ಅಥವಾ

ಒಟ್ಟು 30 ಕಡೆಗಳಲ್ಲಿ , 21 ವಚನಕಾರರು , 30 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಕ್ತನಾಗಿ ಹುಟ್ಟಿ ಮತ್ತೊಬ್ಬರಲ್ಲಿ ಬೇಡುವುದೆ ಕಷ್ಟ. ಹೊತ್ತು ಹೋರಿ ಭೂಮಿಯ ಅಗೆವಲ್ಲಿ ಮೊತ್ತದ ಜೀವಂಗಳು ಸತ್ತುದ ದೃಷ್ಟವ ಕಂಡಲ್ಲಿಯೆ ಮಾಡುವ ಮಾಟ ನಷ್ಟ. ಇದನರಿತು ವಿರಕ್ತರಾಗಿ ಹೋದಲ್ಲಿ, ಮತ್ತೊಬ್ಬರ ಅಪ್ಪಾ ಅಣ್ಣಾ ಎಂದು ಚಿತ್ತ ಕಲಕುವದು ಕಷ್ಟ. ಈ ಹೊತ್ತ ದೇಹಕ್ಕೆ ನಗೆಯ ಚಿತ್ತದ ಕಾಯಕ, ಇದನೊಪ್ಪುಗೊ, ಆತುರವೈರಿ ಮಾರೇಶ್ವರಾ.
--------------
ನಗೆಯ ಮಾರಿತಂದೆ
ಕಾಡಿ ಬೇಡಿ ಉಂಬರೆಲ್ಲರು ಜಗದ ರೋಡಗವಂತರು. ಬೇಡದೆ ಕಾಡದೆ ಚಿತ್ತದಲ್ಲಿ ಆಸೆಯ ಕಲೆದೋರದೆ, ಹೊತ್ತ ಘಟಕ್ಕೆ ತುತ್ತು, ಶೀತಕ್ಕೆ ಅಂಬರ ನಿರ್ಜಾತನ ಒಲುಮೆ ಎಲ್ಲಿದ್ದರೂ ತಪ್ಪದೆಂದು ವಿಶ್ವಾಸವುಳ್ಳ ಶರಣಂಗೆ ಅವ ತೊಟ್ಟಿದ್ದುದು ಅದೇತರ ಕಾಯ? ದಗ್ಧಪಟ ನ್ಯಾಯ! ನಾರಾಯಣಪ್ರಿಯ ರಾಮನಾಥನಲ್ಲಿ ಕಳೆದುಳಿದಶರಣಂಗೆ!
--------------
ಗುಪ್ತ ಮಂಚಣ್ಣ
ಸದ್ವಾಸನ ಧರ್ಮಚರಿತೆಯ ವರ್ಮವನುಳಿದು ದುಷ್ಕರ್ಮಬಾಧೆಯ ಉರಿಯೊಳು ತೊಳಲುವ ಭಾವ ಭಕ್ತಿತ್ರಯದ ಯುಕ್ತಿಯನರಿವುದು ಚೋದ್ಯ ಕಾಣಾ. ಹಿಡಿದ ಕುರುಹು ಹೊತ್ತ ಹೊರೆ ನಡೆವ ಬಟ್ಟೆ ಮಿಥ್ಯ ಮಾಯಾ ಬದ್ಧ ನೋಡಾ. ಇಂತಿರ್ದ ಅರುವಿಗೆ ಕುರುಹುಗಾಣಿಸದಿರ್ದನು ನಮ್ಮ ಚೆಲುವಾಂಗ ಪ್ರಾಣಾತ್ಮಪ್ರಿಯ ಸಿದ್ಧಲಿಂಗ ಶರಣ ಭಕ್ತಸಂಗದಲ್ಲಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ಕಾಲಲ್ಲಿ ಕಟ್ಟಿದ ಸಡ್ಡೆಯ ಕೀಳುವರಿಲ್ಲ. ಕೈಯಲ್ಲಿ ಹಿಡಿದ ಮೊರನ ಬೇಡಾ ಎಂಬವರಿಲ್ಲ. ತಲೆಯಲ್ಲಿ ಹೊತ್ತ ಕೊಂಗವ ಇಳುಹುವರಿಲ್ಲ. ಸಡ್ಡೆಗೆ ಮೂರು ಕವೆ. ಒಂದೆ ಚಿತ್ತವಟ್ಟ. ಮೊರಕೆ ಮೂರು ಗೋಟು, ಮಾಡುವಾಕೆ ಒಬ್ಬಳೆ. ಕೊಂಗಕ್ಕೆ ಎರಡು ಗೋಟು, ತೂರುವರು ಮೂವರು. ರಾಶಿವೊಂದೆ, ಕೊಳಗ ಎರಡು, ಅಳೆವರು ಲೆಕ್ಕಕ್ಕೆ ಕಡೆಯಿಲ್ಲ. ಇದ ಕೇಳಿಹರೆಂದಂಜಿ, ಅಲೇಖನಾದ ಶೂನ್ಯ ಕಲ್ಲಿನೊಳಹೊಕ್ಕ.
--------------
ವಚನಭಂಡಾರಿ ಶಾಂತರಸ
ಆದಿ ಅನಾದಿ ಇಲ್ಲದಂದು, ಸ್ಥಿತಿಗತಿ ಉತ್ಪನ್ನವಾಗದಂದು ಭಕ್ತಿಯನುಭಾವಿಯ ಬಸುರೊಳಗೆ ಸತ್ಯಜ್ಞಾನವೆಂಬ ಶಾಸ್ತ್ರಂಗಳು ಹುಟ್ಟಿದವು. ಆ ಶಾಸ್ತ್ರದೊಳಡಗಿದವು ವೇದಪುರಾಣಾಗಮಂಗಳು. ಆ ಆಗಮಂಗಳೊಳಡಗಿದವು ಐವತ್ತೆರಡಕ್ಷರಂಗಳು ಆ ಅಕ್ಷರಂಗಳೊಳಡಗಿದವು ಇಪ್ಪತ್ತೇಳು ನಕ್ಷತ್ರಂಗಳು. ಆ ಇಪ್ಪತ್ತೇಳು ನಕ್ಷತ್ರಂಗಳೊಳಡಗಿದವು ಈರೇಳು ಲೋಕದ ಗಳಿಗೆ ಜಾವ ದಿನ ಮಾಸ ಸಂವತ್ಸರಂಗಳು. ಇಂತಿವೆಲ್ಲವನು ಒಳಗಿಟ್ಟುಕೊಂಡಿಹಾತ `ಓಂ ನಮಃ ಶಿವಾಯ ಎಂಬಾತ ಕಾಣಿರೆ ! ಹೊರಗಿಪ್ಪಾತನು `ಓಂ ನಮಃ ಶಿವಾಯ ಎಂಬಾತ ಕಾಣಿರೆ ! ಉಳಿದಿಪ್ಪಾತನು `ಓಂ ನಮಃ ಶಿವಾಯ ಎಂಬಾತ ಕಾಣಿರೆ ! ಮತ್ತಿದ್ದ ಯೋನಿಜರೆಲ್ಲರೂ ಶಾಪಹತರಾಗಿ ಹೋದರು. ಇದು ಕಾರಣ- `ಓಂ ನಮಃ ಶಿವಾಯ ಎಂಬಾತನೆ ಲಿಂಗವು ಪಂಚಾಕ್ಷರಿಯೆ ಪರಮೇಶ್ವರನು, ಪಂಚಾಕ್ಷರಿಯೆ ಪರಮತತ್ವ, ಪಂಚಾಕ್ಷರಿಯೆ ಪರಮಯೋಗ, ಪಂಚಾಕ್ಷರಿಯೆ ಪರಂಜ್ಯೋತಿ, ಪಂಚಾಕ್ಷರಿಯೆ ಪಾಪಾಂತಕ. `ನ ಎಂಬಕ್ಷರವೆ ದೇವರ ಚರಣ, `ಮ ಎಂಬಕ್ಷರವೆ ದೇವರ ಒಡಲು, `ಶಿ ಎಂಬಕ್ಷರವೆ ದೇವರ ಹಸ್ತ, `ವಾ ಎಂಬಕ್ಷರವೆ ದೇವರ ನಾಸಿಕ, `ಯ ಎಂಬಕ್ಷರವೆ ದೇವರ ನೇತ್ರ. ಮತ್ತೆ ; `ನ ಎಂಬಕ್ಷರವೆ ದೇವರ ದಯೆ, `ಮ ಎಂಬಕ್ಷರವೆ ದೇವರ ಶಾಂತಿ, `ಶಿ ಎಂಬಕ್ಷರವೆ ದೇವರ ಕ್ರೋಧ, `ವಾ ಎಂಬಕ್ಷರವೆ ದೇವರ ದಮನ, `ಯ ಎಂಬ ಅಕ್ಷರವೆ ದೇವರ ಶಬ್ದ, ಮತ್ತೆ ; `ನ ಎಂಬಕ್ಷರವೆ ಪೃಥ್ವಿ, `ಮ ಎಂಬಕ್ಷರವೆ ಅಪ್ಪು, `ಶಿ` ಎಂಬಕ್ಷರವೆ ಅಗ್ನಿ, `ವಾ ಎಂಬಕ್ಷರವೆ ವಾಯು, `ಯ ಎಂಬಕ್ಷರವೆ ಆಕಾಶ. ಮತ್ತೆ; `ನ ಎಂಬಕ್ಷರವೆ ಬ್ರಹ್ಮ, `ಮ ಎಂಬಕ್ಷರವೆ ವಿಷ್ಣು, `ಶಿ ಎಂಬಕ್ಷರವೆ ರುದ್ರ, `ವಾ ಎಂಬಕ್ಷರವೆ ಶಕ್ತಿ, `ಯ ಎಂಬಕ್ಷರವೆ ಲಿಂಗ, ಇಂತು ಪಂಚಾಕ್ಷರದೊಳಗಳಿವಕ್ಷರ ನಾಲ್ಕು, ಉಳಿವಕ್ಷರ ಒಂದು. ಈ ಪಂಚಾಕ್ಷರವನೇಕಾಕ್ಷರವ ಮಾಡಿದ ಬಳಿಕ ದೇವನೊಬ್ಬನೆ ಎಂದರಿದು, ಬ್ರಹ್ಮ ದೈವವೆಂಬ ಬ್ರಹ್ಮೇತಿಕಾರರನೇನೆಂಬೆನಯ್ಯ ! ವಿಷ್ಣು ದೈವವೆಂಬ ವಿಚಾರಹೀನರನೇನೆಂಬೆನಯ್ಯ ! ಅಶ್ವಿನಿ ಭರಣಿ ಕೃತ್ತಿಕೆ ಮೊದಲಾದ ಇಪ್ಪತ್ತೇಳು ನಕ್ಷತ್ರಂಗಳೊಳಗೆ, ಮೂಲಾನಕ್ಷತ್ರದಲ್ಲಿ (ವಿಷ್ಣು) ಹುಟ್ಟಿದನಾಗಿ ಮೂಲನೆಂಬ ಹೆಸರಾಯಿತ್ತು. ದೇವರ ಸೇವ್ಯಕಾರ್ಯಕ್ಕೆ ಪ್ರಾಪ್ತನೆಂದು ವೇದಂಗಳು ಬಿನ್ನೈಸಲು, ಜ್ಯೋತಿಷ್ಯಜ್ಞಾನ ಶಾಸ್ತ್ರಂಗಳು ಹುಸಿಯಾದೆವೆಂದು ನಿಮ್ಮ ಹರಿಯ ಅಡವಿಯಲ್ಲಿ ಬೀಸಾಡಲು, ಅಲ್ಲಿ ಆಳುತ್ತಿದ್ದ ಮಗನ ಭೂದೇವತೆ ಸಲಹಿ, ಭೂಕಾಂತನೆಂಬ ಹೆಸರುಕೊಟ್ಟು, ಭೂಚಕ್ರಿ ತನ್ನ ಪ್ರತಿರೂಪ ತೋಳಲ್ಲಿ ಸೂಡಿಸಿ ಶಿವಧರ್ಮಾಗಮ ಪೂಜೆ ಭಕ್ತಿಯಲ್ಲಿ ಯುಕ್ತನ ಮಾಡಿದ ಬಳಿಕ, ಮತ್ತೆ ನಮ್ಮ ದೇವರ ಶ್ರೀಚರಣದಲ್ಲಿರ್ದು ಒಳಗೆ ತೋರಲು ದೇವರು ಪುರಾಣಂಗ? ಕರೆದು ವಿಷ್ಣುವಿನ ಪಾಪಕ್ಷಯವ ನೋಡಿ ಎಂದರೆ ಆ ಪುರಾಣಂಗಳಿಂತೆಂದವು; ``ಪಾಪಂತು ಮೂಲನಕ್ಷತ್ರಂ ಜನನೀವರಣಂ ಪುನಃ ಪಾಪಂ ತು ಪರ್ವತಸ್ಥೂಲಂ ಶಿವೇ ವೈರಮತಃ ಪರಂ ಶಿವದಾಸೋಹಭಾವೇನ ಪಾಪಕ್ಷಯಮವಾಪ್ನುಯಾತ್ ಎಂದು ಪುರಾಣಂಗಳು ಹೇಳಲಾಗಿ; ವಿಷ್ಣು ಕೇಳಿ, ಪುರಾಣದ ಕೈಯಲು ದೀಕ್ಷಿತನಾಗೆ, ಪುರಾಣ ಪುರುಷೋತ್ತಮನೆಂಬ ಹೆಸರು ಬಳಿಕಾಯಿತ್ತು. ಮತ್ತೆ ನಮ್ಮ ದೇವರ ಪಾದರಕ್ಷೆಯ ತಲೆಯಲ್ಲಿ ಹೊತ್ತುಕೊಂಡು ಭೂತಂಗಳಿಗಂಜಿ ಶಂಖಮಂ ಪಿಡಿದುಕೊಂಡು, ದುರಿತಂಗಳಿಗಂಜಿ ನಾಮವನಿಟ್ಟು, ಪ್ರಳಯಂಗಳಿಗಂಜಿ ವೇಷವ ತೊಟ್ಟು. ರಾಕ್ಷಸರಿಗಂಜಿ ಚಕ್ರಮಂ ಪಿಡಿದು, ಶಿವನ ದಾಸೋಹದ ದಾಸಿಯೆಂದು ಕಸಕಿಲಂ ಪಿಡಿದು ಬಯಲನುಡುಗಿ, ಹೊತ್ತ ನೀರಲ್ಲಿ ಪುತ್ಥಳಿಯ ¸õ್ಞಖ್ಯಮಂ ಮಾಡಿ ಇಪ್ಪತ್ತೇಳು ಲಕ್ಷವರುಷ ಶಿವನ ಸೇವೆಯಂ ಮಾಡಿ ಮತ್ತೆ ಗರುಡವಾಹನ ಸತಿಲಕ್ಷ್ಮಿ ವಾರ್ಧಿಜಯಮಂ ಪಡೆದು ದೇವರ ಎಡದ ಗದ್ದುಗೆಯನೋಲೈಸಿಪ್ಪವನ ದೇವರೆಂದರೆ ನೀವೆಂದಂತೆ ಎಂಬರೆ ? ಕೇಳಿರಣ್ಣಾ ! ವಚನಶುದ್ಧ ಭಾವದಲ್ಲಿ ಭಕ್ತಿಯುಳ್ಳವರು ನೀವು ಹೊತ್ತಿದ್ದ ವೇಷದಲ್ಲಿ ತಿಳಿದು ನೋಡಿ. ತಂದೆತಾಯಿ ಇಂದ್ರಿಯದಲ್ಲಿ ಬಂದವರು ದೇವರೆ ? ಸಂದೇಹ ಭ್ರಮೆಯೊಳಗೆ ಸಿಕ್ಕಿದವರು ದೇವರೆ ? ಶುಕ್ಲ ಶೋಣಿತದೊಳಗೆ ಬೆಳೆದವರು ದೇವರೆ ? ಆ ತಂದೆ ತಾಯ ಹುಟ್ಟಿಸಿದರಾರೆಂದು ಕೇಳಿರೆ; ಹಿಂದೆ ಸಂದ ಯುಗಂಗಳು ಶತಕೋಟಿ ಸಂಖ್ಯೆಯ ಮೇಲೆ ಏಳುನೂರೆಪ್ಪತ್ತುಸಾವಿರ ಯುಗಂಗಳು, ಇದಕ್ಕೆ ನವಕೋಟಿ ನಾರಾಯಣರಳಿದರು, ಶತಕೋಟಿ ಸಂಖ್ಯೆ ಬ್ರಹ್ಮರಳಿದರು ಉಳಿದವರ ಪ್ರಳಯವ ಹೊಗಳಲಿನ್ನಾರ ವಶ ? ಇಂತಿವೆಲ್ಲವನು ಬಿಟ್ಟು ಉಳಿದಿಪ್ಪಾತನೊಬ್ಬನೆ, ಆತಂಗೆ ನಮೋ ಎಂಬೆ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಅರಿದು ಮಾಡುವ ಮಾಟ ಮರವೆಗೆ ಬೀಜವೆಂದೆ. ಅದಕ್ಕೆ ಮರೆದರಿವು ತಪ್ಪದು. [ಆ] ಅರಿವಿನ ಭೇದ ಎತ್ತಿದ ದೀಪದ ಬೆಳಗಿನಂತೆ. ಅರಿದು ಮರೆಯದೆ, [ಮರೆದು ಅರಿಯದೆ] ಇಂತೀ ಅರಿಕೆಯಲ್ಲಿ ಮಾಡುವವನ ಅರಿವು, ಹೊತ್ತ ದೀಪದ ನಿಶ್ಚಯದಂತೆ. ನಿಃಕಳಂಕ ಮಲ್ಲಿಕಾರ್ಜುನನಲ್ಲಿ, ಚನ್ನಬಸವಣ್ಣಂಗೆ ನಮೋ ನಮೋ ಎನುತಿರ್ದೆನು.
--------------
ಮೋಳಿಗೆ ಮಾರಯ್ಯ
ಜಗದಲ್ಲಿ ಪರಿವೇಷ್ಟಿಸುವ ದೈವಜಾತಿಗಳ ಪರಿಪ್ರಕಾರವ ನೋಡಿರೆ. ಬ್ರಹ್ಮಮೂರ್ತಿ ಗುರುವಾದ, ವಿಷ್ಣುಮೂರ್ತಿ ಲಿಂಗವಾದ, ರುದ್ರಮೂರ್ತಿ ಜಂಗಮವಾದ. ಇಂತೀ ಮೂವರು ಬಂದ ಭವವ ನೋಡಾ. ಇಷ್ಟಲಿಂಗವ ಕೊಟ್ಟು ಕಷ್ಟದ್ರವ್ಯಕ್ಕೆ ಕೈಯಾನುವ ಕಾರಣ, ಗುರುಬ್ರಹ್ಮನ ಕಲ್ಪಿತವ ತೊಡೆದುದಿಲ್ಲ. ಲಿಂಗ ಸರ್ವಾಂಗದಲ್ಲಿ ಸಂಬಂದ್ಥಿಸಿದ ಮತ್ತೆ, ಕಾಯದಲ್ಲಿ ಮೆಟ್ಟಿಸಿಕೊಂಬ ಕಾರಣ, ವಿಷ್ಣುವಿನ ಸ್ಥಿತಿ ಬಿಟ್ಟುದಿಲ್ಲ. ಜಂಗಮ ರುದ್ರನ ಪಾಶವ ಹೊತ್ತ ಕಾರಣ, ರುದ್ರನ ಲಯಕ್ಕೆ ಹೊರಗಾದುದಿಲ್ಲ. ಇಂತಿವರ ಗುರುವೆನಬಾರದು, ಲಿಂಗವೆನಬಾರದು, ಜಂಗಮವೆನಬಾರದು. ಪೂಜಿಸಿದಲ್ಲಿ ಮುಕ್ತಿಯಲ್ಲದೆ ನಿತ್ಯತ್ವವಿಲ್ಲ. ಸತ್ಯವನರಸಿ ಮಾಡುವ ಭಕ್ತ, ನಿತ್ಯಾನಿತ್ಯವ ವಿಚಾರಿಸಬೇಕು. ಸತ್ತು ಗುರುವೆಂಬುದ, ಚಿತ್ತು ಲಿಂಗವೆಂಬುದ, ಆನಂದ ಜಂಗಮವೆಂಬುದ [ಅರಿದು], ಇಂತೀ ತ್ರೈಮೂರ್ತಿಯಾಗಬೇಕು. ತಾನೆ ಗುರುವಾದಡೆ ಬ್ರಹ್ಮಪಾಶವ ಹರಿಯಬೇಕು. ತಾನೆ ಲಿಂಗವಾದಡೆ ಶಕ್ತಿಪಾಶವ ನಿಶ್ಚೆ ೈಸಬೇಕು. ತಾನೆ ಜಂಗಮವಾದಡೆ ರುದ್ರನ ಬಲೆಯ ಹರಿಯಬೇಕು. ಇಂತಿವರೊಳಗಾದವೆಲ್ಲವು ಪ್ರಳಯಕ್ಕೆ ಒಳಗು. ಗುರುವೆಂಬುದು ಬಿಂದು, ಲಿಂಗವೆಂಬುದು ಕಳೆ, ಜಂಗಮವೆಂಬುದು ಕಳಾತೀತ, ಜ್ಞಾನ ಜಂಗಮ. ಆ ವಸ್ತುವಿಂಗೆ ಗುರುವಿಲ್ಲ ಲಿಂಗವಿಲ್ಲ ಜಂಗಮವಿಲ್ಲ. ಪಾಶಬದ್ಧನಲ್ಲ, ವೇಷಧಾರಿಯಲ್ಲ, ಗ್ರಾಸಕ್ಕೋಸ್ಕರವಾಗಿ ಭಾಷೆಯ ನುಡಿವನಲ್ಲ. ಈಶಲಾಂಛನವ ಹೊತ್ತು, ಕಾಸಿಂಗೆ ಕಾರ್ಪಣ್ಯಬಡುವನಲ್ಲ. ಮಹದಾಶ್ರಯವನಾಶ್ರಯಿಸಿದನಾಗಿ, ಮನೆಯ ತೂತಜ್ಞಾನಿಗಳ ಮೆಚ್ಚ, ನಿಃಕಳಂಕ ಮಲ್ಲಿಕಾರ್ಜುನನಲ್ಲಿ ನಿರ್ಲೇಪನಾದ ಶರಣ.
--------------
ಮೋಳಿಗೆ ಮಾರಯ್ಯ
ಅತಿರಥ ಸಮರಥರೆನಿಪ ಹಿರಿಯರು, ಮತಿಗೆಟ್ಟು ಮರುಳಾದರಲ್ಲಾ ! ದೇವಸತ್ತ ಬ್ರಹ್ಮ ಹೊತ್ತ, ವಿಷ್ಣು ಕಿಚ್ಚ ಹಿಡಿದ. ಗಂಗೆಗೌರಿಯರಿಬ್ಬರು ಬರು ಮುಂಡೆಯರಾದರು. ಇದ ಕಂಡು ಬೆರಗಾದೆ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಅಯ್ಯಾ, ನಾವು ಪರಮವಿರಕ್ತರು, ಪಟ್ಟದ ಅಯ್ಯನವರು, ಚರಮೂರ್ತಿಗಳು, ಪರದೇಶಿಗಳು ಎಂದು ಶಂಖ ಗಿಳಿಲು ದಂಡಾಗ್ರ ಎಂಬ ಬಿರುದು ಪಿಡಿದು, ಕಾವಿ ಕಾಷಾಯಾಂಬರವ ಹೊತ್ತು, ಸರ್ವಕಾರ್ಯದಲ್ಲಿ ಶ್ರೇೀಷ*ರೆಂದು ಗರ್ವದಲ್ಲಿ ಕೊಬ್ಬಿ, ಕಾಮನಾಟದಲ್ಲಿ ಕಲಕಿ, ಮನಸ್ಸಿನಲ್ಲಿ ದುರ್ಗುಣವನ್ನಿಟ್ಟುಕೊಂಡು ಮಾತಿನಲ್ಲಿ ನೀತಿಯ ಸೇರಿಸುತ್ತ ಕಪಟದಲ್ಲಿ ಚರಿಸುವಂತಹ ತೊನ್ನ ಹೊಲೆಮಾದಿಗರ ಸಂಗಮಾಡಲಾಗದು, ಅವರ ಪ್ರಸಂಗವ ಕೇಳಲಾಗದು. ಅದೇನು ಕಾರಣವೆಂದಡೆ: ಗುರುಲಿಂಗಜಂಗಮವಾದ ಬಳಿಕ ಅಷ್ಟಾವರಣದಲ್ಲಿ ನಿಷಾ*ಪರವಾಗಿರಬೇಕು. ಪರಧನ ಪರಸತಿಯರ ಹಿಡಿಯೆನೆಂಬ ನೇಮದಲ್ಲಿ ಬಲ್ಲಿದರಾಗಿರಬೇಕು. ಶಿವಭಕ್ತರಾದವರ ಭವವ ಗೆಲಿಸಿ ಮೋಕ್ಷವ ಹೊಂದಿಸಬೇಕು. ಶಿವಲಾಂಛನವ ಹೊತ್ತ ಬಳಿಕ ಶಿವನಂತಿರಬೇಕು ಬರಿದೆ, ನಾನು ಮಾಹೇಶ್ವರನೆಂದು, ನಾನು ಶಿವಭಕ್ತನೆಂದು ತನ್ನ ಹೃನ್ಮಂದಿರದಲ್ಲಿ ನೆಲಸಿದ ಚಿನ್ಮಯಜಂಗಮಲಿಂಗಕ್ಕೆ ತನು-ಮನ-ಧನವೆಂಬ ತ್ರಿವಿಧಪದಾರ್ಥವನರ್ಪಿಸಿ, ತ್ರಿವಿಧಪ್ರಸಾದವ ಗರ್ಭೀಕರಿಸಿಕೊಂಡು, ಪ್ರಸನ್ನಪ್ರಸಾದವ ಸ್ವೀಕರಿಸಿ ಪರತತ್ವಪ್ರಸಾದದಲ್ಲಿ ತಾನು ತಾನಾಗಲರಿಯದೆ ಉಚ್ಚಂಗಿದುರ್ಗಿಗೆ ಬಿಟ್ಟ ಪೋತರಾಜನಂತೆ ಮೂರು ಮೂರು ಜಡೆಗಳ ಬಿಟ್ಟು, ಆಡಿನೊಳಗಿರುವ ಹಿರಿಯ ಹೋತಿನಂತೆ ಮೊಳ ಮೊಳ ಗಡ್ಡವ ಬಿಟ್ಟು, [ಡಂ]ಬ ಜಾತಿಗಾರನಂತೆ ವೇಷವ ತೊಟ್ಟು, ಮೀಸೆಯ ಬೋಳಿಸಿಕೊಂಡು, ಕೈಪವ ಧರಿಸಿ, ಸಂಸ್ಕೃತ ಗೀರ್ವಾಣಭಾಷೆಯ ಕಲಿತು, ಕಾಕ ಕುಟಿಲ ಕುಹಕದ ಗಾಳಿಪೂಜೆಯಿಂದ ಬಂದ ಸುಡಗಾಡು ಸಿದ್ಧಯ್ಯಗಳಂತೆ, ಗಿಡಮೂಲಿಕೆಗಳು ತಂತ್ರ ಮಂತ್ರ ಯಂತ್ರದ ಭಾಷೆಗಳ ಕಲಿತುಕೊಂಡು ಪುರಜನರ ಮೆಚ್ಚಿಸಬೇಕೆಂದು ಅಯ್ಯಾ, ನಾವು ಕೆರೆ ಭಾವಿಯನಗೆಸಬೇಕೆಂದು, ಮಠ ಗುಡಿಯ ಕಟ್ಟಿಸಬೇಕೆಂದು, ಮಾನ್ಯದಲಿ ಬಿಲ್ವಗಿಡಗಳ ಹಚ್ಚಬೇಕೆಂದು, ಮದುವೆ ಅಯ್ಯಾಚಾರವ ಮಾಡಬೇಕೆಂದು, ಅನ್ನಕ್ಷೇತ್ರ ಅರವಟ್ಟಿಗೆಯ ಇಡಿಸಬೇಕೆಂದು, ಪುರಾಣಗಳ ಹಚ್ಚಿಸಬೇಕೆಂದು, ಇಂತಪ್ಪ ದುರಾಸೆಯ ಮುಂದುಗೊಂಡು ನಾನಾ ದೇಶವ ತಿರುಗಿ, ಅರಸರ ಮದದಂತೆ ಗರ್ವದಿಂದ ಹೆಚ್ಚಿ, ಹೇಸಿ ಹೊಲೆ ಮಾದಿಗರ ಕಾಡಿ ಬೇಡಿ, ಹುಸಿಯನೆ ಬೊಗಳಿ ಒಬ್ಬನ ಒಲವ ಮಾಡಿ[ಕೊಂ]ಡು, ವ್ಯಾಪಾರ ಮರ್ಯಾದೆಯಲ್ಲಿ ಪೇಟೆಯಲ್ಲಿ ಕುಳಿತು ಅನಂತ ಮಾತುಗಳನಾಡುತ್ತ, ಸೆಟ್ಟಿ ಮುಂತಾದ ಅನಂತ ಕಳ್ಳ ಹಾದರಗಿತ್ತಿಯ ಮಕ್ಕಳ ಮಾತಿನಿಂದೊಲಿಸಿ, ಅವರು ಕೊಟ್ಟಡೆ ಹೊಗಳಿ, ಕೊಡದಿರ್ದಡೆ ಬೊಗಳಿ, ಆ ಭ್ರಷ್ಟ ಹೊಲೆಮಾದಿಗರು ಕೊಟ್ಟ ದ್ರವ್ಯಗಳ ತೆಗೆದುಕೊಂಡು ಬಂದು ಕಡೆಗೆ ಚೋರರು ಒಯ್ದರೆಂದು ಮಠದೊಳಗೆ ಮಡಗಿಕೊಂಡು ಪರಸ್ತ್ರೀಯರ ಹಡಕಿ ಯೋನಿಯೊಳಗೆ ಇಂದ್ರಿಯ ಬಿಟ್ಟು, ಕಾಮಕ್ರೋಧದಲ್ಲಿ ಮುಳುಗಿ ಮತಿಗೆಟ್ಟು, ಶಿವಪಥಕ್ಕೆ ದೂರಾಗಿ, ದುರಾಚಾರವ ಆಚರಿಸಿ, ನಡೆನುಡಿಗಳ ಹೊರತಾಗಿ, ವ್ಯರ್ಥ ಹೊತ್ತುಗಳೆದು, ಸತ್ತುಹೋಗುವ ಜಡದೇಹಿ ಕಡುಪಾತಕ ಕತ್ತೆ ಹಡಿಕರಿಗೆ ಪರಮ ನಿರಂಜನ ಜಂಗಮಲಿಂಗದೇವರೆಂದು ಕರೆತಂದು, ಪಾದತೀರ್ಥ ಪ್ರಸಾದವ ತೆಗೆದುಕೊಂಬುವರಿಗೆ ಇಪ್ಪತ್ತೊಂದು ಯುಗಪರಿಯಂತರ ನರಕಕೊಂಡದಲ್ಲಿಕ್ಕುವ. ಇಂತಪ್ಪ ಜಂಗಮವನು ಪೂಜೆ ಮಾಡುವಂತಹ ಶಿವಭಕ್ತನ ಉಭಯತರ ಮೂಗ ಸೀಳಿ ಮೆಣಸಿನ ಹಿಟ್ಟು ತುಪ್ಪವ ತುಂಬಿ, ಪಡಿಹಾರಿ [ಉತ್ತಣ]ಗಳೆಡದ ಪಾದುಕೆಯಿಂದ ಪಡಪಡನೆ ಹೊಡಿ ಎಂದಾತ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು.
--------------
ಅಂಬಿಗರ ಚೌಡಯ್ಯ
ನಾ ಬಂದೆ ಹರಿಭಕ್ತನಾಗಿ, ಬಾಹಾಗ ನಾ ದಾಸನಾಗಿ. ಒಂಬತ್ತು ಜೂಳಿಯ ತಣ್ಣೀರ ಕಣಿತೆಯ ಹೊತ್ತು ತಿತ್ತಿಗ ನೀರ ಕಾಣೆ. ಲೆಕ್ಕವಿಲ್ಲದ ನಾಮವನಿಕ್ಕಿದೆ, ಸುತ್ತಿ ಸುತ್ತಿ ಬಳಸಿದೆ. ಹೀಲಿಯ ಗರಿಯ ಹೇಕಣ್ಣ, ಪಜ್ಞೆಯ ನಾಮವ ದೃಷ್ಟಿಯ ಮಧ್ಯದಲ್ಲಿ ಇಕ್ಕಿ ಮತ್ತೆ ಅದರ ನಡುವೆ ನಿಶ್ಚಯ ಬಿಳಿಯ ನಾಮವನಿಕ್ಕಿ ಹೊತ್ತ ದಾಸಿಕೆ ಹುಸಿಯಾಯಿತ್ತು. ದಾಸೋಹವೆಂಬುದನರಿಯದೆ ಎನ್ನ ವೇಷ ಹುಸಿಯಾಯಿತ್ತು, ನಾರಾಯಣಪ್ರಿಯ ರಾಮನಾಥಾ.
--------------
ಗುಪ್ತ ಮಂಚಣ್ಣ
ಕಾಲಸಂಹರ ಕಾಮವಿದೂರ ಕರಣಾತೀತ ಕರ್ಮಗಿರಿಗೊಜ್ರ ಕಮಲಮಿತ್ರ ಶಶಿಭೂಷ ಕರುಣಕಟಾಕ್ಷ ಕಮಲೋದ್ಭವಶಿರಕರಕಪಾಲ ಕಮಲಪೂಜಿತನಯನ ಪಾದಚರಣದಲಿ ಧರಿಸಿದ ದೇವ ವಿಶ್ವಕ್ಷೇನ ಹೆಣನ ಹೊತ್ತ ದೇವ ವೇದಶಾಸ್ತ್ರಕತೀತದೇವನೆಂದು ಮೊರೆಹೊಕ್ಕೆ. ಎನ್ನಯ ಮೊರೆಯಂ ಕೇಳಿ ಕಾದರೆ ಕಾಯಿ,ಕೊಂದರೆ ಕೊಲ್ಲು, ನಿಮ್ಮ ಧರ್ಮ, ನಿಮ್ಮ ಧರ್ಮ. ನೀನೆ ಹುಟ್ಟಿಸಿ, ನೀನೆ ಕರ್ಮಕಾಯಕೆ ಗುರಿಮಾಡಿ, ನೀನಗಲಿದರೆ ನೊಂದೆ ಬೆಂದೆ. ಬಿಡಬೀಸದಿರು, ಎನ್ನನಿತ್ತ `ಬಾ'ಯೆಂದು ತಲೆದಡಹೊ ಜಯಜಯ ಹರಹರ ಶಿವಶಿವ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ನಾನು ಹೊತ್ತ ಹುಳ್ಳಿಯನಂಬಲಿಗೆ ಕೊಂಬುವರಿಲ್ಲ ನೋಡಯ್ಯಾ. ಆನು ನಿಮ್ಮ ಶರಣರ ಒಕ್ಕುದನುಂಡು ಬದುಕುವೆನಯ್ಯಾ. ಮೇರುವ ಸಾರಿದ ಕಾಗೆ ಹೊಂಬಣ್ಣವಪ್ಪುದು ತಪ್ಪದು ಕೂಡಲಸಂಗಮದೇವಾ. 471
--------------
ಬಸವಣ್ಣ
ಪೈರಿಗೆ ನೀರು ಬೇಕೆಂಬಲ್ಲಿ ಉಚಿತವನರಿದು ಬಿಡಬೇಕು. ಕ್ರೀಗೆ ಅರಿವು ಬೇಕೆಂಬಲ್ಲಿ ಉಭಯನರಿದು ಘಟಿಸಬೇಕು. ಏರಿ ಹಿಡಿವನ್ನಕ್ಕ ನೀರ ಹಿಡಿದಡೆ ಸುಖವಲ್ಲದೆ ಮೀರಿದರುಂಟೆ? ಕ್ರೀಯ ಬಿಡಲಿಲ್ಲ, ಅರಿವ ಮರೆಯಲಿಲ್ಲ. ಬೆಳೆಯ ಕೊಯಿದ ಮತ್ತೆ, ಹೊಲಕ್ಕೆ ಕಾವಲುಂಟೆ? ಫಲವ ಹೊತ್ತ ಪೈರಿನಂತೆ, ಪೈರನೊಳಕೊಂಡ ಫಲದಂತೆ, ಅರಿವು ಆಚರಣೆಯೆಲ್ಲ ನಿಂದು, ಆಚರಣೆ ಅರಿವಿನಲ್ಲಿ ಲೇಪನಾದ ಮತ್ತೆ ಕಾಮಭೀಮ ಜೀವಧನನೊಡೆಯನೆಂಬುದ ಭಾವಿಸಲಿಲ್ಲ.
--------------
ಒಕ್ಕಲಿಗ ಮುದ್ದಣ್ಣ
ಎತ್ತನೇರಿ ಎತ್ತನರಸುವನಂತೆ, ತಾನಿರ್ದು ತನ್ನನರಸಿ ಕೇಳುವನಂತೆ, ಹೊತ್ತ ನಿಜವನರಿಯದತ್ತಲಿತ್ತ ಸುತ್ತಿ ಬಳಲುವನಂತೆ, ಹಿಡಿದಿರ್ದ ಲಿಂಗವ ಕಾಣದೆ ಮೂವಿಧಿಗಾಣ್ಬರನೇನೆಂಬೆನಯ್ಯಾ! ಅಜ್ಞಾನಬದ್ಧರನೆನಗೆ ತೋರದಿರಯ್ಯಾ, ಸೌರಾಷ್ಟ್ರ ಸೋಮೇಶ್ವರಾ.
--------------
ಆದಯ್ಯ
ಗಾಣವ ಹಾಕಲಾಗಿ ಆರಾರು ಸಿಕ್ಕಿದರು ಆರೈಕೆಗೊಳ್ಳಯ್ಯ. ಐದಕ್ಕೊಂದು ಹೋಗಿ ನಾಲ್ಕರಲ್ಲಿ ನಾಚಿಕೆಗೆಟ್ಟು ಜಗದಾಶೆಯ ಬಯಕೆಯಿಂದ ದಶಾವತಾರವಾದ. ಇಷ್ಟದ ಇಂದ್ರಿಯಕ್ಕಾಗಿ ಪಾಶವ ಹೊತ್ತ ತಲೆಯಲ್ಲಿ ಇಂತೀ ವೇಷಧಾರಿ ಹಾಕಿದ ಗಾಣದಲ್ಲಿ ಇಷ್ಟಕ್ಕೆ ಸಿಕ್ಕಿ ಘಾಸಿಯಾದರು ಇನ್ನಿಪ್ಪುವರಾರಯ್ಯ ಗೊಹೇಶ್ವರನ ಶರಣ ಅಲ್ಲಮನಲ್ಲದೆ?
--------------
ಗಾಣದ ಕಣ್ಣಪ್ಪ
ಇನ್ನಷ್ಟು ... -->