲ್ಲಿ ಕಂಠಸ್ಥಾನದಲ್ಲಿ ನಿಂದ ತತ್ತ್ವಂಗಳಾವಾವವೆಂದಡೆ- ಮಾಯೆ ಒಂದು, ವಾಯು ಒಂಬತ್ತು ವಿಷಯ ಹತ್ತು, ಕರಣ ಮೂರು- ಇಂತು ಇಪ್ಪತ್ತಮೂರು ತತ್ತ್ವ. ಇನ್ನು ಹೃದಯಸ್ಥಾನದಲ್ಲಿ ಕೂಡಿಹ ತತ್ತ್ವ ಆವಾವೆಂದಡೆ: ಪ್ರಾಣವಾಯು ಒಂದು, ಪ್ರಕೃತಿ ಒಂದು, ಚಿತ್ತ ಒಂದು -ಇಂತು ಸುಷುಪ್ತಾವಸ್ಥೆಯಲ್ಲಿ ತತ್ತ್ವ. ಇನ್ನು ತೂರ್ಯಾವಸ್ಥೆಗೆ ಬಹಾಗ ಹೃದಯದಲ್ಲಿ ನಿಂದ ತತ್ತ್ವ ಚಿತ್ತ ಒಂದು. ನಾಬ್ಥಿಸ್ಥಾನದಲ್ಲಿ ತೂರ್ಯಾವಸ್ಥೆಯಲ್ಲಿಹ ತತ್ತ್ವ ಪ್ರಾಣವಾಯು ಒಂದು, ಪ್ರಕೃತಿ ಒಂದು. ಅತೀತಾವಸ್ಥೆಗೆ ಹೋಹಾಗ ನಾಬ್ಥಿಸ್ಥಾನದಲ್ಲಿ ತೂರ್ಯಾವಸ್ಥೆಯಲ್ಲಿ ಪ್ರಾಣವಾಯುವುಳಿದು ಅತೀತಾವಸ್ಥೆಯಲ್ಲಿ ಪ್ರಕೃತಿಗೂಡಿ ಮೂಲಾಧಾರದಲ್ಲಿ ಆಣವಮಲಯುಕ್ತವಾಗಿ ಏನೆಂದರಿಯದೆ ಇಹುದು, ಇಂತಿದು ಅಧೋವಸ್ಥೆ. ಇನ್ನು ಊಧ್ರ್ವಾವಸ್ಥೆ, ಅತೀತದಲ್ಲಿ ಪ್ರಕೃತಿಕಾರ್ಯಂಗಳೆಲ್ಲವನೂ ಬಿಟ್ಟು, ತತ್ತ್ವಂಗಳೊಂದೂ ಇಲ್ಲದೆ, ಅಣವಮಲಸ್ವರೂಪವಾಗಿ ಮೂಲಾಧಾರದಲ್ಲಿ ಬ್ದಿರ್ದ ಆತ್ಮನಿಗೆ ಪರಮೇಶ್ವರನ ಕರುಣದಿಂದ ಕ್ರಿಯಾಶಕ್ತಿ, ಶಕ್ತಿತತ್ತ್ವಮಂ ಪ್ರೇರಿಸುವುದು. ಆ ಶಕ್ತಿ ಕಲೆ, ಕಾಲ, ನಿಯತಿಗಳಂ ಪ್ರೇರಿಸುವುದು. ಆ ವೇಳೆಯಲ್ಲಿ ಸೂಕ್ಷೆ ್ಮಯೆಂಬ ವಾಕ್ಕು ಕೂಡುವುದು. ಇಂತು ಅತೀತದಲ್ಲಿ ಅರುಹಿಸುವ ತತ್ತ್ವಂಗಳು: ಶಕ್ತಿತತ್ತ್ವ, ಕಲೆ, ಕಾಲ, ನಿಯತಿ, ಸೂಕ್ಷೆ ್ಮ ಇಂತು ತತ್ತ್ವಂಗಳು ಐದು. ಇನ್ನು ತೂರ್ಯಾವಸ್ಥೆಗೆ ಬಹಾಗ ಹಿಂದೆ ಹೇಳಿದ ತತ್ತ್ವ ಐದು, ಪಶ್ಯಂತಿಯೆಂಬ ವಾಕ್ಕು, ಪ್ರಾಣವಾಯು ಕೂಡಿ ತತ್ತ್ವ ಏಳು ತೂರ್ಯಾವಸ್ಥೆಯಲ್ಲಿ ಪ್ರೇರಿಸುವುದು: ಹಿಂದೆ ಹೇಳಿದ ತತ್ತ್ವ ಏಳು ಕೂಡಿ, ಹೃದಯಸ್ಥಾನದಲ್ಲಿ ಮಧ್ಯಮೆ, ಚಿತ್ತ - ಎರಡು ಕೂಡುತ್ತಿಹವು. ಆ ವೇಳೆಯಲ್ಲಿ ಜ್ಞಾನಶಕ್ತಿ ಶುದ್ಧವಿದ್ಯಾತತ್ತ್ವಮಂ ಪ್ರೇರಿಸುವುದು. ಆ ಶುದ್ಧವಿದ್ಯಾತತ್ತ್ವ ಆತ್ಮಂಗೆ ಅರಿವನೆಬ್ಬಿಸುವುದು. ಇಚ್ಛಾಶಕ್ತಿ ಈಶ್ವರತತ್ತ್ವಮಂ ಪ್ರೇರಿಸುವುದು; ಈಶ್ವರತತ್ತ್ವ ರಾಗತತ್ತ್ವಮಂ ಪ್ರೇರಿಸುವುದು; ರಾಗತತ್ತ್ವ ಆತ್ಮಂಗೆ ಇಚ್ಛೆಯನೆಬ್ಬಿಸುವುದು. ಆಶಕ್ತಿ ಸಾದಾಖ್ಯತತ್ತ್ವಮಂ ಪ್ರೇರಿಸುವುದು; ಸಾದಾಖ್ಯತತ್ತ್ವ ಪ್ರಕ್ಕೃತಿತ್ತ್ವಮಂ ಪ್ರೇರಿಸುವುದು; ಪರಾಶಕ್ತಿ ಶಿವತತ್ತ್ವಮಂ ಪ್ರೇರಿಸುವುದು; ಶಿವತತ್ತ್ವ ಗುಣತತ್ತ್ವಮಂ ಪ್ರೇರಿಸುವುದು. ಇಂತು ಹದಿನೆಂಟು ತತ್ತ್ವ ಆವಾವವೆಂದಡೆ: ಪಂಚಶಕ್ತಿ ಹೊರಗಾಗಿ ಶಿವತತ್ತ್ವ ಐದು, ವಿದ್ಯಾತತ್ತ್ವ ಐದು, ಪ್ರಾಣವಾಯು ಒಂದು, ಪ್ರಕೃತಿ ಒಂದು, ಗುಣ ಮೂರು, ಚಿತ್ತ ಒಂದು, ಪುರುಷ ಒಂದು. ಇಂತು ತತ್ತ್ವ ಹದಿನೇಳು ಸುಷುಪ್ತಾವಸ್ಥೆಯಲ್ಲಿ ಅರುಹಿಸುವುವು. ಇನ್ನು ಸ್ವಪ್ನಾವಸ್ಥೆಯ ಕಂಠದಲ್ಲಿಹ ತತ್ತ್ವ: ಜ್ಞಾನೇಂದ್ರಿಯ ವಿಷಯ ಹತ್ತು, ಕರ್ಮೇಂದ್ರಿಯ ವಿಷಯ ಹತ್ತು, ಪ್ರಾಣವಾಯು ಉಳಿಯೆ, ವಾಯುಚಿತ್ತ ಉಳಿಯೆ, ತ್ರಿಕರಣ ಅಹಂಕಾರ ಮೂರು, ವೈಖರಿಯ ವಾಕ್ಕು ಒಂದು ಇಂತು ಇಪ್ಪತ್ತನಾಲ್ಕು ತತ್ತ್ವ. ಸುಷುಪ್ತಾವಸ್ಥೆಯಲ್ಲಿ ಹಿಂದೆ ಹೇಳಿದ ತತ್ತ್ವ ಹದಿನೇಳು ಕೂಡಿ ತತ್ತ್ವ ನಲವತ್ತೊಂದು ಸ್ವಪ್ನಾವಸ್ಥೆಯಲ್ಲಿ ಕೂಡಿಹವು. ಆಗ ತನ್ನೊಳಗೆ ಅರುಹಿಸುವ ಪ್ರಕಾರವೆಂತೆಂದಡೆ: ಚಿತ್ತ, ಬುದ್ಧಿ, ಅಹಂಕಾರ, ಮನ, ಹೃದಯ ಈ ಐದು. ಚಿತ್ತವನು ಆಕಾರ ಪ್ರೇರಿಸುವುದು. ಆ ಅಕಾರವನು ಬ್ರಹ್ಮ ಪ್ರೇರಿಸುವನು, ಬುದ್ಧಿಯನು ಉಕಾರ ಪ್ರೇರಿಸುವುದು; ಉಕಾರವನು ವಿಷ್ಣು ಪ್ರೇರಿಸುವನು, ಅಹಂಕಾರವನು ಮಕಾರ ಪ್ರೇರಿಸುವುದು; ಮಕಾರವನು ರುದ್ರ ಪ್ರೇರಿಸುವನು, ಮನವನು ಬಿಂದು ಪ್ರೇರಿಸುವುದು; ಬಿಂದುವನು ಈಶ್ವರ ಪ್ರೇರಿಸುವನು; ಹೃದಯವನು ನಾದ ಪ್ರೇರಿಸುವುದು; ನಾದವನು ಸದಾಶಿವ ಪ್ರೇರಿಸುವನು. ಈ ಹದಿನೈದು ತನ್ನೊಳಗೆ ಸೂಕ್ಷ ್ಮಶರೀರದಲ್ಲಿಹುದು. ...........ಗೀ(?) ಅಷ್ಟತನುವಿನಿಂದ ಸ್ವರ್ಗನರಕವನರಿವನು. ಮುಂದೆ ಜಾಗ್ರಾವಸ್ಥೆಯಲ್ಲಿ ಅರುಹಿಸುವ ತತ್ತ್ವ ಅವಾವವೆಂದಡೆ- ಭೂತ ಐದು, ಉಭಯೇಂದ್ರಿಯ ಹತ್ತು, ಭೂತಕಾರ್ಯ ಇಪ್ಪತ್ತೈದು, ನಾಡಿ ಹತ್ತು, ಅಂತು ತತ್ತ್ವ ನಲವತ್ತೊಂದು. ಅಂತು ಕೂಡಿ ತತ್ತ್ವ ತೊಂಬತ್ತೊಂದು. ಇಂತಿದು ಊಧ್ರ್ವಾವಸ್ಥೆ. ಇನ್ನು ಸಕಲಾವಸ್ಥೆಯೆಂತೆಂದಡೆ: ತೊಂಬತ್ತೊಂದು ತತ್ತ್ವ ಅವರಲ್ಲಿ ಪ್ರೇರಕತತ್ವವೊಂದು ಪ್ರೇರಿಸುವಲ್ಲಿ ಸಕಲಾವಸ್ಥೆ. ಅದು ಶಿವನನೂ ತನ್ನನೂ ಪಾಶಪಂಚಕವನು ಅರಿಯದೆ ಎಲ್ಲ ವಿಷಯಂಗಳನು ಅರಿವುತ್ತಿಹುದು. ಇನ್ನು ಮಧ್ಯಮಾವಸ್ಥೆಯೆಂತೆಂದಡೆ- ಹಿಂದೆ ಕಂಡವನ ಈಗಲೆಂದು ಅರಿಯಹುದೀಗ ಜಾಗ್ರ ಅತೀತ. ಹಿಂದೆ ಕಂಡವನ ಅರಿದ ಹಾಂಗಿಹುದೀಗ ಜಾಗ್ರ ತುರೀಯ. ಹಿಂದೆ ಕಂಡವನ ಮೆಲ್ಲನೆಚ್ಚತ್ತು ಅರಿವುದು ಜಾಗ್ರದ ಸುಷುಪ್ತಿ. ಹಿಂದೆ ಕಂಡವನ ಕಂಡಾಗಲೆ ಅರಿವುದು ಜಾಗ್ರದ ಸ್ವಪ್ನ. ಹಿಂದೆ ಕಂಡವನ ಹೆಸರು, ಇದ್ದ ಸ್ಥಲ, ಅವನ ಕಾಯಕ ಮುಂತಾಗಿ ಚೆನ್ನಾಗಿ ಅರಿವುದು ಜಾಗ್ರದ ಜಾಗ್ರ. ಅದೆಂತೆಂದಡೆ, ಜಾಗ್ರದಲ್ಲಿ ಪುರುಷತತ್ತ್ವದಲ್ಲಿ ಎಲ್ಲ ತತ್ತ್ವಗಳು ಕೂಡಿದ ಕಾರಣಂದ ತಾನೇನ ನೆನೆದಿದ್ದುದನು ಮರೆವುದು ಜಾಗ್ರ ಅತೀತ. ಆ ಪುರುಷತತ್ತ್ವದಲ್ಲಿ ಪ್ರಾಣವಾಯು ಕೂಡಲು ನೆನೆದುದನು ಹೇಳಿಹೆನೆಂದಡೆ ತೋರುವ ಹಾಂಗೆ ಇಹುದು ತೋರದಿಹುದು ಜಾಗ್ರದ ತುರೀಯ. ಆ ಪುರುಷತತ್ತ್ವದಲ್ಲಿ ಪ್ರಾಣವಾಯು ಚಿತ್ತವು ಕೂಡಲು ನೆನೆದುದನು ಮೆಲ್ಲನೆಚ್ಚತ್ತು ಅರಿದು ಹೇಳುವುದು ಜಾಗ್ರದ ಸುಷುಪ್ತಿ, ಆ ಪುರುಷತತ್ತ್ವದಲ್ಲಿ ಕರಣ ನಾಲ್ಕು, ಇಂದ್ರಿಯ ಹತ್ತು, ವಾಯು ಹತ್ತು, ವಿಷಯ ಹತ್ತು ಅಂತೂ ತತ್ತ್ವ ಮೂವತ್ತನಾಲ್ಕು ಕೂಡಲಾಗಿ, ತಾ ನೆನೆದುದನು ಇದ್ದುದನು ಚೆನ್ನಾಗಿ ಅರಿದು ವಿವರದಿಂದ ಹೇಳುವುದು ಇದು ಜಾಗ್ರದ ಜಾಗ್ರ. ಇಂತಿದು ಮಾಧ್ಯಮಾವಸ್ಥೆ. ಇನ್ನು ಕೇವಲಾವಸ್ಥೆಯೆಂತೆಂದಡೆ: ಶುದ್ಧತತ್ತ್ವ ವಿದ್ಯಾತತ್ತ್ವವನೆಲ್ಲವ ಬಿಟ್ಟು ಆಣವಮಲದಲ್ಲಿ ಆಣವಸ್ವರೂಪಾಗಿ ಕಣ್ಗತ್ತಲೆಯಲ್ಲಿ ಏನೂ ಕಾಣದ ಕಣ್ಣಿನ ಹಾಂಗೆ ಇದ್ದುದೀಗ ಕೇವಲಾವಸ್ಥೆ. ಇನ್ನು ಶುದ್ಧಾವಸ್ಥೆಯೆಂತೆಂದಡೆ: ಕರ್ಮಸಮಾನದಲ್ಲಿ ಶಕ್ತಿಪಾತವಾಗಿ,ತ್ರಿಪದಾರ್ಥಜ್ಞಾನವಾಗಿ, ದಿಟವೆಂಬಂತೆ ತೋರುತ್ತಿಹ ದೇಹಾಪ್ರಪಂಚುವನು ಸಟೆಯೆಂದು ಕಸವ ಕಳೆವ ಹಾಂಗೆ ಕಳೆದು, ತತ್ತ್ವಂಗಳೊಳಗೆ ಇದ್ದು ತತ್ತ್ವಂಗಳಿಗೆ ಅನ್ಯವಾಗಿ, ಆ ತತ್ತ್ವಂಗಳನು ಅರಿದ ಸಕಲಾವಸ್ಥೆಯೆಂಬ ಕೇವಲಾವಸ್ಥೆಯೆಂಬ ಈ ಎರಡು ಅವಸ್ಥೆಗಳೂ ತನ್ನನು ಶಿವನನು ಅರಿವುದಕ್ಕೆ ಪ್ರಯೋಜನವಲ್ಲವೆಂದು ಎರಡವಸ್ಥೆಯನೂ ಬಿಟ್ಟು ಸಕಲವನೂ ಹೊದ್ದದೆ ಕೇವಲವನೂ ಹೊದ್ದದೆ ತ್ರಾಸಿನ ಮುಳ್ಳು ನಿಂದ ಹಾಂಗೆ ನಿಂದುದು ಶುದ್ಧಾವಸ್ಥೆ. ಇದು ಶಿವನ ಶರಣರಿಗಲ್ಲದೆ ಇಲ್ಲ. ಇನ್ನು ನಿರ್ಮಲಾವಸ್ಥೆ ಎಂತೆಂದಡೆ- ಶಿವಜ್ಞಾನದಲ್ಲಿ ಬೋಧವನಳಿದು ಜ್ಞೇಯದೊಳು ಕೂಡಿಹ ಜೀವನ್ಮುಕ್ತರಿಗೆ ಪಂಚಾವಸ್ಥೆಗಳು. ಆ ಅವಸ್ಥೆಗಳಲ್ಲಿ ತತ್ತ್ವಗಳಾವಾವೆಂದಡೆ: ಶಿವತತ್ತ್ವ, ಶಕ್ತಿತತ್ತ್ವ, ಸಾದಾಖ್ಯತತ್ತ್ವ, ಈಶ್ವರತತ್ತ್ವ, ಶುದ್ಧ ವಿದ್ಯಾತತ್ತ್ವ ಈ ಐದು ಮೊದಲಾಗಿ ಪರಾ, ಆದಿ, ಇಚ್ಛೆ, ಜ್ಞಾನ, ಕ್ರಿಯೆಯೆಂಬ ಶಕ್ತಿ ಪಂಚಕಗಳು ಉಸುರಾಗಿ ಜಾಗ್ರಾವಸ್ಥೆಯಲ್ಲಿ ಅರಿವುತ್ತಿಹನು. ಕ್ರಿಯಾಶಕ್ತಿ ಶಕ್ತಿತತ್ತ್ವಮಂ ಬಿಟ್ಟು ಉಳಿದ ಶಕ್ತಿ ನಾಲ್ಕು ಒಡಲುಸುರಾಗಿ ಅರಿಯೆ ಸ್ವಪ್ನಾವಸ್ಥೆ. ಜ್ಞಾನಶಕ್ತಿ ಶುದ್ಧವಿದ್ಯಾತತ್ತ್ವಮಂ ಬಿಟ್ಟು ಕಳೆದು ಉಳಿದ ಶಕ್ತಿ ಮೂರರಲ್ಲಿ ಅರಿಯೆ ಸುಷುಪ್ತಾವಸ್ಥೆ. ಇಚ್ಛಾಶಕ್ತಿ ಈಶ್ವರತತ್ತ್ವಮಂ ಬಿಟ್ಟು ಕಳೆದು ಉಳಿದ ಶಕ್ತಿ ಎರಡರಲ್ಲಿ ಅರಿವುದು ತೂರ್ಯಾವಸ್ಥೆ. ಆಶಕ್ತಿ ಸಾದಾಖ್ಯತತ್ತ್ವವೂ ಬಿಟ್ಟು ಕಳೆದು ಉಳಿದ ಪರಾಶಕ್ತಿ ಒಂದು ಶಿವತತ್ತ್ವ ಒಂದರಲ್ಲಿ ಅರಿಯೆ ನಿರ್ಮಲದ ಅತೀತಾವಸ್ಥೆ. ಇನ್ನು ಈ ಶಕ್ತಿ ಶಿವತತ್ತ್ವಂಗಳೆ ಒಡಲುಸುರಾಗಿ ಇದ್ದಲ್ಲಿ ಶಿವನಲ್ಲದೆ ಮತ್ತೊಂದು ಏನೂ ತೋರದು. ಅಂಥ ಜೀವನ್ಮುಕ್ತರು ನಿರ್ಮಲಜಾಗ್ರದಲ್ಲಿ ಎಂತು ಅರಿವುತ್ತಿಪ್ಪರೆಂದಡೆ ಆ ಪರಮಾವಸ್ಥೆಯನೂ ಅನುಭವದಲ್ಲಿ ಅರಿವುದು, ಮಲಪಂಚಕಗಳನು ಅರುಹಿಸುವ ಸದಮಲ ಶಿವಜ್ಞಾನ ಪರೆ ಮೊದಲಾದ ಪೂರ್ಣ ಬೋಧದಲ್ಲಿ ಕೂಡಿ ತಾನು ಇಲ್ಲದಿರುವಂಧು ಏನೂ ತೋರದ ಪೂರ್ಣ ಬೋಧವಾಗಿ ನಿಂದುದು ನಿರ್ಮಲಜಾಗ್ರ. ಇನ್ನು ಪರಾಶಕ್ತಿಯನೂ ಶಿವತತ್ತ್ವವನೂ ಮೀರಿ, ಪರದಲಿ ಬೆರೆದು, ಅದ್ವೆ ೈತವೂ ಅಲ್ಲದೆ, ದ್ವೆ ೈತವೂ ಅಲ್ಲದೆ, ದ್ವೆ ೈತಾದ್ವೆ ೈತವೂ ಅಲ್ಲದೆ ಇನತೇಜದಲ್ಲಿ ಕಣ್ಣು ತೇಜ ಕೂಡಿದ ಹಾಂಗೆ ಆಣವದ ಅಣುವಿನ ಹಾಂಗೆ ತಾನು ಇಲ್ಲದೆ ಇಹನು. ಇದು ಶಿವಾದ್ವೆ ೈತ. ಇಂತಲ್ಲದೆ ಆತ್ಮ ಆತ್ಮ ಕೆಟ್ಟಡೆ, ಆತ್ಮವರ್ಗ ಮುಕ್ತಿಸುಖವಿಲ್ಲ, ಅಳಿದ ಠಾವಿನಲ್ಲಿ ಹುಟ್ಟುವುದಾಗಿ, ಶಿವ ತಾನೆ ಆತ್ಮನಾಗಿ ಹುಟ್ಟುವನಹುದು: ಶಿವನಲ್ಲಿ ಹುಟ್ಟಿ ಮಲ ಉಳ್ಳದಹುಲ್ಲ. ಶಿವ ತಾನೆ ಹುಟ್ಟಿಸಿ ನರಕ - ಸ್ವರ್ಗದ ಮಾನವನಹನು, ಪಕ್ಷಪ್ಕಾಯಹನು, ನಿಃಕರುಣಿಯಹನು, ವಿಕಾರಿಯಹನು. ಶಿವನ್ಲ ಕೂಡದೆ ಬೇರಾಗಿ ಇಹನೆಂದಡೆ, ಮುಕ್ತಿಯೆಂಬ ಮಾತು ಇಲ್ಲವಹುದು. ಪಂಚಕೃತ್ಯವ ಮಾಡಲು ಕಾರಣವಿಲ್ಲ ಒಂದಾಗೆ! ಎರಡಾಗದೆ ಭೇದಾಭೇದವಾಗಿಹನೆಂದಡೆ ಶಿವಭಕ್ತಿಯನೂ ಶಿವಕ್ರಿಯೆಗಳನೂ ಮಾಡಿ ಶಿವನ ಕೂಡಿಹನೆಂದೆನ್ನಬೇಡ! ಮುನ್ನವೆ ಒಂದಾಗಿ ಇದ್ದನಾಗಿ, ಈ ಭೇದವ ತಿಳಿಯಬಲ್ಲಡೆ ಆತನೆ ಶರಣ ಕಾಣಾ, ಕಪಿಲಸಿದ್ಧಮಲ್ಲಿಕಾರ್ಜುನಾ
--------------
ಸಿದ್ಧರಾಮೇಶ್ವರ
ಲಿಂಗದ ಕಲೆ ಅಂತರಂಗಕ್ಕೆ ವೇದಿಸುವ ಹಲವು ಸಾಧನಂಗಳಲ್ಲಿ ಒಂದು ಸಾಧನವನಿಲ್ಲಿ ಹೇಳಿಹೆನು ಕೇಳಿರಯ್ಯಾ. ಕರದಿಷ್ಟಲಿಂಗದಿ ತೆರೆದಿಟ್ಟ ದೃಷ್ಟಿ ಎವೆ ಹರಿಚದಂತಿರ್ದಡೆ ಆ ಲಿಂಗವು ಕಂಗಳಲ್ಲಿ ವ್ಯಾಪಿಸುತಿಪ್ಪುದು. ಆ ಮಂಗಲಮಯವಾದ ಕಂಗಳಲ್ಲಿ ಮನವಿರಿಸಿ, ಲಿಂಗನಿರೀಕ್ಷಣೆಯಿಂದ ನೆನೆಯಲು, ಆ ಲಿಂಗಮೂರ್ತಿ ಮನವನಿಂಬುಗೊಂಡು ಪ್ರಾಣಲಿಂಗವಾಗಿ ಪರಿಣಮಿಸುತಿಪ್ಪುದು. ಬಳಿಕ ಮನೋಮಯಲಿಂಗವನು ಭೇದವಿಲ್ಲದ ಸುವಿಚಾರದಿಂದ ಪರಿಭಾವಿಸಲು, ಆ ಲಿಂಗಮೂರ್ತಿ ಭಾವದಲ್ಲಿ ಸಮರಸಗೊಂಡು ಭಾವಲಿಂಗವಾಗಿ ಕಂಗೊಳಿಸುತಿಪ್ಪುದು. ಆ ಭಾವಲಿಂಗವನು ಎಡೆವಿಡದೆ ಭಾವಿಸುತ್ತ, ನೆನಹು ನಿರೀಕ್ಷಣೆಯಿಂದ ತಪ್ಪದಾಚರಿಸಲು, ಶರಣನು ನಿತ್ಯತೃಪ್ತನಾಗಿ ವಿರಾಜಿಸುತಿಪ್ಪನು. ಇದೇ ನಮ್ಮ ಕೂಡಲಚೆನ್ನಸಂಗಯ್ಯನೊಡನೆ ಕೂಡುವ ಪರಮೋಪಾಯವು.
--------------
ಚನ್ನಬಸವಣ್ಣ
ಅಣುವಿಂಗೆ ಅಣುವಾಗಿ, ಮಹತ್ತಿಂಗೆ ಮಹತ್ತಾಗಿ ಪರಿಪೂರ್ಣವಾದ ಪರವೆಂಬ ಪ್ರಸಾದಮೂರ್ತಿಯ ಇರವ ಹೇಳಿಹೆನು ಕೇಳಿರಣ್ಣ. ಮುಂದೆ ತಾರಾ ಬೀಜ, ಹಿಂದೆ ಸುನಾದ ಬೀಜ, ಬಲದಲ್ಲಿ ಆತ್ಮ ಬೀಜ, ಎಡದಲ್ಲಿ ವಿದ್ಯಾ ಬೀಜ, ಎಂಟರಲ್ಲಿ ಅಷ್ಟೆಶ್ವರ್ಯ, ಅಷ್ಟಶಕ್ತಿ ಬೀಜ, ಹದಿನಾರರಲ್ಲಿ ಕಲೆ, ಕಲಾಪತಿಗಳು ಮೂವತ್ತೆರಡರಲ್ಲಿ ವಿಕಲೆ ವಿಃಕಲಾಪತಿಗಳು. ಇಂತೀ ತ್ರಿಮಂಡಲ ಮಧ್ಯದ ಸೂಕ್ಷ ್ಮಕರ್ಣಿಕೆಯಲ್ಲಿಯೆ ಶುದ್ಧ ಪ್ರಸಾದವನು ಮಹಾನುಭಾವರ ಸಂಗದಲ್ಲಿದ್ದರಿದೆನು ಕಾಣಾ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ಲಿಂಗವೆ ನಿಮ್ಮ ನೆನೆವ ಮನಕ್ಕೆ ಹೊನ್ನ ತೋರಿ, ನಿಮ್ಮ ನೋಡುವ ನೋಟಕ್ಕೆ ಹೆಣ್ಣ ತೋರಿ, ನಿಮ್ಮ ಪೂಜಿಸುವ ಕೈಗೆ ಮಣ್ಣ ತೋರಿ, ಮತ್ತೆ ಗಣಂಗಳ ಸಾಕ್ಷಿಯಾಗಿದ್ದುದ ತಿಳಿದು ಅವರಿಗೆ ಅಂಜಿ ಮನದ ಕೊನೆಯಲ್ಲಿ ಮಂತ್ರರೂಪಾಗಿ ನಿಂದ ಕಾರಣ ಹೊನ್ನಿನ ನೆನಹು ಕೆಟ್ಟಿತ್ತು ನೋಡಾ ! ಪರಶಿವಮೂರ್ತಿಯ ಮುದ್ದುಮೊಗದ ತುಟಿಯಲ್ಲಿ ಹುಟ್ಟಿದ ಓಂಕಾರನಾದಾಮೃತವ ಚುಂಬನವ ಮಾಡಲಿಕ್ಕೆ ಹೆಣ್ಣಿನ ನೋಟ ಕೆಟ್ಟಿತ್ತು. ಕರಕಮಲ ಗದ್ದುಗೆಯ ಮಾಡಿದ ಕಾರಣ ಮಣ್ಣಿನ ಧಾವತಿ ಬಿಟ್ಟುಹೋಯಿತ್ತು. ಇಂತು ಮಾಡಿದಿರಿ ಲಿಂಗವೆ, ಮತ್ತೆ ನಿಮ್ಮ ಬೇಡಿದಡೆ ಅಷ್ಟೈಶ್ವರ್ಯ ಚತುರ್ವಿಧಪದಗಳನು ಕೊಡುವಿರಿ. ಇವೆಲ್ಲ ಅಲ್ಪಸುಖ, ತಾಮಸಕಿಕ್ಕುವವು. ಮತ್ತೆ ನಮ್ಮ ಗಣಂಗಳ ಮನೆಯಲ್ಲಿ ಕೇಡಿಲ್ಲದಂತಹ ನಿತ್ಯವಾದ ವಸ್ತು ಅಷ್ಟೈಶ್ವರ್ಯಗಳುಂಟು, ನಿದ್ಥಿ ನಿಧಾನಗಳುಂಟು, ಇದಕ್ಕೆ ನಾವು ನೀವು ಬೇಡಿಕೊಂಬುವ ಬನ್ನಿರಿ. ಅವರಿರುವ ಸ್ಥಲವ ತೋರಿಕೊಡಿ ಎಲೆ ಲಿಂಗವೆ. ಅವರು ಎಲ್ಲಿ ಐದಾರೆಯೆಂದಡೆ : ಏಳುಪ್ಪರಿಗೆಯೊಳಗಿಪ್ಪರು. ಅವರ ನಾಮವ ಪೇಳ್ವೆನು - ಪಶ್ಚಿಮಚಕ್ರದಲ್ಲಿ ನಿರಂಜನ ಜಂಗಮವು, ಗುರು-ಹಿರಿಯರು ಅಸಂಖ್ಯಾತ ಮಹಾಗಣಂಗಳು ಸಹವಾಗಿಪ್ಪರು. ಅವರ ಮಧ್ಯದಲ್ಲಿ ನೀವೆ ನಾವಾಗಿ ಬೇಡಿಕೊಂಬೆವು. ಬೇಡಿಕೊಂಡ ಮೇಲೆ ಅವರು ಕೊಟ್ಟ ವಸ್ತುವ ಹೇಳಿಹೆನು ಕೇಳಿರೆ ಲಿಂಗವೆ. ಅವು ಯಾವುವೆಂದಡೆ : ಜೀವಾತ್ಮ ಅಂತರಾತ್ಮ ಪರಮಾತ್ಮರೆಂಬ ಆತ್ಮತ್ರಯರು, ಹೇಮಾದ್ರಿ ರಜತಾದ್ರಿ ಮಂದರಾದ್ರಿಯೆಂಬ ಮೇರುಗಳ ಸೆಜ್ಜೆಯ ಮಾಡಿ, ವಾಯುವನೆ ಶಿವದಾರವ ಮಾಡಿ, ತನುತ್ರಯವನೆ ವಸ್ತ್ರವ ಮಾಡಿ, ಇವುಗಳನೆ ಅವರು ನಮಗೆ ಕೊಟ್ಟರು. ಅಲ್ಲದೆ ಪರಸ್ತ್ರೀಯರ ಅಪ್ಪದ ಹಾಗೆ ನಿಃಕಾಮವೆಂಬ ಉಡುಗೊರೆಯ ಮಾಡಿ ಕಟ್ಟಿನಲ್ಲಿಟ್ಟರು. ಕುಶಬ್ದವ ಕೇಳದ ಹಾಗೆ ಬಲದ ಕರ್ಣದಲ್ಲಿ ಷಡಕ್ಷರವೆಂಬ ವಸ್ತುವ ಮಾಡಿಯಿಟ್ಟರು. ಪಂಚಾಂಗುಲಿಗೆ ಪಂಚಾಕ್ಷರವೆ ಐದುಂಗುರವ ಮಾಡಿಯಿಟ್ಟರು. ನೂರೆಂಟು ನಾಮ ಹರಗÀಣ ಕೊರಳಲಿ ಹಾಕಿದರು. ಆಪತ್ತಿಗೆ ಅಂಜಬೇಡೆಂದು ವಿಭೂತಿಧೂಳನ ಧಾರಣವಮಾಡಿ ಜೋಡಂಗಿಯ ಮಾಡಿ ತೊಡಿಸಿದರು. ಗಣಂಗಳು ಹೋದ ಹಾದಿಯನೆ ಮುಂಡಾಸವ ಮಾಡಿ ತಲೆಗೆ ಸುತ್ತಿದರು. ಆವ ಕಂಟಕವು ಬಾರದ ಹಾಗೆ ಗಣಂಗಳ ಪಾದಧೂಳನವ ಸೆಲ್ಲೆಯ ಮಾಡಿ ಹೊದಿಸಿದರು. ಭಕ್ತಿಯೆಂಬ ನಿಧಾನವ ಕೊಟ್ಟು, ಭಾವದಲ್ಲಿ ಬಚ್ಚಿಟ್ಟುಕೊಳ್ಳಿರಿ ಎಂದರು. ಅಷ್ಟಾವರಣವೆ ನಿದ್ಥಿನಿಧಾನವೆಂದು ಹೇಳಿದರು. ಇವೆಲ್ಲ ವಸ್ತುಗಳ ನಿಮ್ಮ ನೋಡಿ ಕೊಟ್ಟರಲ್ಲದೆ ಬೇರಿಲ್ಲ. ನಿಮ್ಮ ದಾಸಾನುದಾಸಯೆಂದು ನಿಮ್ಮೊಡವೆಯ ನಿಮಗೊಪ್ಪಿಸು ಎಂದರುಹಿದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಗುರೂಪದೇಶವ ಪಡೆದು ಗುರುಪುತ್ರನೆನಿಸಿಕೊಂಡ ಬಳಿಕ ಹಿಂದಣ ತಾಯಿ ತಂದೆ ಬಂಧು ಬಳಗವ ನೆನೆಯದಿರಿರೋ. ಕುಲಗೆಟ್ಟ ಹೊಲೆಯರಿರ ನೆನೆದರೆ ನಿಮಗೆ ಶಿವದ್ರೋಹ ತಪ್ಪದು. ನಿಮಗೆ ತಂದೆ ತಾಯಿ ಬಂಧು ಬಳಗವ ಹೇಳಿಹೆನು ಕೇಳಿರೊ. 'ಗುರುದೈವಾತ್ ಪರಂ ನಾಸ್ತಿ' ಎಂದುದಾಗಿ, ಗುರುವೇ ತಾಯಿ, ಗುರುವೇ ತಂದೆ, ಗುರುವೇ ಬಂಧುಬಳಗವೆಂದು ನಂಬಬಲ್ಲಡೆ ಆತನೆ ಶಿಷ್ಯನೆಂಬೆ, ಆತನೆ ಭಕ್ತನೆಂಬೆ. ಅಲ್ಲದಿರ್ದಡೆ ಭವಿಯೆಂಬೆ ಕಾಣಾ ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರ ಶಿವಸಾಕ್ಷಿಯಾಗಿ.
--------------
ಕುಷ್ಟಗಿ ಕರಿಬಸವೇಶ್ವರ
ಪಶ್ಚಿಮದ ಕದವ ತೆಗೆದು ಬಚ್ಚಬರಿಯ ಬೆಳಗ ನೋಡಲೊಲ್ಲದೆ, ಕತ್ತಲೆಯ ಬಾಗಿಲಿಗೆ ಮುಗ್ಗಿ, ಕಣ್ಣುಕಾಣದ ಅಂಧಕನಂತೆ ಜಾರಿ ಜರಿಯಲ್ಲಿ ಬಿದ್ದು, ಕರ್ಮಕ್ಕೆ ಗುರಿಯಾಗುವ ಮರ್ತ್ಯದ ಮನುಜರಿರಾ, ನೀವು ಕೇಳಿರೋ ಹೇಳಿಹೆನು, ನಮ್ಮ ಶರಣರ ನಡೆ ಎಂತೆಂದಡೆ ಕತ್ತಲೆಯ ಬಾಗಿಲಿಗೆ ಕದವನಿಕ್ಕಿ, ಪಶ್ಚಿಮದ ಕದವ ತೆಗೆದು, ಬಚ್ಚಬರಿಯ ಬೆಳಗಿನೊಳಗೋಲಾಡುವ ಶರಣರ ಪಾದಕ್ಕೆ ನಮೋ ಎಂದು ಸುಖಿಯಾದೆನಯ್ಯಾ, ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಹೊತ್ತು ಹೊತ್ತಿಗೆ ಮೆತ್ತಹಾಕಿ ತಿಪ್ಪೆಯಲ್ಲಿ ಕರ್ಪೂರವನರಸುವನಂತೆ, ತಿಪ್ಪೆಯಂತಹ ಒಡಲೊಳಗೆ ಕರ್ತೃವನರಸಿಹೆನೆಂಬ ಅಣ್ಣಗಳಿರಾ, ನೀವು ಕೇಳಿರೊ, ಹೇಳಿಹೆನು. ಆ ಕರ್ತೃವನರಸುವುದಕ್ಕೆ ಚಿತ್ತ ಹೇಗಾಗಬೇಕೆಂದಡೆ ಜಲದೊಳಗಣ ಸೂರ್ಯನ ಪ್ರತಿಬಿಂಬದಂತಿರಬೇಕು. ಮೋಡವಿಲ್ಲದ ಚಂದ್ರಮನಂತಿರಬೇಕು. ಬೆಳಗಿನ ದರ್ಪಣದಂತಿರಬೇಕು. ಇಂತು ಚಿತ್ತಶುದ್ಧವಾದಲ್ಲದೆ, ಆ ಕರ್ತೃವಿನ ನೆಲೆಯ ಕಾಣಬಾರದೆಂದರು, ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣನ ಶರಣರು.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಭಕ್ತ ಮಾಹೇಶ್ವರ ಪ್ರಸಾದಿಯೆಂದು ಈ ಮೂರು ಕ್ರಿಯಾಂಗವಯ್ಯ. ಪ್ರಾಣಲಿಂಗಿ ಶರಣ ಐಕ್ಯವೆಂದು ಈ ಮೂರು ಜ್ಞಾನಾಂಗವಯ್ಯ. ಆಚಾರಲಿಂಗ ಗುರುಲಿಂಗ ಶಿವಲಿಂಗವೆಂದು ಈ ಮೂರು ಕ್ರಿಯಾಲಿಂಗವಯ್ಯ. ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗವೆಂದು ಈ ಮೂರು ಜ್ಞಾನಲಿಂಗವಯ್ಯ. ಇವಕ್ಕೆ ಅಂಗ ಲಿಂಗ ಸಂಗ ಸಂಯೋಗನಿರ್ದೇಶವ ಹೇಳಿಹೆನು. ಭಕ್ತ ಮಾಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯನೆಂದು ಆ ಆರು ಕ್ರಿಯಾಂಗವು. ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗವೆಂದು ಲಿಂಗವಾರು ತೆರನಾಗಿಪ್ಪುದಯ್ಯ. ಇನ್ನು ಸಂಗವಾರು ತೆರನದೆಂತೆಂದಡೆ: ಘ್ರಾಣ, ಜಿಹ್ವೆ, ನೇತ್ರ, ತ್ವಕ್ಕು, ಶ್ರೋತ್ರ, ಭಾವವೆಂದು ಸಂಗವಾರು ತೆರನಾಗಿಪ್ಪುದಯ್ಯ. ಘ್ರಾಣದಲ್ಲಿ ಆಚಾರಲಿಂಗ, ಜಿಹ್ವೆಯಲ್ಲಿ ಗುರುಲಿಂಗ; ನೇತ್ರದಲ್ಲಿ ಶಿವಲಿಂಗ; ತ್ವಕ್ಕಿನಲ್ಲಿ ಜಂಗಮಲಿಂಗ; ಶ್ರೋತ್ರದಲ್ಲಿ ಪ್ರಸಾದಲಿಂಗ; ಭಾವದಲ್ಲಿ ಮಹಾಲಿಂಗ ಸಂಬಂಧ. ಇಂತೀ ಷಂಡಗವು ಷಡ್ವಿಧಲಿಂಗದಲ್ಲಿ ಸಮರಸ ಸಂಯೋಗವಾದಲ್ಲಿ ಅಂಗ ಲಿಂಗ ಸಂಬಂಧವೆನಿಸಿಕೊಂಡಿತಯ್ಯ. ಇನ್ನು ಪ್ರಾಣಾಂಗವಾರು ತೆರನದೆಂತೆಂದಡೆ: ಸುಚಿತ್ತ, ಸುಬುದ್ಧಿ, ನಿರಹಂಕಾರ, ಸುಮನ, ಸುಜ್ಞಾನ, ಶುದ್ಧಾತ್ಮ ಆ ಆರು ಪ್ರಾಣಾಂಗಗಳು. ಇಂತೀ ಪ್ರಾಣಾಂಗಂಗಳಲ್ಲಿಯೂ ಹಿಂದೆ ಹೇಳಿದ ಷಡ್ವಿಧಲಿಂಗವು ಮಾರ್ಗ ಕ್ರೀಯನೆಯ್ದಿ ಮೀರಿದ ಕ್ರಿಯಾಸ್ಥಲದಲ್ಲಿ ಬಂದು ನಿಂದು ಜ್ಞಾನಗಮ್ಯವಾಗಿ ಸಂಗದನುವನರಿದು ಪ್ರಾಣಾಂಗವಾರೂ ಲಿಂಗಸಂಬಂಧವಾದವಯ್ಯ. ಹಿಂದೆ ಹೇಳಿದ ಕ್ರಿಯಾಂಗವಾರು ಮುಂದೆ ಹೇಳುವ ಸುಚಿತ್ತಾದಿ ಭಾವಾಂತ್ಯವಹ ಜ್ಞಾನಾಂಗವಾರು. ಈ ಉಭಯಾಂಗವು ಲಿಂಗಸಂಗದಿಂದ ಲಿಂಗಕ್ಕೆ ಅಂಗಕ್ಕೆ ಆಶ್ರಯಸ್ಥಾನನಾಗಿ ನಿಂದ ನಿರುಪಮ ಮಹಿಮ ಶರಣ ತಾನೆ ಅಂಗಲಿಂಗ ಪ್ರಾಣಲಿಂಗ ಸಂಬಂಧಿಯೆನಿಸಿಕೊಂಬನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಕಾಮವಿಲ್ಲ, ಕ್ರೋಧವಿಲ್ಲ, ಲೋಭವಿಲ್ಲ, ಮೋಹವಿಲ್ಲ, ಮದವಿಲ್ಲ, ಮತ್ಸರವಿಲ್ಲ ಎಂಬ ಅಣ್ಣಗಳಿರಾ, ನೀವು ಕೇಳಿರೊ ಹೇಳಿಹೆನು. ಕಾಮವಿಲ್ಲದವಂಗೆ ಕಳವಳವುಂಟೆ ? ಕ್ರೋಧವಿಲ್ಲದವಂಗೆ ರೋಷವುಂಟೆ ? ಲೋಭವಿಲ್ಲದವಂಗೆ ಆಸೆವುಂಟೆ ? ಮೋಹವಿಲ್ಲದವಂಗೆ ಪಾಶವುಂಟೆ ? ಮದವಿಲ್ಲದವಂಗೆ ತಾಮಸವುಂಟೆ ? ಮತ್ಸರವಿಲ್ಲದವನು ಮನದಲ್ಲಿ ಮತ್ತೊಂದ ನೆನೆವನೆ ? ಇವು ಇಲ್ಲವೆಂದು ಮನವ ಕದ್ದು ನುಡಿವ ಅಬದ್ಭರ ಮಾತ ಮೆಚ್ಚುವನೆ ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ ?
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಆಕಾರ ನಿರಾಕಾರವಿಲ್ಲದಂದು, ಹಮ್ಮುಬಿಮ್ಮುಗಳಿಲ್ಲದಂದು, ಜೀವ ಪರಮರಿಲ್ಲದಂದು, ಮನ ಮನನ ಮನುನೀಯವಿಲ್ಲದಂದು, ಶೂನ್ಯ ನಿಶೂನ್ಯ ನಾಮ ನಿರ್ನಾಮ ಇವೇನೂ ಇಲ್ಲದೆ, ಬಚ್ಚಬರಿಯ ಬಯಲೆ ಸಹಜದಿಂದ ಗಟ್ಟಿಗೊಂಡು, ಘನಲಿಂಗವೆಂಬ ಪುರುಷತತ್ತ್ವವಾಯಿತ್ತಯ್ಯ. ಆ ಘನಲಿಂಗದಿಂದ ಚಿಚ್ಛಕ್ತಿ ಜನಿಸಿದಳು. ಚಿಚ್ಚಕ್ತಿಯಿಂದ ಪರಶಕ್ತಿ ಪುಟ್ಟಿದಳು. ಪರಶಕ್ತಿಯಿಂದ ನಾದ ಬಿಂದು ಕಳೆಗಳಾದವು. ಅಕಾರವೇ ನಾದ, ಉಕಾರವೇ ಬಿಂದು, ಮಕಾರವೇ ಕಳೆ. ಇಂತೀ ತ್ರಿವಿಧಕ್ಕೆ ಪರಶಕ್ತಿಯೇ ತಾಯಿ. ಇಂತೀ ನಾಲ್ಕು ಒಂದಾದಲ್ಲಿ ಓಂಕಾರವಾಯಿತ್ತಯ್ಯ. ಮುಂದೀ ಪ್ರಣವ ತಾನೆ ಪಂಚಲಕ್ಷಣವಾಯಿತ್ತು. ಆ ಘನಲಿಂಗದಿಂದಲೇ ಪಂಚಸಾದಾಖ್ಯಮೂರ್ತಿಗಳಾದುವು. ಆ ಚಿಚ್ಛಕ್ತಿಯಿಂದಲೇ ಪಂಚಶಕ್ತಿಯರಾದರು. ಆ ಪಂಚಶಕ್ತಿಯರಿಂದಲೇ ಪಂಚಕಲೆಗಳಾದವು. ಆ ಪಂಚಲಕ್ಷಣವುಳ್ಳ ಮೂರ್ತಿ ತಾನೆ ತ್ರಯವಾದ ಭೇದವ ಹೇಳಿಹೆನು. ಅದೆಂತೆಂದಡೆ: ಶಿವತತ್ತ್ವ ಸದಾಶಿವತತ್ತ್ವ ಮಾಹೇಶ್ವರತತ್ತ್ವವೆಂದು ಮೂರುತೆರನಾಗಿಪ್ಪುದು. ಬಾಹ್ಯ ನಿಃಕಲತತ್ತ್ವವಾಗಿಪ್ಪುದು. ಒಂದು ಸಕಲನಿಃಕಲತತ್ತ್ವವಾಗಿಪ್ಪುದು. ಒಂದು ಸಕಲತತ್ತ್ವವಾಗಿಪ್ಪುದು. ಶಿವತತ್ತ್ವ ಏಕಮೇವ ಒಂದೆಯಾಗಿಪ್ಪುದು. ಸದಾಶಿವತತ್ತ್ವ ಐದುತೆರನಾಗಿಪ್ಪುದು. ಮಾಹೇಶ್ವರತತ್ವ ಇಪ್ಪತ್ತೆ ೈದು ತೆರನಾಗಿಪ್ಪುದು. ಹೀಂಗೆ ಶಿವತತ್ತ್ವ ಮೂವತ್ತೊಂದು ತೆರನೆಂದರಿವುದು. ಸ್ಥೂಲ, ಸೂಕ್ಷ ್ಮ, ಪರತತ್ವವೆಂಬ ಈ ಮೂರು ತತ್ತ್ವವೆ ಆರಾದ ಭೇದಮಂ ಪೇಳ್ವೆ. ಅದೆಂತೆಂದಡೆ: ಆ ಘನಲಿಂಗದ ಸಹಸ್ರಾಂಶದಲ್ಲಿ ಚಿತ್‍ಶಕ್ತಿ. ಚಿತ್‍ಶಕ್ತಿಯ ಸಹಸ್ರಾಂಶದಿಂದ ಪರಮೇಶ್ವರ. ಪರಮೇಶ್ವರನ ಸಹಸ್ರಾಂಶದಿಂದ ಪರಶಕ್ತಿ. ಆ ಪರಶಕ್ತಿಯ ಸಹಸ್ರಾಂಶದಿಂದ ಸದಾಶಿವನು. ಆ ಸದಾಶಿವನ ಸಹಸ್ರಾಂಶದಿಂದ ಆದಿಶಕ್ತಿ. ಆದಿಶಕ್ತಿಯ ಸಹಸ್ರಾಂಶದಿಂದ ಈಶ್ವರ. ಆ ಈಶ್ವರನ ಸಹಸ್ರಾಂಶದಿಂದ ಇಚ್ಛಾಶಕ್ತಿ. ಇಚ್ಛಾಶಕ್ತಿಯ ಸಹಸ್ರಾಂಶದಿಂದ ಮಾಹೇಶ್ವರ. ಮಾಹೇಶ್ವರನ ಸಹಸ್ರಾಂಶದಿಂದ ಜ್ಞಾನಶಕ್ತಿ. ಆ ಜ್ಞಾನಶಕ್ತಿಯ ಸಹಸ್ರಾಂಶದಿಂದ ರುದ್ರನು. ಆ ರುದ್ರನ ಸಹಸ್ರಾಂಶದಿಂದ ಕ್ರಿಯಾಶಕ್ತಿ. ಆ ಕ್ರಿಯಾಶಕ್ತಿಯ ಸಹಸ್ರಾಂಶದಿಂದ ಈಶಾನ್ಯಮೂರ್ತಿಯಾದನು. ಹೀಂಗೆ ಮೂರು ಆರು ತೆರನಾಯಿತ್ತಯ್ಯ. ಇನ್ನೀ ಲಿಂಗಂಗಳಿಗೆ ಸರ್ವ ಲಕ್ಷಣ ಸಂಪೂರ್ಣವ ಹೇಳಿಹೆನು. ಅದೆಂತೆಂದಡೆ: ಒಂದು ಮೂರ್ತಿ ಸರ್ವತೋಮುಖ ಸರ್ವತೋಚಕ್ಷು, ಸರ್ವತೋಬಾಹು, ಸರ್ವತೋಪಾದ, ಸರ್ವಪರಿಪೂರ್ಣನಾಗಿ ಮಾಣಿಕ್ಯವರ್ಣದ ಧಾತುವಿನಲ್ಲಿ ಭಾವಗಮ್ಯವಾಗಿ ಒಪ್ಪುತಿಪ್ಪುದು. ಅದರಿಂದಲಾದ ಮೂರ್ತಿಗೆ ಏಕ ಶಿರಸ್ಸು, ತ್ರಿಣೇತ್ರ, ಎರಡು ಹಸ್ತ, ಎರಡು ಪಾದ. ಮಿಂಚಿನವರ್ಣದ ಧಾತುವಿನಲ್ಲಿ ಜ್ಞಾನಗಮ್ಯವಾಗಿ ಒಪ್ಪುತಿಪ್ಪುದು. ಅದರಿಂದಲಾದ ಮೂರ್ತಿಗೆ ಎರಡು ಶಿರಸ್ಸು, ಆರು ಕಂಗಳು, ನಾಲ್ಕು ಭುಜ, ಎರಡು ಪಾದ, ಸುವರ್ಣದ ಧಾತುವಿನಲ್ಲಿ ಮನೋಗಮ್ಯವಾಗಿ ಒಪ್ಪುತಿಪ್ಪುದು. ಅದರಿಂದಲಾದ ಮೂರ್ತಿಗೆ ಮೂರು ಮುಖ, ಒಂಬತ್ತು ಕಂಗಳು, ಆರು ಭುಜ, ಎರಡು ಪಾದ, ಶ್ವೇತವರ್ಣದ ಧಾತುವಿನಲ್ಲಿ ಅಹಂಕಾರಗಮ್ಯವಾಗಿ ಒಪ್ಪುತಿಪ್ಪುದು. ಅದರಿಂದಲಾದ ಮೂರ್ತಿಗೆ ನಾಲ್ಕುಮುಖ, ಹನ್ನೆರಡು ಕಂಗಳು, ಎಂಟು ಭುಜ, ಎರಡು ಪಾದ, ಕುಂಕುಮವರ್ಣದ ಧಾತುವಿನಲ್ಲಿ ಬುದ್ಧಿಗಮ್ಯವಾಗಿ ಒಪ್ಪುತಿಪ್ಪುದು. ಅದರಿಂದಲಾದ ಮೂರ್ತಿಗೆ ಪಂಚಮುಖ, ದಶಭುಜ, ದಶಪಂಚನೇತ್ರ, ದ್ವಿಪಾದ, ತನುಯೇಕ, ಶುದ್ಧಸ್ಫಟಿಕವರ್ಣದ ಧಾತುವಿನಲ್ಲಿ ಚಿತ್ತಗಮ್ಯವಾಗಿ ಒಪ್ಪುತಿಪ್ಪುದು. ನಿರಾಕಾರವೇ ಸಾಕಾರವಾಗಿ ತೋರಿತ್ತು. ಸಾಕಾರ ನಿರಾಕಾರವೇಕವೆಂಬುದನು ಸ್ವಾನುಭಾವದಿಂದ ಅನುಭಾವಕೆ ತಂದೆನಯ್ಯ. ಇದು ತನ್ನಿಂದ ತಾನೆ ಸ್ವಯಂಭುವಾದ ಮೂರ್ತಿಯಲ್ಲದೆ ಮತ್ತೊಂದರಿಂದಾದುದಲ್ಲ. ಇಂತೆಸೆವ ಶಿವನ ಮುಖದಲ್ಲಿ ಒಗೆದ ಭೂತಂಗಳಾವವೆಂದಡೆ: ಸದ್ಯೋಜಾತ ಮುಖದಲ್ಲಿ ಪೃಥ್ವಿ. ವಾಮದೇವ ಮುಖದಲ್ಲಿ ಅಪ್ಪು. ಅಘೋರ ಮುಖದಲ್ಲಿ ಅಗ್ನಿ. ತತ್ಪುರುಷ ಮುಖದಲ್ಲಿ ವಾಯು. ಈಶಾನ್ಯ ಮುಖದಲ್ಲಿ ಆಕಾಶ. ಇಂತುದಯವಾದ ಪಂಚಭೂತಂಗಳು ಪಂಚವಿಂಶತಿತತ್ವವಾದ ಭೇದವ ಹೇಳಿಹೆನು. ಆವಾವೆಂದರೆ: ಪೃಥ್ವಿ ಅಪ್ಪು ತೇಜ ವಾಯು ಆಕಾಶ ಇಂತಪ್ಪ ಸ್ಥೂಲಭೂತಿಕವೈದು. ಪ್ರಾಣ ಅಪಾನ ವ್ಯಾನ ಉದಾನ ಸಮಾನವೆಂದು ವಾಯುಗಳೈದು. ವಾಕು ಪಾಣಿ ಪಾದ ಪಾಯು ಗುಹ್ಯವೆಂದು ಕರ್ಮೇಂದ್ರಿಯಂಗಳೈದು. ಶ್ರೋತ್ರ ತ್ವಕ್ಕು ನೇತ್ರ ಜಿಹ್ವೆ ಘ್ರಾಣವೆಂದು ಬುದ್ಧೀಂದ್ರಿಯಂಗಳೈದು. ಮನ ಬುದ್ಧಿ ಚಿತ್ತ ಅಹಂಕಾರವೆಂದು ಕರಣ ಚತುಷ್ಟಯ ನಾಲ್ಕು. ಜೀವನೊಬ್ಬನು; ಅಂತು ಆತ್ಮತತ್ತ್ವವಿಪ್ಪತ್ತೆ ೈದು. ವಿದ್ಯಾತತ್ತ್ವಹತ್ತು ತೆರನು. ಅದೆಂತೆಂದಡೆ: ಶಾಂತಾತೀತ, ಶಾಂತಿ, ವಿದ್ಯೆ, ಪ್ರತಿಷೆ*, ನಿವೃತ್ತಿ ಎಂದು ಕಲಾಶಕ್ತಿಯರೈದು. ಶಿವಸಾದಾಖ್ಯ ಅಮೂರ್ತಿಸಾದಾಖ್ಯ ಮೂರ್ತಿಸಾದಾಖ್ಯ ಕರ್ತೃಸಾದಾಖ್ಯ ಕರ್ಮಸಾದಾಖ್ಯವೆಂದು ಶಿವಾದಿಯಾದ ಸಾದಾಖ್ಯಮೂರ್ತಿಗಳೈದು. ಅಂತು ವಿದ್ಯಾತತ್ವ ಹತ್ತು ತೆರನು. ದ್ವಿತೀಯ ತತ್ತ್ವಮೂವತ್ತೆ ೈದು ತೆರನು. ಇವೆಲ್ಲಾ ತತ್ತ್ವಂಗಳಿಗನುತ್ತರತತ್ತ್ವವಾಗಿ ಶಿವತತ್ತ್ವವೊಂದು. ಅಂತು ತತ್ತ್ವ ಮೂವತ್ತಾರು. ಅಂತು ಆತ್ಮತತ್ತ್ವ ವಿದ್ಯಾತತ್ತ್ವ ಶಿವತತ್ತ್ವವೆಂಬ ತ್ರೆ ೈತತ್ತ್ವ ಮೂವತ್ತಾರು ತೆರನು. ಈ ತತ್ತ್ವಂಗಳಲ್ಲಿಯೇ ತತ್ತ್ವಮಸ್ಯಾದಿ ವಾಕ್ಯಾರ್ಥ ಕಾಣಲಾಯಿತ್ತು. ಅದು ಹೇಂಗೆಂದಡೆ: ತತ್‍ಪದ ತ್ತ್ವಂಪದ ಅಸಿಪದವೆಂದು ಮೂರು ತೆರನು. ತತ್‍ಪದವೆಂದು ತೂರ್ಯನಾಮದ ಶಿವತತ್ತ್ವವು. ತ್ವಂ ಪದವೆಂದು ಇಪ್ಪತ್ತೆ ೈದು ತೆರನಾಗುತಂ ಇದ್ದಂಥಾ ಆತ್ಮತತ್ತ್ವವು. ಅಸಿ ಪದವೆಂದು ಹತ್ತು ತೆರನಾಗುತಂ ಇದ್ದಂಥಾ ವಿದ್ಯಾತತ್ತ್ವವು. ತತ್‍ಪದವೇ ಲಿಂಗ, ತ್ವಂ ಪದವೇ ಅಂಗ, ಅಸಿ ಪದವೇ ಲಿಂಗಾಂಗ ಸಂಬಂಧ. ಈ ತ್ರಿವಿಧ ಪದವನೊಳಕೊಂಡು ನಿಂದುದೇ ಪರತತ್ತ್ವವಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ನಮ್ಮಂತುವ ತಿಳಿದು, ನೋಡಿದರೆ ಹೇಳಿಹೆನು. ಅದೆಂತೆಂದರೆ, ಮೇಲು ಕೀಳಾಯಿತ್ತು, ಕೀಳು ಮೇಲಾಯಿತ್ತು. ನಿರಾಳ ಆಳವಾಯಿತ್ತು, ಆಳ ನಿರಾಳವಾಯಿತ್ತು. ಉತ್ತರ ಪೂರ್ವವಾಯಿತ್ತು, ಪೂರ್ವ ಉತ್ತರವಾಯಿತ್ತು, ಗುರುವು ಶಿಷ್ಯನಾಯಿತ್ತು, ಶಿಷ್ಯ ಗುರುವಾಯಿತ್ತು. ಅರ್ಪಿತ ಅನರ್ಪಿತವಾಯಿತ್ತು, ಅನರ್ಪಿತ ಅರ್ಪಿತವಾಯಿತ್ತು, ಇಂತಪ್ಪ ಘನವ ವೇಧಿಸಿ ನುಡಿಯಬಲ್ಲರೆ, ಆತನೆ ಭಕ್ತ, ಮಹೇಶ್ವರ, ಪ್ರಸಾದಿ, ಪ್ರಾಣ. ನಡೆದುದೆ ಬಟ್ಟೆ, ನುಡಿದುದೆ ತತ್ವ. ಇಂತಪ್ಪ ಸರ್ವಾಂಗ ಪ್ರಸಾದಿಯ ಪ್ರಸಾದವ ಕೊಂಡು, ಸರ್ವಾಂಗ ಶುದ್ಧವಾಯಿತ್ತು. ನಾ ನಿಮ್ಮ ಪಾದದೊಳು ನಿರ್ಮುಕ್ತನಾಗಿ ಏನೂ ಇಲ್ಲದಂತಾದೆನಯ್ಯಾ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ .
--------------
ಹಡಪದ ಅಪ್ಪಣ್ಣ
ಇನ್ನಷ್ಟು ... -->