ಅಥವಾ

ಒಟ್ಟು 72 ಕಡೆಗಳಲ್ಲಿ , 27 ವಚನಕಾರರು , 67 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಿಂಗ ಸಹಿತವಾಗಿ ಸರ್ವಗುಣಂಗಳ ಭೋಗಿಸಬೇಕೆಂಬಲ್ಲಿ ಲಿಂಗಕ್ಕೆ ಕೊಟ್ಟು ತಾ ಕೊಂಬ ತೆರನಾವುದು? ಹೆಣ್ಣ ಕೊಡುವಲ್ಲಿ ತನ್ನಯ ವಿಕಾರವೊ ಲಿಂಗದ ಸುಖವೊ? ಹೊನ್ನ ಹಿಡಿವಲ್ಲಿ ತನ್ನಯ ಬಯಕೆಯೊ ಲಿಂಗದ ಭೋಗವೊ? ಮಣ್ಣ ಹಿಡಿವಲ್ಲಿ ತನ್ನಯ ಬೆಳೆಯೊ ಲಿಂಗದ ಇರವೊ? ಇಂತೀ ತ್ರಿವಿಧದ ಬಿಡುಮುಡಿಯನರಿತು, ಹೆಣ್ಣ ಬೆರಸಿದಲ್ಲಿ ಹೆಣ್ಣಿಗೆ ವಿಷಯಸುಖ ತೋರಿ ತನಗೆ ಆ ವ್ಯಾಪಾರ ಹಿಂಗಿ ನಿಂದ ನಿಜದುಳುಮೆ ಲಿಂಗಸುಖಿ. ಹೊನ್ನು ತನ್ನ ತಾ ಬಂದಲ್ಲಿ ಮುಟ್ಟಿ ಕೊಟ್ಟೆನೆಂಬುದನರಿಯದೆ ಅದು ದೃಷ್ಟದಿಂದ ಬಂದುದ, ತನ್ನಷ್ಟವೆಂಬುದನರಿದಿಪ್ಪಾತನೆ ನಿಸ್ಪ ೃಹ. ಮಣ್ಣ ಅಡಿವಿಡಿದು ಹಿಡಿದಲ್ಲಿ ಕರ್ಮರುಗಳಂತೆ ಕಾದರೆ ಅವು ಮುನ್ನಿನಂತೆ ಇರಲಿ ಎಂಬುದು ಪರಮ ನಿರ್ವಾಣ. ಇಂತೀ ತ್ರಿವಿಧ ಮಲಂಗಳಲ್ಲಿ ಅಮಲನಾಗಿ ಸರ್ವಗುಣ ಸಂಪನ್ನನಾದುದು ಲಿಂಗ ಭೋಗೋಪಭೋಗಿಯ ಅಂಗನಿರತ, ಸ್ವಯಾನುಭಾವಿಯ ಲಿಂಗಾಂಗ ಯೋಗ ಸಂಬಂಧ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 81 ||
--------------
ದಾಸೋಹದ ಸಂಗಣ್ಣ
ಮಣ್ಣು ಹಿಡಿದವರೆಲ್ಲರೂ ಬ್ರಹ್ಮನ ಸೃಷ್ಟಿಗೊಳಗಾದರು. ಹೊನ್ನ ಹಿಡಿದವರೆಲ್ಲರೂ ವಿಷ್ಣುವಿನ ಸ್ಥಿತಿಗೊಳಗಾದರು. ಹೆಣ್ಣು ಹಿಡಿದವರೆಲ್ಲರೂ ರುದ್ರನ ಸಂಹಾರಕ್ಕೊಳಗಾದರು. [ಮ]ಣ್ಣು ಹೊನ್ನು[ಹೆ]ಣ್ಣ ಬಿಟ್ಟು ಲಿಂಗಾಂಗ ಸಂಯೋಗವರಿಯದೆ ಸದಾಚಾರದಲ್ಲಿ ತಿರಿದುಂಡು ಆತ್ಮಸುಖಿಯಾದವರೆಲ್ಲರೂ ಫಲಭೋಗಕ್ಕೊಳಗಾದರು. ನಾನು ಮೂರ ಬಿಟ್ಟು ಆರ ಕಂಡು ಮೂದೇವರ ಗೆಲಿದೆ. ಆರ ಬಿಟ್ಟು ಮೂರ ಕಂಡು ಮನ ಮುಳುಗಿ ಮೂರೊಂದು ಪದವ ದಾಂಟಿ ಶಿವನೊಳಗಾದೆನಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ಹಣದಾಸೆಗೆ ಹದಿನೆಂಟುಜಾತಿಯ ಭಕ್ತರ ಮಾಡಿ, ಲಿಂಗವ ಕೊಟ್ಟು ಲಿಂಗದ್ರೋಹಿಯಾದ. ಪ್ರಸಾದವ ನೀಡಿ ಪ್ರಸಾದದ್ರೋಹಿಯಾದ. ಪಂಚಾಕ್ಷರಿಯ ಹೇಳಿ ಪಂಚಮಹಾಪಾತಕಕ್ಕೊಳಗಾದ. ಇಂತೀ ಹೊನ್ನ ಹಂದಿಯ ಕೊಂದು, ಬಿನ್ನಾಣದಲ್ಲಿ ಕಡಿದುತಿಂಬ ಕುನ್ನಿಗಳನೇನೆಂಬೆನಯ್ಯಾ, ಕಲಿದೇವರದೇವ.
--------------
ಮಡಿವಾಳ ಮಾಚಿದೇವ
ನೇಮವ ಮಾಡಿಕೊಂಡು ಭಕ್ತರ ಭವನಂಗಳ ಹೊಕ್ಕು, ಕಾಯಕ ಸತ್ತು, ಹಣ ಹೊನ್ನ ಬೇಡೆಹೆನೆಂಬುದು ಕಷ್ಟವಲ್ಲವೆ ಸದ್ಭಕ್ತಂಗೆ ? ಆ ಗುಣ ಅಮರೇಶ್ವರಲಿಂಗಕ್ಕೆ ದೂರ.
--------------
ಆಯ್ದಕ್ಕಿ ಮಾರಯ್ಯ
ಆರು ನೆಲೆ ಮಂಟಪದ ಕೋಣೆಯಲ್ಲಿ ಆರು ಜ್ಯೋತಿಯ ಮುಟ್ಟಿಸಿ ಆ ಜ್ಯೋತಿಯ ಬೆಳಗಿನಲ್ಲಿ ಆರು ಲಿಂಗವ ನಿರ್ಮಿಸಿ ಆರು ಲಿಂಗದ ಪ್ರತುಮೆಯಲ್ಲಿ ಆರು ಹಂತದ ಸೋಪಾನದಲ್ಲಿ ಮಹಾ ನಿರ್ಮಳವೆಂಬ ದುರ್ಗಮಂ ನಿರ್ಮಿಸಿ ಆ ದುರ್ಗದಲ್ಲಿ ಅರಸಂಗೆ ಕಾಲಿಲ್ಲದಾಕೆಯ ಮದುವೆಯ ಮಾಡಿ ತೂತಿಲ್ಲದ ಭೋಗಕ್ಕೆ ಕೂಡಿ ಬಿಂದುವಿಲ್ಲದೆ ಮಕ್ಕಳಾದ ಪರಿಯ ನೋಡಾ. ತೊಟ್ಟಿಲಿಲ್ಲದೆ ಹಾಸಿ ಮಲಗಿಸಿ ನಿದ್ರೆಗೆಯ್ಸಿದ ಶರಣನಾಚರಣೆಯನೆಂತೆಂಬೆನು. ಇದ ಕಂಡು ನಡೆಯಲರಿಯದೆ, ತಮ್ಮ ಮನ ಬಂದಂತೆ ನಡೆವರು. ಶಿವಯೋಗಕ್ಕೆ ದೂರವಾದರು ನೋಡಾ. ಹೊನ್ನ ಕಟ್ಟಿ ವಿರಕ್ತನು ಬ್ಥಿಕ್ಷೆಯೆನಲಾಗದು. ಭಕ್ತನ ಗೃಹವೆಂದು ಜಂಗಮವು ಹೋದಲ್ಲಿ ಆ ಭಕ್ತನು ಎದ್ದು ನಮಸ್ಕರಿಸಿ ತನ್ನಲ್ಲಿರ್ದ ಪದಾರ್ಥವಂ ತಾನು ಸಹವಾಗಿ ಶಿವಾರ್ಪಣವ ಮಾಡ[ಬ]ಹುದಲ್ಲದೆ. ಇದಲ್ಲದೆ, ಜಂಗಮವ ಬೇರೆ ಕುಳ್ಳಿರಿಸಿ ಉಂಡನಾದರೆ ಅವನಿಗೆ ದೀಕ್ಷೆಯ ಕೊಟ್ಟ ಗುರುವಿಗೆ ತನ್ನ ಮಾರ್ಗವ ಬಿಟ್ಟು ಶಿವಭಕ್ತನಾದರೆ ಮೋಕ್ಷವಿಲ್ಲವಾಗಿ. ಕೋಳಿ ಒಂದು ಕುಟುಕ ಕಂಡರೆ ತನ್ನ ಮರಿಗೆ ತೋರದುಳಿವುದೆ? ಕಾಗೆ ಒಂದಗುಳ ಕಂಡರೆ ತನ್ನ ಬಳಗವ ಕರೆಯದುಳಿವುದೆ? ಶಿವಭಕ್ತನಾಗಿ ತನ್ನ ಲಿಂಗವ ಪೂಜಿಸಿ ಜಂಗಮವ ಮರೆದವನಾದರೆ ಸತ್ತ ದನವಿಗೆ ನರಿ ಹೋದಂತಾಯಿತ್ತು. ಆ ನರಿ ಹೋದ ನೆನಹಿನಲ್ಲಿ ನಾಯಿ ಹೋದಂತಾಯಿತ್ತು. ಇಷ್ಟಕ್ಕಿಂದ ಕರಕಷ್ಟವೆ ಶಿವಭಕ್ತರು? ಷಟ್ಚಕ್ರದ ಭಾವದಲ್ಲಿವೊಪ್ಪಿರುವ ಶಿವಶರಣರು ತಮ್ಮ ನಡೆ ನುಡಿಗಳ ಬಿಡದೆ ನಡೆವುದು. ಅದ ಕಂಡು ಕಣ್ದೆರೆದು ನೋಡಿದೆನಯ್ಯ. ಆವ ವರ್ತನೆಯಲ್ಲಿ ತಾನಿದ್ದರೇನು? ಆವ ಭಾವ ಹೇಂಗಿದ್ದರೇನು? ನಮ್ಮಾಚರಣೆ ನಮಗೆ ಶುದ್ಧ. ಗುರು ಕಲ್ಪಿತನಾದರು ಅವನು ಹಿಂದೆ ಸಂಬಂಧವಾದ ಕಾರಣ, ಅವನಿಗೆ ಬಂಧ ದೊರಕುವದಲ್ಲದೆ ನನಗೆ ದೊರಕದೆಂದು ತಾನು ನಿಶ್ಚೆಸಿದರೆ ತನಗೆ ದೊರಕಬಲ್ಲದೆ? ತಾನು ಪೂರ್ವದಲ್ಲಿ ತಾ ಪಡದುದು ತನಗೆ ತಪ್ಪುವದೆ? ಪ್ರಾಣಿಹಿಂಸೆಯ ಮಾಡುವಾತನಾದರೆಯು ಅವನಿಗೆ ಕಲ್ಪಿತವೇತಕ್ಕೆ? ಹಿಂದೆ ಅವನು ಶಿವನಪ್ಪಣೆವಿಡಿದು ಬಂದ ಕಾರಣ ಅವನಿಗೆ ಬಂದಿತಲ್ಲದೆ ಗಗನದ ಮಂಟಪದ ಮೇಲೆ ಊಧ್ರ್ವಮುಖದ ಗದ್ದುಗೆಯ ಮಾಡಿ ಮಹಾಪ್ರಕಾಶವೆಂಬ ಬೆಳಗಂ ತೋರಿ ಓಂಕಾರವೆಂಬ ಲಿಂಗವ ಮೂರ್ತಮಾಡಿಸಿ ಅದಕ್ಕೆ ಸದ್ಭಾವವೆಂಬ ಪುಷ್ಪವ ತಂದು ಜ್ಞಾನಪ್ರಕಾಶವೆಂಬ ಜ್ಯೋತಿಯಂ ಪೊತ್ತಿಸಿ ಸದ್ಭಕ್ತಿಯೆಂಬ ನೈವೇದ್ಯಮಂ ಮಾಡಿ ನಿರ್ಮಳವೆಂಬ ಪೂಜಾರಿಯಾಗಿರ್ಪನು. ಇದನರಿಯದೆ ತಮ್ಮ ಮನ ಬಂದಂತೆ ಇಪ್ಪವರ ಲಿಂಗಹೋದವನಾದರು ಅವನ ಕಣ್ಣಲ್ಲಿ ಕಂಡು ಅವನಷ್ಟಕ್ಕಲ್ಲದೆ ಅನ್ಯರ ಗೃಹವ ಬಿಡಲೇತಕ್ಕೇ? ಪಾಪವ ಮಾಡಿದನಾರು ಅವನ ಗೃಹಕ್ಕಲ್ಲದೆ ಅವನೊಂದಿಗೆ ಬೆರಸಿದವನಾದರು ಅವನಿಗೆ ಪಾಪ ಸಂಭವಿಸುವುದುಂಟೇ? ಇದ ಸಂಕಲ್ಪವ ಮಾಡಿ ಬಿಡಲೇತಕ್ಕೆ? ಒರ್ವಾನೊಬ್ಬನು ಭವಿಯ ಒಡನಾಡಲು ಅವನ ಪಾಪವು ಅವನಲ್ಲಿಪ್ಪುದಲ್ಲದೆ ಮಿಕ್ಕಿನ ಗೃಹಕ್ಕೆ ಸಂಬಂಧವೇನು? `ಮಾಡಿದವರನಲ್ಲದೆ ಮಿಕ್ಕಿನವರ ಸಂಕಲ್ಪವ ಮಾಡಲಾಗದು'ಯೆಂಬುದು ಗುರುವಚನ. ಹೆಣ್ಣು ಬಿಂದು ಸಂಬಂಧವಾಗಲು ಆ ಭೋಗಕ್ಕೆ ಶರಣನು ಅದನು ಮನದಲ್ಲಿ ಕಂಡು ಸಂತೋಷವಾಗಿಪ್ಪ. ಇಂತೀ ಭಾವಶುದ್ಧವುಳ್ಳಾತನು ಮತ್ರ್ಯಲೋಕಕ್ಕೆ ಮರಳಿ ಬಾರನೆಂಬುದು. ಶರಣ ಸಕಲವಿದ್ಯವ ಕಲಿತು ಫಲವೇನು? ನಿಂದ್ಯನೆ ದೊರಕೊಂಡಮೇಲೆ? ಹುಣ್ಣು ಹುಗಳು ಕೋಷ್ಠವಾಗಿರಲು, ಅವರ ಕಂಡು ಜರಿಯಲಾರದೆಂಬುದೆನ್ನ ಭಾಷೆ. ಇಂದ್ರಿಯಸುಖಕ್ಕೆ ಹೋಗಿ ಬಿದ್ದು ಶಿವಮಾಡಿದರಾಯಿತ್ತೆಂಬ ಅವಿಚಾರದ ನುಡಿಯ ಕೇಳಲಾಗದು. ತನ್ನ ಮನವು ಶುದ್ಧವಾದ ಮೇಲೆ, ಸಕಲ ಸುಖಂಗಳು ತನಗುಂಟಲ್ಲದೆ, ಜ್ಞಾನಿಗೆ ಕತ್ತಲೆಯಿಲ್ಲ. ಅಜ್ಞಾನಿಗೆ ಪಾಪವಿಲ್ಲ. ಇದನರಿದು, ಮುಂದುಗೊಂಡು ತಿರುಗುವ, ಅಣ್ಣಗಳ ಕಂಡು, ನಗುತಿರ್ಪರು ನಿಮ್ಮ ಶರಣರು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ನಿರವಯಸ್ಥಲದಲ್ಲಿ ನಿಂದ ಬಳಿಕ ಹೊನ್ನ ಹಿಡಿಯೆನೆಂಬ ಭಾಷೆ ಎನಗೆ. ಹೆಣ್ಣು ಹೊನ್ನು ಮಣ್ಣು ಹಿಡಿದು ಲಿಂಗೈಕ್ಯನಾದೆನೆಂದಡೆ ಎನ್ನ ಅಂಗದ ಮೇಲೆ ಲಿಂಗವಿಲ್ಲ. ಪಟ್ಟೆಮಂಚ ಹಚ್ಚಡ ಬಂದಡೆ ದಿಟ್ಟಿಸಿ ನೋಡೆ. ಸಣ್ಣ ಬಣ್ಣಗಳು ಬಂದಡೆ ಕಣ್ಣೆತ್ತಿ ನೋಡೆನೆಂಬ ಭಾಷೆ ಎನಗೆ. ಎನ್ನ ಲಿಂಗಕ್ಕೆ ಸೆಜ್ಜೆ ಶಿವದಾರವ ಬಾಯೆತ್ತಿ ಭಕ್ತ ಜಂಗಮವ ಬೇಡಿದೆನಾದಡೆ, ಎನ್ನ ಅರುವಿಂಗೆ ಭಂಗ ನೋಡಾ. ಬಸವಣ್ಣ ಸಾಕ್ಷಿಯಾಗಿ, ಪ್ರಭುವಿಗರಿಕೆಯಾಗಿ. ಪ್ರಭುದೇವರ ಕಂಡು ಕೈಯಲ್ಲಿ ಕಟ್ಟಿದ ಬಿರಿದಿಂಗೆ ಹಿಂದೆಗೆದೆನಾದಡೆ ಎನಗೆ ಗುರುವಿಲ್ಲ ಲಿಂಗವಿಲ್ಲ ಜಂಗಮವಿಲ್ಲ, ಪಾದೋದಕ ಪ್ರಸಾದವೆಂಬುದು ಎಂದೆಂದಿಗೂ ಇಲ್ಲ. ಅಮುಗೇಶ್ವರನೆಂಬ ಲಿಂಗವು ಸ್ವಪ್ನದಲ್ಲಿ ಸುಳಿಯಲಿಲ್ಲ.
--------------
ಅಮುಗೆ ರಾಯಮ್ಮ
ಮಣ್ಣ ಮೆಚ್ಚಿ ಗುರುವಿಗೆ ಹೊರತಾದೆ, ಹೆಣ್ಣ ಮೆಚ್ಚಿ ಲಿಂಗಕ್ಕೆ ಹೊರತಾದೆ, ಹೊನ್ನ ಮೆಚ್ಚಿ ಜಂಗಮಕ್ಕೆ ಹೊರತಾದೆ. ಇಂತೀ ತ್ರಿವಿಧವ ಮೆಚ್ಚಿ ಅಕಟಕಟಾ ಕೆಟ್ಟೆನೆಂದು ಗುರೂಪಾವಸ್ತೆಯಂ ಮಾಡಿ, ಗುರುವಾಕ್ಯ ಪ್ರಮಾಣವಿಡಿದು, ಆಚರಿಸುವ ಜ್ಞಾನಕಲಾತ್ಮನಿಗೆ ಈ ಲೋಕದ ಜಡಜೀವರು ಕಡುಪಾತಕರು ಬಂದು ಈ ಸಂಸಾರದಲ್ಲಿ ಪಾರಮಾರ್ಥವುಂಟು, ಇದರೊಳಗೆ ಸಾದ್ಥಿಸಬೇಕೆಂದು ಇಹ ಬಿಟ್ಟು ವೈರಾಗ್ಯದಲ್ಲಿ ಮೋಕ್ಷವಿಲ್ಲೆಂದು ಹೇಳುವರು. ಇದಕ್ಕೆ ಉಪಮೆ- ಹಿಂದೆ ಕಲ್ಯಾಣಪಟ್ಟಣಕ್ಕೆ ತಮ್ಮ ತಮ್ಮ ದೇಶವ ಬಿಟ್ಟು ಬಂದ ಗಣಂಗಳಾರಾರೆಂದಡೆ: ಮೋಳಿಗೆ ಮಾರತಂದೆಗಳು ಕಾಶ್ಮೀರದೇಶದ ಅರಸು. ನಿಜಗುಣಸ್ವಾಮಿಗಳು ಕೈಕಾಡದೇಶದ ಅರಸು. ನುಲಿಯ ಚಂದಯ್ಯನವರು ಕೈಕಾಣ್ಯದೇಶದ ಅರಸುಗಳು. ಇಂತಿವರು ಮೊದಲಾದ ಬಸವಾದಿ ಪ್ರಭುದೇವರಾಂತ್ಯಮಾದ ಏಳನೂರೆಪ್ಪತ್ತು ಪ್ರಮಥಗಣಂಗಳು. ತಮ್ಮ ತಮ್ಮ ದೇಶವ ಬಿಟ್ಟು ಕಲ್ಯಾಣಕ್ಕೆ ಬಂದರು. ಅವರೆಲ್ಲರು ಹುಚ್ಚರು, ನೀವೇ ಬಲ್ಲವರು. ಬಸವೇಶ್ವರದೇವರು ಮೊದಲಾಗಿ ಏಳನೂರೆಪ್ಪತ್ತು ಪ್ರಮಥಗಣಂಗಳು ಕೂಡಿ ತಮ್ಮ ತಮ್ಮ ಹೃನ್ಮಂದಿರದಲ್ಲಿ ನೆಲಸಿರುವ ಪರಶಿವಲಿಂಗಲೀಲಾವಿನೋದದಿಂ ಎರಡೆಂಬತ್ತೆಂಟುಕೋಟಿ ವಚನಗಳನ್ನು ಹಾಡಿಕೊಂಡರು. ಇದರನುಭಾವವ ತಿಳಿಯಬಲ್ಲರೆ ಹೇಳಿರಿ; ಅರಿಯದಿದ್ದರೆ ಕೇಳಿರಿ. ತನು-ಮನ-ಧನ ನೀನಲ್ಲ, ಪಂಚವಿಂಶತಿತತ್ವ ನೀನಲ್ಲ, ಪಂಚಭೂತಪ್ರಕೃತಿ ನೀನಲ್ಲ, ಮನ ಮೊದಲಾದ ಅರವತ್ತಾರುಕೋಟಿ ಕರಣಾದಿ ಗುಣಂಗಳು ನೀನಲ್ಲ. ಇಂತೀ ಎಲ್ಲವನು ನೀನಲ್ಲ, ನೀನು ಸಾಕಾರಸ್ವರೂಪಲ್ಲವೆಂದು ಸ್ವಾನುಭಾವಜ್ಞಾನಗುರುಮುಖದಿಂದ ತಿಳಿದು ಸಕಲಪ್ರಪಂಚವನೆಲ್ಲವ ನಿವೃತ್ತಿಯ ಮಾಡಿ, ಸಕಲಸಂಶಯವಂ ಬಿಟ್ಟು, ನಿಶ್ಚಿಂತನಾಗಿ, ಏಕಾಗ್ರಚಿತ್ತದಲ್ಲಿ ಸ್ವಸ್ಥಿರನಾಗಿ ಮುಂದೆ ಶಿವಪಥವ ಸಾದ್ಥಿಸೆಂದು ಹಾಡಿದರಲ್ಲದೆ ಅವರೇನು ದಡ್ಡರೇ? ನೀವೇ ಬಲು ಬುದ್ಧಿವಂತರು, ಬಲುಜಾಣರು ! ಇಂಥ ಯುಕ್ತಿ ವಿಚಾರವ ಹೇಳುವ ಮತಿಭ್ರಷ್ಟ ಹೊಲೆಯರ ಕಾಲು ಮೇಲಕ್ಕೆ ಮಾಡಿ, ತಲೆ ಕೆಳಯಕ್ಕೆ ಮಾಡಿ ಅವರಂಗದ ಮೇಲಿನ ಚರ್ಮವ ಹೋತು ಕುರಿಗಳ ಚರ್ಮವ ಹರಿದ ಹಾಗೆ ಹರಿದು, ಅವರ ತಿದಿಯನೆ ಹಿರಿದು, ಅವರ ಕಂಡವ ಕಡಿದು, ಚಿನಿಪಾಲವ ಮಾಡಿ, ಹದ್ದು ಕಾಗೆ ನಾಯಿ ನರಿಗಳಿಗೆ ಹಾಕೆಂದ ಕಾಣಾ ನಿಮ್ಮ ಶರಣ ವೀರಾದ್ಥಿವೀರ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ವೇದವನೋದಿ ಹೊನಲಲ್ಲಿ ಹೋದ ದ್ವಿಜರು, ಕೆಟ್ಟ ಕೇಡಿಂಗೆ ಕಡೆಯಿಲ್ಲ. ಅದು ಹೇಗೆಂದಡೆ:ಹೇಮದಾಸೆಗೆ ಒಕ್ಕಲಿಗಂಗೆ ದತ್ತಪುತ್ರನಾಗೆಂದು ಹೇಳಿತ್ತೆ ವೇದವು ? ಕೊರಡಿನ ಮೇಲೆ ಕುಳಿತು ತುತ್ತು ಗದ್ಯಾಣವ ನುಂಗಿ ಸೀಮೆಯಹೊರವಡಿಸಿಕೊಳ್ಳೆಂದು ಹೇಳಿತ್ತೆವೇದ? ಬಡಗಿ ಮಾಚಲದೇವಿಯ ಕುಲಜೆಯ ಮಾಡಿಹೆವೆಂದು ಹೊನ್ನಕಪಿಲೆಯ ಕೊಂದು ನರಕಕ್ಕಿಳಿಯ ಹೇಳಿತ್ತೆವೇದ? `ಅಹಿಂಸಾ ಪರಮೋ ಧರ್ಮಃ' ಎಂದೋದಿ, ಅಸುರಭೋಜನಕ್ಕೆ ಅಂಗವಿಸಿ ಕರ್ಮವ ಮಾಡಿ ಹೋತ ಕೊಂದು ತಿಂಬುದು ಪಾತಕವಲ್ಲವೆ ? `ಪರಮೋ ಧರ್ಮಃ ಹಿರಣ್ಯಗರ್ಭಃ' ಎಂದು ಹೊನ್ನ ಕಪಿಲೆಯಂ ಮಾಡಿ ಕಡಿದು ಹಂಚಿಕೊಂಬುದು ಚಾಂಡಾಲವಲ್ಲವೆ ? ಹೊಲೆಯನಂತೆ ಹುಲುವೆಣನ ಸುಟ್ಟು ಹೊರಸಿನ ಮೇಲೆ ಹತವಾದ ಕಳಗ ಹತ್ತಿದ ಹಸುವಿನ ಉತ್ಕ್ರಾಂತಿಯ ಕಾನನದಲ್ಲಿ ಕೂಳು ಭೋಜನವನುಂಡು, ಲೋಕೋಪಚಾರಕ್ಕೆ ಒಳಗಾಗಿ ಪಾಪಕರ್ಮವ ಮಾಡಿ ಸಲ್ಲದೆ ಹೋದರು ಶಿವನಲ್ಲಿಗೆ. ಕೂಡಲಚೆನ್ನಸಂಗಮದೇವ ಶಿವಭಕ್ತಂಗೊಲಿದ ಕಾರಣ ಕಂಚಿಯ ಏಳು ಕೇರಿಯ ಕೈಲಾಸಕ್ಕೊಯ್ದ.
--------------
ಚನ್ನಬಸವಣ್ಣ
ಕಾಣಬಹುದೆ ಪರುಷದ ಗಿರಿ ಅಂಧಕಂಗೆ ಮೊಗೆಯಬಹುದೆ ರಸದ ಬಾವಿ ನಿರ್ಭಾಗ್ಯಂಗೆ ತೆಗೆಯಬಹುದೆ ಕಡವರವು ದಾರಿದ್ರಂಗೆ ಕರೆಯಬಹುದೆ ಕಾಮಧೇನು ಅಶುದ್ಧಂಗೆ ಹೊನ್ನ ಹುಳುವ ಕಂಡು ನರಿ ತನ್ನ ಬಾಲವ ಹುಣ್ಣು ಮಾಡಿಕೊಂಡಡೆ ಹೋಲಬಹುದೆ ಎನ್ನೊಡೆಯ ಕೂಡಲಸಂಗನ ಶರಣರನು ಪುಣ್ಯವಿಲ್ಲದೆ ಕಾಣಬಹುದೆ 268
--------------
ಬಸವಣ್ಣ
ತಿರುಕನಾಗುವ, ನರಕಿಯಾಗುವ, ವಿರಸನಾಗುವ, ಕುರುಡನಾಗುವ, ಕುರುಟನಾಗುವ, ಕುಂಟನಾಗುವ, ಮುರುಡನಾಗುವ, ಕನ್ನವನಿಕ್ಕುವ, ಅನ್ಯಶಬ್ದವ ನುಡಿವ, ತೊನ್ನು ಹತ್ತುವ, ಬಣ್ಣಬಿಡುವ, ಹೊನ್ನ ಕೆಡುವ ಮುನ್ನ, ಸೊಡ್ಡಳನ ಆರಾಧನೆ ಇಲ್ಲದ ಕುನ್ನಿಗಳಿಗೆಲ್ಲಾ ಈ ವಿದ್ಥಿ ತಪ್ಪದು.
--------------
ಸೊಡ್ಡಳ ಬಾಚರಸ
ಎನ್ನವರೊಲಿದು ಹೊನ್ನ ಶೂಲದಲ್ಲಿಕ್ಕಿದರೆನ್ನ ಹೊಗಳಿ, ಹೊಗಳಿ, ಎನ್ನ ಹೊಗಳತೆ ಎನ್ನನಿಮ್ಮೈಗೊಂಡಿತ್ತಲ್ಲಾ- ಅಯ್ಯೋ, ನೊಂದೆನು, ಸೈರಿಸಲಾರೆನು ! ಅಯ್ಯಾ, ನಿಮ್ಮ ಮನ್ನಣೆಯೆ ಮಸೆದಲಗಾಗಿ ತಾಗಿತ್ತಲ್ಲಾ- ಅಯ್ಯೋ ನೊಂದೆನು, ಸೈರಿಸಲಾರೆನು. ಕೂಡಲಸಂಗಮದೇವಾ, ನೀನೆನಗೆ ಒಳ್ಳಿದನಾದಡೆ ಎನ್ನ ಹೊಗಳತೆಗಡ್ಡ ಬಾರಾ, ಧರ್ಮೀ ! 387
--------------
ಬಸವಣ್ಣ
ಲಿಂಗವೆ ನಿಮ್ಮ ನೆನೆವ ಮನಕ್ಕೆ ಹೊನ್ನ ತೋರಿ, ನಿಮ್ಮ ನೋಡುವ ನೋಟಕ್ಕೆ ಹೆಣ್ಣ ತೋರಿ, ನಿಮ್ಮ ಪೂಜಿಸುವ ಕೈಗೆ ಮಣ್ಣ ತೋರಿ, ಮತ್ತೆ ಗಣಂಗಳ ಸಾಕ್ಷಿಯಾಗಿದ್ದುದ ತಿಳಿದು ಅವರಿಗೆ ಅಂಜಿ ಮನದ ಕೊನೆಯಲ್ಲಿ ಮಂತ್ರರೂಪಾಗಿ ನಿಂದ ಕಾರಣ ಹೊನ್ನಿನ ನೆನಹು ಕೆಟ್ಟಿತ್ತು ನೋಡಾ ! ಪರಶಿವಮೂರ್ತಿಯ ಮುದ್ದುಮೊಗದ ತುಟಿಯಲ್ಲಿ ಹುಟ್ಟಿದ ಓಂಕಾರನಾದಾಮೃತವ ಚುಂಬನವ ಮಾಡಲಿಕ್ಕೆ ಹೆಣ್ಣಿನ ನೋಟ ಕೆಟ್ಟಿತ್ತು. ಕರಕಮಲ ಗದ್ದುಗೆಯ ಮಾಡಿದ ಕಾರಣ ಮಣ್ಣಿನ ಧಾವತಿ ಬಿಟ್ಟುಹೋಯಿತ್ತು. ಇಂತು ಮಾಡಿದಿರಿ ಲಿಂಗವೆ, ಮತ್ತೆ ನಿಮ್ಮ ಬೇಡಿದಡೆ ಅಷ್ಟೈಶ್ವರ್ಯ ಚತುರ್ವಿಧಪದಗಳನು ಕೊಡುವಿರಿ. ಇವೆಲ್ಲ ಅಲ್ಪಸುಖ, ತಾಮಸಕಿಕ್ಕುವವು. ಮತ್ತೆ ನಮ್ಮ ಗಣಂಗಳ ಮನೆಯಲ್ಲಿ ಕೇಡಿಲ್ಲದಂತಹ ನಿತ್ಯವಾದ ವಸ್ತು ಅಷ್ಟೈಶ್ವರ್ಯಗಳುಂಟು, ನಿದ್ಥಿ ನಿಧಾನಗಳುಂಟು, ಇದಕ್ಕೆ ನಾವು ನೀವು ಬೇಡಿಕೊಂಬುವ ಬನ್ನಿರಿ. ಅವರಿರುವ ಸ್ಥಲವ ತೋರಿಕೊಡಿ ಎಲೆ ಲಿಂಗವೆ. ಅವರು ಎಲ್ಲಿ ಐದಾರೆಯೆಂದಡೆ : ಏಳುಪ್ಪರಿಗೆಯೊಳಗಿಪ್ಪರು. ಅವರ ನಾಮವ ಪೇಳ್ವೆನು - ಪಶ್ಚಿಮಚಕ್ರದಲ್ಲಿ ನಿರಂಜನ ಜಂಗಮವು, ಗುರು-ಹಿರಿಯರು ಅಸಂಖ್ಯಾತ ಮಹಾಗಣಂಗಳು ಸಹವಾಗಿಪ್ಪರು. ಅವರ ಮಧ್ಯದಲ್ಲಿ ನೀವೆ ನಾವಾಗಿ ಬೇಡಿಕೊಂಬೆವು. ಬೇಡಿಕೊಂಡ ಮೇಲೆ ಅವರು ಕೊಟ್ಟ ವಸ್ತುವ ಹೇಳಿಹೆನು ಕೇಳಿರೆ ಲಿಂಗವೆ. ಅವು ಯಾವುವೆಂದಡೆ : ಜೀವಾತ್ಮ ಅಂತರಾತ್ಮ ಪರಮಾತ್ಮರೆಂಬ ಆತ್ಮತ್ರಯರು, ಹೇಮಾದ್ರಿ ರಜತಾದ್ರಿ ಮಂದರಾದ್ರಿಯೆಂಬ ಮೇರುಗಳ ಸೆಜ್ಜೆಯ ಮಾಡಿ, ವಾಯುವನೆ ಶಿವದಾರವ ಮಾಡಿ, ತನುತ್ರಯವನೆ ವಸ್ತ್ರವ ಮಾಡಿ, ಇವುಗಳನೆ ಅವರು ನಮಗೆ ಕೊಟ್ಟರು. ಅಲ್ಲದೆ ಪರಸ್ತ್ರೀಯರ ಅಪ್ಪದ ಹಾಗೆ ನಿಃಕಾಮವೆಂಬ ಉಡುಗೊರೆಯ ಮಾಡಿ ಕಟ್ಟಿನಲ್ಲಿಟ್ಟರು. ಕುಶಬ್ದವ ಕೇಳದ ಹಾಗೆ ಬಲದ ಕರ್ಣದಲ್ಲಿ ಷಡಕ್ಷರವೆಂಬ ವಸ್ತುವ ಮಾಡಿಯಿಟ್ಟರು. ಪಂಚಾಂಗುಲಿಗೆ ಪಂಚಾಕ್ಷರವೆ ಐದುಂಗುರವ ಮಾಡಿಯಿಟ್ಟರು. ನೂರೆಂಟು ನಾಮ ಹರಗÀಣ ಕೊರಳಲಿ ಹಾಕಿದರು. ಆಪತ್ತಿಗೆ ಅಂಜಬೇಡೆಂದು ವಿಭೂತಿಧೂಳನ ಧಾರಣವಮಾಡಿ ಜೋಡಂಗಿಯ ಮಾಡಿ ತೊಡಿಸಿದರು. ಗಣಂಗಳು ಹೋದ ಹಾದಿಯನೆ ಮುಂಡಾಸವ ಮಾಡಿ ತಲೆಗೆ ಸುತ್ತಿದರು. ಆವ ಕಂಟಕವು ಬಾರದ ಹಾಗೆ ಗಣಂಗಳ ಪಾದಧೂಳನವ ಸೆಲ್ಲೆಯ ಮಾಡಿ ಹೊದಿಸಿದರು. ಭಕ್ತಿಯೆಂಬ ನಿಧಾನವ ಕೊಟ್ಟು, ಭಾವದಲ್ಲಿ ಬಚ್ಚಿಟ್ಟುಕೊಳ್ಳಿರಿ ಎಂದರು. ಅಷ್ಟಾವರಣವೆ ನಿದ್ಥಿನಿಧಾನವೆಂದು ಹೇಳಿದರು. ಇವೆಲ್ಲ ವಸ್ತುಗಳ ನಿಮ್ಮ ನೋಡಿ ಕೊಟ್ಟರಲ್ಲದೆ ಬೇರಿಲ್ಲ. ನಿಮ್ಮ ದಾಸಾನುದಾಸಯೆಂದು ನಿಮ್ಮೊಡವೆಯ ನಿಮಗೊಪ್ಪಿಸು ಎಂದರುಹಿದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಹೊನ್ನ ಬಿಟ್ಟು, ಹೆಣ್ಣ ಬಿಟ್ಟು, ಮಣ್ಣ ಬಿಟ್ಟು, ಮಂಡೆಯ ಬೋಳಿಸಿಕೊಂಡು ಬೋಳಾದ ಬಳಿಕ ನಿರಾಸಕ್ತನಾಗಿ, ಭಿಕ್ಷಾಹಾರಿಯಾಗಿ ಶಿವಧ್ಯಾನಪರಾಯಣನಾಗಿಪ್ಪುದೀಗ ಪ್ರಥಮ ಬೋಳು. ಲಿಂಗಾಣತಿಯಿಂದ ಬಂದುದ ಕೈಕೊಂಡು ಲಿಂಗ ಸಾವಧಾನವಾಗಿಪ್ಪುದೀಗ ದ್ವಿತೀಯಬೋಳು. ಶರಣಸತಿ ಲಿಂಗಪತಿಯೆಂಬುಭಯವಳಿದು ಪರಮಾನಂದದಲ್ಲಿಪ್ಪುದೀಗ ತೃತೀಯಬೋಳು. ಈ ಬೋಳಿನ ಅನುವ ಕೂಡಲಚೆನ್ನಸಂಗಯ್ಯನಲ್ಲಿ ಅಲ್ಲಯ್ಯ ಬಲ್ಲ.
--------------
ಚನ್ನಬಸವಣ್ಣ
ತನುವಿಕಾರ, ಮನವಿಕಾರ, ಜನನಮರಣಸ್ಥಿತಿ ಕಾರಣ, ಹೊನ್ನ ತೋರಿದೆ, ಜಗದ ಕಣ್ಣ ಮೊದಲಿಗೆ. ಹೆಣ್ಣ ಸುಳಿಸಿದೆ, ಜಗದ ಕಣ್ಣ ಮೊದಲಿಗೆ. ಮಣ್ಣ ಹರಹಿದೆ, ಜಗದ ಕಣ್ಣ ಮೊದಲಿಗೆ. ತನುವ ತಪ್ಪಿಸಿ, ಜಗವ ಸಂಸಾರಕ್ಕೊಪ್ಪಿಸಿ, ನುಣ್ಣನೆ ಹೋದನುಪಾಯದಿ ದೇವರಾಯಸೊಡ್ಡಳ.
--------------
ಸೊಡ್ಡಳ ಬಾಚರಸ
ಮಣ್ಣ ಮಡಕೆ ಮಣ್ಣಾಗದು ಕ್ರೀಯಳಿದು, ಬೆಣ್ಣೆ ಕರಗಿ ತುಪ್ಪವಾಗಿ ಮರಳಿ ಬೆಣ್ಣೆಯಾಗದು ಕ್ರೀಯಳಿದು, ಹೊನ್ನ ಕಬ್ಬುನವಾಗದು ಕ್ರೀಯಳಿದು, ಮುತ್ತು ನೀರಲ್ಲಿ ಹುಟ್ಟಿ ಮತ್ತೆ ನೀರಾಗದು ಕ್ರೀಯಳಿದು, ಕೂಡಲಸಂಗನ ಶರಣನಾಗಿ ಮರಳಿ ಮಾನವನಾಗ ಕ್ರೀಯಳಿದು.
--------------
ಬಸವಣ್ಣ
ಇನ್ನಷ್ಟು ... -->